20.07.2026 - ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ

 ಮೊದಲನೇ ವಾಚನ: ಮೀಕ 6:1-4, 6-8


ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ. “ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.” ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು. ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ. ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ? ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ? ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.

ಕೀರ್ತನೆ: 50:5-6, 8-9, 16-17, 21, 23

ಶ್ಲೋಕ: ಸನ್ಮಾರ್ಗಿಗೆ ತೋರುವೆ ಪರಮ ಜೀವೋದ್ದಾರವನು

ಶುಭಸಂದೇಶ: ಮತ್ತಾಯ12:38-42


ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

19.07.2026 - ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು

 ಮೊದಲನೇ ವಾಚನ: ಸುಜ್ಞಾನಗ್ರಂಥ 12:13, 16-19


ಸರ್ವಜನರ ಸುಖ ಕೋರುವ ದೇವರು ನೀವಲ್ಲದೆ ಇನ್ನಾರೂ ಇಲ್ಲ. ನೀವು ವಿಧಿಸಿದ ದಂಡನೆ ಅನ್ಯಾಯವಲ್ಲ ಎಂದು ನೀವು ತೋರಿಸಬೇಕಾಗಿಲ್ಲ. ನಿಮ್ಮ ಶಕ್ತಿಯೇ ನ್ಯಾಯನೀತಿಗೆ ಆಧಾರ ನಿಮ್ಮ ಸಾರ್ವಭೌಮತ್ವವೇ ಎಲ್ಲ ಸಹನೆಗೆ ಮೂಲ ಕಾರಣ. ನೀವು ಸರ್ವಶಕ್ತರೆಂದು ಜನರು ನಂಬದಿರುವಾಗ ನೀವು ಶಕ್ತಿಯನ್ನು ತೋರಿಸುತ್ತೀರಿ; ಅದನು ಬಲ್ಲವರೊಂದಿಗೆ ವರ್ತಿಸುವಾಗ ಅವರ ಉದ್ಧಟತನವನ್ನು ಖಂಡಿಸುತ್ತೀರಿ. ಶಕ್ತಿಯಲ್ಲಿ ನೀವೇ ಸಾರ್ವಭೌಮ ಎಂದೇ, ತೀರ್ಪಿಡುತ್ತೀರಿ ಸಾಮ್ಯತೆಯಿಂದ ನಮ್ಮನ್ನಾಳುತ್ತೀರಿ ಬಹು ತಾಳ್ಮೆಯಿಂದ ನಿಮ್ಮ ಶಕ್ತಿ ನಿಮ್ಮಲ್ಲಿದೆ ಇಚ್ಛಿಸಿದಾಗಲೆಲ್ಲ ಇಂಥ ಕಾರ್ಯಗಳಿಂದ ಸಜ್ಜನನು ಜನಪ್ರಿಯ ನಾಗಿರಲು ಕಲಿಸಿಕೊಟ್ಟಿರುವಿರಿ ಪಾಪಗಳಿಗೆ ಪಶ್ಚಾತ್ತಾಪದ ಅವಕಾಶವಿತ್ತು ನಿಮ್ಮ ಮಕ್ಕಳನು ಭರವಸೆಯುಳ್ಳವರಾಗಿಸಿದಿರಿ.

ಕೀರ್ತನೆ: 86:5-6, 9-10, 15-16

ಶ್ಲೋಕ: ಪ್ರಭೂ, ನೀನು ದಯಾವಂತನು ಕ್ಷಮಿಸುವವನು

ಪ್ರಭು, ನೀನು ದಯಾವಂತನು, ಕ್ಷಮಿಸುವವನು 
ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು 
ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ
ನನ್ನ ವಿಜ್ಞಾಪನೆಗಳ ಕೋರಿಕೆಗೆ. ಶ್ಲೋಕ

ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು 
ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು 
ಪ್ರಭು, ನೀನೊಬ್ಬನೇ ದೇವನು 
ಅದ್ಭುತಶಾಲಿ, ಮಹೋನ್ನತನು. ಶ್ಲೋಕ

ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ
ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ 
ಕಟಾಕ್ಷವಿಟ್ಟು ಕರುಣಿಸೆನ್ನನು. ಶ್ಲೋಕ

ಎರಡನೇ ವಾಚನ: ರೋಮನರಿಗೆ 8:26-2

ಸಹೋದರರೇ, ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.




ಶುಭಸಂದೇಶ: ಮತ್ತಾಯ13:24-43


ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ. ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು. ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು. ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು. ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ. ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.” ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.” ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.” ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು. ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು. ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು. ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!" ಎಂದರು.

