07.05.2026 - ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15: 7-21


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದು ನಿಂತು ಹೀಗೆಂದನು: “ಸಹೋದರರೇ, ಅನ್ಯ ಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ. ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅವರಿಗೂ ನಮಗೂ ಯಾವ ಭೇದ ಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು. ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ? ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.” ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯ ಧರ್ಮೀಯರ ಮಧ್ಯೆ ಎಸಗಿದ ಸೂಚಕ ಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ಕುರಿತು ಕೇಳಿದರು. ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ, ದೇವರು ಈ ಮೊದಲೇ ಅನ್ಯ ಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ದಾರೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ. ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣ ಸಾಮರಸ್ಯವಿದೆ. ‘ಅಳಿದುಹೋದ ದಾವೀದನ ಮನೆತನವನು ಪುನರ್ಸ್ಥಾಪಿಸಲು ಮರಳಿ ಬರುವೆನು ಪಾಳು ಬಿದ್ದುದನು ಜೀರ್ಣೋದ್ಧಾರ ಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’ “ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯ ಧರ್ಮೀಯರನ್ನು ತೊಂದರೆಗೆ ಈಡು ಮಾಡಬಾರದು. ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು. ಏಕೆಂದರೆ ಪುರಾತನ ಕಾಲಂದಿದಲೂ ಪ್ರತಿಯೊಂದು ಸಬ್ಬತ್‍ ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾ ಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.

ಕೀರ್ತನೆ: 96: 1-3, 10
ಶ್ಲೋಕ: ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ, ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ. 

ಶುಭಸಂದೇಶ: ಯೊವಾನ್ನ 15:9-11


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.

06.05.2026 - ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು. 

ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ, ಆಯಿತೆನಗೆ ಆನಂದ, ಜನರೆನ್ನ ಕರೆದಾಗ.

ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I
ಆಯಿತೆನಗೆ ಆನಂದಜನರೆನ್ನ ಕರೆದಾಗ II
ನನ್ನ ಕಾಲುಗಳು  ಜೆರುಸಲೇಮೇ I
ತಲುಪಿವೆ ನಿನ್ನ ಪುರದ್ವಾರಗಳನೇ II

ನೋಡುಜೆರುಸಲೇಮ್ ಪಟ್ಟಣವಿದು I
ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II
ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I
ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I
ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II

ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I
ದಾವೀದನ ಮನೆತನದವರ ಸಿಂಹಾಸನಗಳು II

ಶುಭಸಂದೇಶ: ಯೊವಾನ್ನ 15:1-8


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು. “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

05.05.2026 - ನಾನು ಶಾಂತಿ ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:19-28



ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು. ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು. ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು. ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು. ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು. ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು. ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು. ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು. ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.

ಕೀರ್ತನೆ: 145:10-11, 12-13, 21

ಶ್ಲೋಕ: ಅರಿವರಿಂತು ಜನರು ತನ್ನ ಶೂರಕಾರ್ಯಗಳನು, ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು.

ಪ್ರಭುನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I
ಕೊಂಡಾಡುವುದು ನಿನ್ನನು ಭಕ್ತ ಸಮೂಹವು II
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II


ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II
ಶಾಶ್ವತವಾದುದು ನಿನ್ನ ರಾಜ್ಯವು I
ಇರುವುದೆಂದಿಗು ನಿನ್ನ ಆಳ್ವಿಕೆಯು II

ಸಲಹುವನು ತನ್ನನು ಪ್ರೀತಿಸುವವರೆಲ್ಲರನು I

ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಶುಭಸಂದೇಶ: ಯೊವಾನ್ನ 14:27-31


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ. ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ. ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು.” ಎಂದರು.

04.05.26 - ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:5-18


ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು. ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು. ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು. ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ. ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ, “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು. ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು. ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು. ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು: “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು. ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು. ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.” ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಕೀರ್ತನೆ: 115:1-2, 3-4, 15-16
ಶ್ಲೋಕ: ನಮಗಲ್ಲ ಹೇ ಪ್ರಭೂ, ನಮಗಲ್ಲ ಮಹಿಮೆ, ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ.

ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ
ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ
ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ
ಅನ್ಯಜನರು ನುಡಿಯುವುದೆಂತು
“ಅವರ ದೇವರೆಲ್ಲಿ?” ಎಂದು

ಪರದಲ್ಲಿಹನು ನಮ್ಮ ದೇವನು
ಗೈವನು ತನಗಿಷ್ಟ ಬಂದುದನು
ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ
ಅವು ಮಾನವನ ಕೈ ಕೆಲಸಗಳು ಮಾತ್ರ

ಇಹಪರಗಳನು ಉಂಟುಮಾಡಿದ ಪ್ರಭುವಿಂದ
ಲಭಿಸುವಂತಾಗಲಿ ನಿಮಗೆ ಆಶೀರ್ವಾದ
ಪ್ರಭುವಿಗೆ ಸ್ವಂತವಾದುದು ಪರಲೋಕ
ನರರಿಗೆ ಕೊಟ್ಟಿಹನಾತನು ಭೂಲೋಕ

ಶುಭಸಂದೇಶ: ಯೊವಾನ್ನ 14:21-26

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು. ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ. ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು." ಎಂದರು.

03.05.2026 - “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:1-7


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು. ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ. ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ. ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು. ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು. ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು. ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಕೀರ್ತನೆ: 33:1-2, 4-5, 18-19

ಶ್ಲೋಕ: ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ

ಎರಡನೇ ವಾಚನ: ೧ ಪೇತ್ರನು 2:4-9

ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು. ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ. ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.” ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.” “ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು. ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ. 

ಶುಭಸಂದೇಶ: ಯೊವಾನ್ನ 14:1-12

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು. ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು. ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ." ಎಂದರು.

02.05.2026 - ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:44-52


ಮುಂದಿನ ಸಬ್ಬತ್ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು. ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ. ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’ ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು. ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು. ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು. ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು. ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.

ಕೀರ್ತನೆ: 98:1, 2-3, 3-4

ಶ್ಲೋಕ: ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ, ನಮ್ಮ ದೇವ ಸಾಧಿಸಿದ ಜಯಗಳಿಗೆ

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I
ಎಸಗಿಹನಾತನು ಪವಾಡಕಾರ್ಯಗಳನು I
ಗಳಿಸಿತಾತನ ಕೈ ಪೂತಭುಜ ಗೆಲುವನು II
ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II
ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II
ಭೂನಿವಾಸಿಗಳೇಮಾಡಿರಿ ಜಯಕಾರ ಪ್ರಭುವಿಗೆ I
   ಮುದದಿ ಹಾಡಿರಿಮಾಡಿರಿ ಸುಮಧುರ ಭಜನೆ II

ಶುಭಸಂದೇಶ ಯೊವಾನ್ನ 14:7-14

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, "ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು." ಎಂದರು

0105.2026 - ಇವನು ಆ ಬಡಗಿಯ ಮಗನಲ್ಲವೇ?

ಮೊದಲನೆಯ ವಾಚನ: ಆದಿಕಾಂಡದಿಂದ ಇಂದಿನ ವಾಚನ 1:26-2:3


ದೇವರು, "ನಮ್ಮಂತೆಯೇ ಇರುವ ಹಾಗೂ ನಮ್ಮನ್ನು ಹೋಲುವ ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ- ಚಿಕ್ಕ ಸಾಕುಪ್ರಾಣಿ ಹಾಗೂ ಕಾಡು ಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ, "ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, "ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿ ಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ ಭೂಮಿಯಲ್ಲಿರುವ ಎಲ್ಲ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ " ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆ ಏಳನೆಯ ದಿನವು ಪರಿಶುದ್ದವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲಾ ಮುಗಿಸಿ, ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಕೀರ್ತನೆ 90:2,3-4,12-13,14,17
ಶ್ಲೋಕ: ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ, ಓ ಪ್ರಭೂ!

ಬೆಟ್ಟಗಳು ಹುಟ್ಟುವುದಕ್ಕೆ ಮುಂಚಿನಿಂದ|
ಭೂದೇಶಗಳು ಆಗುವುದಕ್ಕೆ ಮೊದಲಿನಿಂದ|
ನೀನೆಮಗೆ ದೇವರು ಯುಗಯುಗಗಳಿಂದ||

ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ|
"ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ" ಎನ್ನುತಿಹೆ||
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ|
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ||

ಜೀವನಾವಧಿಯನು ಲೆಕ್ಕಿಸುವುದನ್ನು ನಮಗೆ ಕಲಿಸು|
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು||
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ|
ನಿನ್ನ ಸೇವಕರ ಮೇಲಿರಲಿ ಮರುಕ||

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ|
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ||
ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ|
ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ||

ಘೋಷಣೆ (ಕೀರ್ತನೆ 68:20)
ಅಲ್ಲೆಲೂಯ, ಅಲ್ಲೆಲೂಯ!
ನಮ್ಮ ದೇವರು ಜೀವೋದ್ಧಾರಕ ದೇವರು ಹೌದು | ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 13:54-58


ಆ ಕಾಲದಲ್ಲಿ ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು? " ಎಂದು ಮಾತನಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ದೊರಕದು, "ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ. 

07.05.2026 - ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15: 7-21 ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದು ನಿಂತು ಹೀಗೆಂದನು: “ಸಹೋದರರೇ, ಅನ್ಯ ಧರ್ಮೀಯರು ಶುಭಸಂದೇಶವನ್ನು ನನ್ನ...