ಮೊದಲನೇ ವಾಚನ: 1 ಅರಸುಗಳು 18:20-39
11.03.2026 - ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು
12.03.2026 - ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದುರಿಸುತ್ತಾನೆ
ಮೊದಲನೇ ವಾಚನ: ಯೆರೆಮೀಯ: 7: 23-28
ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ. ಆದರೆ ಅವರು ಕೇಳಲಿಲ್ಲ. ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು. ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ. ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.” “ಯೆರೆವಿೂಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ. ಆದಕರಣ ನೀನು ಅವರಿಗೆ – ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದು ಹೋಗಿದೆ’ ಎಂದು ಹೇಳು.”
10.03.2026 - ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು
ಮೊದಲನೇ ವಾಚನ: ಅಜರ್ಯ 1:2, 11-20
ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು. “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ. “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.
09.03.2026 - ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ
ಮೊದಲನೆಯ ವಾಚನ
ಅರಸುಗಳ ಎರಡನೆಯ ಗ್ರಂಥ 5:1-15
ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು; ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, "ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ" ಎಂಬುದಾಗಿ ಬರೆದಿತ್ತು. ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೇ; ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, "ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ ! ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ, ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ದಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ," ಎಂದು ಹೇಳಿದನು. ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವ ಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, "ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯೇಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ," ಎಂದು ಹೇಳಿ ಕಳುಹಿಸಿದನು. ನಾಮನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು. ಎಲೀಷನು ಅವನಿಗೆ, "ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ದನಾಗುವೆ," ಎಂದು ಹೇಳಿಕಳುಹಿಸಿದನು. ನಾಮನನು ಇದನ್ನು ಕೇಳಿ ಕೋಪಗೊಂಡನು. "ಇದೇನು! ಇವನು ಖಂಡಿತವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರನ ಹೆಸರು ಹೇಳಿ, ನನ್ನ ಚರ್ಮದ ಮೇಲೆ ಕೈಯಾಡಿಸಿ, ರೋಗ ವಾಸಿಮಾಡುವನೆಂದು ನೆನಸಿದೆ. ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೆ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೆ? ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು. ಆಗ ಅವನ ಸೇವಕರು ಹತ್ತಿರ ಬಂದು, "ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ 'ಸ್ನಾನಮಾಡಿ, ಶುದ್ಧರಾಗುವಿರಿ' ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?" ಎಂದರು. ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವ ಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ದವಾಯಿತು. ಅನಂತರ ನಾಮನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವ ಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. "ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು," ಎಂದು ಹೇಳಿದನು.
ಪ್ರಭುವಿನ ವಾಕ್ಯ
ಕೀರ್ತನೆ: 42: 1-2, 43: 3-4, v.2
ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ | ನಾ ತೆರಳಿ ಪಡುವುದೆಂತು ಆ ದೇವನ ಮುಖದರ್ಶನ ||*
1. ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಯಾಗಿ|
ದಣಿದಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ||
ಶ್ಲೋಕ
2. ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ|
ನಾ ತೆರಳಿ ಪಡುವುದೆಂತು ಆ ದೇವನ ಮುಖದರ್ಶನ||
ಶ್ಲೋಕ
3. ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕೆ|
ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ||
ಶ್ಲೋಕ
4. ಬರುವೆನಾಗ ನಿನ್ನ ಬಲಿಪೀಠದ ಬಳಿಗೆ|
ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ||
ಶ್ಲೋಕ
ಘೋಷಣೆ
ದೇವರ ವಾಕ್ಯವಾದ ಪ್ರಭು ಯೇಸುವೇ, ನಿಮಗೆ ಸದಾ ಮಹಿಮೆ ಸಲ್ಲಲಿ
ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 4:24-30

ಪ್ರಭುವಿನ ಶುಭಸಂದೇಶ
08.03.2026 - ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ
ಮೊದಲನೇ ವಾಚನ: ವಿಮೋಚನಕಾಂಡ 17:3-7
ಶ್ಲೋಕ: ಪ್ರಭು ಸಹನಶೀಲನು, ಪ್ರೀತಿಮಯನು
ಯೇಸು ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ. ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು. ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು. ಶಿಷ್ಯರು ಊಟಕ್ಕೆ ಏನಾದರೂ ಕೊಂಡು ತರುವುದಕ್ಕೆ ಊರಿನೊಳಗೆ ಹೋಗಿದ್ದರು. ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೇ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ). ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು. ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು? ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು. ಆಗ ಯೇಸು, “ಈ ನೀರನ್ನು ಕುಡಿಯುವ ಎಲ್ಲರಿಗೂ ಮತ್ತೆ ದಾಹವಾಗುತ್ತದೆ. ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು. ಅದಕ್ಕೆ ಆಕೆ, “ಸ್ವಾವಿೂ, ಅಂಥ ನೀರನ್ನು ಕೊಡಿ; ಇನ್ನು ಮುಂದೆ ನನಗೆ ದಾಹವಾಗದಿರಲಿ. ನೀರು ಸೇದಲು ಇಷ್ಟು ದೂರ ಬರುವುದು ತಪ್ಪಲಿ,” ಎಂದಳು. ಅದಕ್ಕೆ ಯೇಸು, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದು ಹೇಳಿದರು. ಆಕೆ, “ನನಗೆ ಗಂಡನಿಲ್ಲ,” ಎಂದಳು. ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸುಸ್ವಾಮಿ. ಅದಕ್ಕೆ ಆ ಮಹಿಳೆ, “ಸ್ವಾವಿೂ, ತಾವು ಪ್ರವಾದಿ ಎಂದು ನನಗೀಗ ತಿಳಿಯಿತು. ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲ” ಎಂದಳು. ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು. ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ. ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ. ದೇವರು ಆತ್ಮಸ್ವರೂಪಿ. ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು. ಆಕೆ “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು. ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು. ಅಷ್ಟರಲ್ಲಿ ಹಿಂದಿರುಗಿ ಬಂದ ಶಿಷ್ಯರು ಯೇಸು ಆ ಮಹಿಳೆಯೊಡನೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೆ, “ಏನು ಬೇಕು?” ಎಂದು ಆಕೆಯನ್ನಾಗಲಿ, “ಆಕೆಯೊಡನೆ ಏಕೆ ಮಾತನಾಡುತ್ತಿದ್ದೀರಿ?” ಎಂದು ಯೇಸುವನ್ನಾಗಲಿ ಅವರು ಕೇಳಲಿಲ್ಲ. ಆ ಮಹಿಳೆ ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ನಡೆದಳು. “ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ. ಬಂದು ನೋಡಿ. ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು. ಅವರು ಯೇಸುವಿನ ಬಳಿಗೆ ಬಂದರು. ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯ ಮಾಡಿದರು. ಆಗ ಯೇಸು, “ನಿಮಗೆ ತಿಳಿಯದಂಥ ಆಹಾರ ನನ್ನಲ್ಲಿದೆ,” ಎಂದರು. ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದು ಕೊಟ್ಟಿರಬಹುದೇ?” ಎಂದು ಮಾತನಾಡಿಕೊಂಡರು. ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೆ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ. ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ. ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ. ‘ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು. ನೀವು ದುಡಿಯದ ಎಡೆಯಲ್ಲಿ ಕೊಯ್ಲು ಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ. ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು. ‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು. ಇನ್ನೂ ಅನೇಕರಿಗೆ ಯೇಸುವಿನ ಬೋಧನೆಯನ್ನು ಅವರ ಬಾಯಿಂದಲೇ ಕೇಳಿ ಅವರಲ್ಲಿ ನಂಬಿಕೆ ಮೂಡಿತು. ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.
ಮನಸ್ಸಿಗೊಂದಿಷ್ಟು: ಆಕಸ್ಮಿಕವಾಗಿ ಯೇಸುವನ್ನು ಕಂಡು, ಸಂಭಾಷಣೆಗಿಳಿಯುತ್ತಾಳೆ ಸಮಾರಿಯಾದ ಹೆಂಗಸು. ಕೆಲವೇ ನಿಮಿಷಗಳ ಈ ಭೇಟಿಯ ಕೊನೆಗೆ 'ಯೇಸುವೇ ಲೋಕೊದ್ಧಾರಕ' ಎಂದು ತಾನು ನಂಬುವುದು ಮಾತ್ರವಲ್ಲದೆ ಇಡೀ ಹಳ್ಳಿಗೆ ಹೋಗಿ ಹೇಳುತ್ತಾಳೆ. ಹೀಗೆ ತಾನೇ ಶುಭಸಂದೇಶದ ಮೊದಲ ಪ್ರಚಾರಕಿ ಆಗುತ್ತಾಳೆ. ಹುಟ್ಟಿನಿಂದಲೇ ಯೇಸುವಿನ ಅನುಯಾಯಿಗಳಾದ ನಮಗೆ ಯೇಸುವಿನ ಬಗ್ಗೆ ಆ ಅಭಿಮಾನ, ವಿಶ್ವಾಸ ಹಾಗೂ ಶುಭ ಸಂದೇಶ ಸಾರುವ ಕಾತುರ ಇದೆಯೇ?
ಪ್ರಶ್ನೆ: ಇದುವರೆಗಿನ ನಮ್ಮ ಜೀವನದಲ್ಲಿ ಶುಭಸಂದೇಶದ ಪ್ರಚಾರದಲ್ಲಿ ನಾವು ತೊಡಗಿಕೊಂಡದೆಷ್ಟು?
ಪ್ರಭುವೇ,
ಜಾರಿಯಲ್ಲಿರಲಿ
ಸದಾ ನನ್ನ ನಿಮ್ಮ
ನಡುವೆ ಸಂಭಾಷಣೆ
ಅದರೊಂದಿಗೆ
ನಾನ್ಯಾರೆಂಬ
ಅನ್ವೇಷಣೆ
ನನ್ನಲಿರಿಸಿ
ಜೀವಜಲಕ್ಕಂಬಲಿಸುವ
ಕಾತುರ
ಲೋಕೋದ್ಧಾರಕ ನೀವೇ
ಎಂದು ಜಗಕ್ಕೆ
ಸಾರುವ ಆತುರ
-ಚಿತ್ತ
07.03.2026 - ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೇ
ಮೊದಲನೇ ವಾಚನ: ಮೀಕ 7:14-15, 18-20
ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ. ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.ಮನಸ್ಸಿಗೊಂದಿಷ್ಟು : ತನ್ನ ತಂದೆಯಿಂದ ದೂರ ಹೋಗಿದ್ದ ರಾಜನ ಮಗನೊಬ್ಬ ಮತ್ತೆ ತನ್ನ ತಂದೆಯ ಬಳಿಗೆ ಬರಲು ಮನಸು ಮಾಡುತ್ತಾನೆ. ಆದರೆ ತಂದೆಯನ್ನು ಮತ್ತೆ ಎದುರಿಸುವ ಧೈರ್ಯ ಸಾಲದೆ ಹಿಂಜರಿಯುತ್ತಾನೆ. ಇದನ್ನು ತಿಳಿದ ರಾಜ ಮಗನಿಗೆ ಹೇಳಿ ಕಳುಹಿಸುತ್ತಾನೆ, " ನಿನಗೆಷ್ಟು ಸಾಧ್ಯವೋ ಅಷ್ಟು ದೂರ ಮರಳಿ ಬಾ, ಮಿಕ್ಕ ದಾರಿ ನಾನೇ ಬಂದು ಕರೆದುಕೊಂಡು ಬರುತ್ತೇನೆ. ಇದು ದೇವರ ಪ್ರೀತಿಯ ಅಗಾಧತೆಯ ಅನಂತತೆಯ ಉದಾಹರಣೆ. ದೇವರಿಂದ ನಾವೆಷ್ಟೇ ದೂರ ಹೋದರೂ , ಅವರು ನಮ್ಮ ಮರಳುವಿಕೆಯ ಸಣ್ಣ ಹೆಜ್ಜೆಯನ್ನು ನಿರೀಕ್ಷಿಸುತ್ತಾರೆ, ಅವರೇ ಬಂದು ನಮ್ಮನ್ನು ತಬ್ಬಿ ಸ್ವಾಗತಿಸುತ್ತಾರೆ. ಮರಳುವ ಮನಸ್ಸು ನಮ್ಮದಾಗಬೇಕು
ಪ್ರಶ್ನೆ : ದೇವರತ್ತ ಮತ್ತೆ ಮರಳಲು ನಮ್ಮ ಅಡೆ ತಡೆಗಳೇನು?
ಪ್ರಭುವೆ,
ನಿನ್ನತ್ತ ಮತ್ತೆ ಮರಳಿ
ಬಾರಲಾಗದಷ್ಟು
ದೂರಕ್ಕೆ ಈ ನನ್ನ
ಮನಸ್ಸು ಸಾಗದಿರಲಿ
ನಾನೆಷ್ಟೇ ದೂರ ಹೋದರೂ
ಮರಳಿ ಬರುವ ದಾರಿ
ಮರೆಯಾಗದಿರಲಿ
06.03.2026 - ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು
ಆದಿಕಾಂಡ 37 :3-4,12-13,17-28.
ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಾಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ. ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆ ಹೋದರು. ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು. ಯಕೋಬನು ಜೋಸೆಫನಿಗೆ, "ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ, " ಎಂದನು. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ. ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು. "ಅಗೋ ಆ ಕನುಸುಗಾರ ಬರುತ್ತಾ ಇದ್ದಾನೆ ! ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ. ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ," ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, "ನಾವು ಅವನ ಪ್ರಾಣತೆಗೆಯಬೇಕಾಗಿಲ್ಲ, ರಕ್ತಪಾತ ಕೂಡದು. ಕಾಡಿನಲ್ಲಿರುವ ಈ ಬಾವಿ ಯೊಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ," ಎಂದು ಅವರಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ಪಿಸಬೇಕೆಂಬ ಗುರಿ ರೂಬೇನನದಾಗಿತ್ತು. ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು. ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.
ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು. ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, "ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು? ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?" ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು. ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿ ನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.
ಪ್ರಭುವಿನ ವಾಕ್ಯ
ಕೀರ್ತನೆ
ಶ್ಲೋಕ: ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು|
1. ಬರಮಾಡಿದನಾ ನಾಡಿನಲಿ ಕ್ಷಾಮವನು|
ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು||
ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು|
ದಾಸತ್ವಕ್ಕೆ ಮಾರಲಾದ ಆ ಜೋಸೆಫನನು||
ಶ್ಲೋಕ
2. ಅವನ ಕಾಲು ನೊಂದವು ಸಂಕೋಲೆಗಳಿಂದ|
ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ||
ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು|
ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು||
ಶ್ಲೋಕ
3. ಬಿಡಿಸಲವನನು ಅರಸ ಕಳಿಸಿದ ಆಳನು|
ಬಿಡುಗಡೆಮಾಡಿದ ಜನಾಧಿಪತಿ ಅವನನು||
ನೇಮಿಸಿದವನನು ತನ್ನ ಮನೆಗೆ ಯಜಮಾನನನ್ನಾಗಿ|
ಮಾಡಿದನವನನು ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ||
ಶ್ಲೋಕ
ಮತ್ತಾಯನು 21:33-43,45-46
ಆ ಕಾಲದಲ್ಲಿ ಯೇಸು ಮುಖ್ಯ ಯಾಜಕರಿಗೂ ಪ್ರಜಾಪ್ರಮುಖರಿಗೂ ಈ ಸಾಮತಿಯನ್ನು ಹೇಳಿದರು:
ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ. ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲುತೂರಿದರು. ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು. ಕಟ್ಟಕಡೆಗೆ ಯಜಮಾನ, 'ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೆಕೊಡುವರು' ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ. ಆದರೆ ಗೇಣಿದಾರರು ಮಗನನ್ನು ಕಂಡೊಡನೇ, 'ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,' ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು. ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ, ಕೊಂದು ಹಾಕಿದರು. "ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನು ಮಾಡುವನು?" ಎಂದು ಯೇಸು ಕೇಳಿದರು. "ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು," ಎಂದು ಅಲ್ಲಿದ್ದವರು ಉತ್ತರಕೊಟ್ಟರು. ಬಳಿಕ ಯೇಸು ಇಂತೆಂದರು: "ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!' ಎಂಬ ವಾಕ್ಯವನ್ನು ನೀವು ಪವಿತ್ರ ಗ್ರಂಥದಲ್ಲಿ ಓದಿಲ್ಲವೆ? ಆದುದರಿಂದ ನಾನು ನಿಮಗೆ ಹೇಳುತ್ತೇನೆ, 'ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು." ಮುಖ್ಯ ಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, 'ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,' ಎಂದು ಅರ್ಥ ಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.
11.03.2026 - ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು
ಮೊದಲನೇ ವಾಚನ: 1 ಅರಸುಗಳು 18:20-39 ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...
-
ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪ 7:51-8:1 ಸ್ತೇಫನನು ಮುಂದುವರೆದು, "ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು; ದೇವರ ಸಂದೇಶಕ್ಕೆ ಎಷ್ಟು ಕಿವ...








