26.07.2026 - ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು

 ಮೊದಲನೇ ವಾಚನ: ಅರಸರು 3:5, 7-12



ದೇವರಾದ ಸರ್ವೇಶ್ವರ ಆ ರಾತ್ರಿ ಗಿಬ್ಯೋನಿನಲ್ಲಿ ಸೊಲೊಮೋನನಿಗೆ ಕನಸಿನಲ್ಲಿ ಕಾಣಿಸಿಕೊಂಡು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು. ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು. ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು. ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ. ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು. ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.

ಕೀರ್ತನೆ: 119:57, 72, 76-77, 127-128, 129-130

ಶ್ಲೋಕ:  ನಿನ್ನ ಧರ್ಮಶಾಸ್ತ್ರ ಪ್ರಭೂ, ನನಗೆ ಪರಮ ಪ್ರಿಯ.

1.  ಹೇ ಪ್ರಭೂ, ನೀನೇ ನನ್ನ ಪಾಲಿನ ಸ್ವಾಸ್ತ್ಯ|
ನಿನ್ನ ವಾಕ್ಯದ ಪಾಲನೆಯೇ ನಾ ಗೈದ ನಿರ್ಣಯ||
ಸಾವಿರಾರು ಚಿನ್ನ ಬೆಳ್ಳಿ ನಾಣ್ಯಗಳಿಗಿಂತ|
ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ||
ಶ್ಲೋಕ

2.  ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ|
ಸಾಂತ್ವನ ನೀಡಲಿ ಎನಗೆ ನಿನ್ನಚಲ ಪ್ರೀತಿ||
ನಾ ಬದಕುವಂತೆ ತೋರೆನಗೆ ನಿನ್ನ ದಯ|
ನಿನ್ನ ಧರ್ಮಶಾಸ್ತ್ರ ನನಗೆ ಪರಮ ಪ್ರಿಯ||
ಶ್ಲೋಕ

3.  ಚಿನ್ನ ಅಪರಂಜಿಗಿಂತಲೂ ಪ್ರಿಯ| ನಿನ್ನ ಆಜ್ಞೆಗಳು ನನಗೆ ಸುಪ್ರಿಯ||
ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ|
ನನಗೆ ಹಗೆ ಮಿಥ್ಯ ಮಾರ್ಗಗಳೆಲ್ಲ||
ಶ್ಲೋಕ

4.  ಅಪೂರ್ವವಾದ ನಿನ್ನ ಕಟ್ಟಳೆಗಳನು|
ಹೃತ್ಪೂರ್ವಕವಾಗಿ ನಾ ಪಾಲಿಪೆನು||
ತರುವುದು ನಿನ್ನ ವಾಕ್ಯೋಪದೇಶ|
ಸರಳ ಜನರಿಗೆ ಜ್ಞಾನ ಪ್ರಕಾಶ||
ಶ್ಲೋಕ

ಎರಡನೇ ವಾಚನ: ರೋಮನರಿಗೆ 8:28-30


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಶುಭಸಂದೇಶ: ಮತ್ತಾಯ 13:44-52



“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದು ಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ. “ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ. “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.  ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟು ಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.  ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.

25.07.2026 - ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು

 ಮೊದಲನೇ ವಾಚನ: 2 ಕೊರಿಂಥಿಯರಿಗೆ 4:7-15


ಸಹೋದರರೇ, ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ. ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ. ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ. “ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ. ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು. ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.

ಕೀರ್ತನೆ: 126:1-2, 2-3, 4-5, 6

ಶ್ಲೋಕ:  ಅಳುತಳುತಾ  ಬಿತ್ತುವವರು  ನಲಿನಲಿಯುತಾ  ಕೊಯ್ಯುವರು.

