11.07.2026 - “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 6:1-8 


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. 2ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು. ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು. ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು. ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.

ಕೀರ್ತನೆ: 93:1, 1-2, 5

ಶ್ಲೋಕ:  ವಹಿಸಿಹನು ಪ್ರಭು ರಾಜ್ಯಾಧಿಕಾರವನು




ಶುಭಸಂದೇಶ: ಮತ್ತಾಯ 10:24-33


ಯೇಸುಸ್ವಾಮಿ ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?” “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ."

10.07.2026 - ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 14:2-10 

ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು. ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿ ಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆತೋರಿಸುವವನು ನೀನೇ,” ಎಂದು ಹೇಳು. ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು. ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ. ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ. ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ. ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ”. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.” ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿ ಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.

ಕೀರ್ತನೆ: 51:3-4, 8-9, 12-13, 14, 17

ಶ್ಲೋಕ:  ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ

ಶುಭಸಂದೇಶ: ಮತ್ತಾಯ 10:16-23

ಯೇಸುಸ್ವಾಮಿ ಶಿಷ್ಯರ ನಿಯೋಗವನ್ನು ಕಳುಹಿಸುವಾಗ ಅವರಿಗೆ ಕೊಟ್ಟ ಆದೇಶ ಇದು: “ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ. ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.

09.07.2026 - “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 11:1, 3-4, 8-9 

ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ. ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ. ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ. “ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ? ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.

ಕೀರ್ತನೆ: 80:2, 3, 15-16

ಶ್ಲೋಕ:  ದೇವರೇ, ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು

ಶುಭಸಂದೇಶ:  ಮತ್ತಾಯ 10:7-15


ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. “ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ. ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ. ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.

08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12

ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು. “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣು ಹೋಗಬೇಕು.
ಕೀರ್ತನೆ: 105:2-3, 4-5, 6-7

ಶ್ಲೋಕ:  ಅಪೇಕ್ಷಿಸಿ ನಿತ್ಯವೂ ಪ್ರಭುವಿನ ದರ್ಶನವನು

1.  ಹಾಡಿಪಾಡಿ ಹೊಗಳಿರಿ ಪ್ರಭುವನು|
ಧ್ಯಾನಿಸಿ ನೀವು ಆತನ ಪವಾಡಗಳನು||
ಹೆಮ್ಮೆಪಡಿ ನೆನೆದಾತನ ಶ್ರೀ ನಾಮ|
ಹಿಗ್ಗಲಿ ಹೃದಯ ಕೋರಿ ಆತನ ದರ್ಶನ||
ಶ್ಲೋಕ

2.  ಅರಸಿರಿ ಪ್ರಭುವನೂ ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ಆತನ ದಾಸ ಅಬ್ರಹಾಮನ ಸಂತತಿಯವರೇ,|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಶ್ಲೋಕ

3.  ನೆನೆಯಿರಿ ಆತನದ್ಭುತಗಳನು ಮಹತ್ಕಾರ್ಯಗಳನು|
ಆತನು ವಿಧಿಸಿದಾ ನ್ಯಾಯನಿರ್ಣಯಗಳನು||
ಪ್ರಭು ದೇವನೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||
ಶ್ಲೋಕ

ಘೋಷಣೆ
(ಕೀರ್ತನೆ 95: 8)

ಅಲ್ಲೆಲೂಯ, ಅಲ್ಲೆಲೂಯ.
ಆತನ  ಕರೆಗೆ  ಕಿವಿಗೊಟ್ಟರೆನಿತೋ  ಒಳಿತು  ನೀವಿಂದೇ,|ಕಲ್ಲಾಗಿಸಿಕೊಳ್ಳದಿರಿ  ಹೃದಯವನು  ನಿಮ್ಮ  ಪೂರ್ವಜರಂತೆ||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 10:1-7


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."



07.07.2026 - “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 8:4-7, 11-13

“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ. ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ? ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು. ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು. “ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ. ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ. ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು."

ಕೀರ್ತನೆ: 115:3-4, 5-6, 7-8, 9-10

ಶ್ಲೋಕ:  ಪ್ರಭುವಿನಲ್ಲಿದೆ ಭರವಸೆ ಇಸ್ರಯೇಲ್ ಜನರಿಗೆ

ಕೀರ್ತನೆ
115: 3-10. v. 9

ಶ್ಲೋಕ:  ಪ್ರಭುವಿನಲ್ಲಿದೆ  ಭರವಸೆ  ಇಸ್ರಯೇಲ್  ಜನರಿಗೆ.

1.  ಪರದಲ್ಲಿಹನು  ನಮ್ಮ  ದೇವನು|
ಗೈವನು  ತನಗಿಷ್ಟ  ಬಂದುದನು||
ಅವರ  ವಿಗ್ರಹ  ಬರೀ  ಬೆಳ್ಳಿ  ಬಂಗಾರ|
ಅವು  ಮಾನವನ  ಕೈ ಕೆಲಸಗಳು  ಮಾತ್ರ||
ಶ್ಲೋಕ

2.  ಬಾಯಿದ್ದರೂ  ಅವು  ಮಾತಾಡುವುದಿಲ್ಲ|
ಕಣ್ಣುಗಳಿದ್ದರೂ  ಅವು  ಕಾಣುವುದಿಲ್ಲ||
ಕಿವಿಯಿದ್ದರೂ  ಅವು  ಕೇಳುವುದಿಲ್ಲ|
ಮೂಗಿದ್ದರೂ  ಅವು  ಮೂಸುವುದಿಲ್ಲ||
ಶ್ಲೋಕ

3.  ಕೈಯಿದ್ದರೂ  ಅವು  ಮುಟ್ಟುವುದಿಲ್ಲ|
ಕಾಲಿದ್ದರೂ  ಅವು  ನಡೆಯುವುದಿಲ್ಲ||
ಅವುಗಳಂತಾಗುವರು  ಅವುಗಳನು  ಮಾಡುವವರು|
ಅವುಗಳಂತಾಗುವರು  ಅವುಗಳನು  ನಂಬುವವರು||
ಶ್ಲೋಕ

4.  ಪ್ರಭುವಿನಲ್ಲಿದೆ  ಭರವಸೆ  ಇಸ್ರಯೇಲ್  ಜನರಿಗೆ|
ಆತನೇ  ಸಹಾಯಕ  ರಕ್ಷಾಕವಚ  ಅವರಿಗೆ||
ಪ್ರಭುವಿನಲ್ಲಿದೆ  ಭರವಸೆ  ಆರೋನನ  ಕುಲಕೆ|
ಆತನೇ  ಸಹಾಯಕ  ರಕ್ಷಾಕವಚ  ಅವರಿಗೆ|| 
ಶ್ಲೋಕ


ಘೋಷಣೆ
(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.
ಬೋಧಿಸುವೆನು ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 9:32-38


ಕುರುಡರು ಹೊರಟು ಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು. ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿ ಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.

06.07.2026 - ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,

 ಮೊದಲನೇ ವಾಚನ: ಹೊಶೇಯ 2:16, 17-18, 21-22


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ. ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಚರಿಸದಂತೆ ಮಾಡುವೆನು. ಆ ದಿನಗಳಲ್ಲಿ ನನ್ನ ಜನರಿಗೆ ಹಾನಿ ಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದ ಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.

ಕೀರ್ತನೆ: 145:2-3, 4-5, 6-7, 8-9

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು

ಕೀರ್ತನೆ
145: 2-9, v. 8

ಶ್ಲೋಕ:  ಪ್ರಭು  ದಯಾನಿಧಿ,  ಕೃಪಾಸಾಗರನು.

1.  ಹೊಗಳುವೆನು ನಾ ದಿನದಿನವೂ ನಿನ್ನನು|
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು||
ಪ್ರಭು ಮಹಾತ್ಮನು ಸ್ತತ್ಯರ್ಹನು|
ಆತನ ಮಹಿಮೆ ಅಗಮ್ಯವಾದದು||
ಶ್ಲೋಕ

2.  ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು|
ತಿಳಿಸುವುದು ಪ್ರಭೂ, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು||
ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು|
ನಿನ್ನ ಮಹೋನ್ನತ ಮಹಿಮಾಪ್ರಭಾವವನು||
ಶ್ಲೋಕ

3.  ಜನರು ಸಾರುವರು ನಿನ್ನ  ಅದ್ಭುತಶಕ್ತಿಯನು|
ನಾ ಪ್ರಸಿದ್ದಪಡಿಸುವೆನು ನಿನ್ನ ಮಹಿಮೆಯನು||
ಪ್ರಕಟಿಸುವರವರು ನಿನ್ನ ಮಹೋಪಕಾರವನು|
ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು||
ಶ್ಲೋಕ

4.  ಪ್ರಭು ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

🌺✝️🌺

ಘೋಷಣೆ
(ಕೀರ್ತನೆ 25: 4,5)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ಸನ್ಮಾರ್ಗದಲಿ  ಮುನ್ನಡೆಸೆನ್ನ  ದೇವಾ ||
ಅಲ್ಲೆಲೂಯ.





ಶುಭಸಂದೇಶ: ಮತ್ತಾಯ 9:18-26


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು," ಎಂದು ಬೇಡಿಕೊಂಡನು. ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿ ಹೋದರು. ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು" ಎಂದುಕೊಂಡಿದ್ದಳು ಆಕೆ. ಯೇಸು ಹಿಂದಿರುಗಿ ಆಕೆಯನ್ನು ನೋಡಿ, "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲ ಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, "ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ" ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯ ಮಾಡಿದರು. ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು. ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿ ಹರಡಿತು. 

04.07.2026 - ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ

 ಮೊದಲನೆಯ ವಾಚನ: ಆಮೋಸ 9:11-15



ಸರ್ವೇಶ್ವರ ಇಂತೆನ್ನುತ್ತಾರೆ: "ದಿನ ಬರಲಿದೆ, ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದುದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು. ಹೀಗೆ ನನ್ನ ಜನರು ಎದೋಮಿನ ಮಿಕ್ಕ ಭಾಗವನ್ನೂ ಸರ್ವೇಶ್ವರನ ಪ್ರಜೆ ಎನ್ನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು." ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು: ಕಾಲ ಬರುವುದು. ಆಗ ಹೊಸಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು, ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು. ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು. ಬೇರೂರಿಸುವೆನು ಅವರನು ಸ್ವಂತನಾಡಿನಲಿ, ಕೀಳರಾರು ಅವರನು ಅಲ್ಲಿಂದ ಮರಳಿ." ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.

ಕೀರ್ತನೆ: 85:9, 11-12, 13-14
ಶ್ಲೋಕ: ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ.

ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ|
ಇದರಿಂದ ತನ್ನ ಮಹಿಮೆ ನಾಡಿನಲ್ಲಿರುವುದು ನಿರುತ||

ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ|
ಸರ್ವೇಶ್ವರನಿಗೆ ಜಯಜಯ ಘೋಷಮಾಡಿರಿ ಮಾಡಿರಿ||
ಪರಾತ್ಪರನಾದ ಪ್ರಭುವು ಘನಗಂಭೀರನು|
ಪ್ರಪಂಚಕ್ಕೆಲ್ಲ ರಾಜಧಿರಾಜನು||

ಏರಿದನು ಪ್ರಭು ಜಯಜಯಕಾರದೊಂದಿಗೆ|
ಆರೋಹಣವಾದನು ತುತೂರಿನಾದ ಜೊತೆಗೆ||
ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ|
ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ||

ದೇವನು ಭೂಮಂಡಲಕ್ಕೆಲ್ಲಾ ಒಡೆಯನು|
ಕೀರ್ತನೆಯಿಂದ ಕೊಂಡಾಡಿರಿ ಆತನನು||
ವಹಿಸಿಕೊಂಡನು ದೇವನು ಸರ್ವಾಧಿಪತ್ಯ|
ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ||

ಶುಭಸಂದೇಶ: ಮತ್ತಾಯ 9:14-17


ಯೊವಾನ್ನನ ಶಿಷ್ಯರು ಯೇಸುವಿನ ಬಳಿಗೆ ಬಂದರು. "ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ? " ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, " ಮದುವಣಿಗನು ಜೊತೆಯಲ್ಲಿರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗರಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು. " ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ, " ಎಂದರು.

11.07.2026 - “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 6:1-8  ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ...