29.05.2026 - ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ

 ಮೊದಲನೇ ವಾಚನ:1ಪೇತ್ರ 4:7-13 



ಎಲ್ಲದರ ಅಂತ್ಯಕಾಲವೂ ಹತ್ತಿರವಾಯಿತು. ಈ ಕಾರಣ ನೀವು ಜಿತೇ೦ದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ. ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆ೦ದರೆ, ಪ್ರೀತಿ ಅಸ೦ಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ. ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿ. ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನ೦ತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳಾನ್ನು ಇತರರ ಒಳಿತಿಗಾಗಿ ಬಳಸಲಿ. ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಸೇವೆಮಾಡಲಿ. ಇದರಿ೦ದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯು೦ಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಪ್ರಿಯರೇ, ಪರಿಶೋಧನೆಗೆ೦ದು ನಿಮಗೆ ಬ೦ದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸ೦ಭವಿಸಿಬಿಟ್ಟಿತೆ೦ದು ವಿಸ್ಮಯಪಡಬೇಡಿ. ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.

ಕೀರ್ತನೆ: 96:10,11-12,13 

ಶ್ಲೋಕ: ಪ್ರಭು ಧರೆಗೆ ನ್ಯಾಯ ತೀರಿಸಲು ಬಂದೇ ಬರುವನು ಖರೆಯಾಗಿ. 

1.  ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ಕದಲದ ಸ್ಥಿರತೆಯನು ಇತ್ತಿಹನು ಧರೆಗೆ|
ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ||
ಶ್ಲೋಕ

2.  ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭುವಿಯು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಗಿರುವುದೆಲ್ಲವೂ||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು||
ಶ್ಲೋಕ

3.  ಪ್ರಭು ದರೆಗೆ ನ್ಯಾಯ ತೀರಿಸಲು ಬಂದೇ ಬರುವನು ಖರೆಯಾಗಿ|
ಜಗಕು, ಜನತೆಗು ತೀರ್ಪಿಡುವನು|
ನೀತಿನಿಯಮಾನುಸಾರವಾಗಿ||
ಶ್ಲೋಕ

 ಶುಭಸಂದೇಶ: ಮಾರ್ಕ 11:11 -26 


ಯೇಸು ಜೆರುಸಲೇಮನ್ನು ಸೇರಿ ಮಹಾ ದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನು ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು. ದೂರದಲ್ಲಿ ಎಲೆ ತಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೀನಾದರು ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. ಯೇಸು ಆ ಮರಕ್ಕೆ, "ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ," ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು. ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದವರ ಮಣೆಗಳನ್ನು ಉರುಳಿಸಿದರು.ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹದು ಹೋಗುವವರನ್ನು ತಡೆದರು. " 'ಸರ್ವಜನಾಂಗಗಳಿಗೂ ಪ್ರಾತನಾಲಯ ನನ್ನೀ ಆಲಯ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗಹೆಯನ್ನಾಗಿ ಮಾಡಿದ್ದೀರಿ," ಎಂದು ಯೇಸು ಅವರಿಗೆ ಬುದ್ದಿ ಹೇಳಿದರು. ಮುಖ್ಯ ಯೂಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಎಕಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ, ಜನರೆಲ್ಲರೂ ಅವರ ಭೋಧನೆಗೆ ಮಾರುಹೋಗಿದ್ದರು. ಸೂರ್ಯಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆ ಹೋದರು. ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, "ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿ ಹೋಗಿದೆ," ಎಂದನು. ಅದಕ್ಕೆ ಯೇಸು, "ನಿಮಗೆ ದೇವರಲ್ಲಿ ವಿಶ್ವಾಸವಿರಲಿ, ಅಗ ಯಾವನಾದರೂ ಈ ಬೆಟ್ಟಕ್ಕೆ, 'ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!' ಎಂದು ಹೇಳಿ, ಮನಸ್ಸನಲ್ಲಿ ಸಂದೇಹಪಡದೆ, ಅದು ಸಂಭವಿಸುದುದೆಃದು ವಿಶ್ವಾಸಿಸಿದರೆ, ನಾನು ನಿಮಗೆ ನಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು. ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ. ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ, ಯಾರಿಗಾದರೂ ವಿರೋದವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ, ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪಗಳನ್ನು ಕ್ಷಮಿಸಿ ಬಿಡುವರು".

