02.06.2026 - ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ

ಮೊದಲನೇ ವಾಚನ: 2 ಪೇತ್ರ 3:12-15, 17-18

ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ದರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು. ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು. ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು. ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ. ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ. ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.

ಕೀರ್ತನೆ: 90:2, 3-4, 10, 14, 16

ಶ್ಲೋಕ: ಪ್ರಭೂ, ತಲತಲಾಂತರಕ್ಕೆ ಶ್ರೀನಿವಾಸ ನೀನೆಮಗೆ

1.  ಬೆಟ್ಟಗಳು  ಹುಟ್ಟುವುದಕೆ  ಮುಂಚಿನಿಂದ|
ಭೂದೇಶಗಳು  ಆಗುವುದಕ್ಕೆ  ಮೊದಲಿಂದ|
ನೀನೆಮಗೆ  ದೇವರು  ಯುಗಯುಗಗಳಿಂದ||
ಶ್ಲೋಕ

2.  'ನರಪುತ್ರರೇ,  ಮರಳಿ  ಮಣ್ಣಿಗೆ  ಸೇರಿರಿ'  ಎನ್ನುತಿಹೆ|
ನಿನ್ನ  ದೃಷ್ಟಿಯಲ್ಲಿ  ಪ್ರಭೂ,  ಸಹಸ್ರ  ವರುಷ|
ಇರುಳಿನೊಂದು  ಜಾವ,  ಗತಿಸಿಹೋದ  ಒಂದು  ದಿವಸ||
ಶ್ಲೋಕ

3.  ನಮ್ಮ  ಆಯುಷ್ಕಾಲ  ಎಪ್ಪತ್ತು  ವರುಷ|
ಹೆಚ್ಚಾಗಿದ್ದರೆ  ಬಲ  ಎಂಭತ್ತು  ವರುಷ||
ಶ್ಲೋಕ

4.  ಉದಯದಲೆ  ತೋಯಿಸೆಮ್ಮನು  ನಿನ್ನ  ಕೃಪೆಯಿಂದ|
ಹರ್ಷಿಸಿ  ಆನಂದಿಸುವೆವು  ಆಗ  ದಿನದಾದ್ಯಂತ||
ಪ್ರಕಟವಾಗಲಿ  ನಿನ್ನ  ರಕ್ಷಾಕಾರ್ಯ    ಭಕ್ತರಿಗೆ|
ನಿನ್ನ  ಮಹಿಮಾಶಕ್ತಿ  ಅವರ  ಸಂತಾನಕೆ||
ಶ್ಲೋಕ


ಶುಭಸಂದೇಶ: ಮಾರ್ಕ12:13-17


ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು. ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು. ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್ ಚಕ್ರವರ್ತಿಯವು,” ಎಂದರು. ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.

01.06.2026 - ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು

 ಮೊದಲನೇ ವಾಚನ: 2 ಪೇತ್ರನು1:2-7


ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ! ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ. ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ. ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ. ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ. ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.

ಕೀರ್ತನೆ: 91:1-2, 14-15, 15-16

ಶ್ಲೋಕ: ಪ್ರಭುವೇ ದುರ್ಗವೂ ನಾ ನಂಬಿದ ದೇವನೂ

1.  ಪರಾತ್ಪರ  ಪ್ರಭುವಿನ  ಮೊರೆ  ಹೊಕ್ಕಿರುವವನು|
ಸರ್ವಶಕ್ತನ  ಆಶ್ರಯದಲ್ಲಿ  ಸುರಕ್ಷಿತನು||
ನಾನಾತನಿಗೆ  'ನೀನೇ  ನನ್ನ  ರಕ್ಷಕನೂ ದುರ್ಗವೂ|
ನಾ  ನಂಬಿದ  ದೇವನೂ' ಎನ್ನುವೆನು||
ಶ್ಲೋಕ

