25.05.2026 - ಅಮ್ಮಾ, ಇಗೋ, ನಿನ್ನ ಮಗ

 ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 1: 12-14



ಯೇಸು ಸ್ವರ್ಗಾರೋಹಣವಾದ ನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊವಿೂಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು. ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು. ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.

ಲೂಕ  1: 47-55  ( ಕೀರ್ತನೆ  87: 1-3, 5-7)

ಶ್ಲೋಕ:  ಏಕೆನೆ  ಮಾಡಿಹನೆನಗೆ  ಸರ್ವಶಕ್ತನು  ಮಹತ್ಕಾರ್ಯ |  ನಿಜಕ್ಕೂ  ಆತನ  ನಾಮಧೇಯ  ಪರಮ  ಪೂಜ್ಯ ||

1.  ಎನ್ನ  ಮನ  ಮಾಡುತ್ತಿದೆ  ಸರ್ವೇಶ್ವರನ  ಸ್ತುತಿ|
ಉಲ್ಲಾಸಿಸುತ್ತಿದೆ  ಮುಕ್ತಿದಾತ  ದೇವನಲಿ||
ಶ್ಲೋಕ

2.  ತನ್ನ  ದಾಸಿಯ  ದೀನತೆಯನ್ನು  ನೆನಪಿಗೆ  ತಂದುಕೊಂಡನಾತ|
ಧನ್ಯಳೆಂದು  ಹೊಗಳುವರೆನ್ನನು  ಇಂದಿನಿಂದ  ಸರ್ವ  ಜನಾಂಗ|
ಏಕೆನೆ  ಮಾಡಿಹನೆನಗೆ  ಮಹತ್ಕಾರ್ಯ|
ನಿಜಕ್ಕೂ  ಆತನ  ನಾಮಧೇಯ  ಪರಮ  ಪೂಜ್ಯ||
ಶ್ಲೋಕ

3.  ಆತನಲ್ಲಿ  ಭಯಭಕ್ತಿಯುಳ್ಳವರಿಗೆ|  ಆತನ  ಪ್ರೀತಿ  ತಲತಲಾಂತರದವರೆಗೆ|| ಗರ್ವ  ಹೃದಯಿಗಳನಾತ  ಚದುರಿಸಿರುವನು|
ಪ್ರದರ್ಶಿಸಿರುವನು  ತನ್ನ  ಬಾಹುಬಲವನು||
ಶ್ಲೋಕ

4.  ಇಳಿಸಿಹನು  ಗದ್ದುಗೆಯಿಂದ  ಘನಾಧಿಪತಿಗಳನು|
ಏರಿಸಿರುವನು  ಉನ್ನತಿಗೆ  ದೀನರನು||
ತೃಪ್ತಿಪಡಿಸಿರುವನಾತ  ಹಸಿದವರನು  ಮೃಷ್ಟಾನ್ನದಿ|
ಹೊರದೂಡಿರುವನು  ಸಿರಿವಂತರನು  ಬರಿಗೈಯಲಿ||
ಶ್ಲೋಕ

5.  ನೆರವಾದನು  ತನ್ನ  ದಾಸ  ಇಸ್ರಯೇಲನಿಗೆ|
ಪೂರ್ವಜರಿಗಿತ್ತ  ವಾಗ್ಧನದ  ಮೇರೆಗೆ||
ಮರೆಯಲಿಲ್ಲ  ಆತ  ಕರುಣೆ  ತೋರಲು  ಅಬ್ರಹಾಮನಿಗೆ|
ಅವನ  ಸಂತತಿಗೆ,  ಯುಗಯುಗಾಂತರದವರೆಗೆ||
ಶ್ಲೋಕ

ಶುಭಸಂದೇಶ: ಯೊವಾನ್ನ 19: 25-34


ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು. ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ತಮ್ಮ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಇದಾದ ಮೇಲೆ ಯೇಸುಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು. ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು. ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು. ತಾವು ಇರಿದವನನ್ನೇ ನಿರೀಕ್ಷಿಸುವರು ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು. ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು. ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ. ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದು ಬಂದವು.