18.07.2026 - “ಇಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು

 



ಪ್ರವಾದಿ ಮೀಕನ ಗ್ರಂಥದಿಂದ ವಾಚನ 2 : 1-5

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ. ಇತರರ ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ. ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ : “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತಾನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು. ಆ ದಿನಗಳಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯ ಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ, ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವ ದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋಧಿಸುವರು. ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.

ಕೀರ್ತನೆ 10 : 1-2, 3-4, 7-8,14

ಶ್ಲೋಕ : ಪ್ರಭೂ, ದಲಿತನನು ಮರೆಯದಿರಯ್ಯಾ|

1.  ನನ್ನಿಂದೇಕೆ  ಪ್ರಭೂ,  ಅಷ್ಟು  ದೂರವಿರುವೆ?|
ಕಷ್ಟಕಾಲದಲೇಕೆ  ಕಣ್ಮರೆಯಾಗಿರುವೆ?||
ಸೊಕ್ಕಿನಿಂದ  ಶೋಷಿಸುತಿಹರು  ದಲಿತರನು  ದುರುಳರು|
ಸಿಕ್ಕಿಬೀಳಲಿ  ತಾವೇ  ಒಡ್ಡಿದ  ಉರಿಳಿನೊಳವರು||
ಶ್ಲೋಕ

2.  ಕೇಡಿಗನು  ತನ್ನ  ಮನದಾಶೆಗಾಗಿ  ಹೆಮ್ಮೆಪಡುತಿಹನು|
ಲಾಭಬಡುಕನು  ಪ್ರಭುವನು  ಶಪಿಸಿ  ತಿರಸ್ಕರಿಸುತಿಹನು||
ಸೊಕ್ಕೇರಿದ  ಮುಖದಾತನು  ಪ್ರಭುವನು  ಅರಸುವುದಿಲ್ಲ|
ಅವನ  ಮನದೊಳಿದೊಂದೇ  ಭಾವನೆ: "ದೇವರೇ  ಇಲ್ಲ"! ||
ಶ್ಲೋಕ

3.  ತುಂಬಿದೆ  ಶಾಪಕೋಪ,  ಕುತಂತ್ರ  ಅವನ  ಬಾಯಲಿ|
ಅವಿತಿದೆ  ಪಾಪ  ಅತಿ  ವಿನಾಶ  ನಾಲಿಗೆಯಡಿಯಲಿ||
ಊರು  ಸಂದುಗೊಂದುಗಳಲೆ  ಅವಿತಿದ್ದು| ನಿರ್ಗತಿಕರಿಗಾಗಿ ಅಲ್ಲೇ ಕಾದಿದ್ದು 
ಕೊಲೆಗೈವನು  ಮರೆಯಲ್ಲೇ  ಮೇಲೆಬಿದ್ದು||
ಶ್ಲೋಕ

4.  ಹೌದು  ದೇವಾ,  ನೀ  ವಿಚಾರಿಪವನು;  ದುಃಖದುಗುಡ  ಲೆಕ್ಕಿಸುವವನು|
ತಬ್ಬಲಿಗಳಿಗೆ  ತಂದೆ  ನೀನು,  ನಿರ್ಗತಿಕ  ನಿನಗೆ  ಶರಣಾಗತನು||
ಶ್ಲೋಕ

ಶುಭಸಂದೇಶ ಮತ್ತಾಯ 12:14-21


ಫರಿಸಾಯರು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು. ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನೂ ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆ ಮಾಡಿದರು. ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: ಇಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಮುರಿದ ಜೊಂಡಿನಂತಹ ದುರ್ಬಲರಿಗಿಂತ ದೀನಬಂಧು, ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು, ನ್ಯಾಯನೀತಿಗೆ ಜಯದೊರಕಿಸದೆ ಬಿಡನಿವನು. ನೆನೆಯುವರು ಅನ್ಯ ಜನರೆಲ್ಲರು ಇವನ ನಾಮವನು."

17.07.2026 - ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ

 ಪ್ರವಾದಿ ಯೆಶಾಯನ ಗ್ರಂಥ 38:1-6, 21-22, 7-8


ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆ ಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು. ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು, “ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆ ಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು. ಆಗ ಸರ್ವೇಶ್ವರ ಯೆಶಾಯನಿಗೆ, “ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ. ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.” ಯೆಶಾಯನು ಹಿಜ್ಕೀಯನಿಗೆ, ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕರುವಿನ ಮೇಲೆ ಕಟ್ಟು, ಆಗ ನೀನು ಗುಣ ಹೊಂದುವೆ,” ಎಂದು ಹೇಳಲು ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು. ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ: ಇಗೋ, ಅಹಾಜನು ಕಟ್ಟಿಸಿದ ನೆರಳುಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. 

ಕೀರ್ತನೆ: 38:10, 11, 12, 16

ಶ್ಲೋಕ: ನನ್ನಾತ್ಮವನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ

1.  ನನ್ನ ರೋಗದಲ್ಲಿ  ನಾನು ಇಂತೆಂದುಕೊಂಡೆ:|
ಮಧ್ಯಪ್ರಾಯದಲ್ಲೇ,  ಮೃತ್ಯುಲೋಕವನು ಸಮೀಪಿಸಿರುವೆ|
ನನ್ನ ಆಯುಷ್ಯವನು, ನಾ  ಕಳೆದುಕೊಂಡಿರುವೆ||
ಶ್ಲೋಕ

2.  ಜೀವಲೋಕದಲಿ ಇನ್ನು ದೇವರನು ಕಾಣೆನೆಂದುಕೊಂಡೆ|
ಭೂಲೋಕ ನಿವಾಸಗಳಲಿ ಒಬ್ಬನನ್ನೂ   ನೋಡಲಾರೆನೆಂದುಕೊಂಡೆ|| ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ|
ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ|
ಬೆಳಗು ಬೈಗಿನೊಳಗೆ ನನ್ನ ಆಯುಷ್ಯವನು ನೀ ಮುಗಿಸುತ್ತಿರುವೆನೆಂದು||
ಶ್ಲೋಕ

ಶ್ಲೋಕ
 
3.  ಸರ್ವೇಶ್ವರಾ, ಮಾನವನ ಜೀವನ ಇಂತಿದೆ|
ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ|
ನೀನೀಗ ಗುಣಪಡಿಸು ನಾ ಬಾಳುವೆ||
ಶ್ಲೋಕ


ಘೋಷಣೆ
(ಕೀರ್ತನೆ 119: 135)

ಅಲ್ಲೆಲೂಯ, ಅಲ್ಲೆಲೂಯ.
ತೋರು  ಪ್ರಭೂ,  ನಿನ್ನ ಮುಖದರ್ಶನ ಈ ದಾಸನಿಗೆ| ನೀ  ಕಲಿಸು  ನಿನ್ನ  ನಿಬಂಧನೆಗಳನು  ಎನಗೆ ||
ಅಲ್ಲೆಲೂಯ

ಶುಭಸಂದೇಶ: ಮತ್ತಾಯ 12:1-8


ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು. ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ? ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ? ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ? ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ. ‘ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ. ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.

16.07.2026 - ದುಡಿದು, ಭಾರ ಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 26:7-9, 12, 16-19



ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ. ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು. ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು. ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ. ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ. ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ. ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ. ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.

ಕೀರ್ತನೆ: 102:13-14, 15, 16-18, 19-21

ಶ್ಲೋಕ: ದೃಷ್ಟಿಸಿದನು ಪ್ರಭು ತನ್ನ ಉನ್ನತ ಪವಿತ್ರ ಸ್ಥಾನದಿಂದ

1.  ನೀನಾದರೋ ಪ್ರಭೂ, ಸದಾ ಸಿಂಹಾಸನರೂಢ|
ಮಾಳ್ಪರು ತಲಾತಲಾಂತರಕು ನಿನ್ನ ನಾಮಸ್ಮರಣ||
ಎದ್ದು ಸಿಯೋನಿಗೆ ತೋರು ಸೌಜನ್ಯತೆ|
ಅದಕೆ ದಯೆ ತೋರಿಸುವ ಸಮಯವಿದೇ|
ನಿಯಮಿತ ಕಾಲವಿದೋ ಬಂದು ಬಿಟ್ಟಿದೆ||
ಶ್ಲೋಕ 

2.  ಅದರ ಕಲ್ಲುಗಳು ನಿನ್ನ ಭಕ್ತರಿಗೆ ಪ್ರಿಯ|
ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ||
ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು|
ಭಯಪಡುವರು ನಿನ್ನ ಪ್ರತಾಪಕೆ ಭೂ ರಾಜರುಗಳು||
ಶ್ಲೋಕ

3.  ಏಕೆನೆ ಪುನರುದ್ದರಿಸುವನು ಸಿಯೋನನು|
ಪ್ರತ್ಯಕ್ಷ ಮಾಡುವನಾತ ತನ್ನ ಮಹಿಮೆಯನು||
ತಿರಸ್ಕರಿಸನಾತ ನಿರ್ಗತಿಕರ ಮೊರೆಯನು|
ನೆರವೇರಿಸದೆ ಬಿಡನು ಅವರ   ಕೋರಿಕೆಯನು|

ಶ್ಲೋಕ                     ‍
4.  ಮುಂದಣ ಸಂತತಿಗಿದು ಶಾಸನವಾಗಿಲಿ|| ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ||
ಭೂಲೋಕವನು ವೀಕ್ಷಿಸಿದನು ಪ್ರಭು ಸ್ವರ್ಗದಿಂದ|
ದೃಷ್ಟಿಸಿದನು ತನ್ನ ಉನ್ನತ ಪವಿತ್ರ ಸ್ಥಾನದಿಂದ||
ಆಲಿಸಿದನಾತನು ಬಂಧಿತರ ಗೋಳಾಟವನು|
ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು||
ಶ್ಲೋಕ

ಘೋಷಣೆ
(ಕೀರ್ತನೆ 119: 105)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ವಾಕ್ಯ  ನನಗೆ  ದಾರಿದೀಪ|  ನನ್ನ  ಕಾಲಿನ  ನಡೆಗೆ ಕೈದೀಪ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 11:28-30


ಆ ಸಮಯದಲ್ಲಿ ಯೇಸುಸ್ವಾಮಿ ಜನಸಮೂಹವನ್ನುದ್ದೇಶಿಸಿ: "ದುಡಿದು, ಭಾರ ಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ  ಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.

15.07.2026 - ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ10:5-7, 13-16



ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ. ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ. ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು. ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತು ಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಧಿನಿಕ್ಷೇಪಗಳನ್ನು ಸೂರೆ ಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿ ಬಿಟ್ಟಿದ್ದೇನೆ. ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟು ಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟು ಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕುತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.” ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು! ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.

ಕೀರ್ತನೆ: 94:5-6, 7-8, 9-10, 14-15

ಶ್ಲೋಕ: ಕೈಬಿಡನು ಪ್ರಭು ತನ್ನ ಸ್ವಕೀಯರನು

1.  ನಸುಕಿ ಹಾಕುತಿಹರು ನಿನ್ನ ಪ್ರಜೆಯನು|
ಹಿಂಸಿಸುತಿಹರು ನಿನ್ನ ಸ್ವಕೀಯರನು||
ವಧಿಸುತಿಹರು ವಿಧವೆಯರನು, ಪರದೇಶಿಯರನು|
ಹತ್ಯೆಮಾಡುತಿಹರು ಗತಿಯಿಲ್ಲದ ಅನಾಥರನು||
ಶ್ಲೋಕ

2.  ಅವರಾಡಿಕೊಳ್ಳುತಿಹರು ಪ್ರಭು ನೋಡನೆಂದು|
ಯಕೋಬ್ಯರ ಸ್ವಾಮಿದೇವ ವಿಚಾರಿಸನೆಂದು||
ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ?|
ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ?||
ಶ್ಲೋಕ

3.  ಕಿವಿ ಮಾಡಿದವನು ಕೇಳದಿರುವನೋ?|
ಕಣ್ಣು ಕೊಟ್ಟವನು ನೋಡದಿರುವನೋ?||
ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ?||
ಮನುಜರಿಗೆ ಬುದ್ಧಿ ಕಲಿಸುವವನು ಬುದ್ಧಿಹೀನನೋ?||
ಶ್ಲೋಕ

4.  ತಳ್ಳಿಬಿಡಲು ಪ್ರಭು ತನ್ನ ಜನರನು|
ಕೈಬಿಡನವನು ತನ್ನ ಸ್ವಕೀಯರನು||
ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ|
ನೇರ ಮನಸ್ಕರೆಲ್ಲ ಮಾಡುವರು ಅದನು ಸಮರ್ಥ ||
ಶ್ಲೋಕ

ಶುಭಸಂದೇಶ: ಮತ್ತಾಯ 11:25-27



ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. “ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು." ಎಂದು ಹೇಳಿದರು

14.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9



ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ. ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು. ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು : ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ. ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ. ‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ. “ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ. ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು. ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”

ಕೀರ್ತನೆ: 48:2-3, 3-4, 5-6, 7-8
ಶ್ಲೋಕ: ಸರ್ವಶಕ್ತ ಪ್ರಭುವನು ದೇವನಗರದಲ್ಲಿ ಕಂಡೆವು

ಶುಭಸಂದೇಶ: ಮತ್ತಾಯ11:20-24


ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು; :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ. ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತ ಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು. ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.

20.07.2026 - ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ

  ಮೊದಲನೇ ವಾಚನ: ಮೀಕ 6:1-4, 6-8 ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸ...