17.05.2026 - ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಯೇಸುಸ್ವಾಮಿಯ ಸ್ವರ್ಗಾರೋಹಣ ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸುವಿರೋ?” ಎಂದು ಕೇಳಿದರು.ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತಿರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.


ಕೀರ್ತನೆ: 47:2-3, 6-7, 8-9
ಶ್ಲೋಕ: ಏರಿದನು ಪ್ರಭು ಜಯಜಯಕಾರದೊಂದಿಗೆ, ಆರೋಹಣವಾದನು ತುತೂರಿನಾದದ ಜೊತೆಗೆ

1.  ಸರ್ವ  ಜನಾಂಗಗಳೇ,  ಚಪ್ಪಾಳೆ  ಹೊಡೆಯಿರಿ|
ಸರ್ವೇಶ್ವರನಿಗೆ  ಜಯಜಯ ಘೋಷಮಾಡಿರಿ||
ಪರಾತ್ಪರನಾದ  ಪ್ರಭುವು  ಘನಗಂಭೀರನು|
ಪ್ರಪಂಚಕ್ಕೆಲ್ಲಾ  ರಾಜಾಧಿರಾಜನು||
ಶ್ಲೋಕ

2.  ಏರಿದನು  ಪ್ರಭು ಜಯಜಯಕಾರದೊಂದಿಗೆ|
ಆರೋಹಣವಾದನು  ತುತೂರಿನಾದದ  ಜೊತೆಗೆ||
ಕೀರ್ತಿಸಿರಿ  ನಮ್ಮ  ದೇವನನು  ಸಂಕೀರ್ತಿಸಿರಿ|
ಕೀರ್ತಿಸಿರಿ  ನಮ್ಮ  ರಾಜನನು  ಸಂಕೀರ್ತಿಸಿರಿ||
ಶ್ಲೋಕ

3.  ದೇವನು  ಭೂಮಂಡಲಕ್ಕೆಲ್ಲಾ  ಒಡೆಯನು|
ಕೀರ್ತನೆಯಿಂದ  ಕೊಂಡಾಡಿರಿ  ಆತನನು||
ವಹಿಸಿಕೊಂಡನು  ದೇವನು  ಸರ್ವಾಧಿಪತ್ಯ|
ಅಲಂಕರಿಸಿಹನು  ತನ್ನ  ಪೂಜ್ಯ  ಗದ್ದುಗೆಯ||
ಶ್ಲೋಕ

ಎರಡನೇ ವಾಚನ: ಎಫೆಸಿಯರಿಗೆ 1:17-23


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಶುಭಸಂದೇಶ: ಮತ್ತಾಯ 28:16-20


ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು.


16.05.2026 - ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18: 23-28

ಪೌಲನು ಅಂತಿಯೋಕ್ಯದಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು. ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು. ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು. ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು. ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.

ಕೀರ್ತನೆ: 47:2-3, 8-9, 10
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II
ವಹಿಸಿಕೊಂಡನು ದೇವನು ಸರ್ವಾಧಿಪತ್ಯ I

ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II
ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I
ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II

ಭೂಪಾಲರೆಲ್ಲರೂ ದೇವರಿಗೆ ಅಧೀನರು I
ಸರ್ವೋನ್ನತನು, ಸಾರ್ವಭೌಮನು ದೇವರು II

ಶುಭಸಂದೇಶ:  ಯೊವಾನ್ನ 16:23-28


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು. ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು. “ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ. ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ. ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.

15.05.2026 - ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತು ಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18



ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು. ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು. ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು. “ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು. ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ. ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು. ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ. ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು. 

ಕೀರ್ತನೆ: 47:2-3, 4-5, 6-7
ಶ್ಲೋಕ: ದೇವನು ಭೂಮಂಡಲಕ್ಕೆಲ್ಲಾ ಒಡೆಯನು

ಪರಾತ್ಪರನಾದ ಪ್ರಭುವು ಘನಗಂಭೀರನು I
ಪ್ರಪಂಚಕ್ಕೆಲ್ಲ ರಾಜಾಧಿರಾಜನು II
ಜನಾಂಗಗಳನಾತ ನಮಗಧೀನಪಡಿಸಿಹನು I
ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II

ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I
ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II
ಏರಿದನು ಪ್ರಭು ಜಯಜಯಕಾರದೊಂದಿಗೆ I
ಆರೋಹಣವಾದನು ತುತೂರಿನಾದ ಜೊತೆಗೆ II

ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ I
ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ II
ದೇವನು ಭೂಮಂಡಲಕ್ಕೆಲ್ಲಾ ಒಡೆಯನು I

ಕೀರ್ತನೆಯಿಂದ ಕೊಂಡಾಡಿರಿ ಆತನನು II


ಶುಭಸಂದೇಶ: ಯೊವಾನ್ನ 16:20-23


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತು ಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು. ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ; ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ. ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು."

14.05.2026 - ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:15-17, 20-26




ಸ್ವಲ್ಪ ದಿನಗಳ ನಂತರ ಸುಮಾರು ನೂರಿಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆಸೇರಿದ್ದರು. ಆಗ ಪೇತ್ರನು ಎದ್ದು ನಿಂತು ಹೀಗೆಂದನು: "ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು. ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು, ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದನು. 'ಅವನ ಮನೆ ಹಾಳಾಗಲಿ, ಅದು ಪಾಳು ಬೀಳಲಿ," ಎಂದೂ, 'ಅವನ ಸ್ಥಾನ ಇನ್ನೊಬ್ಬನದಾಗಲಿ,' ಎಂದೂ ಕೀರ್ತನಾಗ್ರಂಥದಲ್ಲಿ ಬರೆಯಲಾಗಿದೆ. ಆದುದರಿಂದ ಪ್ರಭು ಯೇಸುವಿನ ಪುನರುತ್ದಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು. ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು. ಆಗ ಬಾರ್ನಬ ಎಂದು ಹೆಸರಿಡಲಾದ ಜೋಸೆಫ್ (ಇವನನ್ನು ಯುಸ್ತ ಎಂದು ಕರೆಯುತ್ತಿದ್ದರು)  ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು. ಅನಂತರ ಎಲ್ಲರೂ ಪ್ರಾರ್ಥನೆ ಮಾಡುತ್ತಾ, "ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತ ಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ," ಎಂದರು. ಆನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಕೀರ್ತನೆ: 113:1-2, 3-4, 5-6, 7-8

ಶ್ಲೋಕ: ಕೂರಿಸುವಾತ ಅವರನು ಅಧಿಪತಿಗಳ ನಡುವೆ, ತನ್ನ ಪ್ರಜೆಯನಾಳುವ ಅಧಿಪತಿಗಳ ನಡುವೆ

1.  ಪ್ರಭುವಿನ ದಾಸರೇ, ಸ್ತುತಿಮಾಡಿ|
ಪ್ರಭುವಿನ ನಾಮಸ್ತುತಿಯನು ಮಾಡಿ||
ಪ್ರಭುವಿನ ಸಿರಿ  ನಾಮವು ಪೂಜ್ಯ|
ಇಂದಿಗೂ ಎಂದೆಂದಿಗೂ ಪೂಜ್ಯ||
ಶ್ಲೋಕ

2.  ಪ್ರಭುವಿನಾ ಸಿರಿ  ನಾಮವು ಸ್ತುತ್ಯ|
ಪೂರ್ವ ಪಶ್ಚಿಮದವರೆಗೂ ಸ್ತುತ್ಯ||
ಸಕಲ ಜಾತಿ ಜನಾಂಗಗಳಲಿ ಪ್ರಭು ಶ್ರೇಷ್ಠ|
ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ||
ಶ್ಲೋಕ

3.  ನಮ್ಮ ಪ್ರಭು  ದೇವನಂತೆ ಯಾರು ಸಮರ್ಥ?|
ಉನ್ನತದಲಿ ಆಸನಾರೂಢನು ಆತ|
ಇಹಪರಗಳನು ವೀಕ್ಷಿಸಲಾತ ಶಕ್ತ||
ಶ್ಲೋಕ

4.  ದೀನರನು ಎಬ್ಬಿಸುವನು ಧೂಳಿನಿಂದ|
ಬಡವರನು ಎತ್ತುವನು ತಿಪ್ಪೆಯಿಂದ||
ಕೂರಿಸುವನಾತ ಅವರನು ಅಧಿಪತಿಗಳ ನಡುವೆ|
ತನ್ನ ಪ್ರಜೆಯನ್ನಾಳುವ ಅಧಿಪತಿಗಳ ನಡುವೆ||
ಶ್ಲೋಕ


ಘೋಷಣೆ
(ಯೊವಾನ್ನ 15: 16)

ಅಲ್ಲೆಲೂಯ, ಅಲ್ಲೆಲೂಯ!
ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ,|ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ||
ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 15:9-17



ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ: "ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ. ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು, ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ"

13.05.2026 - ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದ ಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 17:15, 22-18:1


ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದು ಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು. ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ. ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ. ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ. ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ. ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ. ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ. ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’ “ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು. ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ. ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.” ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು. ಹೀಗೆ ಪೌಲನು ಆ ಸಭೆಯಿಂದ ನಿರ್ಗಮಿಸಿದನು. ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.  ಇದಾದಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಕೀರ್ತನೆ: 148:1-2, 11-12, 13, 14
ಶ್ಲೋಕ: ಭೂಮ್ಯಾಕಾಶ ಮೀರಿದೆ ಆತನ ಮಹಿಮೆ

ಹೊಗಳಿರಿ ಸ್ವರ್ಗದಿಂದ ಪ್ರಭುವನು I
ವಂದಿಸಿ ಮಹೋನ್ನತದಲಿ ಆತನನು II
ಆತನ ಸಮಸ್ತ ದೂತರೇ, ಸ್ತುತಿಸಿ ಆತನನು I
ಆತನ ಎಲ್ಲಾ ಗಣಗಳೇ, ಹೊಗಳಿ ಆತನನು II

ಭೂರಾಜರು, ಎಲ್ಲ ಜನಾಂಗಗಳು I
ಅಧಿಕಾರಿಗಳು, ದೇಶಾಧಿಪತಿಗಳು II
ಯುವಕರೂ ಯುವತಿಯರೂ I
ಮುದುಕರೂ ಮಕ್ಕಳೂ II

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I
ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I
ಆತನ ಮಹತ್ತಾದ ಏಕೈಕ ನಾಮವನು II

ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I
ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I
ತನ್ನ ಆಪ್ತಜನರಾದ ಇಸ್ರಯೇಲರಿಗೆ I

ಅಲ್ಲೆಲೂಯ! II

ಶುಭಸಂದೇಶ: ಯೊವಾನ್ನ 16:12-15


ಯೆಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು:  "ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸದ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು. ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದ ಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು. ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು. ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು."

12.05.2026 - ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:22-34


ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು. ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು. ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು. ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು. ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು. ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು. ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು. ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು. “ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು. ಅನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನೆಯಲ್ಲಿದ್ದ ಎಲ್ಲರಿಗೂ ಬೋಧಿಸಿದರು. ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು. ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಕೀರ್ತನೆ: 138:1-2, 2-3, 7-8
ಶ್ಲೋಕ: ಇಕ್ಕಟಿನಲ್ಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭೂ ಪ್ರಾಣವನು.

ಹೃದಯಪೂರ್ವಕ ವಂದನೆ ಪ್ರಭು ನಿನಗೆ I
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II

ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I
ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I
ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II

ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I
ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II
ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I
ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II

ಯೊವಾನ್ನ 16:5-11


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ. ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು. ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ. ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ. ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.

11.05.2026 - ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:11-15


ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣ ಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ, ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು. ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು. ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು. ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಕೀರ್ತನೆ: 149:1-2, 3-4, 5-6, 9

ಶ್ಲೋಕ: ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು!

ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I
ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II
ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I
ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II

ಆತನ ನಾಮವನು ಕೀರ್ತಿಸಲಿ ಕುಣಿತದಿಂದ I
ಆತನನು ಭಜಿಸಲಿ ತಮಟೆಕಿನ್ನರಿಗಳಿಂದ II
ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I
ಜಯಶೀಲರನ್ನಾಗಿಸುತ್ತಾನೆ ದೀನದಲಿತರನು

ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I
ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II
ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I
ಇದು ತರಲಿ ಭಕ್ತರೆಲ್ಲರಿಗೆ ಗೌರವವನು I

ಯೊವಾನ್ನ 15:26-16:4



ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು. ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ."

17.05.2026 - ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11 ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕ...