03.07.2026 - ನನ್ನ ಪ್ರಭುವೇ, ನನ್ನ ದೇವರೇ,

 ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು  : 10:24-35 


ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು. ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿನು ಅವನನ್ನು ಎದುರಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರ ಮಾಡಿದನು. ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ,   ಎದ್ದು ನಿಲ್ಲು,  ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.

ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು. ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.

ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು. ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ. ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು. ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ವಿಷಯ ನನಗೆ ಮನದಟ್ಟಾಗಿದೆ. ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

-ಪ್ರಭುವಿನ ವಾಕ್ಯ


ಕೀರ್ತನೆ

42: 2-5. v. 5


ಶ್ಲೋಕ:  ಜೀವಂತ  ದೇವರಿಗಾಗಿ  ದಾಹದಿಂದಿದೆ  ಎನ್ನ  ಮನ.

1.  ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ|

ದಣಿದೆನ್ನ ಮನ ದೇವಾ ಹಂಬಲಿಸುತಿದೆ ನಿನಗಾಗಿ||

ಶ್ಲೋಕ

2.  ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ|

ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ||

ಶ್ಲೋಕ

3.  ಜನಸಮೂಹದೊಡನೆ ನಾ ಜಯಜಯಕಾರ  ಮಾಡುತ|

ಸ್ತುತಿಗೀತೆಗಳ ಹಾಡುತ ತೀರ್ಥಯಾತ್ರೆ. ಗೈಯುತ|

ದೇಗುಲಕೆ ತೆರಳಿದಾ ಸವಿನೆನಪು ಮನಗರಗಿಸುವುದು ನಿರುತ||

ಶ್ಲೋಕ

4.  ಎನ್ನ ಮನವೇ, ಚಿಂತಿಸುವೆಯೇಕೆ?|

ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ||

ಮತ್ತೆ ಸ್ತುತಿಸುವೆ ನಾನಾತನನು|

ಮುಕ್ತಿದಾತ ಪರಮಾತ್ಮ ಆತನೆನಗೆ||

ಶ್ಲೋಕ

ಎರಡನೇ ವಾಚನ  : ಹಿಬ್ರಿಯರಿಗೆ 1:2-3 


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ. ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.

-ಪ್ರಭುವಿನ ವಾಕ್ಯ

ಶುಭಸಂದೇಶ: ಯೊವಾನ್ನ20:24-29

ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.

ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.

02.07.2026 - ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು

 ಮೊದಲನೇ ವಾಚನ: ಆದಿಕಾಂಡ 22:1-19

 
ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, "ಅಬ್ರಹಾಮನೇ, "  ಎಂದು ಕರೆದರು. ಅವನು "ಇಗೋ, ಸಿದ್ದನಿದ್ದೇನೆ" ಎಂದನು. ಆಗ ದೇವರು, "ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂಆದ ಇಸಾಕನನ್ನು ಕರೆದುಕೊಂಡು ಮೊರೀಯ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು" ಎಂದರು. ಅಬ್ರಾಮನು ಮುಂಜಾನೆಯೇ ಎದ್ದು ತನ್ನ ಹೆಸರುಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ದಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು. ಅವನು ತನ್ನ ಸೇವಕರಿಗೆ, "ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಿಗೆ ಬರುತ್ತೇವೆ," ಎಂದು ಹೇಳಿದನು. ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು. ಹೊಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, "ಅಪ್ಪಾ" ಎಂದು ಕರೆದ; "ಏನು ಮಗನೇ?" ಎಂದ ಅಬ್ರಹಾಮ. ಇಸಾಕನು, "ಬೆಂಕಿ--ಕಟ್ಟಿಗೆಯೇನೋ ಇವೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?" ಎಂದು ಕೇಳಿದ. ಅದಕ್ಕೆ ಅಬ್ರಹಾಮನು, "ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ," ಎಂದು ಉತ್ತರಕೊಟ್ಟ, ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು. ದೇವರು ಹೇಳಿದ ಸ್ಥಳಕ್ಕೆ  ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, "ಇಗೋ ಸಿದ್ಧನಿದ್ಧೇನೆ" ಎಃದ. ದೂತನು ಅವನಿಗೆ, "ಹುಡುಗನ ಮೇಲೆ ಕೈಯೊತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು," ಎಂದು ಹೇಳಿದನು. ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ. ಆ ಸ್ಥಳಕ್ಕೆ "ಯೆಹೋವ ಯೊರೆ ಎಂದು ಹೆಸರಿಟ್ಟ. "ಬೆಟ್ಟದ ಮೇಲೆ ಸರ್ವೇಶ್ವರಸ್ವಾಮಿಯೇ ಒದಗಿಸುತ್ತಾರೆ" ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, "ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮೂದ್ರತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರುಶತ್ರುಗಳ ಪಟ್ಟಣಗಳನ್ನು ಸ್ವಾಧೀನ ಪಡಿಸಿಕೊಳ್ಳುವರು. ನೀನು ನನ್ನ ಮಾತುಗಳನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು. ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ," ಎಂದನು. ತರುವಾಯ ಅಬ್ರಹಾಮನುತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.