24.05.2026 - “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು.

 ಪಂಚಾಶತ್ತಮ ಮಹೋತ್ಸವ


ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:1-11


ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು. ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು. ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು. ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು. ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ? ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ, ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್ನಿಂದ ಬಂದಿದ್ದಾರೆ. ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.

ಕೀರ್ತನೆ: 104:1, 24, 29-30, 31, 34

ಶ್ಲೋಕ: ನೀ ಉಸಿರನ್ನೂದಲು ಹೊಸದಾಗುವುವು, ಪುನಶ್ಚೇತನಗೊಳುವುದು ಜಗವೆಲ್ಲವು

ಎರಡನೇ ವಾಚನ: 1 ಕೊರಿಂಥಿಯರಿಗೆ 12:3-7, 12-13

ಸಹೊದರರೇ, ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು. ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ. ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ. ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ. ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ. ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.

ಶುಭಸಂದೇಶ ಯೊವಾನ್ನ 20:19-23

ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.

23.05.2026 - ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 28:16-20, 30-31



ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು. ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು. ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು. ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶೀಯರ ಮೇಲೆ ದೋಷಾರೋಪಣೆ ಮಾಡಬೇಕೆಂದು ನಾನು ಹಾಗೆ ಮಾಡಲಿಲ್ಲ. ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು. ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು. ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.

ಕೀರ್ತನೆ: 11:4, 5, 7

ಶ್ಲೋಕ: ಪ್ರಭೂ, ಸತ್ಪುರುಷನು ಸೇರುವನು ನಿಮ್ಮ ಸನ್ನಿಧಿಯನು

1.  ಪ್ರಭು  ಪ್ರಸನ್ನವಿರುವನು  ಪವಿತ್ರಾಲಯದಲಿ|
ಸ್ಥಾಪಿಸಿಹನು  ಸಿಂಹಾಸನವನು  ಪರದಲಿ||
ನರಮಾನವರನು  ನೋಡುತಿಹನು  ನೇತ್ರಗಳಲಿ|
ಪರೀಕ್ಷಿಸುತಿಹನು  ಅವರನು  ಸೂಕ್ಷ್ಯ  ರೀತಿಯಲಿ||
ಶ್ಲೋಕ

2.  ಪರೀಕ್ಷಿಸುವನು  ಪ್ರಭು  ಸಜ್ಜನ  ದುರ್ಜನರನು|
ದ್ವೇಷಿಸುವನು  ಮನಸಾರೆ  ಹಿಂಸಾತ್ಮಕರನು||
ಶ್ಲೋಕ

3.  ಸತ್ಯಸ್ವರೂಪನಾದ  ಪ್ರಭು  ಸತ್ಯ  ಪ್ರಿಯನು|
ಸತ್ಪುರುಷನು  ಸೇರುವನು  ಆತನ  ಸನ್ನಿಧಿಯನು||
ಶ್ಲೋಕ

ಘೋಷಣೆ                ಯೊವಾನ್ನ 16: 7, 13

ಅಲ್ಲೆಲೂಯ, ಅಲ್ಲೆಲೂಯ!
ನಾನು ಪವಿತ್ರಾತ್ಮರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುವೆನು|ಸತ್ಯಸ್ವರೂಪಿಯಾದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು ||
ಅಲ್ಲೆಲೂಯ!


ಶುಭಸಂದೇಶ: ಯೊವಾನ್ನ 21:20-25


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.) ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು. ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು. ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ. ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು. ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

22.05.2026 - ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21


ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು. ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ. ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯ ಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು. ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ. ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ. ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ. ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು. ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ. ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು. 

ಕೀರ್ತನೆ: 103:1-2, 11-12, 19-20

ಶ್ಲೋಕ: ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ನನ್ನ ಅಂತರಂಗವೇ, ಭಜಿಸು ಆತನನು I
ನೆನೆ ಆತನ ಪರಮಪಾವನ ನಾಮವನು II
ಭಜಿಸು ನನ್ನ ಮನವೇ, ಭಜಿಸು ಪ್ರಭುವನು I
ಮರೆಯದಿರು ಆತನ ಉಪಕಾರಗಳೊಂದನು II

ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I
ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II
ಪಡುವಣದಿಂದ ಮೂಡಣವೆಷ್ಟೋ ದೂರ I
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II

ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I
ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II
ಭಜಿಸಿರಿ ಪ್ರಭುವನು ದೇವದೂತರುಗಳೇ 
ಆತನ ಆಣತಿ ಪಾಲಿಪ ಪರಾಕ್ರಮಿಗಳೇ I

ಶುಭಸಂದೇಶ: ಯೊವಾನ್ನ 21:15-19


ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು; ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು. ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.

21.05.2026 - ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು  22:30; 23:6-11



ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.

ಕೀರ್ತನೆ: 16:1-2, 5, 7-8, 9-10, 11

ಶ್ಲೋಕ: ನೀಡು ದೇವಾ ರಕ್ಷಣೆಯನು ನಾ ನಿನಗೆ ಶರಣಾಗತನು


ನೀಡು ದೇವಾ ರಕ್ಷಣೆಯನು I
ನಾ ನಿನಗೆ ಶರಣಾಗತನು II
ನೀನೇ ನನ್ನೊಡೆಯ"ನೆಂದು ನಾ ನುಡಿದೆ I
ನಿನ್ನ ಹೊರತು ನನಗಿಲ್ಲ ಒಳಿತುಎಂದೇ II

ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I
ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II

ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I
ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II

ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I
ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I
ಬಿಟ್ಟುಕೊಡುವುದಿಲ್ಲ ನಿನ್ನ ಭಕ್ತನನು ಪಾತಾಳಕೆ II

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I
ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II

ಶುಭಸಂದೇಶ: ಯೊವಾನ್ನ 17:20-26


ಯೇಸುಸ್ವಾಮಿ ಆಕಾಶದತ್ತ ಕಣ್ಣೆತ್ತಿ ಹೀಗೆಂದು ಪ್ರಾರ್ಥಿಸಿದರು: “ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ. ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ. ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು. ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ. ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು.”

19.05.2026 - ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20:17-27


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು. ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ. ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು. ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ. ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು. ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ. ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ. ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ. ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ. ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ. 

ಕೀರ್ತನೆ: 68:10-11, 20-21

ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!

ವಸತಿಯಾಯಿತದು ನಿನ್ನ ಜನಮಂದೆಗೆ I
ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II
ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I
ಹರಡಿತು ಜನಸ್ತೋಮ ಸಂದೇಶವನು II

ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I
ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II
ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I
ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II

ಶುಭಸಂದೇಶ: ಯೊವಾನ್ನ 17:1-11


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ. ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ. ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ. “ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. 

18.05.2026 - ನಿಮಗೆ ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 19:1-8


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು, “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು. ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು. ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು. ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು. ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು. ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು. ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.

ಕೀರ್ತನೆ: 68:2-3, 4-5, 6-7

ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!

ಶುಭಸಂದೇಶ: ಯೊವಾನ್ನ 16:29-33



ಶಿಷ್ಯರು ಯೇಸುವಿಗೆ, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ. ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು. ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ? ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ನಿಮಗೆ ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.

25.05.2026 - ಅಮ್ಮಾ, ಇಗೋ, ನಿನ್ನ ಮಗ

  ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 1: 12-14 ಯೇಸು ಸ್ವರ್ಗಾರೋಹಣವಾದ ನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊವಿೂಟರು ದೂರದಲ್...