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

 ಮೊದಲನೆಯ ವಾಚನ: 1 ಪೇತ್ರ 2:2-5,9-12



ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್ಧಾರವನ್ನು ಹೊಂದುವಿರಿ. ಪ್ರಭು ಎಂಥಾ ದಯಾಳು ಎಂಬುದನ್ನು ನೀವು ಅನುಭವದಿಂದ ಅರಿತುಕೊಂಡಿದ್ದೀರಿ. ಪ್ರಭುವಿನ ಬಳಿಗೆ ಬನ್ನಿ ಸಜೀವ ಶಿಲೆಯಾದ ಅವರನ್ನು ಮಾನವರು ನಿಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು. ನೀವೂ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸು ಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕ ವರ್ಗದವರು ನೀವಾಗಿರುವಿರಿ. ನೀವು ದೇವರು ಆಯ್ದುಕೊಂಡ ಜನಾಂಗ; ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿ ಆಯ್ಕೆಯಾದವರು. ಗಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು. ಒಮ್ಮೆ ನೀವು ಗಣನೆಗೆ ಬಾರದ ಜನರಾಗಿದ್ದೀರಿ. ಈಗಲಾದರೋ ದೇವ ಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ. ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅನ್ಯ ಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಠರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತ ಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.

ಕೀರ್ತನೆ: 100:2,3,4,5,
ಶ್ಲೋಕ: ಹಾಡುತ ಪಾಡುತ ಬನ್ನಿ ಪ್ರಭುವಿನ ಸನ್ನಿಧಿಗೆ|

ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ|
ಹಾಡುತ ಪಾಡುತ ಬನ್ನಿ ಆತನ ಸನ್ನಿಧಿಗೆ||
ಪ್ರಭುವೆ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು ||

ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು|
ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ||
ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ||

ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ|
ಹೌದು, ಪ್ರಭುವೆನಿತೋ ಒಳ್ಳೆಯವನು||
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಘೋಷಣೆ ಕೀರ್ತನೆ 111:7,8
ಅಲ್ಲೆಲೂಯ, ಅಲ್ಲೆಲೂಯ!

ಸುಸ್ಥಿರವಾದುವು ಆತನ ನಿಯಮ ನಿಬಂಧನೆಗಳು | ಯುಗಯುಗಾಂತರಕೂ ದೃಢವಾಗಿರುವುವು ||

ಅಲ್ಲೆಲೂಯ!

ಶುಭಸಂದೇಶ: ಮಾರ್ಕ 10:46-52



ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡ ಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್ ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, " ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, "ಎಂದು ಗಟ್ಟಿಯಾಗಿ ಕೂಗಿಕೊಂಡನು. ಆನೇಕರು " ಸುಮ್ಮನಿರು " ಎಂದು ಅವನನ್ನು ಗದರಿಸಿದರು. ಅವನಾದರೋ, "ದಾವೀದ ಕುಲಪುತ್ರರೇ, ನನಗೆ ದಯೆತೋರಿ, "ಎಂದು ಇನ್ನಷ್ಟು. ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು, "ಅವನನ್ನು ಕರೆದುಕೊಂಡು ಬನ್ನಿ " ಎಂದು ಅಪ್ಪಣೆ ಮಾಡಿದರು. ಅವರು ಹೋಗಿ, " ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ, " ಎಂದು ಹೇಳಿದರು. ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೆ ಬಿಟ್ಟು, ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು, "ನನ್ನಿಂದ ನಿನಗೆ ಏನಾಗಬೇಕು " ಎಂದು ಕೇಳಿದರು. ಅದಕ್ಕೆ ಅವನು, "ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ, " ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, " ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ, ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿ ಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

27.05.2026 - ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ; ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ

 


ಮೊದಲನೆಯ ವಾಚನ: 1 ಪೇತ್ರ 1:18-25


ಸಹೋದರರೇ, ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ. ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ. ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು. ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ. ಸತ್ಯಕ್ಕೆ ಶರಣಾಗಿ ಆತ್ಮಶುದ್ದಿ ಹೊಂದಿರುವ ನಿಮ್ಮ ಸಹೋದರನನ್ನು ನಿಷ್ಠಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ. ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ. ಪವಿತ್ರಗ್ರಂಥದಲ್ಲಿ ಬರೆದಿರುವಂತೆ: ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು. ಈ ವಾಕ್ಯವೇ ನಿಮಗೆ ಸಾರಾಲಾದ ಶುಭಸಂದೇಶ.

