15.06.2026 - ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ.

 ಮೊದಲನೇ ವಾಚನ: 1 ಅರಸುಗಳು 21:1-16



ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು. ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು. ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು. ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು. ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು. ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು. ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ; ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು. ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು. ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.

ಕೀರ್ತನೆ: 5:2-3, 4-6, 6-7

ಶ್ಲೋಕ: ಕಿವಿಗೊಡು ಪ್ರಭೂ, ಎನ್ನ ನುಡಿಗೆ 

ಶುಭಸಂದೇಶ: ಮತ್ತಾಯ 5:38-42

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”

14.06.2026 - ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.

 ಮೊದಲನೇ ವಾಚನ: ವಿಮೋಚನಕಾಂಡ 19:2-6

ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಮೋಶೆ ಆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: ‘ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ. ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲೂ ನನಗೆ ಸ್ವಕೀಯ ಜನರಾಗುವಿರಿ. ಅಲ್ಲದೆ ನೀವು ನನಗೆ ಯಾಜಕರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ.’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.

ಕೀರ್ತನೆ: 100: 1-2, 3, 5
ಶ್ಲೋಕ: ಸೃಷ್ಟಿಕರ್ತನ ಜನ, ಆತನೇ ಮೇಯಿಸುವ ಕುರಿಗಳು ನಾವು. 

1.  ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ|
ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ||
ಶ್ಲೋಕ

2.  ಪ್ರಭುವೇ, ದೇವರೆಂಬುದನ್ನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು ಆತನವರು ನಾವು|
ಆತನ ಜನ ಆತನೇ ಮೇಯಿಸುವ ಕುರಿಗಳು ನಾವು||
ಶ್ಲೋಕ

3.  ಹೌದು, ಪ್ರಭುವೆನಿತೋ ಒಳ್ಳೆಯವನು|
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಎರಡನೇ ವಾಚನ: ರೋಮನರಿಗೆ 5: 6-11


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು. ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು. ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ. ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ? ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ? ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆ ಪಡುತ್ತೇವೆ.

ಶುಭಸಂದೇಶ: ಮತ್ತಾಯ 9: 35, 10:1-8


ಆ ಕಾಲದಲ್ಲಿ ಯೇಸು ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾ ಮಂದಿರಗಳಲ್ಲಿ ಬೋಧಿಸಿದರು.  ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ  ರೋಗರುಜಿನಗಳನ್ನು ಗುಣಪಡಿಸುದರು. ಆ ಜನ ಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದರು ಹಾಗೂ ಬಳಲಿದ್ದರು ಆದುದರಿಂದ ಯೇಸು ತಮ್ಮ ಶಿಷ್ಯರಿಗೆ,  "ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕ  ಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.  ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.  ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶ ಇದು: "ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.  ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ.  ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ.  ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ."

13.06.2026 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?

 ಮೊದಲನೇ ವಾಚನ: ಯೆಶಾಯ: 61:9-11

ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.” ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು. ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.



1 ಸಮುವೇಲ 2:1, 4-8

ಶ್ಲೋಕ: ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ. 


ಶುಭಸಂದೇಶ: ಲೂಕ: 2:41-51


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು. ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು. ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು. ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು. ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು. ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?” ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ. ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. 

12.06.2026 - ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ.

 ಯೇಸುವಿನ ಪವಿತ್ರ ಹೃದಯದ ಮಹೋತ್ಸವ


ಮೊದಲನೇ ವಾಚನ: ಧರ್ಮೋಪದೇಶಕಾಂಡ 7:6-11


ಮೋಶೆಯು ಜನರಿಗೆ ಹೇಳಿದ್ದೇನೆಂದರೆ: "ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗಲು ಅವರು ಆಯ್ದುಕೊಂಡಿದ್ದಾರೆ. “ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು. ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ. ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು. ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು. ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.

ಕೀರ್ತನೆ: 103:1-2, 3-4, 6-7 8, 10

ಶ್ಲೋಕ: ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು

ಎರಡನೇ ವಾಚನ: 1 ಯೊವಾನ್ನನು 4:7-1 

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು. ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ. ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು. ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ. ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು. ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ. ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ. ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ. ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ.

ಶುಭಸಂದೇಶ: ಮತ್ತಾಯ11:25-30

ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. “ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು. “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.

11.06.2026 - ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 11:21-26; 13:1-3


ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು. ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು. ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು-ಅಂತಿಯೋಕ್ಯದಲ್ಲೇ. ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯಸ್ನೇಹಿತ ಮೆನಹೇನ ಮತ್ತು ಸೌಲ ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ವಿೂಸಲಾಗಿಡಿ,” ಎಂದರು. ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆ ಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.

ಕೀರ್ತನೆ: 98:1, 2-3, 3-4, 5-6

ಶ್ಲೋಕ: ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ದಾರಕಾ ಶಕ್ತಿಯನು

ಶುಭಸಂದೇಶ: ಮತ್ತಾಯ 10: 7-13

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು. "ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. ನೀವು ಒಂದು ಮನೆಗೆ ಹೋದಾಗ, "ಈ ಮನೆಗೆ ಶುಭವಾಗಲಿ!" ಎಂದು ಹರಸಿರಿ. ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆ ಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ."

10.06.2026 - ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು

ಮೊದಲನೇ ವಾಚನ: 1 ಅರಸುಗಳು  18:20-39



ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ, “ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ. ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು. ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು. ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು. ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ. ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು. ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು. ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ. ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬಂದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರನ ಪೀಠವನ್ನು ದುರಸ್ತು ಮಾಡಿಸಿದನು. ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು. ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ನೀರು ವೇದಿಯ ಸುತ್ತಲೂ ಹರಿಯಿತು. ಇದಲ್ಲದೆ, ಅವನು ಕಾಲುವೆಯನ್ನೂ ನೀರಿನಿಂದ ತುಂಬಿಸಿದನು. ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ. ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು. ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು

ಕೀರ್ತನೆ: 4:2-3, 4-5, 7-8

ಶ್ಲೋಕ: ನೀಡು ದೇವಾ, ರಕ್ಷಣೆಯನು, ನಾ ನಿನಗೆ ಶರಣಾಗತನು

1.  ನೀಡು ದೇವಾ ರಕ್ಷಣೆಯನು|
ನಾ ನಿನಗೆ ಶರಣಾಗತನು||
'ನೀನೇ ನನ್ನೊಡೆಯ'ನೆಂದು ನಾ ನುಡಿದೆ|
ನಿನ್ನ ಹೊರತು ನನಗಿಲ್ಲ ಒಳಿತು ಎಂದೆ ||
ಶ್ಲೋಕ

2.  ಅನ್ಯದೇವರನು ಬಯಸುವವರನು ಕಾದಿದೆ ಕಠಿಣ ಕಷ್ಟ|
ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ|
ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ||
ಶ್ಲೋಕ

3.  ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ|
ನಿನ್ನ ಕೈಯಲ್ಲಿದೆ ಪ್ರಭೂ, ನನ್ನ ವಿಮೆ||
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ|
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ?||
ಶ್ಲೋಕ

4.  ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು|
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು|
ನಿನ್ನ ಬಲಗೈ ನೀಡುವುದು ನಿತ್ಯ ಭಾಗ್ಯವನು||
ಶ್ಲೋಕ

ಘೋಷಣೆ
(ಕೀರ್ತನೆ 145: 14)

ಅಲ್ಲೆಲೂಯ, ಅಲ್ಲೆಲೂಯ
ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು| ನಡೆಯಲಿ ಆತನು ಸದಾ ಪ್ರೀತಿಮಯನು||
ಅಲ್ಲೆಲೂಯ

ಶುಭಸಂದೇಶ: ಮತ್ತಾಯ 5:17-19

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು." 

09.06.2026 - ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು

 ಮೊದಲನೇ ವಾಚನ: 1 ಅರಸುಗಳು  17:7-16


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿ ಹೋಯಿತು. ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು. ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು. ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು. ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು. ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ. ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು. ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ

ಕೀರ್ತನೆ: 4:2-3, 4-5, 7-8


ಶ್ಲೋಕ: ಬೆಳಗಿಸಲಿ ನಮ್ಮನು, ಓ ಪ್ರಭೂ, ನಿನ್ನ ಮೊಗದ ಘನತೆ


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I
ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II
ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I
ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II

ಕೋಪಗೊಂಡರೂ ದೂರವಿರು ಪಾಪದಿಂದ I
ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II
ಅರ್ಪಿಸಿರಿ ಯೋಗ್ಯ ಬಲಿಗಳನೆ I
ಇಡಿರಿ ಭರವಸೆ ಪ್ರಭುವಿನಲೆ II

ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I
ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II
ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I
ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II

ಶುಭಸಂದೇಶ: ಮತ್ತಾಯ 5:13-16 



ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.” “ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ."

15.06.2026 - ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ.

  ಮೊದಲನೇ ವಾಚನ: 1 ಅರಸುಗಳು 21:1-16 ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು. ಅಹ...