 ಕೀರ್ತನೆ: 115:1-2, 3-4, 5-6, 8-9

 ಶ್ಲೋಕ: ನಡೆವೆನು ನಾನು ಪ್ರಭುವಿನ ಕಣ್ಮುಂದೆ

 ಶುಭಸಂದೇಶ: ಮತ್ತಾಯ 9:1-8

ಯೇಸುಸ್ವಾಮಿ ದೋಣಿಯನ್ನು ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು. ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, "ಮಗೂ, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು. ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? "ನಿನ್ನ ಪಾಪಗಳು ಕ್ಷಮಿಸಲಾಗಿದೆ" ಎನ್ನುವುದು ಸುಲಭವೂ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು. ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು. ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.

01.07.2026 - "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ?

 ಮೊದಲನೇ ವಾಚನ: ಆದಿಕಾಂಡ 21:5, 8-20

ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು. ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆ ಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು. ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು. ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕು ಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು. ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು. ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು. ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು, ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು. ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು; ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು. ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು. ಹುಡುಗನ ಸಂಗಡ ದೇವರಿದ್ದರು.

ಕೀರ್ತನೆ: 34:6-7, 9-10, 11-12
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು. 

ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I
ಕಾಯುವನು ಪ್ರಭುವಿನ ದೂತನೆ ಬಂದಿಳಿದು II
ಸವಿದು ನೋಡು ಪ್ರಭುವಿನ ಮಾಧುರ್ಯವನು I
ಆತನನು ಆಶ್ರಯಿಸಿಕೊಂಡವನು ಧನ್ಯನು II

ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II
ಯುವ ಕೇಸರಿಗೆ ಇರಬಹುದು ಹಸಿವು, ದಾಹ I
ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II

ಬನ್ನಿ ಮಿತ್ರರೇ, ಆಲಿಸಿರೀ ಮಾತನು I
ಕಲಿಸುವೆನು ನಾ ನಿಮಗೆ ದೇವ ಭಯವನು II
ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I
ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II

ಕಾದಿಡು ನಾಲಿಗೆಯನು ಕೇಡನು ಆಡದಂತೆ I
ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II

ಶುಭಸಂದೇಶ: ಮತ್ತಾಯ 8:28-34


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅವರು ಯೇಸುವನ್ನು ನೋಡಿದೊಡನೆಯೇ "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತ ಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?" ಎಂದು ಕೂಗಿಕೊಂಡರು. ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪ ದೂರದಲ್ಲೇ ಮೇಯುತ್ತಿತ್ತು. "ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ," ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು, "ಹೋಗಿ" ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿ ಹೋಯಿತು. ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನ ಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು. ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟು ಹೋಗಬೇಕೆಂದು ಮನವಿ ಮಾಡಿಕೊಂಡಿತು.

30.06.2026 - ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ

 ಮೊದಲನೇ ವಾಚನ: ಪ್ರವಾದಿ ಆಮೋಸನ ಗ್ರಂಥ 3:1-8; 4:11-12


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ: “ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.” ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ? ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ? ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ? ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ? ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ. ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?.” “ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ. ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ," ಎನ್ನುತ್ತಾರೆ ಸರ್ವೇಶ್ವರ.

ಕೀರ್ತನೆ: 5:4-6, 6-7, 8
ಶ್ಲೋಕ: ಪ್ರಭೂ, ಸತ್ಯಪಥದಲಿ ನಡೆಸೆನ್ನನು

ಶುಭಸಂದೇಶ: ಮತ್ತಾಯ 8:23-27


ಆಮೇಲೆ ಯೇಸುಸ್ವಾಮಿ ದೋಣಿಯನ್ನು ಹತ್ತಿದರು. ಶಿಷ್ಯರೂ ಹತ್ತಿ ಅವರ ಸಂಗಡಹೋದರು. ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು. ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರು ಪಾಲಾಗುತ್ತಿದ್ದೇವೆ,” ಎಂದರು. ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.

29.06.2026 - ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು,

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11


ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು. ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು). ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು. ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು. ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು. ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು. ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು. ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು. ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.

ಕೀರ್ತನೆ: 34:2-3, 4-5, 6-7, 8-9

ಶ್ಲೋಕ: ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು

1.  ಪ್ರಭುವನು ನಾ ಕೊಂಡಾಡುವ ಎಲ್ಲ ಕಾಲದೊಳು|
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು||
ಪ್ರಭುವಿನಲ್ಲಿದೆ ನನ್ನ ಮನದಭಿಮಾನ|
ದೀನರಿದನು ಕೇಳಿ, ಪಡೆಯಲಿ ಸುಮ್ಮಾನ||
ಶ್ಲೋಕ

2.  ಬನ್ನಿ, ಕೊಂಡಾಡುವ ಪ್ರಭು ದೇವನನು|
ಘನಪಡಿಸೋಣ ಅವನ ಶ್ರೀ ನಾಮವನು||
ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು|
ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು||
ಶ್ಲೋಕ

3.  ಆತನತ್ತ ತಿರುಗಿದ ಮುಖ ಅರಳುವುದು|
ಲಜ್ಜೆಯಿಂದೆಂದಿಗು ಕುಂದಿಹೋಗದು||
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು|
ಸರ್ವಾಪತ್ತಿನಿಂದವನು ಮುಕ್ತಗೊಂಡನು||
ಶ್ಲೋಕ

4.  ಭಯಭಕುತಿಯುಳ್ಳವರು ಸುತ್ತಲು  ಕಾವಲಿದ್ದು|
ಕಾಯುವನು ಪ್ರಭುವಿನ ದೂತನೇ ಬಂದಿಳಿದು||
ಸವಿದು ನೋಡು ಪ್ರಭುವಿನ ಮಾಧುರ್ಯವನು|
ಆತನನು ಆಶ್ರಯಿಸಿಕೊಂಡವನು ಧನ್ಯನು||
ಶ್ಲೋಕ

ಎರಡನೇ ವಾಚನ: 2 ತಿಮೊಥೇಯನಿಗೆ 4:6-8, 17-18

ಅತಿ ಪ್ರಿಯನೇ, ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.

ಶುಭಸಂದೇಶ: ಮತ್ತಾಯ 16:13-19


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು. ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು. ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ. ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು. ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,

28.06.2026 - ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ

 ಮೊದಲನೇ ವಾಚನ: 2 ಅರಸುಗಳು 4:8-11, 14-16

ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು. ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು. ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು. ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು. ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು. ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು. ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. 

ಕೀರ್ತನೆ: 89:2-3, 16-17, 18-19

ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು

ಎರಡನೇ ವಾಚನ: ರೋಮನರಿಗೆ 6:3-4, 8-11

ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ. ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.

ಶುಭಸಂದೇಶ:  ಮತ್ತಾಯ 10:37-42


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ. “ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”

26.06.2026 - ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು.

 ಮೊದಲನೇ ವಾಚನ: 2 ಅರಸುಗಳು 25:1-12

ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು. ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು. ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು. ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು. ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು. ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು. ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು. ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.

ಕೀರ್ತನೆ: 137:1-2, 3, 4-5, 6

ಶ್ಲೋಕ: ಜೆರುಸಲೇಮನು ನಾ ಸ್ಮರಣೆಮಾಡದಿದ್ದಲಿ, ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ

1.  ಬಾಬಿಲೋನಿನ  ನದಿಗಳ  ತೀರದಲಿ  ಕುಳಿತು |
ಅತ್ತು  ಪ್ರಲಾಪಿಸಿದೆವು  ಸಿಯೋನನ್ನು   ನೆನೆದು ||
ಆ  ನಾಡಿನಲ್ಲಿ  ಕಿನ್ನರಿಗಳನ್ನೆ  ತೂಗುಹಾಕಿದೆವು|
ನೀರವಂಜಿ  ಮರಗಳಿಗೆ ಅವನ್ನು  ನೇತುಹಾಕಿದೆವು||
ಶ್ಲೋಕ

2.  ಸೆರೆಹಿಡಿದು  ಬಂಧಿಸಿದ ಆ ಜನ  ಈ  ಪರಿ  ಪೀಡಿಸಿದರೆಮ್ಮನು:|
"ಹಾಡಿ,  ನಮ್ಮ  ವಿನೋದಕ್ಕಾಗಿ  ಸಿಯೋನಿನ  ಗೀತೆಗಳಲೊಂದನು"||
ಶ್ಲೋಕ

3.  ಪ್ರಭು  ಗೀತೆಗಳ  ನಾವು  ಗಾನ  ಮಾಡುವುದೆಂತು|
ಅನ್ಯ  ನಾಡಿನೊಳು  ಅವುಗಳನು  ಹಾಡುವುದೆಂತು||
ಜೆರುಸಲೇಮ್, ನಾನು  ನಿನ್ನ   ಮರೆತಲ್ಲಿ|
ನನ್ನ  ಬಲ  ಹಸ್ತ  ಬತ್ತಿಹೋಗಿಬಿಡಲಿ||
ಶ್ಲೋಕ

4.  ಜೆರುಸಲೇಮನು  ನಾ  ಸ್ಮರಣೆಮಾಡದಿದ್ದಲಿ |
ಫಆ  ಸ್ಮರಣೆ  ಸರ್ವೋತ್ತಮ  ನಲಿವು  ನನಗಾಗದಿದ್ದಲಿ|
ಸೇದಿಹೋಗಲಿ  ನಾಲಿಗೆ  ನನ್ನ  ಬಾಯಲಿ ||
ಶ್ಲೋಕ

🌺✝️🌺

ಘೋಷಣೆ
(ಎಫೆಸಿಯರಿಗೆ 1: 17-18)

ಅಲ್ಲೆಲೂಯ, ಅಲ್ಲೆಲೂಯ!
ನಮ್ಮ  ಪ್ರಭು  ಯೇಸು  ಕ್ರಿಸ್ತರ  ದೇವರೂ,  ಮಹಿಮಾನ್ವಿತ ತಂದೆಯೂ ಆದವರು ನಿಮಗೆ  ಜ್ಞಾನವನ್ನು ವಿವೇಚನೆಯನ್ನು ನೀಡುವ ಆತ್ಮವನ್ನು ದಯಪಾಲಿಸಲಿ ಮತ್ತು ನಿಮ್ಮ ಮನೋನೇತ್ರಗಳನ್ನು ತೆರೆಯಲಿ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 8:1-4


ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು. ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು. ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

03.07.2026 - ನನ್ನ ಪ್ರಭುವೇ, ನನ್ನ ದೇವರೇ,

  ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು  : 10:24-35   ಮರುದಿವಸ ಅವನು ಸೆಜರೇಯವನ್ನು ತಲುಪಿದನು . ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊ...