12.09.2026 - ಶನಿವಾರ IIಇಂದಿನ ಬೈಬಲ್ ವಾಚನಗಳುII ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿ ಮಾತಾಗಿ ತುಳುಕುತ್ತದೆ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 10:14-22


ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.  ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?  ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ. ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.  ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?  ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ : ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.  ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.  ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?

ಕೀರ್ತನೆ: 116:12-13, 17-18

ಶ್ಲೋಕ: ಅರ್ಪಿಸುವೆ ಪ್ರಭೂ ನಾ ನಿನಗೆ ಕೃತಜ್ಞತಾಬಲಿಗಳನು

1.  ಪ್ರಭು ನನಗೆ ಮಾಡಿದ ಮಹೋಪಕಾರಗಳಿಗಾಗಿ|

ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ?||
ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು|
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು||
ಶ್ಲೋಕ

2.  ಅರ್ಪಿಸುವೆ ನಾ ನಿನಗೆ ಕೃತಜ್ಞತಾಬಲಿಗಳನು|
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು||
ತೀರಿಸುವೆನು ಆತನ ಸಭೆಯ ಸಮ್ಮುಖದೊಳು|
ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು||
ಶ್ಲೋಕ

ಘೋಷಣೆ

(ಕೀರ್ತನೆ 119: 135)
ಅಲ್ಲೆಲೂಯ, ಅಲ್ಲೆಲೂಯ.
ತೋರು ನಿನ್ನ ಮುಖದರ್ಶನ ಈ ದಾಸನಿಗೆ| ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ||
ಅಲ್ಲೆಲೂಯ.


ಶುಭಸಂದೇಶ: 6:43-49

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದು ಹೇಳಿದರು: “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.  ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.  ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. “ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?  ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:  ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.  ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.

11.09.2026 - ಶುಕ್ರವಾರIIಇಂದಿನ ಬೈಬಲ್ ವಾಚನಗಳುIIಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ?

 ಮೊದಲನೇ ವಾಚನ: 1 ಕೊರಿಂಥಿಯರಿಗೆ 9:16-19, 22-27

ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!  ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.  ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.  ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,  ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.  ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನ ಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.  ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ.  ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.

ಕೀರ್ತನೆ: 84:3, 4, 5-6, 8, 12

ಶ್ಲೋಕ: ಸ್ವರ್ಗಸೇನಾಧೀಶ್ವರಾ, ನಿನ್ನ ನಿವಾಸಗಳೆನಿತೋ ಸುಂದರ

1.  ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ|
ಕಾಣಬೇಕೆಂದು ಪ್ರಭುವಿನ ಪ್ರಾಂಗಣ|
ಸ್ವಾಮಿ ದೇವಾ, ಎನ್ನರಸಾ, ಸ್ವರ್ಗ ಸೇನಾಧೀಶ್ವರಾ||
ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ|
ಪಾರಿವಾಳಕ್ಕೂ ಅಲ್ಲೇ ಇದೆ ಮರಿಯಿಡಲು ಆಗರ||
ಶ್ಲೋಕ

2.  ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು|
ನಿರಂತರವೂ ನಿನ್ನ ಗುಣಗಾನ ಮಾಡುವರವರು||
ನಿನ್ನಿಂದ ಶಕ್ತಿ ಪಡೆಯುವವರು ಧನ್ಯರು|
ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು||
ಶ್ಲೋಕ

3.  ದೇವನೆಮಗೆ  ಬೆಳಕುಕೊಡುವ  ಸೂರ್ಯನು|
ಕಾದಿಟ್ಟು  ರಕ್ಷಿಸುವ  ಗುರಾಣಿಯು|
ಸನ್ಮಾರ್ಗಿಗೆ  ಈವನು  ಸಕಲ  ವರಗಳನು||
ಶ್ಲೋಕ

ಘೋಷಣೆ
(ಕೀರ್ತನೆ 119: 105)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ವಾಕ್ಯ  ನನಗೆ  ದಾರಿದೀಪ| ನನ್ನ  ಕಾಲಿನ  ನಡೆಗೆ  ಕೈದೀಪ||
ಅಲ್ಲೆಲೂಯ.

ಶುಭಸಂದೇಶ: ಲೂಕ 6:39-42


ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ?  ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು."

ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

10.09.2026 - ಗುರುವಾರ IIಇಂದಿನ ಬೈಬಲ್ ವಾಚನಗಳುIIಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ. ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ. ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ. ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ. “ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು"ಗಳನ್ನೂ “ಪ್ರಭು"ಗಳನ್ನೂ ಪೂಜಿಸುವುದುಂಟು. ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ. ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ. ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?  ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.  ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.

ಕೀರ್ತನೆ: 139:1-3, 13-14, 23-24

ಶ್ಲೋಕ: ನಡೆಸೆನ್ನನು ಪ್ರಭೂ, ಆ ಸನಾತನ ಪಥದಲಿ

1.  ಪ್ರಭೂ, ನೀ ಅರಿತುಕೊಂಡಿರುವೆ ಅಂತರಂಗವನು|
ನಾ ಕೂರುವುದು ಏಳುವುದೂ ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ||
ಶ್ಲೋಕ

2.  ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯ ಗರ್ಭದಲೇ ನನ್ನ ರೂಪಿಸಿದಾತ ನೀನು|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ|
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ||
ಶ್ಲೋಕ

3.  ತಿಳಿದುಕೋ ದೇವಾ, ನನ್ನ ಹೃದಯವನು|
ಪರೀಕ್ಷಿಸಿ ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ||
ಕೇಡಿದೆಯೇ ನೋಡು ನನ್ನ ಮಾರ್ಗದಲಿ|
ನಡೆಸೆನ್ನನು ಆ ಸನಾತನ ಪಥದಲಿ||
ಶ್ಲೋಕ

ಘೋಷಣೆ
(ಕೀರ್ತನೆ 119:  88)
ಅಲ್ಲೆಲೂಯ, ಅಲ್ಲೆಲೂಯ.

ನಿನ್ನಚಲ  ಪ್ರೀತಿಗನುಸಾರ  ಚೈತನ್ಯಗೊಳಿಸೆನ್ನನು | 
ಕೈಗೊಳ್ಳುವೆನಾಗ  ನಿನ್ನ ಬಾಯುಸುರಿದ  ಕಟ್ಟಳೆಗಳನು ||
ಅಲ್ಲೆಲೂಯ.

ಶುಭಸಂದೇಶ: ಲೂಕ 6:27-38


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’ “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.  ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.  ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು  ಕೊಟ್ಟ  ಅಳತೆಯಲ್ಲೇ  ದೇವರು  ನಿಮಗೂ  ಅಳೆದು  ಕೊಡುವರು," ಎಂದರು.

ಪ್ರಭುಕ್ರಿಸ್ತರ ಶುಭಸಂದೇಶ

ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

Mother Mary Songs

 




ಮಾತೆ ಓ ಮರಿಯೇ...

Song by Prashanth Ignatius  



09.09.2026 IIಬುಧವಾರII ಇಂದಿನ ಬೈಬಲ್ ವಾಚನ - ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 7:25-31

ಸಹೋದರರೇ, ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ. 26ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.  ನಿನಗೆ ವಿವಾಹವಾಗಿದೆಯೋ? ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ. ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ. ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.  ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ.  ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.

ಕೀರ್ತನೆ: 45:11-12, 14-15, 16-17

ಶ್ಲೋಕ: ಎಲೇ ಕುವರಿಯೇ ಕೇಳು, ಎನ್ನ ಮೊರೆಗೆ ಕಿವಿಗೊಡು

1.  ಎಲೇ  ಕುವರಿಯೇ  ಕೇಳು,  ಎನ್ನ  ಮೊರೆಗೆ  ಕಿವಿಗೊಡು|
ನಿನ್ನ  ಜನರನು  ತೌರುಮನೆಯನು  ಮರೆತುಬಿಡು||
ಆಗ  ಬಯಸುವನು  ರಾಜ  ನಿನ್ನ  ಲಾವಣ್ಯವನು|
ಆತನ  ಪಾದಕ್ಕೆರಗು, ಆತನೇ  ನಿನಗೊಡೆಯನು||
ಶ್ಲೋಕ

2.  ಭೂಷಿತಳಾಗಿಹಳಾಕೆ  ಕಸೂತಿ  ಕೆಲಸದ  ವಸ್ತ್ರಗಳಿಂದ|
ಬರುತಿಹಳು  ರಾಜನ  ಬಳಿಗೆ  ಶಖಿಯರ  ಪರಿವಾರ  ಸಮೇತ||
ಆಗಮಿಸುತಿಹರಿದೋ  ಸಂಭ್ರಮ  ಸಡಗರದಿಂದ|
ಪ್ರವೇಶಿಸುತಿಹರು  ಅರಮನೆಯನು  ಉತ್ಸಾಹದಿಂದ||
ಶ್ಲೋಕ

3.  ನಿನ್ನ  ಪುತ್ರರು  ಅಲಂಕರಿಸುವರು  ಪೂರ್ವಜರ  ಸ್ಥಾನವನು|
ನೇಮಕಗೊಳ್ಳುವರು  ಉತ್ತರಾಧಿಕಾರಿಗಳಾಗಿ  ಜಗದೊಳು||
ಶ್ಲೋಕ

ಘೋಷಣೆ
(ಕೀರ್ತನೆ 119:36,29)

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಕಟ್ಟಳೆಯ  ಕಡೆ  ಎನ್ನ  ಮನವ  ತಿರುಗಿಸಯ್ಯಾ | ಧರ್ಮಶಾಸ್ತ್ರವನು  ಎನಗೆ  ಅನುಗ್ರಹಿಸಯ್ಯಾ ||
ಅಲ್ಲೆಲೂಯ!

ಶುಭಸಂದೇಶ: ಲೂಕ 6:20-26


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. “ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು. 


ಮಾತೆ ಓ ಮರಿಯೇ...
Song by Prashanth Ignatius  


08.09.2026 - ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು

                                                         ದೇವಮಾತೆಯ ಮಹೋತ್ಸವ 


ಮೊದಲನೇ ವಾಚನ: ಮೀಕ 5:1-4


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 13:6, 6

ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ

ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I
ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I
ಹಾಡುವೆ ಗೀತವನು ಮನಃಪೂರ್ವಕವಾಗಿ II

ಶುಭಸಂದೇಶ: ಮತ್ತಾಯ 1:1-16, 18-23


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, 5ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,  ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,  ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.  ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,  ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.  ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು. “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.

ಮರಿಯಮ್ಮನವರ ಗೀತೆಗಳು


                                            

07.09.2026 - ಸೋಮವಾರII ಇಂದಿನ ಬೈಬಲ್ ವಾಚನ II ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ?

 ಮೊದಲನೇ ವಾಚನ: 1 ಕೊರಿಂಥಿಯರಿಗೆ 5:1-8 

ಸಹೋದರರೇ,  ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ. ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ? ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ. ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ. ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ. ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ. ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಕೀರ್ತನೆ: 5:5-6, 7, 12

ಶ್ಲೋಕ: ಸತ್ಯಪಥದಲಿ ನಡೆಸೆನ್ನನು ದೇವಾ

ಶುಭಸಂದೇಶ: ಲೂಕ 6:6-11

ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು ಸಬ್ಬತ್ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು. ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು. ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಸಂತ ಮರಿಯಮ್ಮನವರ ಗೀತೆಗಳು - ಚಿಗುರು ಬಳಗ 

12.09.2026 - ಶನಿವಾರ IIಇಂದಿನ ಬೈಬಲ್ ವಾಚನಗಳುII ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿ ಮಾತಾಗಿ ತುಳುಕುತ್ತದೆ

  ಮೊದಲನೇ ವಾಚನ: 1 ಕೊರಿಂಥಿಯರಿಗೆ 10:14-22 ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ...