02.09.2026 - ನೀವು ದೇವರ ಪುತ್ರ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 3:1-9


ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.  ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ. ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ? ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು? ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ. ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು. ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು. ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ. ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.

ಕೀರ್ತನೆ: 33:12-13, 14-15, 20-21

ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ

1.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|

ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ!||

ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ|

ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ||

ಶ್ಲೋಕ


2.  ಸ್ಥಾವರ ಸಿಂಹಾಸನದಿಂದ ನೋಡುತಿಹನು|

ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು||

ಅವರೆಲ್ಲರ ಹೃದಯಗಳನ್ನು ನಿರ್ಮಿಸಿದಾತನವನು ಅವರವರ  ಕೃತ್ಯಗಳನು ಪರೀಕ್ಷಿಸುತಿಹನು||

ಶ್ಲೋಕ


3.  ಕಾದಿದೆ ಎನ್ನ ಮನ ಪ್ರಭುವಿಗಾಗಿ|

ಆತನಿಹನು ಎನಗೆ ಗುರಾಣಿಯಾಗಿ||

ನೆಮ್ಮದಿಯಿಂದಿದೆ ಎನ್ನ ಮನ ಆತನಲಿ|

ನಂಬಿರುವೆವು ಆತನ ಶ್ರೀ ನಾಮದಲಿ||

ಶ್ಲೋಕ


ಘೋಷಣೆ

(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.

ಬೋಧಿನೆನಗೆ  ಪ್ರಭೂ,  ನಿನ್ನ  ಮಾರ್ಗವನು | ಶತ್ರುರಹಿತ  ಹಾದಿಯಲಿ  ನಡೆಸು  ಎನ್ನನು ||

ಅಲ್ಲೆಲೂಯ.

ಶುಭಸಂದೇಶ: ಲೂಕ 4:38-44

ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು. ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು. ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.  ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ. ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.  ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.  ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.

01.09.2026 - ಇಂದಿನ ಬೈಬಲ್ ವಾಚನ | ಎಂಥಾ ಮಾತುಗಳಿವು, ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 2:10-16


ಸಹೋದರರೇ, ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.  ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.  ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ. ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.  ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.  ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.  “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.

ಕೀರ್ತನೆ: 145:8-9, 10-11, 12-13, 13-14

ಶ್ಲೋಕ: ಪ್ರಭುವಿನ ಮಾರ್ಗ ಧರ್ಮಸಮ್ಮತ

1.  ಪ್ರಭು, ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

2.  ಪ್ರಭೂ, ನಿನ್ನ ಸ್ತುತಿಪುದು ಸೃಷ್ಟಿಯೆಲ್ಲವೂ|
ಕೊಂಡಾಡುವುದು ನಿನ್ನನ್ನು ಭಕ್ತಸಮೂಹವು|
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು||
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು|
ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು|
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಮಹಿಮೆ ಪ್ರಭಾವವನು||
ಶ್ಲೋಕ

3.  ಶಾಶ್ವತವಾದುದು ನಿನ್ನ ರಾಜ್ಯವು|
ಇರುವುದೆಂದಿಗೂ ನಿನ್ನ ಆಳ್ವಿಕೆಯು||
ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು|
ನಡೆಯಲಿ ಆತನು ಸದಾ ಪ್ರೀತಿಮಯನು||
ಶ್ಲೋಕ

ಘೋಷಣೆ:    (ಕೀರ್ತನೆ 25: 4)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ನೀನೊಪ್ಪುವ  ಪಥದಲ್ಲಿ  ನಾ  ನಡೆಯ  ಕಲಿಸು ||
ಅಲ್ಲೆಲೂಯ.

ಶುಭಸಂದೇಶ: ಲೂಕ 4:31-37


ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.  ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು. ದುಷ್ಟ ದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು.  ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.  ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.  ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು. ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.



31.08.2026 - ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ

 ಮೊದಲನೇ ವಾಚನ: ಕೊರಿಂಥಿಯರಿಗೆ   2:1-5



ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ. ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ. ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ. ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಂತೆಯೇ, ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

ಕೀರ್ತನೆ: 119:97, 98, 99, 100, 101, 102

ಶ್ಲೋಕ: ಪ್ರಭೂ, ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ

1.  ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ|
ನಾನದರಲೇ ದಿನವೆಲ್ಲ ಧ್ಯಾನಮಯ||
ನಿನ್ನಾಜ್ಞೆಗಳು ಸದಾ ನನ್ನೊಂದಿಗಿರುವುದರಿಂದ|
ನಾನಧಿಕ ಬುದ್ಧಿವಂತ ನನ್ನ ಶತ್ರುಗಳಿಗಿಂತ||
ಶ್ಲೋಕ

2.  ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ|
ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ||  ನಿನ್ನ ನಿಯಮಗಳನ್ನು ಕೈಗೊಂಡುದರಿಂದ|
ನಾನಧಿಕ ವಿವೇಕಿ ಗುರುಹಿರಿಯರಿಗಿಂತ||
ಶ್ಲೋಕ

3.  ನಿನ್ನ ವಾಕ್ಯವನ್ನು ಅನುಸರಿಸುವ ಧೈಯದಿಂದ|
ನನ್ನ ಹೆಜ್ಜೆಗಳನ್ನು ತಡೆದೆನು ದುರ್ಮಾರ್ಗದಿಂದ||
ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ||
ನೀನೇ ನನಗದರ ಬೋಧನೆ ಮಾಡಿದ್ದರಿಂದ||
ಶ್ಲೋಕ

ಘೋಷಣೆ
(ಕೀರ್ತನೆ 19: 8)

ಅಲ್ಲೆಲೂಯ, ಅಲ್ಲೆಲೂಯ.
ಪ್ರಭುವಿನ  ನಿಯಮ  ನೀತಿಬದ್ಧ; ಮನಸ್ಸಿಗದು  ಗ್ರಹಿಕೆ. | ಪ್ರಭುವಿನ  ಕಟ್ಟಳೆ  ಪರಿಶುದ್ಧy; ಕಣ್ಣಿಗದು  ದೀವಿಗೆ. ||
ಅಲ್ಲೆಲೂಯ.




ಶುಭಸಂದೇಶ: ಲೂಕ 4:16-30


ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,  ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.  ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.  ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.  ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.  ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.  ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು.  ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು. ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.  ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.

30.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

 ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:7-9



ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ. ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ. ‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.

ಕೀರ್ತನೆ: 63:2, 3-4, 5-6, 8-9

ಕೀರ್ತನೆ                 63:1-8

ಶ್ಲೋಕ:  ದೇವಾ,  ನಿನಗಾಗಿ  ಎನ್ನ  ಮನ  ಕಾದಿದೆ |

1.  ದೇವಾ,  ನೀಯೆನ್ನ  ದೇವ,  ನಿನಗಾಗಿ  ನಾ  ಕಾದಿರುವೆ|
ನಿರ್ಜಲ  ಮರುಭೂಮಿಯಲ್ಲಿ  ನೀರಿಗಾಗಿ  ಹಾತೊರೆವಂತೆ|
ನಿನಗೋಸ್ಕರ  ಎನ್ನ  ತನು  ಸೊರಗಿದೆ,  ಮನ  ಬಾಯಾರಿದೆ||

2.  ನಿನ್ನ  ಮಂದಿರದಲಿ  ನನಗಾದ  ದರ್ಶನದಲಿ|
ನಿನ್ನ  ಶಕ್ತಿ  ಪ್ರತಿಭೆಯನ್ನು  ಕಂಡಿರುವೆನಲ್ಲಿ||
ಪ್ರಾಣಕ್ಕಿಂತಲೂ  ಮಿಗಿಲಾದುದು  ನಿನ್ನಚಲ  ಪ್ರೀತಿ|
ಎಡೆಬಿಡದೆ  ಮಾಳ್ವದು  ನನ್ನೀ  ತುಟಿ  ನಿನ್ನ  ಸ್ತುತಿ||

3.  ನಿನ್ನ  ಸ್ತುತಿಸುವೆ  ಜೀವಮಾನ  ಪರಿಯಂತ|
ಕೈಮುಗಿವೆ  ನಿನ್ನ  ನಾಮದ  ಸ್ಮರಣಾರ್ಥ||
ಮೃಷ್ಟಾನ್ನ  ತಿಂದಂತೆ  ಎನ್ನ  ಮನ  ಸಂತೃಪ್ತ|
ಸಂಭ್ರಮದಿಂದ  ನಿನ್ನ  ಹೊಗಳುವುದು ಬಾಯ್ತುಂಬ||

4.  ನನಗೆ  ನೀನು  ನಿರಂತರದ  ಸಹಾಯಕ|
ನಿನ್ನ  ರೆಕ್ಕೆಗಳಡಿ  ನಾ  ಸುಖಿ  ಗಾಯಕ||
ನನ್ನಾತ್ಮ  ನಿನಗಾತುಕೊಂಡಿದೆ|
ನಿನ್ನ  ಬಲಗೈ  ನನಗಿಂಬಾಗಿದೆ||

ಎರಡನೇ ವಾಚನ: ರೋಮನರಿಗೆ 12:1-2


ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ. 2ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಶುಭಸಂದೇಶ: ಮತ್ತಾಯ 16:21-27


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.  ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು. ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು. ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.  ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?  ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

 ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ


ಮೊದಲನೇ ವಾಚನ: ಯೆರೆಮಿಯ: 1: 17-19

ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ. ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ. ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

ಕೀರ್ತನೆ: 96: 71: 1-2, 3-4,5-6, 15, 17

ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು.

1.  ಆಶ್ರಯಕೋರಿ ಹೇ ಪ್ರಭೂ, ನಾ ಬಂದಿರುವೆ|
ಆಶಾಭಂಗವಾಗದಿರಲೆಂದು ನಾ ಬೇಡುವೆ||
ಸತ್ಯಸ್ವರೂಪನೇ, ನನ್ನ ಬಿಡಿಸಿ ರಕ್ಷಿಸಯ್ಯಾ|
ನನಗೆ ಕಿವಿಗೊಟ್ಟು ಪ್ರಭೂ ನನ್ನನುದ್ದರಿಸಯ್ಯಾ||
ಶ್ಲೋಕ

2.  ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು|
ನಿನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು||
ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ|
ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ||
ಶ್ಲೋಕ

3.  ಸ್ವಾಮಿದೇವಾ, ನೀನೇ ನನ್ನ ಭರವಸೆ|
ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ||
ಹುಟ್ಟಿನಿಂದಲೇ ನಾ ನಿನಗಂಟಿಕೊಂಡಿರುವೆನಯ್ಯಾ|
ಗರ್ಭದಿಂದಲೇ ನೀ ಎನ್ನನು ಕರೆದುತಂದೆಯಯ್ಯಾ|
ನಿರಂತರವೂ ನಿನ್ನನು ಕೊಂಡಾತ್ತಿರುವೆನಯ್ಯಾ||
ಶ್ಲೋಕ

4.  ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು|
ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು||
ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ?|
ನಿನ್ನ ಅದ್ಭುತ ಕಾರ್ಯಗಳನೆಂದಿಗೂ ನಾ  ಘೋಷಿಸುತ್ತಿರುವೆ||
ಶ್ಲೋಕ

ಘೋಷಣೆ:    ಮತ್ತಾಯ 5: 10

ಅಲ್ಲೆಲೂಯ, ಅಲ್ಲೆಲೂಯ.
ನ್ಯಾಯನೀತಿಯ  ನಿಮಿತ್ತ  ಹಿಂಸೆಯನ್ನು  ತಾಳುವವರು  ಭಾಗ್ಯವಂತರು| ಸ್ವರ್ಗಸಾಮ್ರಾಜ್ಯ  ಅವರದು||
ಅಲ್ಲೆಲೂಯ.




ಶುಭಸಂದೇಶ: ಮಾರ್ಕ: 6: 17-29

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತಾ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮ ಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು "ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ," ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತಾ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗು ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಉಟ್ಟು ಹಬ್ಬದ ದಿನಾಚರಣೆಯಂದು, ಆಸ್ತಾನಿಕರಿಗೂ ಸೇನಾದಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣ ಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನು ಅವರ ಜೊತೆಯಲ್ಲಿ ಭೋಜನಕ್ಕೆ ಕುಳಿತ್ತಿದ್ದ, ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಹಾಗ ಅರಸ ಹೆರೋದನು ಅವಳಿಗೆ, "ನಿನಗೆ ಏನು ಬೇಕಾದರು ಕೇಳು ಕೊಡುತ್ತೇನೆ," ಎಂದನು. "ನೀನು ಕೇಳಿಕೊಂಡರು ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ," ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, "ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?" ಎಂದು ವಿಚಾರಿಸಿದಳು. "ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು," ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, "ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ’ ಇದೇ ನನ್ನ ಬೇಡಿಕೆ," ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತಾ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ನೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದು ಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25



ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು. ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ. “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ? ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ? ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.  ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.  ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.  ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಕೀರ್ತನೆ: 33:1-2, 4-5, 10, 11

ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.  ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.  ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.  ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.  ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

27.08.2026 - ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ

 ಮೊದಲನೆಯ ವಾಚನ: 1 ಥೆಸಲೋನಿಯರಿಗೆ 3:7-13



ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ. ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ. ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ದಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ದಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ, ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನಾರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವು ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಕೀರ್ತನೆ 90:3-4, 12-13, 14-17
ಶ್ಲೋಕ: ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ.

ಇಳೆಯ ಮಾನವರನು ನೀ ಮಣ್ಣು ಪಾಲಾಗಿಸುತಿಹೆ,
' ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ ' ಎನ್ನುತಿಹೆ,,
ನಿನ್ನ ದೃಷ್ಟಿಯಲಿ ಪ್ರಭೂ, ಸಹಸ್ರ ವರುಷ,
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ,,

ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು,
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು,
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ?,
ನಿನ್ನೀ ಸೇವಕರ ಮೇಲಿರಲಿ ಮರುಕ,,

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ,
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ,,
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ,
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ,,

ಶುಭಸಂದೇಶ: ಮತ್ತಾಯ 24:42-51


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು ? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ' ನನ್ನ ಯಜಮಾನ ತಡಮಾಡುವನು ' ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು."

02.09.2026 - ನೀವು ದೇವರ ಪುತ್ರ

  ಮೊದಲನೇ ವಾಚನ: 1 ಕೊರಿಂಥಿಯರಿಗೆ 3:1-9 ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇ...