ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”
ಕೀರ್ತನೆ: 89:1-4, 26, 28.
ಶ್ಲೋಕ: ಚಿರಶಾಶ್ವತವಾಗಿರುವುದು ಅವನ ಸಂತತಿ.
ಎರಡನೇ ವಾಚನ: ರೋಮನರಿಗೆ 4:13, 16-18, 22
ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ. ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಸ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು. ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.
ಶುಭಸ೦ದೇಶ: ಮತ್ತಾಯ 1:18-21, 24
ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.
ಮನಸ್ಸಿಗೊಂದಿಷ್ಟು : "ಈ ಜಗದಲ್ಲಿ ಪ್ರತಿ ಮನುಷ್ಯ ಹೊತ್ತುಕೊಳ್ಳುವ ಜವಬ್ದಾರಿ, ವಹಿಸಿಕೊಳ್ಳುವ ಪಾತ್ರಕ್ಕೆ ತಕ್ಕಂತೆ ದೇವರು ಅವರ ಮೇಲೆ ಕೃಪಾವರಗಳನ್ನು ಸುರಿಸುತ್ತಾರೆ" ಎನ್ನುತ್ತಾರೆ ಸಂತ ಥಾಮಸ್ ಅಕ್ವಿನಾಸ್. ಲೋಕದಲ್ಲಿ ತಮ್ಮ ಮಗನ ಪ್ರಾಂಪಚಿಕ ತಂದೆಯಾಗಿ ಪಾತ್ರವಹಿಸಬೇಕಾದ ಜೋಸೆಫರಿಗೆ ಎಷ್ಟು ಕೃಪಾವರಗಳನ್ನು ಸುರಿಸಬೇಕು.
ತಮ್ಮಂತೆ ಮನುಷ್ಯರನ್ನು ಉಂಟು ಮಾಡಿದ ದೇವರು, ಅವರಿಂದ ಬಯಸಿದ್ದು ಪಾವಿತ್ರತೆ ಹಾಗು ವಿಧೇಯತೆ ಎನ್ನವುವ ಮಾತಿದೆ. ಸಂತ ಜೋಸೆಫರ ಈ ಎರಡರಲ್ಲೂ ದೇವರ ಮೆಚ್ಚುಗೆಗೆ ಪಾತ್ರರಾದವರೇ. ತಮ್ಮ ನಿದ್ದೆಯಲ್ಲಿ ದೇವರ ಚಿತ್ತದ ಸಂದೇಶ ಪಡೆದ ಜೋಸೆಫರು ಎಚ್ಚರದ ನಂತರ ಜೀವನದುದ್ದಕೂ ಅದಕ್ಕೆ ತಲೆಬಾಗಿದ್ದು ನಮಗೆ ಸದಾ ಪ್ರೇರಣೆಯಾಗಲಿ
ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರಸ್ವಾಮಿ:ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನ್ನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.'ಹೊರಟುಹೋಗಿರಿ' ಎನ್ನುವೆನು ಸೆರೆಯಾಳುಗಳಿಗೆ 'ಬೆಳಕಿಗೆ ಬನ್ನಿರಿ' ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ.ದೇಶವನ್ನು ಪುನಃ ತರುವೆನು ಪೂರ್ವ ಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ. ಇರದು ಅವರಿಗೆ ಹಸಿವು ಬಾಯಾರಿಕೆ, ಬಡಿಯವು ಅವರಿಗೆ ಬಿಸಿಲು ಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ, ಕರುಣಾಕರನು ದಾರಿತೋರಿಸುವನು ಅವರಿಗೆ.ಸಮ ದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು, ಎತ್ತರಿಸುವೆನು ನನ್ನ ರಾಜಮಾರ್ಗಗಳನು.ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ, ದಕ್ಷಿಣದ ಆ ಅಶ್ವಾನ್ ನಾಡಿನಿಂದ.ಹರ್ಷಧ್ವನಿಗೈ ಆಕಾಶವೇ, ಉಲ್ಲಾಸಪಡು ಪೊಡವಿಯೇ, ತಟ್ಟಾಡಿರಿ ಬೆಟ್ಟಗುಡ್ಡಗಳೇ,ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು, ಕನಿಕರಿಸಿಹನು ಶೋಷಿತರಾದ ತನ್ನ ಜನರನು.ಜೆರುಸಲೇಮಿನ ಜನರಾದರೋ ಇಂತೆಂದರು: 'ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.'ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನ್ನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನ್ನು ಮರೆಯೆ."
3. ಪ್ರಭುವಿನ ಮಾರ್ಗ ಧರ್ಮಸಮ್ಮತ| ಆತನ ಕಾರ್ಯವೆಲ್ಲ ಪುನೀತ||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ| ಯಥಾರ್ಥವಾಗಿ ಆತನನು ಅರಸುವವರಿಗೆ|| ಶ್ಲೋಕ
ಯೊವಾನ್ನನು ಬರೆದ ಪವಿತ್ರ ಶುಭಸಂದೇಶ 5:17-30
ಆ ಕಾಲದಲ್ಲಿ ಯೆಹೂದ್ಯರ ಆಕ್ಷೇಪಣೆಗೆ ಉತ್ತರವಾಗಿ ಯೇಸು, "ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ," ಎಂದು ನುಡಿದರು. ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು. ಯೇಸು ಅವರನ್ನು ಉದ್ದೇಶಿಸಿ ಹೀಗೆಂದರು: ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು. ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ. ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ. ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ. ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯ ಜೀವವನ್ನು ಪಡೆದಿರುತ್ತಾನೆ. ಅವನು ಖಂಡನೆಗೆ ಗುರಿಯಾಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ. ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು. ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ. ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ. ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು. ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನರಾಗುವರು. ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ದ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೆ ನೆರವೇರಿಸಲು ಆಶಿಸುತ್ತೇನೆ."
ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು: ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು. ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು. ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ವಿೂಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು. ಅವನು ಪುನಃ ಐನೂರು ವಿೂಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ವಿೂಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು. ಅವನು ಮತ್ತೆ ಅಳೆದು ಐನೂರು ವಿೂಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು. ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು. ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು. ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು. ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪು ಗುಂಪಾಗಿ ಚಲಿಸುವ ಸಕಲವಿಧ ಜಲ ಜಂತುಗಳು ಬದುಕಿ ಬಾಳುವುವು; ವಿೂನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು. ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”
ಕೀರ್ತನೆ: 46:1-2, 4-5, 7-8
ಶ್ಲೋಕ: ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು, ಯಕೋಬ ಕುಲದೇವರು ನಮಗಾಶ್ರಯ ದುರ್ಗವು.
ದೇವರೆಮಗೆ ಆಶ್ರಯ ದುರ್ಗ I
ಸಂಕಟದಲಿ ಸಿದ್ಧ ಸಹಾಯಕ II
ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I
ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II
ನದಿಯೊಂದು ಆನಂದಗೊಳಿಸುವುದು ದೇವನಗರವನು I
ಪುನೀತಗೊಳಿಸುವುದು ಪರಾತ್ಪರನ ನಿವಾಸವನು II
ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I
ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II
ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I
ಯಕೋಬ ಕುಲದೇವರು ನಮಗಾಶ್ರಯ ದುರ್ಗವು II
ಪ್ರಭುವಿನ ಕಾರ್ಯಗಳ ನೋಡಬನ್ನಿ I
ಇಳೆಯೊಳಗೆಸಗಿದ ಪವಾಡಗಳನು ನೋಡಿ II
ಶುಭಸ೦ದೇಶ: ಯೊವಾನ್ನ 5: 1-3, 5-16
ಆ ಕಾಲದಲ್ಲಿ ಯೆಹೂದ್ಯರ ಹಬ್ಬ ಬಂದಿತು. ಯೇಸುಸ್ವಾಮಿ ಜೆರುಸಲೇಮಿಗೆ ತೆರಳಿದರು. ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ. ಕುರುಡರು, ಕುಂಟರು, ಪಾಶ್ರ್ವವಾಯು ಪೀಡಿತರು ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು. ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?” ಎಂದು ಕೇಳಿದರು. “ಸ್ವಾವಿೂ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದು ಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ. ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು. ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು. ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ. ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು. ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು. ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು. ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿ ಬಿಟ್ಟಿದ್ದರು. ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನು ಮೇಲೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು. ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು. ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.
" ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು;ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ;
ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು;
ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.
ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು,
ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು.
ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.
ಕೆಲವೇ ದಿನ ಬದುಕುವ ಮಗುವಾಗಲಿ,
ಆಯಸ್ಸು ಮುಗಿಸದ ಮುದುಕನಾಗಲಿ ಇನ್ನು ಅಲ್ಲಿರನು.
ನೂರು ವರ್ಷ ಬಾಳುವವನು 'ಯುವಕ' ಎನಿಸಿಕೊಳ್ಳುವನು;
ನೂರರೊಳಗೆ ಸಾಯುವ ಪಾಪಿಯು 'ಶಾಪಗ್ರಸ್ತ' ಎನಿಸಿಕೊಳ್ಳುವನು.
ಜನರು ಅಲ್ಲೇ ಮನೆಮಾಡಿ ನಿವಾಸ ಮಾಡುವರು;
ತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು.
ಪ್ರಭುವಿನ ವಾಕ್ಯ
ಕೀರ್ತನೆ 30: 1, 3-5, 10-12
ಶ್ಲೋಕ: ನಿನಗೆನ್ನ ವಂದನೆ ಪ್ರಭೂ, ನನ್ನನ್ನುದ್ದರಿಸಿದೆ |*
1. ನಿನಗೆನ್ನ ವಂದನೆ ಪ್ರಭೂ, ನನ್ನನ್ನುದ್ದರಿಸಿದೆ|
ಶತ್ರುಗಳನ್ನು ಕುರಿತು ಹಿಗ್ಗದಂತೆ ಮಾಡಿದೆ||
ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ|
ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ|| ಶ್ಲೋಕ
2. ಭಕ್ತರೇ, ಸಂಕೀರ್ತಿಸಿರಿ ಪ್ರಭುವನು|ಮಾಡಿರಿ ಆತನ ನಾಮಸ್ಮರಣೆಯನು||
ಆತನ ಕೋಪ ಕ್ಷಣಮಾತ್ರ|ಆತನ ಕೃಪೆ ಜೀವನ ಪರಿಯಂತ|| ಶ್ಲೋಕ
3. ಇರುಳು ಬರಲು ಇರಬಹುದು ಅಳಲು|
ನಲಿವು ಉಲಿವುದು ಹಗಲು ಹರಿಯಲು||
ಆಲಿಸು ಪ್ರಭೂ, ಕರುಣಿಸು, ನೆರವಾಗು ಬೇಗ,"|
ಎಂದು ನಾ ನಿನ್ನನ್ನು ಪ್ರಾರ್ಥಿಸಿದಾಗ|| ಶ್ಲೋಕ
4. ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ|
ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ
ಹೇ ಪ್ರಭೂ, ಎನ್ನ ದೇವಾ, ನಿನಗೆನ್ನ ಅನಂತ ಧನ್ಯ ವಂದನೆ|| ಶ್ಲೋಕ
ಯೊವಾನ್ನನು ಬರೆದ ಶುಭಸಂದೇಶ 4:43-54
ಆ ಕಾಲದಲ್ಲಿ ಯೇಸು ಸಮಾರಿಯದಿಂದ ಗಲಿಲೇಯಕ್ಕೆ ಹೊರಟರು. ಪ್ರವಾದಿಗೆ ಸ್ವಗ್ರಾಮದಲ್ಲಿ ಮರ್ಯಾದೆ ಇಲ್ಲ ಎಂದು ಅವರೇ ಸಾರಿದ್ದರು. ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು. ಯೇಸು ಗಲಿಲೇಯದ ಕಾನ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು. ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು. ಯೇಸು ಅವನಿಗೆ ಸೂಚಕ ಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ," ಎಂದರು. ಆದರೂ ಆ ಅಧಿಕಾರಿ, "ನನ್ನ ಮಗನು ಪ್ರಾಣ ಬಿಡುವ ಮೊದಲೇ ಬನ್ನಿ ಸ್ವಾಮಿ," ಎಂದು ಅಂಗಲಾಚಿದನು. ಆಗ ಯೇಸು, "ಹೋಗು, ನಿನ್ನ ಮಗನು ಬದುಕುತ್ತಾನೆ," ಎಂದು ಹೇಳಿದರು. ಆ ಅಧಿಕಾರಿ ಯೇಸುವಿನ ಮಾತನ್ನು ನಂಬಿ ಹೊರಟನು. ಅವನು ಅರ್ಧದಾರಿಯಲ್ಲಿ ಇದ್ದಾಗಲೇ ಆಳುಗಳು ಅವನಿಗೆ ಎದುರಾಗಿ ಬಂದು, "ನಿಮ್ಮ ಮಗ ಬದುಕಿಕೊಂಡ," ಎಂದು ತಿಳಿಸಿದರು. ಎಷ್ಟು ಹೊತ್ತಿಗೆ ತನ್ನ ಮಗ ಚೇತರಿಸಿಕೊಂಡನೆಂದು ಆ ಅಧಿಕಾರಿ ವಿಚಾರಿಸಿದಾಗ, "ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಅವನ ಜ್ವರ ಬಿಟ್ಟಿತು," ಎಂದು ಆಳುಗಳು ಉತ್ತರಕೊಟ್ಟರು. 'ನಿನ್ನ ಮಗ ಬದುಕುತ್ತಾನೆ' ಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತು. ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರು. ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕ ಕಾರ್ಯ ಇದು.
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು. ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು. ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು. ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು. ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು.
ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು. ಅವನು ಕೆಂಬಣ್ಣದವನು, ಸುಂದರನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು. ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟು ಹೋದನು.
ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ; ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ. ಕಾರಣ - ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು. ಪ್ರಭುವಿಗೆ ಮೆಚ್ಚಿಕೆಯಾದುದು ಯಾವುದೆಂಬುದನ್ನು ಕಲಿತುಕೊಳ್ಳಿರಿ. ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ. ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು. ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು. ಆದ್ದರಿಂದ: “ನಿದ್ರೆಮಾಡುವವನೇ ಎದ್ದೇಳು ಸತ್ತವರನ್ನು ಬಿಟ್ಟು ಬಾ ಎಚ್ಚೆತ್ತು ನಿನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ. ಶುಭಸಂದೇಶ: ಯೊವಾನ್ನ 9:1-41
ಯೇಸುಸ್ವಾಮಿ ನಡೆದು ಹೋಗುತ್ತಿದ್ದಾಗ, ಒಬ್ಬ ಹುಟ್ಟು ಕುರುಡನನ್ನು ಕಂಡರು. ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು. ಅದಕ್ಕೆ ಉತ್ತರವಾಗಿ ಯೇಸು, ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ. ಹಗಲಿರುವಾಗಲೇ ನನ್ನನ್ನು ಕಳುಹಿಸಿರುವಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸಮಾಡಲಾಗದು. ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು. ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು. (‘ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು. ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು. “ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು. ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು. ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು. ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು ಉತ್ತರವಾಗಿ “ನಾನರಿಯೆ,” ಎಂದನು. ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು. ಏಕೆಂದರೆ, ಯೇಸುಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು. ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು. ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕ ಕಾರ್ಯಗಳನ್ನು ಮಾಡಲು ಸಾಧ್ಯವೇ?” ಎಂದರು. ಹೀಗೆ ಅವರಲ್ಲೇ ಭಿನ್ನ ಬೇಧವುಂಟಾಯಿತು. ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣು ಕೊಟ್ಟನೆಂದು ಹೇಳುತ್ತೀಯಲ್ಲಾ, ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು. ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿ ಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ. ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟು ಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು. ಅದಕ್ಕೆ ಅವನ ತಂದೆ ತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣುಕೊಟ್ಟವರು ಯಾರೆಂದೂ ನಮಗೆ ತಿಳಿಯದು. ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು. ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾ ಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು. ಆದುದರಿಂದಲೇ, “ಅವನು ಪ್ರಾಯದವನು, ಅವನನ್ನೇ ಕೇಳಿ” ಎಂದು ಅವನ ತಂದೆತಾಯಿಗಳು ಹೇಳಿದ್ದು. ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣ ಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು. ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ ಇಷ್ಟು ಮಾತ್ರ ಬಲ್ಲೆ,” ಎಂದು ಹೇಳಿದನು. “ಅವನು ನಿನಗೇನು ಮಾಡಿದ? ನಿನಗೆ ಹೇಗೆ ಕಣ್ಣು ಬರಿಸಿದ?” ಎಂದು ಅವರು ಮತ್ತೆ ಪ್ರಶ್ನಿಸಿದರು. ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ?” ಎಂದನು. ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು. ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು. ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ. ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ. ಹುಟ್ಟು ಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕ ಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ. ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು. ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು. ನಮಗೇ ಬುದ್ಧಿ ಹೇಳ ಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿ ಬಿಟ್ಟರು. ಹುಟ್ಟು ಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸುಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?” ಎಂದು ಕೇಳಿದರು. ಅವನು, “ಅವರು ಯಾರೆಂದು ತಿಳಿಸಿ ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,” ಎಂದನು. ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು. “ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು. ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪು ಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು. ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?” ಎಂದು ಪ್ರಶ್ನಿಸಿದರು. ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ, ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.
ಮನಸ್ಸಿಗೊಂದಿಷ್ಟು : ಹುಟ್ಟಿನಿಂದಲೇ ಕುರುಡನಾಗಿದ್ದ ವ್ಯಕ್ತಿಗೆ ಯೇಸು ದೃಷ್ಟಿ ನೀಡಿದರೂ ನಂಬದವರು ಇದ್ದರು ಎನ್ನುತ್ತದೆ ಇಂದಿನ ಶುಭಸಂದೇಶ. ಅಷ್ಟು ಮಾತ್ರವಲ್ಲದೆ ಆ ಗುಣ ಹೊಂದಿದ ವ್ಯಕ್ತಿಯನ್ನೂ ವ್ಯಂಗ ಮಾಡುತ್ತಾರೆ, ದೂಷಿಸುತ್ತಾರೆ. ಇದು ಆಶ್ಚರ್ಯದ ಸಂಗತಿಯೇನ್ನಲ್ಲ. ಇಂದಿಗೂ ದೇವರ ಕಾರ್ಯಗಳು ನೆರವೇರುತ್ತದೆ ಎಂಬುದನ್ನು ನಂಬದವರು ನಮ್ಮ ನಡುವೆಯೇ ಇದ್ದಾರೆ. ನಂಬುವವರನ್ನು, ವ್ಯಂಗ ಮಾಡುವವರು ಈಗಲೂ ಇದ್ದಾರೆ. ನಮ್ಮ ಮನೋಭಾವ ಹಾಗಾಗದಿರಲಿ. ಪ್ರಶ್ನೆ : ವಿಶ್ವಾಸದ ಕುರುಡುತನದಿಂದ ಬಳಲುತ್ತಿರುವ ನಮ್ಮ ಕಣ್ಣುಗಳು ತೆರೆಯಬೇಕೆಂಬ ಆಸೆ ನಮಗಿದೆಯೇ? ಪ್ರಭುವೇ, ಹುಟ್ಟಿನಿಂದಲೂ ನಿಮ್ಮವರೇ ಎನ್ನಿಸಿಗೊಂಡಿದ್ದರೂ ಬೆನ್ನು ಮಾಡಿದ್ದೇವೆ ಬೆಳಕಿಗೆ
ನಮ್ಮ ಅವಿಶ್ವಾಸದ ಅಂಧತ್ವವನ್ನು ನೀಗಿಸಿ ಬೆಳಕು ನೀಡಿ ಕಣ್ಣು ಮನಸ್ಸಿಗೆ
ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು. ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು. ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು. ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ. ಖಂಡ ತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯ ದಂಡನೆ ಮಿಂಚಿನಂತೆ ಹೊರಡುವುದು. ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.
ಕೀರ್ತನೆ: 51: 1-3 16-19
ಶ್ಲೋಕ: ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ
ಕೃಪಾಳು, ದೇವಾ, ಕರುಣಿಸೆನ್ನನು I
ಕರುಣಾನಿಧಿ, ಅಳಿಸೆನ್ನ ದೋಷವನು II
ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I
ದೋಷಪರಿಹರಿಸಿ ಶುದ್ಧಗೊಳಿಸೆನ್ನನು II
ಬಲಿಯರ್ಪಣೆಯಲಿ ನಿನಗೊಲವಿಲ್ಲ I
ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II
ಮುರಿದ ಮನವೇ ದೇವನೊಲಿವ ಯಜ್ಞವು I
ನೊಂದು ಬೆಂದ ಮನವನಾತ ಒಲ್ಲೆಯೆನನು II
ಸಿಯೋನಿಗೆ ದೇವಾ, ಶುಭವನು ಕರುಣಿಸು I
ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II
ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I
ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II
ಶುಭಸ೦ದೇಶ: ಲೂಕ: 18: 9-14
ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ. “ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ. “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.
ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದಲ್ಲಿ ಇಬ್ಬರ ಪ್ರಾರ್ಥನೆ ಇದೆ. ಚಿಂತಕರೊಬ್ಬರು ಹೇಳುವಂತೆ ಫರಿಸಾಯ ಪ್ರಾರ್ಥಿಸಲಿಲ್ಲ, ಬದಲಿಗೆ ತಾನೆಷ್ಟು ಒಳ್ಳೆಯವನೆಂದು ದೇವರಿಗೆ ವರದಿ ಮಾಡಿದನಷ್ಟೆ. ಸುಂಕ ವಸೂಲಿಯವನು ದೇವರ ಮುಂದೆ ತನ್ನನ್ನೇ ತಗ್ಗಿಸಿಕೊಂಡ, ದೇವರಿಗೆ ಅದೇ ಮೆಚ್ಚುಗೆಯಾಯಿತು
ಜಂಭದ ಮನಸ್ಸಿಗೆ ಪ್ರಾರ್ಥನೆ ಕಷ್ಟವಂತೆ. ನಾವು ನಮ್ಮ ಒಳ್ಳೆಯತನವನ್ನು ಹೋಲಿಸಿಕೊಳ್ಳಬೇಕಾದರೆ, ಅದು ಇತರ ಮನುಷ್ಯರೊಂದಿಗೆ ಅಲ್ಲ ದೇವರ ಒಳ್ಳೆಯತನದೊಂದಿಗೆ ಎನ್ನುವ ಮಾತಿದೆ. ದೇವರ ಒಳ್ಳೆಯತನದ ಅಗಾಧತೆ ನಮ್ಮ ಗುರಿಯಾಗಲಿ. ವಿನಯ ನಮ್ಮ ಪ್ರಾರ್ಥನೆಯ ಗರಿಯಾಗಲಿ - ಜೀವವಾಕ್ಯ
ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು. ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿ ಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆತೋರಿಸುವವನು ನೀನೇ,” ಎಂದು ಹೇಳು. ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು. ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ. ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ. ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ”. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.” ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿ ಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.
ಕೀರ್ತನೆ: 81: 6-7, 8-10, 13, 16
ಶ್ಲೋಕ: ಈಜಿಪ್ಟಿನಿಂದ ಕರೆತಂದ ಸ್ವಾಮಿ ದೇವನು ನಾನು, ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ.
ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು:/
“ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು
ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು //
“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು /
ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು /
ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು,//
“ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ /
ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, //
“ಇರಬಾರದು ಅನ್ಯದೇವತೆಗಳು ನಿಮ್ಮಲಿ /
ಪರದೇವತೆಗಳ ಪೂಜೆ ಕೂಡದು ನಿಮ್ಮಲಿ,//
“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು /
ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ /
ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, //
“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು /
ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” //
ಶುಭಸ೦ದೇಶ: ಮಾರ್ಕ: 12: 28-34
ಈ ತರ್ಕವನ್ನು ಕೇಳುತ್ತಿದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು. ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.
ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದಲ್ಲಿ ಧರ್ಮಶಾಸ್ತ್ರೀ ಯೇಸುವಿನ ಮಾತನ್ನು ಒಪ್ಪುವುದು, ಯೇಸು ಅವನನ್ನು ಮೆಚ್ಚುವುದನ್ನು ಕಾಣುತ್ತೇವೆ. ಯೇಸು ವಿನಾಕಾರಣ ಯಾರನ್ನೂ ಖಂಡಿಸುತ್ತಿರಲಿಲ್ಲ ಎಂಬುದರ ಮೇಲೆ ಮಾರ್ಕರು ಬೆಳಕು ಚೆಲ್ಲುತ್ತಾರೆ.
ಯೇಸು ನೀಡಿದ ಎರಡೂ ಆಜ್ಞೆಗಳು ಈಗಾಗಲೇ ಹಳೆಯ ಒಡಂಬಡಿಕೆಯಲ್ಲಿ ಚರ್ಚೆಯಾಗಿದೆ. ಆದರೆ ಯೇಸು ದೈವ ಪ್ರೀತಿ ಹಾಗು ಪರ ಪ್ರೀತಿಗೆ ಸಮನಾದ ಮಹತ್ವ ನೀಡುತ್ತಾರೆ. ದೈವ ಶಾಸ್ತ್ರದ ಕಟ್ಟಲೆ ನಿಯಮಗಳನ್ನು ಪಾಲಿಸುವುದೇನೋ ಸರಿ. ಆದರೆ ಅವು ಪ್ರೀತಿಗಿಂತ ಹೆಚ್ಚು ಮಹತ್ವ ಪಡೆಯುವ ಅಪಾಯವೇ ಹೆಚ್ಚು .
ಜೆರಿಕೋ ಮಾರ್ಗದಲ್ಲಿ ಗಾಯಗೊಂಡ ಪ್ರಯಾಣಿಕನನ್ನು ಆರೈಕೆ ಮಾಡದೆ ಹೋದ ಯಾಜಕ ಹಾಗು ಲೇವಿ ಈ ವಿಷಯದಲ್ಲಿ ಉದಾಹರಣೆ. ಅವರಲ್ಲಿ ಪ್ರೀತಿ ಕರುಣೆಗಿಂತ ವಿಧಿ, ನಿಯಮದ ಕರ್ತವ್ಯವೇ ಹೆಚ್ಚು ಮಹತ್ವ ಪಡೆಯಿತು.
ಈ ನಿಟ್ಟಿನಲ್ಲಿ ಯೇಸು ಹೇಳಿದ ಈ ಎರಡು ಆಜ್ಞೆಗಳೇ ನಮ್ಮ ದಾರಿ ದೀಪವಾಗಬೇಕು