ಕೀರ್ತನೆ: 147:12-15,19-20
ಶ್ಲೋಕ: ಜೆರುಸಲೇಮೇ, ಕೀರ್ತಿಸು ಪ್ರಭುವನು|

ಜೆರುಸಲೇಮೇ, ಕೀರ್ತಿಸು ಪ್ರಭುವನು|
ಸಿಯೋನೇ, ಸ್ತುತಿಸು ನಿನ್ನ ದೇವರನು||
ಬಲಪಡಿಸಿದನಾತ ನಿನ್ನ ಹೆಬ್ಬಾಗಿಲುಗಳನು|
ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು||

ನಿನ್ನ ಪ್ರಾಂತದೊಳಗೆಲ್ಲ ಇರುವುದು ನೆಮ್ಮದಿ|
ನೀಡುವನು ನಿನಗೆ ಅತ್ಯುತ್ತಮವಾದ ಗೋದಿ||
ಕಳಿಸುವನು ಧರೆಗೆ ತನ್ನ ಆಣತಿ|
ಸಿದ್ಧಿಯಾಗುವುದದು ಬಲು ಶೀಘ್ರದಿ||

ತಿಳಿಸಿಹನು ತನ್ನ ವಾಕ್ಯವನು ಯಕೋಬರಿಗೆ|
ತನ್ನ ವಿಧಿನಿಯಮಗಳನು ಇಸ್ರಾಯೇಲರಿಗೆ||
ಬೇರಾವ ಜನಾಂಗಕೂ ಆತ ‌ಹೀಗೆ ಮಾಡಿಲ್ಲ|
ಆತನ ವಿಧಿನಿಯಮಗಳನು ಅವರಿಗೆ ತಿಳಿಸಲಿಲ್ಲ||

ಘೋಷಣೆ ಕೀರ್ತನೆ 95:8
ಅಲ್ಲೆಲೂಯ, ಅಲ್ಲೆಲೂಯ!

ಆತನ ಕರೆಗೆ ಕಿವಿಗೊಟ್ಟರೆನಿತೋ ಒಳಿತು ನೀವಿಂದೇ | ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ ||

ಅಲ್ಲೆಲೂಯ!

ಶುಭಸಂದೇಶ: ಮಾರ್ಕ 10:32-45


ಆ ಕಾಲದಲ್ಲಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಇದ್ದಾಗ ಯೇಸು ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು: " ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು; ಆತನ ಮೇಲೆ ಉಗುಳುವರು; ಕೊರಡೆಯಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು, " ಎಂದರು. ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, " ಗುರುವೇ, ನಮ್ಮದೊಂದು ಬಿನ್ನಹವಿದೆ, ಅದನ್ನು ನಡೆಸಿಕೊಡಬೇಕು, "ಎಂದು ವಿಜ್ಞಾಪಿಸಿಕೊಂಡರು. "ನನ್ನಿಂದ ನಿಮಗೇನಾಗಬೇಕು? "ಎಂದು ಯೇಸು ಕೇಳಿದರು. "ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು, ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು. ಅದಕ್ಕೆ ಯೇಸು, " ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ಥಾನವನ್ನು ಪಡೆಯಲು ನಿಮ್ಮಿಂದ ಆದೀತೆ? " ಎಂದು ಪ್ರಶ್ನಿಸಿದರು. "ಹೌದು ಆಗುತ್ತದೆ, "ಎಂದು ಅವರು ಮರುನುಡಿದರು. ಆಗ ಯೇಸು, " ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು, "ಎಂದು ನುಡಿದರು. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ, ಯೊವಾನ್ನರ ಮೇಲೆ ಸಿಟ್ಟುಗೊಂಡರು. ಆಗ ಯೇಸು ಶಿಷ್ಯರೆಲ್ಲರನ್ನು ತಮ್ಮ ಬಳಿಗೆ ಕರೆದು, "ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು. ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ; ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ನರಪುತ್ರನು ಸಹ ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ, " ಎಂದು ಬೋಧಿಸಿದರು.

26.05.2026 - ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು

 ಮೊದಲನೆಯ ವಾಚನ:  1 ಪೇತ್ರ 1:10-16


ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು. ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು. ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷರಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ. ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ. ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ. ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.


ಕೀರ್ತನೆ: 98:1, 2, 3, 4, 5-6. 
ಶ್ಲೋಕ:  ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು. 

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||

ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ದಾರಕ ಶಕ್ತಿಯನು||
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು|
ಇಸ್ರಾಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||

ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ|
ನಮ್ಮ ದೇವಾ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ|
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ||

ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ|
ಭಜಿಸಿರಿ ಆತನನು ವಾದ್ಯಮೇಳಗಳೊಂದಿಗೆ||
ಊದಿರಿ ಕೊಂಬನು, ತುತೂರಿಯನು|
ಉದ್ಘೋಷಿಸಿರಿ ಪ್ರಭು ರಾಜನನು||

ಘೋಷಣೆ ಕೀರ್ತನೆ 27:11

ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 10: 28-31


ಆಗ ಪೇತ್ರನು ಮುಂದೆ ಬಂದು, “ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು. ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು, ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರ ಜೀವವನ್ನು ಪಡೆಯುವನು. “ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು.

25.05.2026 - ಅಮ್ಮಾ, ಇಗೋ, ನಿನ್ನ ಮಗ

 ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 1: 12-14



ಯೇಸು ಸ್ವರ್ಗಾರೋಹಣವಾದ ನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊವಿೂಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು. ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು. ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.

ಲೂಕ  1: 47-55  ( ಕೀರ್ತನೆ  87: 1-3, 5-7)

ಶ್ಲೋಕ:  ಏಕೆನೆ  ಮಾಡಿಹನೆನಗೆ  ಸರ್ವಶಕ್ತನು  ಮಹತ್ಕಾರ್ಯ |  ನಿಜಕ್ಕೂ  ಆತನ  ನಾಮಧೇಯ  ಪರಮ  ಪೂಜ್ಯ ||

1.  ಎನ್ನ  ಮನ  ಮಾಡುತ್ತಿದೆ  ಸರ್ವೇಶ್ವರನ  ಸ್ತುತಿ|
ಉಲ್ಲಾಸಿಸುತ್ತಿದೆ  ಮುಕ್ತಿದಾತ  ದೇವನಲಿ||
ಶ್ಲೋಕ

2.  ತನ್ನ  ದಾಸಿಯ  ದೀನತೆಯನ್ನು  ನೆನಪಿಗೆ  ತಂದುಕೊಂಡನಾತ|
ಧನ್ಯಳೆಂದು  ಹೊಗಳುವರೆನ್ನನು  ಇಂದಿನಿಂದ  ಸರ್ವ  ಜನಾಂಗ|
ಏಕೆನೆ  ಮಾಡಿಹನೆನಗೆ  ಮಹತ್ಕಾರ್ಯ|
ನಿಜಕ್ಕೂ  ಆತನ  ನಾಮಧೇಯ  ಪರಮ  ಪೂಜ್ಯ||
ಶ್ಲೋಕ

3.  ಆತನಲ್ಲಿ  ಭಯಭಕ್ತಿಯುಳ್ಳವರಿಗೆ|  ಆತನ  ಪ್ರೀತಿ  ತಲತಲಾಂತರದವರೆಗೆ|| ಗರ್ವ  ಹೃದಯಿಗಳನಾತ  ಚದುರಿಸಿರುವನು|
ಪ್ರದರ್ಶಿಸಿರುವನು  ತನ್ನ  ಬಾಹುಬಲವನು||
ಶ್ಲೋಕ

4.  ಇಳಿಸಿಹನು  ಗದ್ದುಗೆಯಿಂದ  ಘನಾಧಿಪತಿಗಳನು|
ಏರಿಸಿರುವನು  ಉನ್ನತಿಗೆ  ದೀನರನು||
ತೃಪ್ತಿಪಡಿಸಿರುವನಾತ  ಹಸಿದವರನು  ಮೃಷ್ಟಾನ್ನದಿ|
ಹೊರದೂಡಿರುವನು  ಸಿರಿವಂತರನು  ಬರಿಗೈಯಲಿ||
ಶ್ಲೋಕ

5.  ನೆರವಾದನು  ತನ್ನ  ದಾಸ  ಇಸ್ರಯೇಲನಿಗೆ|
ಪೂರ್ವಜರಿಗಿತ್ತ  ವಾಗ್ಧನದ  ಮೇರೆಗೆ||
ಮರೆಯಲಿಲ್ಲ  ಆತ  ಕರುಣೆ  ತೋರಲು  ಅಬ್ರಹಾಮನಿಗೆ|
ಅವನ  ಸಂತತಿಗೆ,  ಯುಗಯುಗಾಂತರದವರೆಗೆ||
ಶ್ಲೋಕ

ಶುಭಸಂದೇಶ: ಯೊವಾನ್ನ 19: 25-34


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು. ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ತಮ್ಮ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಇದಾದ ಮೇಲೆ ಯೇಸುಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು. ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು. ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು. ತಾವು ಇರಿದವನನ್ನೇ ನಿರೀಕ್ಷಿಸುವರು ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು. ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು. ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದು ಬಂದವು.

24.05.2026 - “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು.

 ಪಂಚಾಶತ್ತಮ ಮಹೋತ್ಸವ


ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:1-11


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು. ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು. ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು. ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು. ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ? ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ, ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್ನಿಂದ ಬಂದಿದ್ದಾರೆ. ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಕೀರ್ತನೆ: 104:1, 24, 29-30, 31, 34

ಶ್ಲೋಕ: ನೀ ಉಸಿರನ್ನೂದಲು ಹೊಸದಾಗುವುವು, ಪುನಶ್ಚೇತನಗೊಳುವುದು ಜಗವೆಲ್ಲವು

ಎರಡನೇ ವಾಚನ: 1 ಕೊರಿಂಥಿಯರಿಗೆ 12:3-7, 12-13

ಸಹೊದರರೇ, ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು. ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ. ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ. ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ. ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ. ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.

ಶುಭಸಂದೇಶ ಯೊವಾನ್ನ 20:19-23

ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.

23.05.2026 - ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 28:16-20, 30-31



ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು. ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು. ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು. ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶೀಯರ ಮೇಲೆ ದೋಷಾರೋಪಣೆ ಮಾಡಬೇಕೆಂದು ನಾನು ಹಾಗೆ ಮಾಡಲಿಲ್ಲ. ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು. ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು. ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಕೀರ್ತನೆ: 11:4, 5, 7

ಶ್ಲೋಕ: ಪ್ರಭೂ, ಸತ್ಪುರುಷನು ಸೇರುವನು ನಿಮ್ಮ ಸನ್ನಿಧಿಯನು

1.  ಪ್ರಭು  ಪ್ರಸನ್ನವಿರುವನು  ಪವಿತ್ರಾಲಯದಲಿ|
ಸ್ಥಾಪಿಸಿಹನು  ಸಿಂಹಾಸನವನು  ಪರದಲಿ||
ನರಮಾನವರನು  ನೋಡುತಿಹನು  ನೇತ್ರಗಳಲಿ|
ಪರೀಕ್ಷಿಸುತಿಹನು  ಅವರನು  ಸೂಕ್ಷ್ಯ  ರೀತಿಯಲಿ||
ಶ್ಲೋಕ

2.  ಪರೀಕ್ಷಿಸುವನು  ಪ್ರಭು  ಸಜ್ಜನ  ದುರ್ಜನರನು|
ದ್ವೇಷಿಸುವನು  ಮನಸಾರೆ  ಹಿಂಸಾತ್ಮಕರನು||
ಶ್ಲೋಕ

3.  ಸತ್ಯಸ್ವರೂಪನಾದ  ಪ್ರಭು  ಸತ್ಯ  ಪ್ರಿಯನು|
ಸತ್ಪುರುಷನು  ಸೇರುವನು  ಆತನ  ಸನ್ನಿಧಿಯನು||
ಶ್ಲೋಕ

ಘೋಷಣೆ                ಯೊವಾನ್ನ 16: 7, 13

ಅಲ್ಲೆಲೂಯ, ಅಲ್ಲೆಲೂಯ!
ನಾನು ಪವಿತ್ರಾತ್ಮರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುವೆನು|ಸತ್ಯಸ್ವರೂಪಿಯಾದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು ||
ಅಲ್ಲೆಲೂಯ!


ಶುಭಸಂದೇಶ: ಯೊವಾನ್ನ 21:20-25


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.) ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು. ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ. ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು. ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

29.05.2026 - ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ

  ಮೊದಲನೇ ವಾಚನ:1ಪೇತ್ರ 4:7-13  ಎಲ್ಲದರ ಅಂತ್ಯಕಾಲವೂ ಹತ್ತಿರವಾಯಿತು. ಈ ಕಾರಣ ನೀವು ಜಿತೇ೦ದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ. ಎಲ್ಲಕ್ಕೂ ಮಿಗಿಲಾಗ...