1.  ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ|
ಅದೊಂದು ಕನಸು ಕಂಡಂತಿತ್ತು ನಮಗೆ ಅವಾಗ|
ಉಕ್ಕಿತಾಗ ಮುಖ ತುಂಬ ನಗು, ಬಾಯ್ತುಂಬ ಹರ್ಷಗೀತೆ||
ಶ್ಲೋಕ

2.  ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ  ಪರತೆ|
ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯ ಜನತೆ||
ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ|
ಎಂತಲೆ ನಾವಾನಂದಭರಿತರಾಗುವುದು ಉಚಿತ||
ಶ್ಲೋಕ

3.  ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ|
ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ|
ಅಳುತಳುತಾ ಬಿತ್ತುವವರು ನಲಿನಲಿಯುತಾ ಕೊಯ್ಯುವರು||
ದುಃಖಿಸುತಾ ಬೀಜ ಬಿತ್ತಲು ಹೋದವನು|
ಹರ್ಷಿಸುತಾ ಕೊಯ್ದು ತರುವನು ತೆನೆಗಳನು||
ಶ್ಲೋಕ

ಘೋಷಣೆ
(ಯೊವಾನ್ನ 15:16)

ಅಲ್ಲೆಲೂಯ, ಅಲ್ಲೆಲೂಯ!
ನಾನೇ  ನಿಮ್ಮನ್ನು  ಆರಿಸಿಕೊಂಡಿದ್ದೇನೆ,  ನೀವು  ಲೋಕಕ್ಕೆ  ಹೋಗಬೇಕು  ಸಫಲರಾಗಬೇಕು | ಆ  ಫಲ  ಶಾತ್ವತವಾಗಿರಬೇಕೆಂದೇ  ನಿಮ್ಮನ್ನು  ನೇಮಿಸಿದ್ದೇನೆ ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ: 20:20-28


ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.

24.07.2026 - ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲ ಕೊಡುತ್ತಾನೆ.

 ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 3:14-17



ಇದು ಕರ್ತರ ನುಡಿ: “ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು. ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು. ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ. ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.

ಕೀರ್ತನೆ
ಯೆರೆಮೀಯ 31: 10, 11-12, 13, v.10

ಶ್ಲೋಕ:  ಪ್ರಭು  ನಮ್ಮನ್ನು  ಕಾಪಾಡುವರು.

1.  ರಾಷ್ಟ್ರಗಳೇ, ಸರ್ವೇಶ್ವರನ  ವಾಕ್ಯವನ್ನು  ಕೇಳಿರಿ:  ದೂರದ  ದ್ವೀಪಗಳಲ್ಲೂ  
ಅದನ್ನು  ಸಾರಿರಿ:ಇಸ್ರಾಯೇಲರನ್ನು  ಚದುರಿಸಿದಾತ 
ಕುರಿಮಂದೆಯನ್ನು  ಕಾಯುವ  ಕುರುಬನಂತೆ  ಅವರನ್ನು  ಕೂಡಿಸಿ  
ಕಾಪಾಡುವನೆಂದು  ಪ್ರಕಟಿಸಿರಿ.
ಶ್ಲೋಕ

2.  ಸರ್ವೇಶ್ವರ  ಯಕೋಬರ  ವಿಮೋಚಕ  ಅವರನ್ನು  
ಅವರಿಗಿಂತ  ಬಲಿಷ್ಠರ  ಕೈಯಿಂದ  ಬಿಡಿಸಿದಾತ.
ಅವರು  ಬಂದು  ಹಾಡುವರು  ಸಿಯೋನ್  ಶಿಖರದಲ್ಲಿ  
ಬರುವರು  ಪ್ರವಾಹ  ಪ್ರವಾಹವಾಗಿ 
ಧಾನ್ಯ,  ದ್ರಾಕ್ಷಾರಸ,  ಎಣ್ಣೆ, ಕುರಿ, ಕುರಿಮರಿ,  ಸರ್ವೇಶ್ವರನ  
ಈ  ವರದಾನಗಳನ್ನು  ಅನುಭವಿಸಲಿಕ್ಕಾಗಿ.
ಶ್ಲೋಕ

3.  ಆಗ  ನಾಟ್ಯವಾಡಿ  ನಲಿವಳು  ಯುವತಿ 
ಹರ್ಷಿಸುವರು  ಯುವಕರು  ಮುದುಕರು  ಜೊತೆಯಾಗಿ.
ಅವರ  ದುಃಖವನ್ನು  ಸಂತೋಷವಾಗಿಸುವೆನು 
ವ್ಯಸನ  ತೊರೆದು  ಆನಂದಿಸುವಂತೆ  ಅವರನ್ನು  ಸಂತೈಸುವೆನು.
ಶ್ಲೋಕ

ಘೋಷಣೆ
(ಕೀರ್ತನೆ 130: 5)

ಅಲ್ಲೆಲೂಯ, ಅಲ್ಲೆಲೂಯ.
ಪ್ರಭುವಿಗಾಗಿ  ಎನ್ನ  ಮನ  ಕಾದಿದೆ,| ಆತನ  ವಾಕ್ಯದಲಿ  ನಂಬಿಕೆ  ನನಗಿದೆ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 13:18-23


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ, “ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ: ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.

23.07.2026 - ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು

 ಮೊದಲನೇ ವಾಚನ: ಯೆರೆಮೀಯ 2:1-3, 7-8, 12-13 


ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು : “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು: ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ. “ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.” ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ. ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’ ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ. “ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”

ಕೀರ್ತನೆ: 36:6-7, 8-9, 10-11
ಶ್ಲೋಕ: ಪ್ರಭೂ, ನಿನ್ನಲ್ಲಿದೆ ಜೀವದ ಬುಗ್ಗೆ

ಶುಭಸಂದೇಶ: ಮತ್ತಾಯ 13:10-17

ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ. ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’ “ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ. ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ."ಎಂದರು.

22.07.2026 - ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು

 

ಮೊದಲನೇ ವಾಚನ: ಪರಮಗೀತೆ  3:1-4 

ನಲ್ಲೆ: ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ, ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ ಎದ್ದು ಊರೆಲ್ಲಾ  ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದ "ನನ್ನ ಪ್ರಾಣಕಾಂತನನ್ನು ಕಂಡಿರಾ?"  ಎಂದು ವಿಚಾರಿಸಿದೆ; ಅವರನ್ನು ಬಿಟ್ಟು ತುಸು ಹೊತ್ತಿನಲ್ಲೇ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯಿಯ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಅಥವಾ

ಪರ್ಯಾಯ  ವಾಚನ: 2,ಕೊರಿಂಥಿಯರಿಗೆ 5:14-17

ಸಹೋದರರೇ,  ಯೇಸು  ಕ್ರಿಸ್ತರ  ಪ್ರೀತಿಯ  ಪಾಲನೆಗೆ  ನಾವು  ಒಳಗಾಗಿದ್ದೇವೆ.  ಎಲ್ಲಾ  ಮಾನವರಿಗೋಸ್ಕರ  ಒಬ್ಬನು  ಮರಣಹೊಂದಿದನು.  ಆದ್ದರಿಂದ  ನಾವೆಲ್ಲರೂ  ಆ  ಮರಣದಲ್ಲಿ  ಪಾಲುಗಾರರು.  ಸರ್ವರಿಗಾಗಿ ಯೇಸು ಪ್ರಾಣತ್ಯಾಗ  ಮಾಡಿದರು.  ಪರಿಣಾಮವಾಗಿ,  ಇನ್ನು   ಮುಂದೆ   ಜೀವಿಸುವವರು   ತಮಗಾಗಿ  ಜೀವಿಸದೆ,  ಸತ್ತು  ಪುನರುತ್ಥಾನರಾದ  ಯೇಸುವಿಗಾಗಿ  ಜೀವಿಸಬೇಕು.  ಇನ್ನು  ಮುಂದೆ  ನಾವು  ಯಾರನ್ನೂ  ಕೇವಲ  ಮಾನವ  ದೃಷ್ಟಿಯಿಂದ  ಪರಿಗಣಿಸುವುದಿಲ್ಲ.  ಒಂದು  ಕಾಲದಲ್ಲಿ,  ಕ್ರಿಸ್ತ  ಯೇಸುವನ್ನು  ನಾವು  ಹಾಗೆ  ಪರಿಗಣಿಸಿದ್ದುಂಟು.  ಆದರೆ  ಇನ್ನು  ಮುಂದೆ  ಹಾಗೆ  ಮಾಡುವುದಿಲ್ಲ.  ಯಾರಾದರೂ  ಯೇಸು  ಕ್ರಿಸ್ತರೊಡನೆ  ಒಂದಾದರೆ ಅವನು  ನೂತನ  ಸೃಷ್ಟಿಯಾಗುತ್ತಾನೆ.  ಹಳೆಯದೆಲ್ಲಾ  ಅಳಿದುಹೋಗುತ್ತದೆ.  ಹೊಸದಿದೋ,  ಜನ್ಮ  ತಳೆದಿದೆ.

ಕೀರ್ತನೆ: 63:2, 3-4, 5-6, 8-9
ಶ್ಲೋಕ: ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ

ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ
ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ
ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ.

ನಿನ್ನ ಮಂದಿರದಲಿ ನನಗಾದ ದರ್ಶನದಲಿ
ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ
ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ
ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ.

ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ
ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ
ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ
ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ.

ನನಗೆ ನೀನು ನಿರಂತರದ ಸಹಾಯಕ
ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ
ನನ್ನಾತ್ಮ ನಿನಗಾತುಕೊಂಡಿದೆ
ನಿನ್ನ ಬಲಗೈ ನನಗಿಂಬಾಗಿದೆ.

ಶುಭಸಂದೇಶ: ಯೊವಾನ್ನ  20:1-2, 11-18


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದು ಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿ ಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತ ವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿ ಬಿಟ್ಟಿದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು.  ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ) ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.

21.07.2026 - ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ

 ಮೊದಲನೇ ವಾಚನ: ಪ್ರವಾದಿ ಮೀಕನ ಗ್ರಂಥ 7:14-15, 18-20


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ. ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

ಕೀತನೆ: 85:2-4, 5-6, 7-8

ಶ್ಲೋಕ: ತೋರಿಸೆಮಗೆ ಪ್ರಭೂ ಕರುಣೆಯನು

೧. ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ |
     ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ ||
     ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು |
     ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು ||
     ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು |
     ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು ||

೨. ಪುನಶ್ಚೇತನಗೊಳಿಸೆಮ್ಮನು ದೇವಾ ಉದ್ಧಾರಕ |
     ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ ||
     ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ |
     ತಲಾತಲಾಂತರಗಳಿಗೂ ಕೋಪವನು ಬೆಳೆಸುವೆಯಾ? ||

೩. ನವಜೀವವನು ತುಂಬಿಸಲಾರೆಯಾ ನಮ್ಮಲಿ? |
     ಆಗ ನಿನ್ನ ಜನರು ಆನಂದಿಸುವರು ನಿನ್ನಲಿ ||
     ತೋರಿಸೆಮಗೆ ಪ್ರಭೂ ಕರುಣೆಯನು |
      ಅನುಗ್ರಹಿಸೆಮಗೆ ರಕ್ಷಣೆಯನು ||


ಶುಭಸಂದೇಶ: ಮತ್ತಾಯ12:46-50


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು. “ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು. ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ, ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.

20.07.2026 - ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ

 ಮೊದಲನೇ ವಾಚನ: ಮೀಕ 6:1-4, 6-8


ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ. “ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.” ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು. ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ. ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ? ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ? ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.

ಕೀರ್ತನೆ: 50:5-6, 8-9, 16-17, 21, 23

ಶ್ಲೋಕ: ಸನ್ಮಾರ್ಗಿಗೆ ತೋರುವೆ ಪರಮ ಜೀವೋದ್ದಾರವನು

ಶುಭಸಂದೇಶ: ಮತ್ತಾಯ12:38-42


ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

26.07.2026 - ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು

  ಮೊದಲನೇ ವಾಚನ: ಅರಸರು 3:5, 7-12 ದೇವರಾದ ಸರ್ವೇಶ್ವರ ಆ ರಾತ್ರಿ ಗಿಬ್ಯೋನಿನಲ್ಲಿ ಸೊಲೊಮೋನನಿಗೆ ಕನಸಿನಲ್ಲಿ ಕಾಣಿಸಿಕೊಂಡು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇ...