24.03.2026 - ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ

 ಮೊದಲನೇ ವಾಚನ: ಸಂಖ್ಯಾಕಾಂಡ 21:4-9



ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸ ದಿಂದ ಅವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡ ತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜೆಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು. ಅಂತೆಯೆ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 102:2-3, 16-18, 19-21
ಶ್ಲೋಕ: ಕಿವಿಗೊಡು ಪ್ರಭೂ, ನನ್ನ ಪ್ರಾರ್ಥನೆಗೆ ನನ್ನ ಕೂಗು ಸೇರಲಿ ನಿನ್ನ ಬಳಿಗೆ

ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I
ನನ್ನ ಕೂಗು ಸೇರಲಿ ನಿನ್ನ ಬಳಿಗೆ II
ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I
ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II

ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I
ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II
ಏಕೆನೆ ಪುನರುದ್ಧರಿಸುವನು ಸಿಯೋನನು I
ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II

ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I
ನೆರವೇರಿಸದೆ ಬಿಡನು ಅವರ ಕೋರಿಕೆಯನು II
ಮುಂದಣ ಸಂತತಿಗಿದು ಶಾಸನವಾಗಿರಲಿ I
ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II

ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I
ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II
ಆಲಿಸಿದಾತನು ಬಂಧಿತರ ಗೋಳಾಟವನು I
ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II

ಶುಭಸಂದೇಶ: ಯೊವಾನ್ನ 8:21-30

ಯೇಸುಸ್ವಾಮಿ ಯೆಹೂದ್ಯರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು. ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು. “ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ, ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆ ಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು. ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು. ಯೇಸುಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ. ಎಂದೇ ಯೇಸು ಮತ್ತೆ ಇಂತೆಂದರು: “ನರ ಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು. ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ.” ಯೇಸುಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.

ಮನಸ್ಸಿಗೊಂದಿಷ್ಟು : ಯೇಸು ಸ್ವಾಮಿ ಬಹಳ ಬೇಸರವಾಗಿ ಮಾತನಾಡುವುದನ್ನು ಕಾಣಬಹುದು. ಅಂತರಂಗದ ನಮ್ಮೆಲ್ಲ ಹುಳುಕುಗಳು ನಮಗೆ ತಿಳಿದಿದೆ , ಅದು ಯೇಸುವಿಗೂ ತಿಳಿದಿದೆ. ಅವೆಲ್ಲವನ್ನೂ ತಿಳಿಗೊಳಿಸಲು ನಮ್ಮ ಆಧ್ಯಾತ್ಮಿಕ ವೈದ್ಯನಾಗಿ, ರಕ್ಷಕನಾಗಿ ಬರುವ ಯೇಸುವನ್ನು ನಾವು ತಿರಸ್ಕರಿಸುತ್ತಾ ನಡೆದರೆ, ನಮ್ಮ ಬಗ್ಗೆಯೂ ಯೇಸು ಸ್ವಾಮಿ ಬೇಸರಗೊಳ್ಳಬಹುದು ಎಂಬ ಮುನ್ನೆಚ್ಚರಿಕೆ ನಮ್ಮದಾಗಲಿ.

ಪ್ರಶ್ನೆ : ಹಂಬಲಗಳ ನಮ್ಮ ಬಾಳಲ್ಲಿ ಯೇಸುವಿನ ಹಂಬಲಿಕೆ ಎಷ್ಟು?

23.03.2026 - “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ”

 ಮೊದಲನೇ ವಾಚನ: ಸುಸನ್ನಳ ಗ್ರಂಥ 


ಅವರು ಜನರ ಹಿರಿಯರು ಮಾತ್ರವಲ್ಲ ನ್ಯಾಯಾಧೀಶರೂ ಆಗಿದ್ದರಿಂದ ಕೂಡಿದ್ದ ಸಭಿಕರು ಅವರ ಮಾತನ್ನು ನಂಬಿ ಆಕೆಗೆ ಮರಣದಂಡನೆಯನ್ನು ವಿಧಿಸಿದರು. ಆಗ ಸುಸನ್ನಳು ಗಟ್ಟಿಯಾಗಿ ಕೂಗಿ, “ನಿತ್ಯರಾದ ದೇವರೇ ನೀವು ಎಲ್ಲ ಗುಟ್ಟನ್ನು ತಿಳಿದವರು. ಎಲ್ಲ ವಿಷಯಗಳನ್ನು , ಅವು ಹುಟ್ಟುವ ಮೊದಲೇ ಅರಿತವರೂ ಆಗಿದ್ದೀರಿ. ಇವರು ನನ್ನ ವಿರುದ್ಧ ಸುಳ್ಳುಸಾಕ್ಷಿ ಹೇಳಿದ್ದಾರೆಂಬುದು ನಿಮಗೆ ಗೊತ್ತಿದೆ. ಇವರು ನನ್ನ ವಿರುದ್ಧ ಹೊಟ್ಟೆಕಿಚ್ಚಿನಿಂದ ಹೇಳಿದ ಕಾರ್ಯಗಳನ್ನು ನಾನು ಮಾಡಿದ್ದೇ ಇಲ್ಲ. ಆದರೂ ಈಗ ನಾನು ಸಾಯಲೇಬೇಕು. ಎಂದು ಮೊರೆಯಿಟ್ಟಳು. ಸರ್ವೇಶ್ವರಸ್ವಾಮಿ ಆಕೆಯ ಮೊರೆಯನ್ನು ಆಲಿಸಿದರು. ಜನರು ಅವಳನ್ನು ಕೊಲ್ಲುವುದಕ್ಕೆ ಸಾಗಿಸಿಕೊಂಡು ಹೋಗುತ್ತಿರುವಾಗ ದೇವರು ದಾನಿಯೇಲನೆಂಬ ಯುವಕನಲ್ಲಿದ್ದ ಪವಿತ್ರಾತ್ಮನನ್ನು ಚೇತನಗೊಳಿಸಿದರು. ದಾನಿಯೇಲನು, “ಈ ಮಹಿಳೆಯ ರಕ್ತಪಾತಕ್ಕೆ ನಾನು ಹೊಣೆ ಅಲ್ಲ”, ಎಂದು ಕೂಗಿ ಹೇಳಿದನು. ಜನರೆಲ್ಲರು ಅವನ ಕಡೆಗೆ ತಿರುಗಿಕೊಂಡು, “ನೀನು ಆಡಿದ ಮಾತಿನ ಮರ್ಮವೇನು?” ಎಂದು ವಿಚಾರಿಸಿದರು. ಅವನು ಅವರ ಮಧ್ಯೆ ನಿಂತು, “ಇಸ್ರಯೇಲಿನ ಕುಲಪುತ್ರರೇ, ನೀವು ಇಷ್ಟು ಬುದ್ಧಿಹೀನರೋ? ಪರೀಕ್ಷೆಮಾಡದೆ, ಸತ್ಯವನ್ನು ಅರಿತುಕೊಳ್ಳದೆ. ಇಸ್ರಯೇಲಿನ ಕುಲಪುತ್ರಿಯೊಬ್ಬಳಿಗೆ ದಂಡನೆ ವಿಧಿಸಿದಿರೋ? ನ್ಯಾಯಸ್ಥಾನಕ್ಕೆ ಮರಳಿ ಬನ್ನಿ, ಏಕೆಂದರೆ ಇವಳ ಮೇಲೆ ಸುಳ್ಳುಸಾಕ್ಷಿ ಹೇಳಲಾಗಿದೆ,” ಎಂದು ಹೇಳಿದನು. ಜನರೆಲ್ಲರು ಕೂಡಲೆ ಹಿಂದಿರುಗಿ ಬಂದರು. ಜನನಾಯಕ್ತು ದಾನಿಯೇಲನಿಗೆ , “ಬಾ, ನಮ್ಮ ನಡುವೆ ಕುಳಿತುಕೊಂಡು ಆ ವಿಷಯವನ್ನು ನಮಗೆ ವಿವರಿಸು. ಹಿರಿಯರಿಗೆ ಕೊಟ್ಟಂಥ ಗೌರವವನ್ನು ದೇವರು ನಿನಗೆ ಕೊಟ್ಟಂತಿದೆ!” ಎಂದರು, ಆಗ ದಾನಿಯೇಲನು, “ಇವರಿಬ್ಬರನ್ನು ಬೇರ್ಪಡಿಸಿ ದೂರದೂರದಲ್ಲಿ ಇಡಿ. ನಾನು ಇವರನ್ನು ಪರೀಕ್ಷಿಸುತ್ತೇನೆ”, ಎಂದನು. ಅಂತೆಯೇ ಅವರನ್ನು ಬೇರ್ಪಡಿಸಲಾಯಿತು. ಆಮೇಲೆ ಅವರಿಬ್ಬರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಕೆಟ್ಟತನದಲ್ಲೆ ಬೆಳೆದು ಮುಪ್ಪಾಗಿರುವವನೇ, ನೀನು ಹಿಂದೆ ಮಾಡಿದ ಪಾಪಗಳು ಇಂದು ಬಯಲಿಗೆ ಬಂದಿವೆ. `ನಿರಪರಾಧಿಗೂ ನೀತಿವಂತನಿಗೂ ಮರಣದಂಡನೆ ವಿಧಿಸಲೇಕೂಡದು’ ಎಂದು ಸರ್ವೇಶ್ವರಸ್ವಾಮಿ ಹೇಳಿದ್ದರೂ ಅನ್ಯಾಯವಾದ ತೀರ್ಪುಕೊಟ್ಟು, ನಿರಪರಾಧಿಯನ್ನು ದಂಡಿಸಿ, ಅಪರಾಧಿಗಳನ್ನು ಬಿಡುಗಡೆಮಾಡುತ್ತಾ ಬಂದಿರುವೆ. ಈಗ ಹೇಳು, ಇವಳನ್ನು ನೀನು ನೋಡಿದ್ದೇ ಆದರೆ, ಇವರು ಯಾವ ಗಿಡದ ಅಡಿಯಲ್ಲಿ ಕೂಡಿದ್ದರು. ನನಗೆ ತಿಳಿಸು,” ಎಂದನು. ಅದಕ್ಕೆ ಅವನು, “ಬಗಿನಿ ಮರದ ಅಡಿಯಲ್ಲಿ,” ಎಂದು ಉತ್ತರವಿತ್ತನು. ಅದಕ್ಕೆ ದಾನಿಯೇಲನು, “ನಿನ್ನ ಪ್ರಾಣಕ್ಕೆ ವಿರುದ್ಧ ಚೆನ್ನಾಗಿ ಸುಳ್ಳಾಡಿದೆ. ದೇವದೂತನು ಈಗಲೆ ದೇವರಿಂದ ತೀರ್ಮಾನ ಪಡೆದು ನಿನ್ನನ್ನು ಬಗೆದುಹಾಕಿ, ಎರಡು ತುಂಡಾಗಿ ಮಾಡಲಿದ್ದಾನೆ”, ಎಂದು ಹೇಳಿ ಅವನನ್ನು ಪಕ್ಕಕ್ಕೆ ಸರಿಸಿದನು. ಬಳಿಕ ಎರಡನೆಯವನನ್ನು ಕರೆತರಲು ಆಜ್ಞಾಪಿಸಿದನು. ಅವನನ್ನು ನೋಡಿ, “ಯೆಹೂದ ವಂಶಕ್ಕೆ ಅಯೋಗ್ಯನಾದ ಎಲೈ ಕಾನಾನ್ ವಂಶಜನೇ, ಸೌಂದರ್ಯವು ನಿನ್ನನ್ನು ಮೋಸಗೊಳಿಸಿತು. ಕಾಮವು ನಿನ್ನ ಮನಸ್ಸನ್ನು ಕೆಡಿಸಿತು. ಇಸ್ರಯೇಲಿನ ಕುಲಪುತ್ರಿಯರೊಂದಿಗೆ ನೀವು ಇದೇ ರೀತಿ ವರ್ತಿಸುತ್ತಾ ಬಂದಿರಿ. ಅವರು ಅಂಜಿಕೆಯಿಂದ ನಿಮಗೆ ವಶವಾಗುತ್ತಿದ್ದರು. ಆದರೆ ಜುದೇಯದ ಈ ಕುಲಪುತ್ರಿ ಮಾತ್ರ ನಿಮ್ಮ ಅಧರ್ಮಕ್ಕೆ ಇಂಬುಕೊಡಲಿಲ್ಲ. ಈಗ ಹೇಳು, `ಯಾವ ಮರದ ಕೆಳಗೆ ಇವರು ಕೂಡಿದ್ದನ್ನು ನೀನು ಕಂಡುಹಿಡಿದೆ?” ಎಂದನು. ಅವನು, `ಕಡವಾಲ ಮರದ ಕೆಳಗೆ’ ಎಂದು ಉತ್ತರಕೊಟ್ಟ , ಆಗ ದಾನಿಯೇಲನು “ನೀನು ಸಹ ನಿನ್ನ ಕುತ್ತಿಗೆಗೆ ವಿರುದ್ಧ ಚೆನ್ನಾಗಿ ಸುಳ್ಳಾಡಿದೆ, ನಿನ್ನನ್ನು ಕಡಿದು ಎರಡು ಹೋಳಾಗಿ ಮಾಡಿ ನಿಮ್ಮಿಬ್ಬರನ್ನೂ ನಾಶಮಾಡಲು ದೇವದೂತನು ಕೈಯಲ್ಲಿ ಕತ್ತಿಹಿಡಿದು ಕಾದಿದ್ದಾನೆ”, ಎಂದು ನುಡಿದನು, ಕೂಡಿದ್ದ ಸಭಿಕರೆಲ್ಲರು ಆಗ ಗಟ್ಟಿಯಾಗಿ ಕೂಗುತ್ತಾ, ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸಿ ಕಾಪಾಡುವ ದೇವರನ್ನು ಕೊಂಡಾಡಿದರು. ಅಲ್ಲದೆ, ದಾನಿಯೇಲನು ಆ ಇಬ್ಬರು ಹಿರಿಯರನ್ನು ಸುಳ್ಳುಸಾಕ್ಷಿಗಳೆಂದು ತೋರಿಸಿಕೊಟ್ಟ ಕಾರಣ, ಸಭಿಕರು ಅವರ ವಿರುದ್ಧ ಎದ್ದುನಿಂತು ಪ್ರತಿಭಟಿಸಿದರು. ಹೊಟ್ಟೆಕಿಚ್ಚಿನಿಂದ ನೆರೆಯವರ ಮೇಲೆ ಏನು ದಂಡನೆ ತೆರಬೇಕೆಂದಿದ್ದರೋ ಅದನ್ನೇ ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಮೇಲೆ ತಂದು, ಅವರನ್ನು ಕೊಲ್ಲಿಸಿದರು. ಹೀಗೆ ನಿರ್ದೋಷಿಯ ರಕ್ತ. ಅಂದು ಸುರಕ್ಷಿತವಾಯಿತು.

ಕೀರ್ತನೆ: 23:1-6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ? II


ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II

ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II

ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I

ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I

ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ಶುಭಸಂದೇಶ: ಯೊವಾನ್ನ 8:1-11

ಯೇಸುಸ್ವಾಮಿ ಓಲಿವ್ ಗುಡ್ಡಕ್ಕೆ ಹೋದರು. ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು. ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು. ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು. ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯೇ ಧರ್ಮಶಾಸ್ತ್ರದಲ್ಲಿ ವಿಧಿಸಿದ್ದಾನೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು. ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು. ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪ ಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ, ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು. ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು. ಆಗ ಯೇಸು ತಲೆಯೆತ್ತಿ, “ತಾಯಿ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು. ಅವಳು “ಇಲ್ಲ, ಸ್ವಾವಿೂ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.



ಮನಸ್ಸಿಗೊಂದಿಷ್ಟು : “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ" ಎಂದು ಯೇಸು ಹೇಳಿದ ಮಾತು ಇಷ್ಟು ಸಾವಿರ ವರ್ಷಗಳಾದ ಮೇಲೂ ಇನ್ನೂ ಪ್ರತಿಧ್ವನಿಸುತ್ತಿದೆ. ಆ ಮಹಿಳೆಗೆ ಅಂದು ತೋರಿದ ಕರುಣೆ, ಅನುಕಂಪ ನಮಗೆಲ್ಲಾ ಸ್ಪೂರ್ತಿಯಾಗಬೇಕು. ಮತ್ತೊಬ್ಬರ ಬಗ್ಗೆ ತೀರ್ಪು ಕೊಡಲು ನಮಗೆ ಯಾವುದೇ ಅಧಿಕಾವಿಲ್ಲ, ಅದು ದೇವರ ಹಕ್ಕು ಮಾತ್ರ ಎನ್ನುವುದು ಯೇಸು ತಿಳಿಸಿದ, ಬರೆದ ಸಂದೇಶ. 

ಪ್ರಶ್ನೆ : ಮತ್ತೊಬ್ಬರ ತಪ್ಪು ಕಂಡು ಹಿಡಿಯುತ್ತಲೇ ಇರುವ ನಾವೆಷ್ಟು ಶುದ್ಧ?

22.03.2026 - “ಲಾಸರನೇ, ಹೊರಗೆ ಬಾ"

ಮೊದಲನೇ ವಾಚನ: ಯಜೆಕಿಯೇಲ 37:12-14



ಸರ್ವೇಶ್ವರ ನನಗೆ ಹೀಗೆಂದರು: "ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಕೀರ್ತನೆ: 130:1-2, 3-4, 5-6, 7-8

ಶ್ಲೋಕ: ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭೂ, ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ?

"ಶ್ಲೋಕ:  ಆತನಲ್ಲಿದೆ ಕರುಣೆ, ಪೂರ್ಣ ವಿಮೋಚನೆ

1.  ಅಂತರಾಳದಿಂದ ಪ್ರಭೂ, ಮೊರೆಯಿಡುತ್ತಿರುವೆ ನಿನಗೆ|
ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ಥ ವಿಜ್ಞಾಪನೆಗೆ||
ಶ್ಲೋಕ

2.  ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು|
ನಿನ್ನ ಮುಂದೆ ಯಾರು ತಾನೇ ನಿಲ್ಲಬಲ್ಲರು ವಿಭು?||
ಪಾಪವನು ಕ್ಷಮಿಸುವವನು ನೀನು|
ಎಂತಲೇ ಭಯಭಕ್ತಿಗೆ ಪಾತ್ರನು||
ಶ್ಲೋಕ

3.  ಪ್ರಭುವಿಗಾಗಿ ಎನ್ನ ಮನ ಕಾದಿದೆ|
ಆತನ ವಾಕ್ಯದಲಿ ನಂಬಿಕೆ ನನಗಿದೆ||
ಸೊರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ|
ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ|
ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ||
ಶ್ಲೋಕ

4.  ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ|
ಆತನಲ್ಲಿದೆ ಕರುಣೆ, ಪೂರ್ಣ ವಿಮೋಚನೆ||
ಇಸ್ರಯೇಲನು ಉದ್ಧರಿಸುವನಾತ|
ಅದು ಗೈದ ಸಕಲ ದೋಷಗಳಿಂದ||
ಶ್ಲೋಕ


ಎರಡನೇ ವಾಚನ: ರೋಮನರಿಗೆ 8:8-11



ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು ಮೆಚ್ಚಿಸಲು ಸಾಧ್ಯವೇ ಇಲ್ಲ. ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ. ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮ ಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.

ಶುಭಸಂದೇಶ: ಯೊವಾನ್ನ 11:1-45


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.) ಈ ಸಹೋದರಿಯರು, ಯೇಸುಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು. ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು. ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು. ಲಾಸರನ ಕಾಯಿಲೆಯ ಸುದ್ದಿಯನ್ನು ಕೇಳಿದ ಮೇಲೂ ಯೇಸು ತಾವಿದ್ದಲ್ಲಿಯೇ ಇನ್ನೂ ಎರಡು ದಿನ ಉಳಿದುಕೊಂಡರು. ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿ ಹೋಗೋಣ,” ಎಂದರು. ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು. ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿ ಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ. ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿ ಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು. ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆ ಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು. ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿರುವನಾದರೆ ಚೇತರಿಸಿಕೊಳ್ಳುತ್ತಾನೆ,” ಎಂದರು. ಯೇಸು ಹೇಳಿದ್ದು ಅವನ ಮರಣವನ್ನು ಕುರಿತು. ಶಿಷ್ಯರಾದರೋ ಅದು ಸಾಮಾನ್ಯ ನಿದ್ರೆಯೆಂದು ತಿಳಿದುಕೊಂಡರು. ಆದುದರಿಂದ ಯೇಸು ಅವರಿಗೆ ಸ್ಪಷ್ಟವಾಗಿ, “ಲಾಸರನು ಸತ್ತು ಹೋಗಿದ್ದಾನೆ; ನಾನು ಅಲ್ಲಿ ಇಲ್ಲದೆ ಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು. ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು. ‘ನಾನೇ ಪುನರುತ್ಥಾನ; ನಾನೇ ಜೀವ!’ ಯೇಸುಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು. ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊವಿೂಟರು ದೂರದಲ್ಲಿದೆ. ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು ಮಾರ್ತ ಯೇಸುವನ್ನು ಕಂಡು, ‘ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ. ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು. ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು. “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತವಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ. ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು. ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀನು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು, ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು. ಕಂಬನಿಗರೆದ ಯೇಸು ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು. ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು. ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು. ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿಯೇ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು. ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು. ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿ ಬಂದಿತು. ಯೇಸು ಅವರಿಗೆ, “ಆತನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು, “ಬಂದು ನೋಡಿ ಸ್ವಾವಿೂ,” ಎಂದರು. ಯೇಸು ಕಣ್ಣೀರಿಟ್ಟರು. ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು. ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಡಬಾರದಿತ್ತೆ?” ಎಂದರು. ಲಾಸರನ ಪುನರುಜ್ಜೀವನ ಯೇಸುಸ್ವಾಮಿ ಮತ್ತೊಮ್ಮೆ ಮನಮರುಗಿ ಸಮಾಧಿಯ ಬಳಿಗೆ ಬಂದರು.


ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು. ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು. ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು. “ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೆ?” ಎಂದು ಮರುನುಡಿದರು ಯೇಸು. ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ, ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು. ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು. ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು. ಯೇಸುವಿನ ವಿರುದ್ಧ ಹಂಚಿಕೆ ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು.

ಮನಸ್ಸಿಗೊಂದಿಷ್ಟು : ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿದ ಯೇಸು, ದೇವರ ಮಹಿಮೆಯನ್ನು ಎಲ್ಲರೂ ಅರಿಯುವಂತಾಗಲು ಲಾಜರನನ್ನು ಜೀವದಿಂದ ಎಬ್ಬಿಸುವ ಘಟನೆಯನ್ನು ಬಳಸಿಕೊಳ್ಳುತ್ತಾರೆ.  ನಮ್ಮದಾದರೂ ಇದಕ್ಕೆ ತದ್ವಿರುದ್ಧವಾದ ಮನೋಭಾವ. ನಮ್ಮನ್ನೇ ಇತರರ ಮುಂದೆ ಹೆಚ್ಚಿಸಕೊಳ್ಳಲು ಆದಷ್ಟು ಪ್ರಯತ್ನಿಸುತ್ತೇವೆ, ಅವಕಾಶಕ್ಕಾಗಿ ಪ್ರಯತ್ನಿಸುತ್ತೇವೆ. ದೇವರ ಮಹಿಮೆಗಾಗಿ ಬಾಳೋಣ, ದೇವರ ಮಹಿಮೆಯು ನಮ್ಮ ಮೂಲಕ ನೆರವೇರಲು ಸಾಧನವಾಗೋಣ, ಅಮರ ಜೀವದತ್ತ ಮನಸ್ಸನ್ನು ಹರಿಸೋಣ.    

ಪ್ರಶ್ನೆ :  ದೇವರ ಮಹಿಮೆಯು ಪ್ರಕಟಗೊಳ್ಳುವ ಸಾಧನ ನಾವಾಗಿದ್ದೇವೆಯೇ?

ಪ್ರಭುವೇ,
ನವ ಜೀವನ ಲಾಜರನದು
ನೀ ಹೊರಗೆ ಬಾ ಎನಲು  

ಪಡೆಯಲಿ ಎನ್ನ ಆತ್ಮ
ಹೊಸ ಜೀವ ಭಾವ 
ನಿನ್ನ ಕರೆಯೊಳು

ಸಾಕಾರಗೊಳ್ಳಲಿ ನಿನ್ನಯ
ಚಿತ್ತ ಎನ್ನಲಿ 
ಸಾಧನವಾಗಲಿ ಬದಕು 
ನನ್ನದು ನಿನ್ನ 
ಮಹಿಮೆಯಲಿ

21.03.2026 - ಈತನೇ ಲೋಕೋದ್ಧಾರಕ

ಮೊದಲನೇ ವಾಚನ: ಯೆರೆಮೀಯ 11:18-20




ಸರ್ವೇಶ್ವರಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ  ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು. ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. "ಮರವನ್ನು ಫಲಸಹಿತ ನಾಶಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ," ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ಅದು ನನಗೆ ತಿಳಿದಿರಲಿಲ್ಲ. ಆಗ ನಾನು, "ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತಿಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ," ಎಂದೆನು.

ಕೀರ್ತನೆ:7:2-3, 9-10, 11-12

ಶ್ಲೋಕ: ನಿನ್ನಾಶ್ರಯವನರಸಿ ಹೇ ಸ್ವಾಮೀ ದೇವಾ, ನಾ ಬಂದಿಹೆನು.

ಶ್ಲೋಕ:  ನಿನ್ನಾಶ್ರಯವನರಸಿ  ಹೇ  ಸ್ವಾಮಿ  ದೇವಾ,  ನಾ  ಬಂದಿಹೆನು ||

1.   ನಿನ್ನಾಶ್ರಯವನರಸಿ ಹೇ  ಸ್ವಾಮೀ  ದೇವಾ,  ನಾ  ಬಂದಿಹೆನು|
ಬೆನ್ನಟ್ಟಿ  ಬರುವವರ  ಕೈಯಿಂದ  ತಪ್ಪಿಸಿ,  ಕಾಪಾಡೆನ್ನನು||
ಇಲ್ಲದಿರೆ  ಶತ್ರು  ತಿಳಿದಾನು  ನನಗೆ  ರಕ್ಷಕನಿಲ್ಲವೆಂದು|
ಝಲ್ಲನೆ  ಸೀಳಿಬಿಟ್ಟೆನು  ಸಿಂಹದಂತೆ  ಮೇಲೆ  ಬಿದ್ದು||
ಶ್ಲೋಕ

2.  ಹೇ  ಪ್ರಭೂ,  ಜಗದ  ಜನಾಂಗಕೆ  ನ್ಯಾಯ  ದೊರಕಿಸುವವನು  ನೀನು|
ನನಗೂ  ನ್ಯಾಯ  ದೊರಕಿಸು;  ನಿರಪರಾಧಿ,  ನೀತಿವಂತ  ನಾನು||
ಮಾನವರ  ಹೃನ್ಮನವನರಿತಿಹ   ಸತ್ಯಸ್ವರೂಪಿ  ದೇವಾ,|
ದುರುಳರ  ಕೆಡುಕನಳಿಸಯ್ಯಾ,  ಸತ್ಯವಂತರನು  ನೀ  ಉಳಿಸಯ್ಯಾ||
ಶ್ಲೋಕ

3.  ನನಗೆ  ರಕ್ಷೆನೀಡುವ  ಗುರಾಣಿ,  ದೇವನೇ|
ನೇರ  ಮನಸ್ಕರಿಗೆ  ಸಂರಕ್ಷಣೆ  ಆತನೇ||
ನ್ಯಾಯಕ್ಕನುಸಾರ  ತೀರ್ಪು  ನೀಡುವಂಥವನು  ದೇವನು|
ದುರುಳರ  ಮೇಲೆ  ದಿನಬಿಡದೆ  ಕೋಪವುಳ್ಳವನು  ಆತನು||
ಶ್ಲೋಕ

ಘೋಷಣೆ 
ಯೆಜೆಕಿಯೇಲ 33:11

ದೇವರ ವಾಕ್ಯವಾದ ಪ್ರಭು ಯೇಸುವೇ, ನಿಮಗೆ ಸದಾ  ಮಹಿಮೆ ಸಲ್ಲಲಿ !

"ಇದು  ಸರ್ವೇಶ್ವರನಾದ  ದೇವರ  ನುಡಿ,  ದುಷ್ಟನ  ಸಾವಿನಲ್ಲಿ  ನನಗೆ  ಲವಲೇಶವೂ  ಸಂತೋಷವಿಲ್ಲ;| ಅವನು  ತನ್ನ  ದುರ್ಮಾರ್ಗವನ್ನು  ಬಿಟ್ಟು  ಬಾಳುವುದೇ  ನನಗೆ  ಸಂತೋಷ" ||


ಶುಭಸಂದೇಶ: ಯೊವಾನ್ನ 7:40-53

ಯೇಸುಸ್ವಾಮಿ ಹೇಳಿದ್ದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, "ಬರಬೇಕಾಗಿದ್ದ ಪ್ರವಾದಿ ಈತನೇ ಸರಿ," ಎಂದರು. ಇನ್ನೂ ಕೆಲವರು, "ಈತನೇ ಲೋಕೋದ್ಧಾರಕ," ಎಂದರು. ಮತ್ತೆ ಕೆಲವರು, "ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ? 'ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ' ಎಂದು ಪವಿತ್ರ ಗ್ರಂಥವೇ ಹೇಳಿದೆಯಲ್ಲವೆ?" ಎಂದು ವಾದಿಸಿದರು. ಹೀಗೆ ಯೇಸುವನ್ನು ಕುರಿತು ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು. ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ. ಕಾವಲಾಳುಗಳು ಹಿಂದಿರುಗಿದಾಗ, ಮುಖ್ಯಯಾಜಕರು ಮತ್ತು ಫರಿಸಾಯರು, "ಅವನನ್ನೇಕೆ ನೀವು ಹಿಡಿದು ತರಲಿಲ್ಲ?" ಎಂದು ಕೇಳಿದರು. ಅವರು, "ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ." ಎಂದು ಉತ್ತರಿಸಿದರು. ಅದಕ್ಕೆ ಫರಿಸಾಯರು, "ಏನು, ನೀವು ಕೂಡ ಅವನಿಗೆ ಮರುಳಾಗಿಬಿಟ್ಟಿರೋ? ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ? ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ," ಎಂದರು. ಅಲ್ಲಿದ್ದ ಫರಿ‌ಸಾಯರಲ್ಲಿ ನಿಕೋದೇಮನು ಒಬ್ಬನು. ಹಿಂದೆ ಯೇಸುವನ್ನು ಕಾಣಲು ಬಂದಿದ್ದವನು ಈತನೇ, ಈತನು ಅವರಿಗೆ, "ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?" ಎಂದು ಕೇಳಿದನು. ಅದಕ್ಕೆ ಅವರು, "ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿ ನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೆ ಗೊತ್ತಾಗುತ್ತದೆ," ಎಂದು ಉತ್ತರ ಕೊಟ್ಟರು. ಬಳಿಕ ಎಲ್ಲರೂ ತಮ್ಮತಮ್ಮ ಮನೆಗಳಿಗೆ ತೆರಳಿದರು.

20.03.2026 - ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ. ನಾನಾದರೋ ಆತನನ್ನು ಅರಿತಿದ್ದೇನೆ.

 ಮೊದಲನೆಯ ವಾಚನ: ಸುಜ್ಞಾನಗ್ರಂಥ 2:1, 12-22



ದೇವರಿಲ್ಲದವರು ಅಪವಾದಮಾಡಿಕೊಂಡರು ಈ ಪರಿ:
" ನಮ್ಮ ಬದುಕು ಅಲ್ಪಕಾಲಿಕ ಹಾಗು ದುಃಖಕರ,
ಮರಣಕ್ಕೆ ಮದ್ದಿಲ್ಲ, ಸತ್ತವರಿಂದ ಹಿಂದಿರುಗಿದವರಿಲ್ಲ.
ನೀತಿವಂತನಿಗಾಗಿ ಹೊಂಚುಹಾಕೋಣ ಬಲೆಯೊಡ್ಡಿ,
ಅವನು ನಿಮಗೊಂದು ಪೀಡೆ, ನಮ್ಮ ನಡತೆಗೆ ಅಡ್ಡಿ.
ಆರೋಪಿಸುತ್ತಾನೆ, ಧರ್ಮಕ್ಕೆ ವಿರುದ್ಧ ಪಾಪಕಟ್ಟಿಕೊಂಡೆವೆಂದು
ದೂಷಿಸುತ್ತಾನೆ, ಸಂಪ್ರದಾಯದ ವಿರುದ್ಧ ಪಾಪ ಮಾಡಿದೆವೆಂದು,
ಹೇಳಿಕೊಳ್ಳುತ್ತಾನೆ ತಾನೇ ದೇವರನು ಬಲ್ಲವನೆಂದು,
ಕರೆದುಕೊಳ್ಳುತ್ತಾನೆ ತನ್ನನ್ನು ತಾನೇ ದೇವರ ಮಗನೆಂದು.
ನಮ್ಮ ಆಲೋಚನೆಗಳನ್ನು ಆಕ್ಷೇಪಿಸುವ ವ್ಯಕ್ತಿ ಅವನು,
ಅವನನ್ನು ನೋಡಿದ್ದೇ ನಮ್ಮ ಉತ್ಸಾಹ ಕುಂದಿಹೋಗುವುದು.
ಏಕೆಂದರೆ ಅವನು ಇತರರಂತೆ ಅಲ್ಲ, ಅವನ ಮಾರ್ಗವೋ ನಮಗೆ ವಿಚಿತ್ರ.
ಅವನ ಎಣಿಕೆಯಲ್ಲಿ ನಾವೆಲ್ಲರು ನಕಲಿ ನಾಣ್ಯದಂತೆ,
ನಮ್ಮಿಂರ ದೂರವಾಗುತ್ತಾನೆ ಹೇಸಿಕೆಯನ್ನು ಕಂಡಂತೆ.
ನೀತಿವಂತರ ಮರಣ ಸಂತೋಷಕರವೆನ್ನುತ್ತಾನೆ,
ದೇವರೇ ತನ್ನ ತಂದೆಯೆಂದು ಕೊಚ್ಚಿಕೊಳ್ಳುತ್ತಾನೆ.
ಅವನ ಮಾತುಗಳೇ ಸತ್ಯವೇನೋ ನೋಡೋಣ,
ಅವನ ಜೀವಾಂತ್ಯದ ಗತಿ ಏನೆಂದು ಪರೀಕ್ಷಿಸೋಣ.
ನೀತಿವಂತ ದೇವಕುಮಾರನಾಗಿದ್ದರೆ ದೇವರು ಅವನಿಗೆ ನೆರವಾಗಬೇಕು,
ಶತ್ರುಗಳ ಕೈಯಿಂದ ಅವನನ್ನು ತಪ್ಪಿಸಿ ಕಾಪಾಡಬೇಕು.
ಅಂಥವನನ್ನು ಹಿಂಸಿಸಿ, ಪೀಡಿಸಿ, ಪರೀಕ್ಷಿಸೋಣ,
ಅವನಲ್ಲಿ ಸೌಜನ್ಯ ಎಷ್ಟಿದೆಯೆಂದು ತಿಳಿಯೋಣ,
ಅನ್ಯಾಯದೆದುರು ತಾಳ್ಮೆಯೆಷ್ಟಿದೆಯೆಂದು ಶೋಧಿಸೋಣ;
ಅವಮಾನಕರ ಮರಣಶಿಕ್ಷೆಯನ್ನು ಅವನಿಗೆ ವಿಧಿಸೋಣ.
'ದೇವರು ರಕ್ಷಿಸುತ್ತಾನೆ ಎಂದಾಗಿತ್ತಲ್ಲವೇ ಅವನ ವಾದ ?"
ಈ ಪರಿ ಆಲೋಚಿಸಿ ವಂಚಿತರಾದರು ದುರುಳರು.
ಅವರ ದುಷ್ಟತನವೇ ಅವರನ್ನು ಕುರುಡರನ್ನಾಗಿಸಿತು.
ದೇವರ ನಿಗೂಢ ಯೋಜನೆಯನ್ನು ಅವರು ಅರಿಯಲಿಲ್ಲ
ಪವಿತ್ರ ಜೀವನಕ್ಕೆ ದೊರಕುವ ಫಲವನ್ನು ಹಾರೈಸಲಿಲ್ಲ,
ನಿರ್ದೋಷಿಗಳಿಗೆ ಸಂಭಾವನೆಯಿದೆಯೆಂದು ನಂಬಲಿಲ್ಲ.

ಕೀರ್ತನೆ 34:16-20, 22, V. 18
ಶ್ಲೋಕ: ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ |

ದುರ್ಜನರಿಗಾದರೋ ಪ್ರಭು ವಿಮುಖನು|
ಅವರ ಹೆಸರನು ಧರೆಯಿಂದ ಅಳಿಸುವನು||
ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ|
ನೆರವೀವನವರ ಕಷ್ಟ ನಿವಾರಣೆಗೆ||

ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ|
ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ||
ಸಜ್ಜನಿಗೊದಗುವ ಸಂಕಟಗಳು ವಿಪರೀತ|
ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ||

ಕಾಪಾಡುವನು ಅವನೆಲುಬುಗಳೆಲ್ಲವನ್ನೂ|
ಮುರಿಯಬಿಡನು ಪ್ರಭು ಅವಗಳಲ್ಲೊಂದನ್ನು||
ತನ್ನ ದಾಸರನು ಉದ್ಧಾರಮಾಡದಿರನು ಪ್ರಭು|
ತನ್ನ ಶರಣರೊಳೊಬ್ಬರನು ದಂಡಿಸನಾ ಪ್ರಭು||

ಶುಭಸಂದೇಶ: ಯೊವಾನ್ನ 7:1-2,10,25-30


ಆ ಕಾಲದಲ್ಲಿ ಯೇಸು ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ. ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು ಹಬ್ಬಕೆ ಹೋದರು. ಯೇಸುವೂ ಅಲ್ಲಿಗೆ ಹೋದರು. ಬಹಿರಂಗವಾಗಿ ಅಲ್ಲ, ಗುಟ್ಟಾಗಿ. ಜೆರುಸಲೇಮಿನ ಕೆಲವು ಮಂದಿ ಯೇಸುವಿನ ಬೋಧನೆಯನ್ನು ಕೇಳಿ, " ಅವರು ಕೊಲ್ಲಬೇಕೆಂದು ಹವಣಿಸುತ್ತಾ ಇರುವುದು ಈತನನ್ನೇ ಅಲ್ಲವೆ ? ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ? ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವನೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ ! " ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು‌. ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಆಗ ಗಟ್ಟಿಯಾಗಿ ಇಂತೆಂದರು: "ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೆ ಬಂದವನಲ್ಲ ; ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ. ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು, " ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.

19.03.2026 - ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು

 ಮೊದಲನೇ ವಾಚನ: 2 ಸಮುವೇಲನ 7:4-5, 12-14, 16

ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ? ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು. ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು. ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು. ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”

ಕೀರ್ತನೆ: 89:1-4, 26, 28.
ಶ್ಲೋಕ: ಚಿರಶಾಶ್ವತವಾಗಿರುವುದು ಅವನ ಸಂತತಿ. 

ಎರಡನೇ ವಾಚನ: ರೋನರಿಗೆ 4:13, 16-18, 22


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ. ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಸ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು. ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.

ಶುಭಸ೦ದೇಶ: ಮತ್ತಾಯ 1:18-21, 24


ಕ್ರಿಸ್ತ ಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, "ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ," ಎಂದನು. ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹ ಮಾಡಿಕೊಂಡನು.


ಮನಸ್ಸಿಗೊಂದಿಷ್ಟು : "ಈ ಜಗದಲ್ಲಿ ಪ್ರತಿ ಮನುಷ್ಯ ಹೊತ್ತುಕೊಳ್ಳುವ ಜವಬ್ದಾರಿ, ವಹಿಸಿಕೊಳ್ಳುವ ಪಾತ್ರಕ್ಕೆ ತಕ್ಕಂತೆ ದೇವರು ಅವರ ಮೇಲೆ ಕೃಪಾವರಗಳನ್ನು ಸುರಿಸುತ್ತಾರೆ" ಎನ್ನುತ್ತಾರೆ ಸಂತ ಥಾಮಸ್ ಅಕ್ವಿನಾಸ್. ಲೋಕದಲ್ಲಿ ತಮ್ಮ ಮಗನ ಪ್ರಾಂಪಚಿಕ ತಂದೆಯಾಗಿ ಪಾತ್ರವಹಿಸಬೇಕಾದ ಜೋಸೆಫರಿಗೆ ಎಷ್ಟು ಕೃಪಾವರಗಳನ್ನು ಸುರಿಸಬೇಕು. 

ತಮ್ಮಂತೆ ಮನುಷ್ಯರನ್ನು ಉಂಟು ಮಾಡಿದ ದೇವರು, ಅವರಿಂದ ಬಯಸಿದ್ದು ಪಾವಿತ್ರತೆ ಹಾಗು ವಿಧೇಯತೆ ಎನ್ನವುವ ಮಾತಿದೆ. ಸಂತ ಜೋಸೆಫರ ಈ ಎರಡರಲ್ಲೂ ದೇವರ ಮೆಚ್ಚುಗೆಗೆ ಪಾತ್ರರಾದವರೇ. ತಮ್ಮ ನಿದ್ದೆಯಲ್ಲಿ ದೇವರ ಚಿತ್ತದ ಸಂದೇಶ ಪಡೆದ ಜೋಸೆಫರು ಎಚ್ಚರದ ನಂತರ ಜೀವನದುದ್ದಕೂ ಅದಕ್ಕೆ ತಲೆಬಾಗಿದ್ದು ನಮಗೆ ಸದಾ ಪ್ರೇರಣೆಯಾಗಲಿ     

18.03.2026 - ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು

ಪ್ರವಾದಿ ಯೆಶಾಯನ ಗ್ರಂಥ 49:8-15



ತಮ್ಮ  ಪ್ರಜೆಗೆ  ಇಂತೆನ್ನುತ್ತಾರೆ  ಸರ್ವೇಶ್ವರಸ್ವಾಮಿ:ನಿನಗೆ  ದಯಪಾಲಿಸುವೆನು  ಸದುತ್ತರವನು  ಪ್ರಸನ್ನತೆಯ  ಕಾಲದಲಿ ಸಹಾಯ  ನೀಡುವೆನು  ರಕ್ಷಣೆಯ  ದಿನದಲಿ ನಿನ್ನನ್ನು  ಕಾಪಾಡಿ  ನೇಮಿಸುವೆನು  ಜನತೆಗೆ  ಸ್ಥಿರ  ಒಡಂಬಡಿಕೆಯಾಗಿ.'ಹೊರಟುಹೋಗಿರಿ'  ಎನ್ನುವೆನು  ಸೆರೆಯಾಳುಗಳಿಗೆ 'ಬೆಳಕಿಗೆ  ಬನ್ನಿರಿ'  ಎನ್ನುವೆನು  ಕತ್ತಲಲ್ಲಿರುವವರಿಗೆ ಪಾಳುಬಿದ್ದ  ಸೊತ್ತುಗಳನ್ನು  ಹಂಚಿಕೊಡುವೆನು  ಅವರಿಗೆ.ದೇಶವನ್ನು  ಪುನಃ  ತರುವೆನು  ಪೂರ್ವ  ಸ್ಥಿತಿಗೆ ದಾರಿಯುದ್ದಕ್ಕೂ  ಆಹಾರ  ಒದಗಿಸುವೆನು  ನನ್ನ  ಪ್ರಜೆಗೆ ಬೋಳು  ಬೆಟ್ಟಗಳೆಲ್ಲ  ಹುಲ್ಲುಗಾವಲುಗಳಾಗುವುವು  ನನ್ನಾ  ಮಂದೆಗೆ. ಇರದು  ಅವರಿಗೆ  ಹಸಿವು  ಬಾಯಾರಿಕೆ,  ಬಡಿಯವು  ಅವರಿಗೆ  ಬಿಸಿಲು  ಬೇಗೆ. ನಡೆಸುವೆನು  ನೀರುಕ್ಕುವ  ಚಿಲುಮೆಗಳ  ಬಳಿಗೆ,  ಕರುಣಾಕರನು  ದಾರಿತೋರಿಸುವನು  ಅವರಿಗೆ.ಸಮ  ದಾರಿಯಾಗಿಸುವೆನು  ನನ್ನ  ಬೆಟ್ಟಗುಡ್ಡಗಳನು,  ಎತ್ತರಿಸುವೆನು  ನನ್ನ  ರಾಜಮಾರ್ಗಗಳನು.ನೋಡಿ,  ಬರುತಿಹರು  ನನ್ನ  ಜನರು  ದೂರದಿಂದ ಹೌದು,  ಬರುತಿಹರು  ಉತ್ತರ  ಪಶ್ಚಿಮದಿಂದ,  ದಕ್ಷಿಣದ  ಆ  ಅಶ್ವಾನ್  ನಾಡಿನಿಂದ.ಹರ್ಷಧ್ವನಿಗೈ  ಆಕಾಶವೇ,  ಉಲ್ಲಾಸಪಡು  ಪೊಡವಿಯೇ,  ತಟ್ಟಾಡಿರಿ  ಬೆಟ್ಟಗುಡ್ಡಗಳೇ,ಏಕೆನೆ  ಸಂತೈಸಿಹನು  ಸರ್ವೇಶ್ವರ  ತನ್ನ  ಪ್ರಜೆಯನು,  ಕನಿಕರಿಸಿಹನು  ಶೋಷಿತರಾದ  ತನ್ನ  ಜನರನು.ಜೆರುಸಲೇಮಿನ  ಜನರಾದರೋ  ಇಂತೆಂದರು: 'ಸರ್ವೇಶ್ವರ  ನಮ್ಮನ್ನು  ಕೈಬಿಟ್ಟಿಹನು,  ಆ  ಸ್ವಾಮಿ  ನಮ್ಮನ್ನು  ಮರೆತುಬಿಟ್ಟಿಹನು.'ಹೆತ್ತ  ತಾಯಿಗೆ  ತನ್ನ  ಕಂದನ  ಪ್ರೀತಿ  ಬತ್ತಿಹೋಗುವುದುಂಟೆ?  ಆಕೆ  ತನ್ನ  ಮೊಲೆಗೂಸನ್ನು  ಮರೆತುಬಿಡುವುದುಂಟೆ?           ಒಂದು  ವೇಳೆ  ಆಕೆ  ಮರೆತರೂ  ನಾ   ನಿನ್ನನ್ನು  ಮರೆಯೆ."

ಪ್ರಭುವಿನ  ವಾಕ್ಯ.

ಕೀರ್ತನೆ, 145: 8-9, 14-15, 18-19,  v. 8

ಶ್ಲೋಕ:  ಪ್ರಭು ದಯಾನಿಧಿ, ಕೃಪಾಸಾಗರನು| ಸಹನಶೀಲನು, ಪ್ರೀತಿಪೂರ್ಣನು||

1.  ಪ್ರಭು  ದಯಾನಿಧಿ, ಕೃಪಾಸಾಗರನು | ಸಹನಶೀಲನು,   ಪ್ರೀತಿಪೂರ್ಣನು||

ಪ್ರಭುವಿನ  ಕರುಣೆ  ಎಲ್ಲರ  ಮೇಲೆ| ಆತನ  ಕೃಪೆಯು  ಸೃಷ್ಟಿಯ  ಮೇಲೆ|| ಶ್ಲೋಕ

2.  ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು| ನಡೆಯಲಿ  ಆತನು  ಸದಾ  ಪ್ರೀತಿಮಯನು||

ಎತ್ತುವನಾತ  ಬಿದ್ದವರನ್ನೆಲ್ಲ| ಉದ್ಧರಿಪನು    ಕುಗ್ಗಿದವರನ್ನೆಲ್ಲ|| ಶ್ಲೋಕ

3.  ಪ್ರಭುವಿನ  ಮಾರ್ಗ  ಧರ್ಮಸಮ್ಮತ| ಆತನ  ಕಾರ್ಯವೆಲ್ಲ  ಪುನೀತ||

ಹತ್ತಿರ  ಇಹನು  ಪ್ರಭು  ಕರೆಯುವವರೆಲ್ಲರಿಗೆ| ಯಥಾರ್ಥವಾಗಿ  ಆತನನು  ಅರಸುವವರಿಗೆ|| ಶ್ಲೋಕ


ಯೊವಾನ್ನನು ಬರೆದ ಪವಿತ್ರ ಶುಭಸಂದೇಶ  5:17-30


ಆ  ಕಾಲದಲ್ಲಿ  ಯೆಹೂದ್ಯರ  ಆಕ್ಷೇಪಣೆಗೆ  ಉತ್ತರವಾಗಿ  ಯೇಸು,  "ನನ್ನ  ಪಿತ  ಸತತವೂ  ಕಾರ್ಯನಿರತರು.  ಅವರಂತೆಯೇ  ನಾನು  ಸದಾ  ಕಾರ್ಯನಿರತನಾಗಿದ್ದೇನೆ,"  ಎಂದು  ನುಡಿದರು.  ಯೇಸು  ಸಬ್ಬತ್ತಿನ  ನಿಯಮವನ್ನು  ಮುರಿದುದೇ  ಅಲ್ಲದೆ,  ದೇವರನ್ನು  ತನ್ನ  ಪಿತನೆಂದು  ಹೇಳಿಕೊಳ್ಳುತ್ತಾ,  ತನ್ನನ್ನೇ  ದೇವರಿಗೆ  ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು  ಯೆಹೂದ್ಯರು  ಅವರನ್ನು  ಕೊಲ್ಲಲು  ಮತ್ತಷ್ಟು  ಹವಣಿಸಿದರು.  ಯೇಸು  ಅವರನ್ನು  ಉದ್ದೇಶಿಸಿ  ಹೀಗೆಂದರು:  ನಾನು  ನಿಮಗೆ  ಸತ್ಯವಾಗಿ  ಹೇಳುತ್ತೇನೆ:  ಪುತ್ರನು  ತನ್ನಷ್ಟಕ್ಕೆ  ತಾನೇ  ಏನೂ  ಮಾಡಲಾರನು;  ಪಿತನು  ಮಾಡುವುದನ್ನು  ಕಂಡು  ತಾನೂ  ಹಾಗೆಯೇ  ಮಾಡುತ್ತಾನೆ.  ಪಿತನು  ಮಾಡುವುದನ್ನೇ  ಪುತ್ರನೂ  ಮಾಡುವುದು.  ಪುತ್ರನೆಂದರೆ  ಪಿತನಿಗೆ  ಪ್ರೀತಿ.  ಆದುದರಿಂದ  ತಾವು  ಮಾಡುವುದನ್ನೆಲ್ಲಾ  ಪುತ್ರನಿಗೆ  ತೋರಿಸುತ್ತಾರೆ.  ಇದಲ್ಲದೆ  ಇನ್ನೂ  ಎಷ್ಟೋ  ಮಿಗಿಲಾದ  ಕಾರ್ಯಗಳನ್ನು  ಪುತ್ರನಿಗೆ  ತೋರಿಸುತ್ತಾರೆ.  ಅವುಗಳನ್ನು  ಕಂಡು  ನೀವು  ಬೆರಗಾಗುವಿರಿ.  ಪಿತನು  ಸತ್ತವರನ್ನು  ಎಬ್ಬಿಸಿ  ಅವರಿಗೆ  ಜೀವವನ್ನು  ಕೊಡುವಂತೆಯೇ  ಪುತ್ರನೂ  ತನಗೆ  ಬೇಕಾದವರಿಗೆ  ಜೀವವನ್ನು  ಕೊಡುತ್ತಾನೆ.  ಅಲ್ಲದೆ,  ಪಿತನು  ಯಾರನ್ನೂ  ತೀರ್ಪಿಗೆ  ಗುರಿಮಾಡುವುದಿಲ್ಲ.  ತೀರ್ಪುಕೊಡುವ  ಅಧಿಕಾರವನ್ನೆಲ್ಲಾ  ಅವರು  ಪುತ್ರನಿಗೆ  ಕೊಟ್ಟಿದ್ದಾರೆ.  ಏಕೆಂದರೆ,  ತಮ್ಮನ್ನು  ಗೌರವಿಸುವಂತೆಯೇ  ಜನರೆಲ್ಲರು  ಪುತ್ರನನ್ನು  ಗೌರವಿಸಬೇಕೆಂಬುದು  ಅವರ  ಬಯಕೆ.  ಪುತ್ರನನ್ನು  ಗೌರವಿಸದವನು  ಆತನನ್ನು  ಕಳುಹಿಸಿದ  ಪಿತನನ್ನೂ  ಗೌರವಿಸುವುದಿಲ್ಲ.  ನಾನು  ನಿಮಗೆ  ಸತ್ಯವಾಗಿ  ಹೇಳುತ್ತೇನೆ:  ನನ್ನ  ಮಾತಿಗೆ  ಕಿವಿಗೊಟ್ಟು  ನನ್ನನ್ನು  ಕಳುಹಿಸಿದ  ಆತನಲ್ಲಿ  ವಿಶ್ವಾಸವಿಡುವವನು  ನಿತ್ಯ  ಜೀವವನ್ನು  ಪಡೆದಿರುತ್ತಾನೆ.  ಅವನು  ಖಂಡನೆಗೆ  ಗುರಿಯಾಗನು;  ಅವನು  ಈಗಾಗಲೇ  ಸಾವನ್ನು  ದಾಟಿ  ಜೀವವನ್ನು  ಸೇರಿರುತ್ತಾನೆ.  ಸತ್ಯವಾಗಿ  ನಿಮಗೆ  ಮತ್ತೆ  ಹೇಳುತ್ತೇನೆ;  ಸತ್ತವರು  ದೇವರ  ಪುತ್ರನ  ಧ್ವನಿಯನ್ನು  ಕೇಳುವ  ಕಾಲ  ಬರುವುದು;  ಈಗಾಗಲೇ  ಬಂದಿದೆ;  ಈ  ಧ್ವನಿಯನ್ನು  ಕೇಳುವವರು  ಜೀವಿಸುವರು.  ಪಿತನು  ತಾವೇ  ಸ್ವಯಂ  ಜೀವಮೂಲವಾಗಿರುವಂತೆ  ಪುತ್ರನು  ಸಹ  ಸ್ವಯಂ  ಜೀವಮೂಲವಾಗಿರುವಂತೆ  ಕರುಣಿಸಿದ್ದಾರೆ.  ಅದೂ  ಅಲ್ಲದೆ,  ಆತನು  ನರಪುತ್ರನಾಗಿರುವ  ಕಾರಣ  ತೀರ್ಪನ್ನು  ಕೊಡುವ  ಹಕ್ಕನ್ನು  ಆತನಿಗೇ  ದಯಪಾಲಿಸಿದ್ದಾರೆ.  ಇದನ್ನು  ಕೇಳಿ  ನೀವು  ಬೆರಗಾಗುವುದು  ಬೇಡ.  ಸತ್ತು  ಸಮಾಧಿಯಲ್ಲಿರುವವರೆಲ್ಲರೂ  ಆತನ  ಧ್ವನಿಯನ್ನು  ಕೇಳುವ  ಕಾಲ  ಬರುವುದು.  ಹಾಗೆ  ಕೇಳಿದವರೆಲ್ಲಾ  ಸಮಾಧಿಯನ್ನು  ಬಿಟ್ಟು  ಎದ್ದುಬರುವರು;  ಸಜ್ಜನರು  ಸಜ್ಜೀವಕ್ಕಾಗಿ  ಪುನರುತ್ಥಾನರಾಗುವರು,  ದುರ್ಜನರು  ದಂಡನಾ ತೀರ್ಪಿಗಾಗಿ  ಪುನರುತ್ಥಾನರಾಗುವರು.  ನನ್ನಷ್ಟಕ್ಕೆ  ನಾನೇ  ಏನೂ  ಮಾಡಲಾರೆ.  ಪಿತನು  ನನಗೆ  ತಿಳಿಸಿದ  ಪ್ರಕಾರ  ನಾನು  ತೀರ್ಪು  ಕೊಡುತ್ತೇನೆ.  ಈ  ನನ್ನ  ತೀರ್ಪು  ನ್ಯಾಯಬದ್ದ  ಆದುದು.  ಏಕೆಂದರೆ,  ನಾನು  ನನ್ನ  ಸ್ವಂತ  ಇಚ್ಛೆಯನ್ನು  ನೆರವೇರಿಸದೆ  ಪಿತನ  ಚಿತ್ತವನ್ನೆ  ನೆರವೇರಿಸಲು  ಆಶಿಸುತ್ತೇನೆ."

ಪ್ರಭುವಿನ  ಶುಭಸಂದೇಶ

24.03.2026 - ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ

  ಮೊದಲನೇ ವಾಚನ: ಸಂಖ್ಯಾಕಾಂಡ 21:4-9 ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು....