ಪ್ರೇಷಿತರ ಕಾರ್ಯಕಲಾಪಗಳಿಂದ ಇಂದಿನ ವಾಚನ 13: 13-25
ಪೌಲ ಮತ್ತು ಸಂಗಡಿಗರು ಪಾಫೂಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು. ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು. ಧರ್ಮಶಾಸ್ತ್ರ ಮತ್ತು ಪವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, "ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ," ಎಂದು ಕೇಳಿಕೊಂಡರು. ಆಗ ಪೌಲನು ಎದ್ದುನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: "ಇಸ್ರಯೇಲ್ ಬಾಂಧವರೇ, ಹಾಗು ನಿಜ ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ: ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು. ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು. ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ಥ್ಯವಾಗಿ ಕೊಟ್ಟರು. ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು. ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಲ್ವತ್ತು ವರ್ಷ ಆಳಿದನು. ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, "ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು," ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು. ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸು. ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದನು. ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದಂತೆ ಜನರಿಗೆ, "ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ'," ಎಂದನು.
ಕೀರ್ತನೆ:
89: 1-2, 20-21, 24, 26, v. l
ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನ ಅಚಲ ಪ್ರೀತಿಯನು.
1. ಪ್ರಭೂ, ಕೀರ್ತಿಸುವೆನು ಸದಾ ನಿನ್ನ ಅಚಲ ಪ್ರೀತಿಯನು|
ಸಾರುವೆನು ತಲೆತಲಾಂತರಕು ನಿನ್ನ ಸತ್ಯತೆಯನು||
ನಿನ್ನಚಲ ಪ್ರೀತಿ ಪ್ರಭೂ, ನನಗೆ ಶಾಶ್ವತ ಸಿದ್ದ|
ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ||
ಶ್ಲೋಕ
2. ನನ್ನ ದಾಸ ದಾವೀದನನು ಗುರುತಿಸಿರುವೆ|
ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ||
ನನ್ನ ಕೈಯ ಆಸರೆ ಅವನಿಗಿದೆ ಸತತ|
ನನ್ನ ಭುಜಬಲವು ಅವನಿಗೆ ಶಕ್ತಿಯುತ||
ಶ್ಲೋಕ
3. ನನ್ನ ಪ್ರೀತಿ ಸತ್ಯತೆಗಳು ಇರುವುದು ಅವನೊಂದಿಗೆ|
ನನ್ನ ನಾಮ ನಿಮಿತ್ತ ಕೋಡು ಮೂಡುವುದವನಿಗೆ||
ನನಗೆ ಪಿತ, ದೈವ, ದುರ್ಗ, ಉದ್ಧಾರಕ ನೀನು|
ಇಂತೆಂದೇ ನನ್ನನ್ನು ಸಂಬೋಧಿಸುವನವನು||
ಶ್ಲೋಕ
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಪ್ರಭು ಕ್ರಿಸ್ತರೇ, ನೀವೇ ನಂಬಲರ್ಹವಾದ ಸಾಕ್ಷಿಯೂ, ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ | ನಮ್ಮನ್ನು ಪ್ರೀತಿಸುವವರೂ, ನಿಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ ಆಗಿದ್ದೀರಿ.
ಅಲ್ಲೆಲೂಯ!
ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 13: 16-20
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ. ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು! ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ "ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು" ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ. ಅದು ಈಡೇರುವಾಗ "ಇರುವಾತನು ನಾನೇ" ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ. ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ."