2.  ನನ್ನ  ಭಕ್ತನಾದ್ದರಿಂದ  ವಿಮೋಚಿಸುವೆನು  ಅವನನು|
ನನ್ನ  ನಾಮವನು  ಅರಿತವನಾದ್ದರಿಂದ  ರಕ್ಷಿಸುವೆನು|
ನನಗೆ  ಮೊರೆಯಿಟ್ಟಾಗ  ಕಿವಿಗೊಡುವೆನು||
ಶ್ಲೋಕ

3.  ಸಂಕಟದೊಳು  ಅವನ  ಸಂಗಡವಿರುವೆನು|
ದೀರ್ಘಾಯುಸ್ಸನ್ನಿತ್ತು  ತೃಪ್ತಿಪಡಿಸುವೆನು|
ನಾನು  ನೀಡುವ  ಮುಕ್ತಿಯವನಿಗೆ  ಮನಗಾಣಿಸುವೆನು||
ಶ್ಲೋಕ

ಘೋಷಣೆ: ಕೀರ್ತನೆ 119: 18

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಶಾಸ್ತ್ರದ  ಮಹಿಮೆಯನು  ಅರಿಯುವಂತೆ | ನನ್ನ  ಕಣ್ಗಳಿಂದ  ನೀ  ತೆಗೆದುಬಿಡು  ಅಂಧತೆ ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 12:1-12


ಅನಂತರ ಯೇಸು ಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ. ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು. ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು. ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು. ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆ ಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ. ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ, ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು. ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ : ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.

31.05.2026 - ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು

 ಮೊದಲನೇ ವಾಚನ ವಿಮೋಚನಕಾಂಡ 34:4-6, 8-9


ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು. ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು. ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು, ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ, ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.

ಕೀರ್ತನೆ: 1:29-34

ಶ್ಲೋಕ: ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು

1.  ನಮ್ಮ ಪೂರ್ವಜರ ದೇವರಾದ ಸರ್ವೇಶ್ವರಾ|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಮಹಿಮಾಯುತವಾದ ನಿಮ್ಮ ನಾಮ ಸ್ತುತ್ಯಾರ್ಹವಾದುದು|
ಪರಮ ಪೂಜ್ಯವಾದುದು ಎಂದೆಂದಿಗೂ ಘನತರವಾದುದು||
ಶ್ಲೋಕ

2.  ಪರಮ ವೈಭವದಿಂದ ಕೂಡಿದ ಮಂದಿರದಲಿ|
ನೀವು ಸ್ತುತಿಸ್ತೋತ್ರಕ್ಕೆ ಪಾತ್ರರು|
ನೀವು ಪರಮಪೂಜ್ಯರು ಎಂದೆಂದಿಗೂ ಮಹೋನ್ನತರು||
ಸಾಗರಾದಿಗಳನ್ನು ಸಮೀಕ್ಷಿಸುವ ನಿಮಗೆ ಸ್ತೋತ್ರ|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಶ್ಲೋಕ

3.  ನಿಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ|
ಮಂಡಿಸಿರುವ ನಿಮಗೆ ಸ್ತೋತ್ರ||
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು|
ಗಗನ ಮಂಡಲದಲ್ಲಿ ಸ್ತೋತ್ರಪಾತ್ರರು|
ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನಿತ್ವರು||
ಶ್ಲೋಕ

ಎರಡನೇ ವಾಚನ: 2 ಕೊರಿಂಥಿಯರಿಗೆ 13:11-13

ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ. ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!

ಶುಭಸಂದೇಶ: ಯೊವಾನ್ನ 3:16-18


ಯೇಸು ನಿಕೋದೇಮನಿಗೆ ಎಂತೆಂದರು: "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು. ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.

30.05.2026 - "ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,

 ಮೊದಲನೇ ವಾಚನ: ಯೂದ 1:20-25



ಪ್ರಿಯರೇ,  ನೀವಾದರೋ  ಅತಿ  ಪರಿಶುದ್ಧ  ವಿವ್ವಾಸದ  ಆಧಾರದ  ಮೇಲೆ  ನಿರ್ಮಿಸಲಾದ  ಮಂದಿರದಂತೆ  ಪ್ರವರ್ಧಿಸಿರಿ;  ಪವಿತ್ರಾತ್ಮ  ಅವರಿಂದ  ಪ್ರೇರಿತರಾಗಿ  ಪ್ರಾರ್ಥಿಸಿರಿ.  ನಿತ್ಯ  ಜೀವವನ್ನು  ದಯಪಾಲಿಸುವ  ಕರುಣಾಮಯ  ಪ್ರಭು  ಯೇಸು  ಕ್ರಿಸ್ತರನ್ನು  ಎದುರು  ನೋಡುತ್ತಾ  ದೇವರ  ಪ್ರೀತಿಯಲ್ಲಿ  ನೆಲಗೊಂಡಿರಿ.  ಸಂಶಯಪಡುವವರಿಗೆ  ಸಹೃದಯದಿಂದ  ನೆರವಾಗಿರಿ.  ಬೆಂಕಿಯ  ಬಾಯಲ್ಲಿ  ಇರುವವರನ್ನು  ಎಳೆದು  ಸಂರಕ್ಷಿಸಿರಿ.  ಕೆಲವರಿಗೆ  ದಯೆತೋರಿಸುವಾಗ  ಭಯವಿರಲಿ.  ಪಾಪದ  ನಡತೆಯಿಂದ  ಹೊಲಸಾದ  ಅವರ  ಬಟ್ಟೆಬರೆಗಳನ್ನೂ  ಮುಟ್ಟದಿರಿ.  ಪಾಪದಲ್ಲಿ  ಎಡವಿ  ಬೀಳದಂತೆ  ನಿಮ್ಮನ್ನು  ಕಾಪಾಡುವ,  ತಮ್ಮ  ಮಹಿಮಾಸನ್ನಿಧಿಯಲ್ಲಿ  ನಿಮ್ಮನ್ನು  ನಿರ್ದೋಷಿಗಳನ್ನಾಗಿಯೂ  ಹರ್ಷಭರಿತರನ್ನಾಗಿಯೂ  ನಿಲ್ಲಿಸಲು  ಶಕ್ತರಾಗಿರುವ,  ನಮ್ಮ  ಉದ್ಧಾರಕರಾದ  ಏಕೈಕ  ದೇವರಿಗೆ  ನಮ್ಮ  ಪ್ರಭು  ಯೇಸು  ಕ್ರಿಸ್ತರ  ಮುಖಾಂತರ  ಮಹಿಮೆ,  ಮಹತ್ವ,  ಅಧಿಪತ್ಯ,  ಅಧಿಕಾರ  ಆಧಿಯಲ್ಲಿ  ಇದ್ದ  ಹಾಗೆ  ಈಗಲೂ  ಯಾವಾಗಲೂ  ಸಲ್ಲಲಿ!  ಆಮೆನ್.

ಕೀರ್ತನೆ
(63: 1, 2-3, 4-5, v. 1

ಶ್ಲೋಕ:  ದೇವಾ,  ನೀ  ಎನ್ನ  ದೇವ,  ನಿನಗಾಗಿ  ನಾ  ಕಾದಿರುವೆ|

1.  ದೇವಾ,  ನೀ  ಎನ್ನ  ದೇವ,  ನಿನಗಾಗಿ  ನಾ  ಕಾದಿರುವೆ|
ನಿರ್ಜಲ  ಮರುಭೂಮಿಯಲಿ  ನೀರಿಗಾಗಿ  ಹಾತೊರೆವಂತೆ||
ನಿನಗೋಸ್ಕರ  ಎನ್ನ  ತನು  ಸೊರಗಿದೆ,  ಮನ  ಬಾಯಾರಿದೆ|
ನಿನ್ನ  ಮಂದಿರದಲಿ  ನನಗಾದ   ದರ್ಶನದಲಿ||
ಶ್ಲೋಕ

2.  ನಿನ್ನ  ಶಕ್ತಿ  ಪ್ರತಿಭೆಯನ್ನು  ಕಂಡಿರುವೆನಲ್ಲಿ|
ಪ್ರಾಣಕ್ಕಿಂತ  ಮಿಗಿಲಾದುದು  ನಿನ್ನಚಲ  ಪ್ರೀತಿ||
ಎಡೆಬಿಡದೆ  ಮಾಳ್ವುದು  ನನ್ನೀ  ತುಟಿ  ನಿನ್ನ  ಸ್ತುತಿ|
ನಿನ್ನ  ಸ್ತುತಿಸುವೆ  ಜೀವಮಾನ  ಪರಿಯಂತ|
ಕೈ  ಮುಗಿವೆ  ನಿನ್ನ  ನಾಮದ   ಸ್ಮರಣಾರ್ಥ||
ಶ್ಲೋಕ

3.  ಮೃಷ್ಟಾನ್ನ  ತಿಂದಂತೆ  ಎನ್ನ  ಮನ  ಸಂತೃಪ್ತ|
ಸಂಭ್ರಮದಿಂದ  ನಿನ್ನ  ಹೊಗಳುವುದು  ಬಾಯ್ತುಂಬ||
ಶ್ಲೋಕ

🌻✝️🌻

ಘೋಷಣೆ
(ಕೀರ್ತನೆ 119: 27)

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ನಿಯಮಗಳ  ಪಥವೆನಗೆ  ತಿಳಿಯಪಡಿಸಯ್ಯಾ | ನಿನ್ನ  ಅದ್ಭುತ  ಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ!

ಶುಭಸಂದೇಶ:ಮಾರ್ಕ 11:27-33

ಮಹಾ ದೇವಾಲಯದಲ್ಲಿ ಯೇಸು 

ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯ ಯಾಜಕರು, ಧರ್ಮಶಾಸ್ತ್ರಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು, " ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?" ಎಂದಿ ಕೇಳಿದರು. ಅದಕ್ಕೆ ಯೇಸು, "ನಾನೂ ನಿಮಗೆ ಒಂದು ಪ್ರಶ್ನ ಹಾಕುತ್ತೇನೆ; ಅದಕ್ಕೆ ಉತ್ತರ ಕೊಡಿ. ಆಗ ಯಾವ ಅಧಿಕಾರದಿಂದ ನಾನು ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಸ್ನಾನದಿಕ್ಷೆ ಕೊಡುವ ಅಧಿಕಾರ ಯೊವಾನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ? ಮನುಷ್ಯರಿಂದಲೋ? ಉತ್ತರಕೊಡಿ," ಎಂದರು. ಇದನ್ನು ಕೇಳಿದ ಅವರು ತಮ್ಮ ತಮ್ಮೊಳಗೇ ತರ್ಕ ಮಾಡುತ್ತಾ, "ದೇವರಿಂದ ಬಂದಿತೆಂದು ಹೇಳಿದರೆ, "ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?" ಎಂದು ಕೇಳುವನು. 'ಮನುಷ್ಯರಿಂದ ಬಂದಿತು" ಎಂದು ಹೇಳೋಣ ಎಂದರೆ ಅದೂ ಅಗದು, "ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು. ಆದುದರಿಂದ ಅವರು, "ನಮಗೆ ಗೊತ್ತಿಲ್ಲ" ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು ,"ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ," ಎಂದರು.

29.05.2026 - ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ

 ಮೊದಲನೇ ವಾಚನ:1ಪೇತ್ರ 4:7-13 



ಎಲ್ಲದರ ಅಂತ್ಯಕಾಲವೂ ಹತ್ತಿರವಾಯಿತು. ಈ ಕಾರಣ ನೀವು ಜಿತೇ೦ದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ. ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆ೦ದರೆ, ಪ್ರೀತಿ ಅಸ೦ಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ. ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿ. ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನ೦ತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳಾನ್ನು ಇತರರ ಒಳಿತಿಗಾಗಿ ಬಳಸಲಿ. ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಸೇವೆಮಾಡಲಿ. ಇದರಿ೦ದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯು೦ಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.

ಪ್ರಿಯರೇ, ಪರಿಶೋಧನೆಗೆ೦ದು ನಿಮಗೆ ಬ೦ದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸ೦ಭವಿಸಿಬಿಟ್ಟಿತೆ೦ದು ವಿಸ್ಮಯಪಡಬೇಡಿ. ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.

ಕೀರ್ತನೆ: 96:10,11-12,13 

ಶ್ಲೋಕ: ಪ್ರಭು ಧರೆಗೆ ನ್ಯಾಯ ತೀರಿಸಲು ಬಂದೇ ಬರುವನು ಖರೆಯಾಗಿ. 

1.  ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ಕದಲದ ಸ್ಥಿರತೆಯನು ಇತ್ತಿಹನು ಧರೆಗೆ|
ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ||
ಶ್ಲೋಕ

2.  ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭುವಿಯು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಗಿರುವುದೆಲ್ಲವೂ||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು||
ಶ್ಲೋಕ

3.  ಪ್ರಭು ದರೆಗೆ ನ್ಯಾಯ ತೀರಿಸಲು ಬಂದೇ ಬರುವನು ಖರೆಯಾಗಿ|
ಜಗಕು, ಜನತೆಗು ತೀರ್ಪಿಡುವನು|
ನೀತಿನಿಯಮಾನುಸಾರವಾಗಿ||
ಶ್ಲೋಕ

 ಶುಭಸಂದೇಶ: ಮಾರ್ಕ 11:11 -26 


ಯೇಸು ಜೆರುಸಲೇಮನ್ನು ಸೇರಿ ಮಹಾ ದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನು ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು. ದೂರದಲ್ಲಿ ಎಲೆ ತಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೀನಾದರು ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. ಯೇಸು ಆ ಮರಕ್ಕೆ, "ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ," ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು. ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದವರ ಮಣೆಗಳನ್ನು ಉರುಳಿಸಿದರು.ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹದು ಹೋಗುವವರನ್ನು ತಡೆದರು. " 'ಸರ್ವಜನಾಂಗಗಳಿಗೂ ಪ್ರಾತನಾಲಯ ನನ್ನೀ ಆಲಯ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗಹೆಯನ್ನಾಗಿ ಮಾಡಿದ್ದೀರಿ," ಎಂದು ಯೇಸು ಅವರಿಗೆ ಬುದ್ದಿ ಹೇಳಿದರು. ಮುಖ್ಯ ಯೂಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಎಕಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ, ಜನರೆಲ್ಲರೂ ಅವರ ಭೋಧನೆಗೆ ಮಾರುಹೋಗಿದ್ದರು. ಸೂರ್ಯಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆ ಹೋದರು. ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, "ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿ ಹೋಗಿದೆ," ಎಂದನು. ಅದಕ್ಕೆ ಯೇಸು, "ನಿಮಗೆ ದೇವರಲ್ಲಿ ವಿಶ್ವಾಸವಿರಲಿ, ಅಗ ಯಾವನಾದರೂ ಈ ಬೆಟ್ಟಕ್ಕೆ, 'ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!' ಎಂದು ಹೇಳಿ, ಮನಸ್ಸನಲ್ಲಿ ಸಂದೇಹಪಡದೆ, ಅದು ಸಂಭವಿಸುದುದೆಃದು ವಿಶ್ವಾಸಿಸಿದರೆ, ನಾನು ನಿಮಗೆ ನಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು. ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ. ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ, ಯಾರಿಗಾದರೂ ವಿರೋದವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ, ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪಗಳನ್ನು ಕ್ಷಮಿಸಿ ಬಿಡುವರು".

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

 ಮೊದಲನೆಯ ವಾಚನ: 1 ಪೇತ್ರ 2:2-5,9-12



ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್ಧಾರವನ್ನು ಹೊಂದುವಿರಿ. ಪ್ರಭು ಎಂಥಾ ದಯಾಳು ಎಂಬುದನ್ನು ನೀವು ಅನುಭವದಿಂದ ಅರಿತುಕೊಂಡಿದ್ದೀರಿ. ಪ್ರಭುವಿನ ಬಳಿಗೆ ಬನ್ನಿ ಸಜೀವ ಶಿಲೆಯಾದ ಅವರನ್ನು ಮಾನವರು ನಿಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು. ನೀವೂ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸು ಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕ ವರ್ಗದವರು ನೀವಾಗಿರುವಿರಿ. ನೀವು ದೇವರು ಆಯ್ದುಕೊಂಡ ಜನಾಂಗ; ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿ ಆಯ್ಕೆಯಾದವರು. ಗಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು. ಒಮ್ಮೆ ನೀವು ಗಣನೆಗೆ ಬಾರದ ಜನರಾಗಿದ್ದೀರಿ. ಈಗಲಾದರೋ ದೇವ ಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ. ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಅನ್ಯ ಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಠರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತ ಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.

ಕೀರ್ತನೆ: 100:2,3,4,5,
ಶ್ಲೋಕ: ಹಾಡುತ ಪಾಡುತ ಬನ್ನಿ ಪ್ರಭುವಿನ ಸನ್ನಿಧಿಗೆ|

ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ|
ಹಾಡುತ ಪಾಡುತ ಬನ್ನಿ ಆತನ ಸನ್ನಿಧಿಗೆ||
ಪ್ರಭುವೆ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು ||

ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು|
ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ||
ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ||

ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ|
ಹೌದು, ಪ್ರಭುವೆನಿತೋ ಒಳ್ಳೆಯವನು||
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಘೋಷಣೆ ಕೀರ್ತನೆ 111:7,8
ಅಲ್ಲೆಲೂಯ, ಅಲ್ಲೆಲೂಯ!

ಸುಸ್ಥಿರವಾದುವು ಆತನ ನಿಯಮ ನಿಬಂಧನೆಗಳು | ಯುಗಯುಗಾಂತರಕೂ ದೃಢವಾಗಿರುವುವು ||

ಅಲ್ಲೆಲೂಯ!

ಶುಭಸಂದೇಶ: ಮಾರ್ಕ 10:46-52



ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡ ಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್ ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, " ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, "ಎಂದು ಗಟ್ಟಿಯಾಗಿ ಕೂಗಿಕೊಂಡನು. ಆನೇಕರು " ಸುಮ್ಮನಿರು " ಎಂದು ಅವನನ್ನು ಗದರಿಸಿದರು. ಅವನಾದರೋ, "ದಾವೀದ ಕುಲಪುತ್ರರೇ, ನನಗೆ ದಯೆತೋರಿ, "ಎಂದು ಇನ್ನಷ್ಟು. ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು, "ಅವನನ್ನು ಕರೆದುಕೊಂಡು ಬನ್ನಿ " ಎಂದು ಅಪ್ಪಣೆ ಮಾಡಿದರು. ಅವರು ಹೋಗಿ, " ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ, " ಎಂದು ಹೇಳಿದರು. ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೆ ಬಿಟ್ಟು, ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು, "ನನ್ನಿಂದ ನಿನಗೆ ಏನಾಗಬೇಕು " ಎಂದು ಕೇಳಿದರು. ಅದಕ್ಕೆ ಅವನು, "ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ, " ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, " ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ, ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿ ಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

27.05.2026 - ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ; ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ

 


ಮೊದಲನೆಯ ವಾಚನ: 1 ಪೇತ್ರ 1:18-25


ಸಹೋದರರೇ, ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ. ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ. ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು. ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ. ಸತ್ಯಕ್ಕೆ ಶರಣಾಗಿ ಆತ್ಮಶುದ್ದಿ ಹೊಂದಿರುವ ನಿಮ್ಮ ಸಹೋದರನನ್ನು ನಿಷ್ಠಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ. ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ. ಪವಿತ್ರಗ್ರಂಥದಲ್ಲಿ ಬರೆದಿರುವಂತೆ: ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು. ಈ ವಾಕ್ಯವೇ ನಿಮಗೆ ಸಾರಾಲಾದ ಶುಭಸಂದೇಶ.

ಕೀರ್ತನೆ: 147:12-15,19-20
ಶ್ಲೋಕ: ಜೆರುಸಲೇಮೇ, ಕೀರ್ತಿಸು ಪ್ರಭುವನು|

ಜೆರುಸಲೇಮೇ, ಕೀರ್ತಿಸು ಪ್ರಭುವನು|
ಸಿಯೋನೇ, ಸ್ತುತಿಸು ನಿನ್ನ ದೇವರನು||
ಬಲಪಡಿಸಿದನಾತ ನಿನ್ನ ಹೆಬ್ಬಾಗಿಲುಗಳನು|
ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು||

ನಿನ್ನ ಪ್ರಾಂತದೊಳಗೆಲ್ಲ ಇರುವುದು ನೆಮ್ಮದಿ|
ನೀಡುವನು ನಿನಗೆ ಅತ್ಯುತ್ತಮವಾದ ಗೋದಿ||
ಕಳಿಸುವನು ಧರೆಗೆ ತನ್ನ ಆಣತಿ|
ಸಿದ್ಧಿಯಾಗುವುದದು ಬಲು ಶೀಘ್ರದಿ||

ತಿಳಿಸಿಹನು ತನ್ನ ವಾಕ್ಯವನು ಯಕೋಬರಿಗೆ|
ತನ್ನ ವಿಧಿನಿಯಮಗಳನು ಇಸ್ರಾಯೇಲರಿಗೆ||
ಬೇರಾವ ಜನಾಂಗಕೂ ಆತ ‌ಹೀಗೆ ಮಾಡಿಲ್ಲ|
ಆತನ ವಿಧಿನಿಯಮಗಳನು ಅವರಿಗೆ ತಿಳಿಸಲಿಲ್ಲ||

ಘೋಷಣೆ ಕೀರ್ತನೆ 95:8
ಅಲ್ಲೆಲೂಯ, ಅಲ್ಲೆಲೂಯ!

ಆತನ ಕರೆಗೆ ಕಿವಿಗೊಟ್ಟರೆನಿತೋ ಒಳಿತು ನೀವಿಂದೇ | ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ ||

ಅಲ್ಲೆಲೂಯ!

ಶುಭಸಂದೇಶ: ಮಾರ್ಕ 10:32-45


ಆ ಕಾಲದಲ್ಲಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಇದ್ದಾಗ ಯೇಸು ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು: " ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು; ಆತನ ಮೇಲೆ ಉಗುಳುವರು; ಕೊರಡೆಯಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು, " ಎಂದರು. ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, " ಗುರುವೇ, ನಮ್ಮದೊಂದು ಬಿನ್ನಹವಿದೆ, ಅದನ್ನು ನಡೆಸಿಕೊಡಬೇಕು, "ಎಂದು ವಿಜ್ಞಾಪಿಸಿಕೊಂಡರು. "ನನ್ನಿಂದ ನಿಮಗೇನಾಗಬೇಕು? "ಎಂದು ಯೇಸು ಕೇಳಿದರು. "ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು, ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು. ಅದಕ್ಕೆ ಯೇಸು, " ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ಥಾನವನ್ನು ಪಡೆಯಲು ನಿಮ್ಮಿಂದ ಆದೀತೆ? " ಎಂದು ಪ್ರಶ್ನಿಸಿದರು. "ಹೌದು ಆಗುತ್ತದೆ, "ಎಂದು ಅವರು ಮರುನುಡಿದರು. ಆಗ ಯೇಸು, " ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು, "ಎಂದು ನುಡಿದರು. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ, ಯೊವಾನ್ನರ ಮೇಲೆ ಸಿಟ್ಟುಗೊಂಡರು. ಆಗ ಯೇಸು ಶಿಷ್ಯರೆಲ್ಲರನ್ನು ತಮ್ಮ ಬಳಿಗೆ ಕರೆದು, "ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು. ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ; ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ನರಪುತ್ರನು ಸಹ ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ, " ಎಂದು ಬೋಧಿಸಿದರು.

02.06.2026 - ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ

ಮೊದಲನೇ ವಾಚನ: 2 ಪೇತ್ರ 3:12-15, 17-18 ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ದರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು. ದೇವ...