16.06.2026 - ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ

 ಮೊದಲನೇ ವಾಚನ: 2 ಅರಸುಗಳು 2:1, 6-14



ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು. ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು. ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು. ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು. ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು. ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು. ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು. “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು. 

ಕೀರ್ತನೆ: 31:20, 21, 24
ಶ್ಲೋಕ: ಪ್ರಭುವಿಗಾಗಿ ಕಾದಿಹೆ ಜನರೇ, ನಿಮಗಿರಲಿ ಅಭಯ

ಶುಭಸಂದೇಶ: ಮತ್ತಾಯ 6:1-6, 16-18


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿ ಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನ ಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”

16.06.2026 - ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ

 ಮೊದಲನೇ ವಾಚನ: 1 ಅರಸುಗಳು 21:17-29



ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು. “ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ; ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.” ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ. ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು. ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ. ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು; ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು. ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು. ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು. ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.

ಕೀರ್ತನೆ: 51:3-4, 5-6, 11, 16

ಶ್ಲೋಕ: ಕೃಪಾಳು ದೇವಾ, ಕರುಣಿಸೆನ್ನನು, ನಿನಗೆ ದ್ರೋಹವೆಸಗಿದೆ

ಶುಭಸಂದೇಶ: ಮತ್ತಾಯ 5:43-48


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ: “ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”

15.06.2026 - ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ.

 ಮೊದಲನೇ ವಾಚನ: 1 ಅರಸುಗಳು 21:1-16



ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು. ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು. ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು. ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು. ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು. ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು. ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ; ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು. ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು. ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.

ಕೀರ್ತನೆ: 5:2-3, 4-6, 6-7

ಶ್ಲೋಕ: ಕಿವಿಗೊಡು ಪ್ರಭೂ, ಎನ್ನ ನುಡಿಗೆ 

ಶುಭಸಂದೇಶ: ಮತ್ತಾಯ 5:38-42

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”

14.06.2026 - ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.

 ಮೊದಲನೇ ವಾಚನ: ವಿಮೋಚನಕಾಂಡ 19:2-6

ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಮೋಶೆ ಆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: ‘ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ. ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲೂ ನನಗೆ ಸ್ವಕೀಯ ಜನರಾಗುವಿರಿ. ಅಲ್ಲದೆ ನೀವು ನನಗೆ ಯಾಜಕರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ.’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.

ಕೀರ್ತನೆ: 100: 1-2, 3, 5
ಶ್ಲೋಕ: ಸೃಷ್ಟಿಕರ್ತನ ಜನ, ಆತನೇ ಮೇಯಿಸುವ ಕುರಿಗಳು ನಾವು. 

1.  ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ|
ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ||
ಶ್ಲೋಕ

2.  ಪ್ರಭುವೇ, ದೇವರೆಂಬುದನ್ನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು ಆತನವರು ನಾವು|
ಆತನ ಜನ ಆತನೇ ಮೇಯಿಸುವ ಕುರಿಗಳು ನಾವು||
ಶ್ಲೋಕ

3.  ಹೌದು, ಪ್ರಭುವೆನಿತೋ ಒಳ್ಳೆಯವನು|
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಎರಡನೇ ವಾಚನ: ರೋಮನರಿಗೆ 5: 6-11


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು. ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು. ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ. ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ? ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ? ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆ ಪಡುತ್ತೇವೆ.

ಶುಭಸಂದೇಶ: ಮತ್ತಾಯ 9: 35, 10:1-8


ಆ ಕಾಲದಲ್ಲಿ ಯೇಸು ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾ ಮಂದಿರಗಳಲ್ಲಿ ಬೋಧಿಸಿದರು.  ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ  ರೋಗರುಜಿನಗಳನ್ನು ಗುಣಪಡಿಸುದರು. ಆ ಜನ ಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದರು ಹಾಗೂ ಬಳಲಿದ್ದರು ಆದುದರಿಂದ ಯೇಸು ತಮ್ಮ ಶಿಷ್ಯರಿಗೆ,  "ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕ  ಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.  ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.  ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.  ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ.  ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ.  ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ."

13.06.2026 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?

 ಮೊದಲನೇ ವಾಚನ: ಯೆಶಾಯ: 61:9-11

ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.” ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು. ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.



1 ಸಮುವೇಲ 2:1, 4-8

ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ. 


ಶುಭಸಂದೇಶ: ಲೂಕ: 2:41-51


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು. ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು. ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು. ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು. ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?” ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ. ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. 

12.06.2026 - ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ.

 ಯೇಸುವಿನ ಪವಿತ್ರ ಹೃದಯದ ಮಹೋತ್ಸವ


ಮೊದಲನೇ ವಾಚನ: ಧರ್ಮೋಪದೇಶಕಾಂಡ 7:6-11


ಮೋಶೆಯು ಜನರಿಗೆ ಹೇಳಿದ್ದೇನೆಂದರೆ: "ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗಲು ಅವರು ಆಯ್ದುಕೊಂಡಿದ್ದಾರೆ. “ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು. ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ. ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು. ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು. ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.

ಕೀರ್ತನೆ: 103:1-2, 3-4, 6-7 8, 10

ಶ್ಲೋಕ: ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು

ಎರಡನೇ ವಾಚನ: 1 ಯೊವಾನ್ನನು 4:7-1 

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ. ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ. ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು. ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ. ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ. ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ. ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ.

ಶುಭಸಂದೇಶ: ಮತ್ತಾಯ11:25-30

ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. “ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು. “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.

11.06.2026 - ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 11:21-26; 13:1-3


ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು. ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು. ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು-ಅಂತಿಯೋಕ್ಯದಲ್ಲೇ. ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯಸ್ನೇಹಿತ ಮೆನಹೇನ ಮತ್ತು ಸೌಲ ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ವಿೂಸಲಾಗಿಡಿ,” ಎಂದರು. ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆ ಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.

ಕೀರ್ತನೆ: 98:1, 2-3, 3-4, 5-6

ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ದಾರಕಾ ಶಕ್ತಿಯನು

ಶುಭಸಂದೇಶ: ಮತ್ತಾಯ 10: 7-13

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. "ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, "ಈ ಮನೆಗೆ ಶುಭವಾಗಲಿ!" ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ."

16.06.2026 - ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ

  ಮೊದಲನೇ ವಾಚನ: 2 ಅರಸುಗಳು 2:1, 6-14 ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿ...