28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25



ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು. ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ. “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ? ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ? ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.  ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.  ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.  ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.

ಕೀರ್ತನೆ: 33:1-2, 4-5, 10, 11

ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು

ಶುಭಸಂದೇಶ: ಮತ್ತಾಯ 25:1-13


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.  ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.  ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.  ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.  ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು."

27.08.2026 - ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ

 ಮೊದಲನೆಯ ವಾಚನ: 1 ಥೆಸಲೋನಿಯರಿಗೆ 3:7-13



ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ. ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ. ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ. ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ದಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ದಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ, ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನಾರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವು ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಕೀರ್ತನೆ 90:3-4, 12-13, 14-17
ಶ್ಲೋಕ: ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ.

ಇಳೆಯ ಮಾನವರನು ನೀ ಮಣ್ಣು ಪಾಲಾಗಿಸುತಿಹೆ,
' ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ ' ಎನ್ನುತಿಹೆ,,
ನಿನ್ನ ದೃಷ್ಟಿಯಲಿ ಪ್ರಭೂ, ಸಹಸ್ರ ವರುಷ,
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ,,

ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು,
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು,
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ?,
ನಿನ್ನೀ ಸೇವಕರ ಮೇಲಿರಲಿ ಮರುಕ,,

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ,
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ,,
ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ,
ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ,,

ಶುಭಸಂದೇಶ: ಮತ್ತಾಯ 24:42-51


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು. ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು ? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ. ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ' ನನ್ನ ಯಜಮಾನ ತಡಮಾಡುವನು ' ಎಂದು ನೆನೆಸಿಕೊಂಡು, ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದು ಕುಡಿಯಲಾರಂಭಿಸಿದರೆ, ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು."

26.08.2026 - ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ

 ಮೊದಲನೇ ವಾಚನ: 2 ಥೆಸಲೋನಿಯರಿಗೆ 3:6-10, 16-18


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ. ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ. ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ. ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು. ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು. ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ! ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು! ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!

ಕೀರ್ತನೆ: 128:1-2, 4-5

ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು

ಶುಭಸಂದೇಶ: ಮತ್ತಾಯ 23:27-32


ಯೇಸು ವೇದಪಾರಗರನ್ನೂ ಫರಿಸಾಯರನ್ನೂ ಉದ್ದೇಶಿಸಿ ಹೀಗೆಂದರು: “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರ ನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.  ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು. “ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.  ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.  ಹೀಗೆ ಪ್ರವಾದಿಗಳನ್ನು ಕೊಲೆ ಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ. ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ."

25.08.2026 - ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯ ನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ

 ಮೊದಲನೇ ವಾಚನ: 2 ಥೆಸಲೋನಿಯರಿಗೆ 2:1-3, 14-16


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ: ಪ್ರಭುವಿನ ದಿನವು ಬಂದೇ ಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ. ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪ ಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು. ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.  ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.  ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.

ಕೀರ್ತನೆ: 96:10, 11-12, 13

ಶ್ಲೋಕ: ಪ್ರಭು ಧರಗೆ ನ್ಯಾಯತೀರಿಸಲು ಬಂದೇಬರುವನು ಖರೆಯಾಗಿ

1.  ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ಕದಲದ ಸ್ಥಿರತೆಯನು ಇತ್ತಿಹನು ಧರೆಗೆ|
ನ್ಯಾಯವಾದ ತೀರ್ಪು ಕೊಡುವನು  ಜನಾಂಗಕೆ||
ಶ್ಲೋಕ

2.  ಹರ್ಷಿಸಲಿ  ಆಕಾಶವು, ಸಂತೋಷಿಸಲಿ ಭೂಲೋಕವು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ  ಕಾಡಿನ ಫಲವೃಕ್ಷಗಳು||
ಶ್ಲೋಕ

3.  ಪ್ರಭು ಧರೆಗೆ ನ್ಯಾಯತೀರಿಸಲು ಬಂದೇಬರುವನು ಖಂಡಿತವಾಗಿ|
ಜಗಕು, ಜನತೆಗು ತೀರ್ಪಿಡುವನು ನೀತಿ ನಿಯಮಾನುಸಾರವಾಗಿ||
ಶ್ಲೋಕ

🌻✝️🌻

ಘೋಷಣೆ
(ಕೀರ್ತನೆ 119: 27)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ನಿಯಮಗಳ  ಪಥವನೆನಗೆ  ತಿಳಿಯಪಡಿಸಯ್ಯಾ | ನಿನ್ನ  ಅದ್ಭುತ  ಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 23:23-26


ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನಸಮೂಹವನ್ನೂ ಉದ್ದೇಶಿಸಿ, "ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.  ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.  ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ.  ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರ ಭಾಗವೂ ಶುಚಿಯಾಗುವುದು." ಎಂದರು.

24.08.2026 - ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ

  ಮೊದಲನೇ ವಾಚನ: ಪ್ರಕಟನೆ 21:9-14



ದೇವದೂತರುಗಳಲ್ಲಿ  ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.  ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;  ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.  ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.  ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.  ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಕೀರ್ತನೆ: 145:10-11, 12-13, 17-18

ಶ್ಲೋಕ: ಪ್ರಭೂ, ಭಕ್ತಸಮೂಹವು ಪ್ರಸಿದ್ಧಪಡಿಸುವುದು ನಿನ್ನ ರಾಜ್ಯದ ಮಹತ್ವವನು

ಶುಭಸಂದೇಶ: ಯೊವಾನ್ನ 1:45-51


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.  ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.  ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.  ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.  ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.  ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

23.08.2026 - ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 22:15, 19-23


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು : ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು. “ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.  ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.  ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.  ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು."

ಕೀರ್ತನೆ: 138:1-2, 2-3, 6, 8

ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು

1.  ಹೃದಯಪೂರ್ವಕ ವಂದನೆ ಪ್ರಭೂ, ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|

2.  ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||
ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು|
ಅಧಿಕಮಾಡಿದೆ ನೀನು ನನ್ಮಾತ್ಮ ಶಕ್ತಿಯನು||
ಶ್ಲೋಕ

3.  ಉನ್ನತವಾದರೂ ಗಮನಿಸುವನು ಪ್ರಭು ದೀನರನು|
ದೂರದಿಂದಲೇ ಗುರುತಿಸುವಾತನು ಗರ್ವಿಷ್ಠರನು||
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು|
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು||

ಎರಡನೇ ವಾಚನ: ರೋಮನರಿಗೆ 11:33-36

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ! “ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು? ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?” ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಶುಭಸಂದೇಶ: ಮತ್ತಾಯ 16:13-20


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.  ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.  ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.  ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.  ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.  ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.  ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”  ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

21.08.2026 - ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 37:1-14



ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು. 2ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ: ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.” ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು. ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ. ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು. ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು. ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ. ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಕೀರ್ತನೆ: 107:2-3, 4-5, 6-7, 8-9

ಶ್ಲೋಕ: ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು

ಶುಭಸಂದೇಶ: ಮತ್ತಾಯ 22:34-40


ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?” ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’ ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ. ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...