01.08.2026 - ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ

 

ಪ್ರವಾದಿ ಯೆರೆಮೀಯನ ಗ್ರಂಥ 26:11-16, 24


ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು. ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ. ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು. ನಾನೋ ನಿಮ್ಮ ಕೈಯಲ್ಲಿದ್ದೇನೆ. ನಿಮಗೆ ಯಾವುದು ಒಳ್ಳೆಯದು, ಯಾವುದು ನ್ಯಾಯವಾದುದು ಎಂದು ತೋರುತ್ತದೆಯೋ ಅದನ್ನು ನನಗೆ ಮಾಡಿ. ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು. ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು. ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.

ಕೀರ್ತನೆ: 69:15-16, 30-31, 33-34

ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

ಶ್ಲೋಕ:  ಪ್ರೀತಿಮಯ  ದೇವಾ,  ಸದುತ್ತರ  ನೀಡೆನಗೆ.

1.  ಕಳ್ಳುಸುಬೀನಲಿ ನಾನಿಳಿದು ಹೋಗದಂತೆ ಸೆಳೆದುಕೊ|
ಪೊಳ್ಳು ದುರುಳರ ನಡುವಿನಲಿ ನಾ ಮುಳುಗದಂತೆ ಎಳೆದುಕೊ||
ಹುಚ್ಚು  ಹೊಳೆಯ ಎನ್ನ ಕೊಚ್ಚದಿರಲಯ್ಯಾ|
ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ|
ಪಾತಾಳವೆನ್ನನು ನುಂಗದಿರಲಯ್ಯಾ||
ಶ್ಲೋಕ

2.  ದೇವಾ, ನಾ ನೊಂದು  ಬೆಂದಿಹೆನಯ್ಯಾ|
ಉದ್ಧರಿಸಿ ನನ್ನನು ಕಾಪಾಡಯ್ಯಾ||
ಸಂಕೀರ್ತಿಸುವೆನು ದೇವರ ಶ್ರೀ  ನಾಮವನು|
ಕೃತಜ್ಞತೆಯಿಂದಾತನನು  ಕೊಂಡಾಡುವೆನು||
ಶ್ಲೋಕ

3.  ಇದನರಿತು ದೀನದಲಿತರು ಆನಂದಗೊಳ್ಳಲಿ|
ದೇವನನು ಅರಸುವವರು ಪುನಶ್ಚೇತನಗೊಳ್ಳಲಿ||  ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು|
ಸೆರೆಯಲ್ಲಿರುವ ತನ್ನವರನು ತಿರಸ್ಕರಿಸನು||
ಶ್ಲೋಕ

ಘೋಷಣೆ
(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.
ಬೋಧಿಸೆನಗೆ  ಪ್ರಭು  ನಿನ್ನ  ಮಾರ್ಗವನು,| ಶತ್ರುರಹಿತ  ಹಾದಿಯಲಿ  ನಡೆಸು  ಎನ್ನನು||
ಅಲ್ಲೆಲೂಯ.



ಶುಭಸಂದೇಶ: ಮತ್ತಾಯ 14:1-12

ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು. ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು. ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು. ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು. ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು. ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು. ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು. ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು. ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;  ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.  ಯೊವಾನ್ನನ ಶಿಷ್ಯರು ಶವವನ್ನು ತೆಗೆದು ಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.

31.07.2026 - ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು

 ಮೊದಲನೇ ವಾಚನ: ಯೆರೆಮೀಯ 26:1-9


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು; “ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ. ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು. “ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ, ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ, 6ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.” ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು. ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು. “ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.

ಕೀರ್ತನೆ: 69:6, 8-10, 14

ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

1.  ತಲೆಕೂದಲಿಗಿಂತ  ಮಿಗಿಲಿಹರು  ನಿಷ್ಕಾರಣ ದ್ವೇಷಿಗಳು|
ಬಲಿಷ್ಟರಿಹರು  ನನ್ನ  ಕೊಲೆಗಡುಕರು,  ನಿರ್ನಿಮಿತ್ತ  ಶತ್ರುಗಳು||
ಕಳ್ಳ  ನಾನಲ್ಲವಾದರೂ  ದಂಡಕೋರುತಿಹರು  ವೈರಿಗಳು||
ಶ್ಲೋಕ

2.  ನಿನಗಾಗಿಯೇ  ನಾ  ಪ್ರಭೂ,  ನಿದೆಗೊಳಗಾದೆನಯ್ಯಾ|
ನಾಚಿಕೆಯಿಂದಲೇ  ಮುಖ  ಮುಚ್ಚಿಕೊಂಡೆನಯ್ಯಾ||
ನನ್ನವರಿಗೇ  ನಾನನ್ಯನಾದೆನಯ್ಯಾ|
ಒಡಹುಟ್ಟಿದವರಿಗೇ  ಹೊರಗಿನವನಾದೆನಯ್ಯಾ||
ಶ್ಲೋಕ

3.  ಅಗ್ನಿಯಂತೆನ್ನ  ದಹಿಸುತ್ತಿದೆ  ನಿನ್ನಾಲಯದಭಿಮಾನ|
ಎನ್ನ  ಮೇಲೆರಗಿದೆ  ನಿನ್ನ  ಕಡುದ್ರೋಹಿಗಳ  ದೂಷಣ||ಪ್ರಸನ್ನಕಾಲದಲಿ  ಪ್ರಭೂ,  ನಾ  ಮೊರೆಯಿಡುತ್ತಿರುವೆ  ನಿನಗೆ|
ಪ್ರೀತಿಮಯ  ದೇವಾ, ಜೀವೋದ್ಧಾರಕಾ,  ಸದುತ್ತರ  ನೀಡೆನಗೆ||
ಶ್ಲೋಕ 

ಘೋಷಣೆ
(ಕೀರ್ತನೆ 19: 8)

ಅಲ್ಲೆಲೂಯ, ಅಲ್ಲೆಲೂಯ.
ಪ್ರಭುವಿನ  ನಿಯಮ  ನೀತಿಬದ್ದ; ಮನಸ್ಸಿಗದು  ಗ್ರಹಿಕೆ  |  ಪ್ರಭುವಿನ  ಕಟ್ಟಳೆ  ಪರಿಶುದ್ಧ;  ಕಣ್ಣಿಗದು  ದೀವಿಗೆ||
ಅಲ್ಲೆಲೂಯ.




ಶುಭಸಂದೇಶ: ಮತ್ತಾಯ13:54-58


ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾ ಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?” ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

30.07.2026 - ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು

 ಮೊದಲನೇ ವಾಚನ: ಯೆರೆಮೀಯ 18:1-6


ಸರ್ವೇಶ್ವರ ಸ್ವಾಮಿ ನನಗೆ : “ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು, ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುತ್ತೇನೆ,” ಎಂದು ತಿಳಿಸಿದರು. ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ. ಅವನು ಜೇಡಿ ಮಣ್ಣಿನಿಂದ ಮಾಡುತ್ತಿದ್ದ ಒಂದು ಪಾತ್ರೆ ಕೆಟ್ಟುಹೋಗುತ್ತಿದ್ದಾಗಲೆಲ್ಲ ಅದನ್ನು ಮತ್ತೆ ತನಗೆ ಸರಿತೋಚಿದ ಹಾಗೆ ಹೊಸ ಪಾತ್ರೆಯನ್ನಾಗಿ ಮಾಡುತ್ತಿದ್ದ. ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ : “ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ. 

ಕೀರ್ತನೆ:146:1-2, 2-4, 5-6

ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ದಾರಕನೋ ಅವನೇ ಧನ್ಯನು



ಕೀರ್ತನೆ
146: 1-6. v.5

ಶ್ಲೋಕ:  ಇಸ್ರಯೇಲ  ಕುಲದೇವರು  ಯಾರಿಗೆ  ಉದ್ಧಾರಕನೋ  ಅವನೇ  ಧನ್ಯನು.

1.  ಮನವೇ,  ವಂದಿಸು  ಪ್ರಭುವನು|
ಪ್ರಾಣವಿರುವವರೆಗೆ  ಸ್ತುತಿಸುವೆನು  ಪ್ರಭುವನು|
ಬಾಳೆಲ್ಲ  ಹಾಡಿ  ಭಜಿಪೆನು  ನನ್ನ  ದೇವರನು||
ಶ್ಲೋಕ

2.  ನಂಬಬೇಡ  ಅಧಿಕಾರಿಯನು,  ನೆಚ್ಚಬೇಡ  ನರಮಾನವನನು|
ಉದ್ಧರಿಸಲು  ಅಸಮರ್ಥನವನು||
ಉಸಿರು  ಹೋದುದೇ  ಮರಳುತ್ತಾನವನು  ಮಣ್ಣಿಗೆ|  ಅಂದೇ  ಅಳಿಯುತ್ತದೆ  ಅವನೆಲ್ಲಾ ಯೋಜನೆ||
ಶ್ಲೋಕ

3.  ಇಸ್ರಯೇಲ  ಕುಲದೇವರು  ಯಾರಿಗೆ  ಉದ್ಧಾರಕನೋ  ಅವನೇ  ಧನ್ಯನು|
ಪ್ರಭುವನು  ತನ್ನ  ದೇವರೆಂದು  ಯಾರು  ನಂಬಿಹನೋ  ಅವನೇ  ಧನ್ಯನು||
ಭೂಮ್ಯಾಕಾಶ,  ಸಾಗರ,  ಚರಾಚರಗಳು   ನಿರ್ಮಿಸಿದವ  ಆತನೇ|
ಕೊಟ್ಟ  ವಾಗ್ದಾನಗಳನು  ತಪ್ಪದೆ  ನೆರವೇರಿಸುವವ  ಆತನೇ||
ಶ್ಲೋಕ


ಘೋಷಣೆ
(111: 7, 8)

ಅಲ್ಲೆಲೂಯ, ಅಲ್ಲೆಲೂಯ.
ಸುಸ್ಥಿರವಾದವು  ಪ್ರಭುವಿನ  ನಿಯಮ  ನಿಬಂಧನೆಗಳು,| ಯುಗಯುಗಾಂತರಕೂ  ದೃಢವಾಗಿರುವುವು ||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 3:47-53


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ. ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು. ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.

29.07.2026 - ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತು ರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು


 

ಮೊದಲನೇ ವಾಚನ: ಯೆರೆಮೀಯ15:10, 16-21 



ಯೆರೆಮೀಯನು ಈ ಪರಿ ತನ್ನ ಶೋಕವನ್ನು ನಿವೇದಿಸಿಕೊಂಡನು: “ನನ್ನ ಹೆತ್ತ ತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ. ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ? ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ. ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?” ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ. ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”

ಕೀರ್ತನೆ
59: 1-4, 9-11, 16-17. v.16

ಶ್ಲೋಕ:  ದೇವಾ,  ಸಂಕಟದಲ್ಲೆನಗಾದ  ಆಶ್ರಯಗಿರಿ  ನೀನು.

1.  ಶತ್ರುಗಳಿಂದ  ದೇವಾ  ತಪ್ಪಿಸು,|
ಎದುರಾಳಿಗಳಿಂದೆನ್ನ  ರಕ್ಷಿಸು||
ಕೇಡಿಗರಿಂದೆನ್ನ  ಬಿಡಿಸು,|
ಕೊಲೆಪಾತಕರಿಂದ  ಉಳಿಸು||
ಶ್ಲೋಕ

2.  ಇಗೋ  ನನ್ನ   ಪ್ರಾಣಕ್ಕವರು  ಹೂಡಿರುವ   ಹೊಂಚು|
ನನ್ನ  ಮೇಲೆರೆಗಲು  ಹೂಡಿರುವ  ಕ್ರೂರಿಗಳ  ಸಂಚು ||
ನಿದಪರಾಧಿ,  ನಿರ್ದೋಷಿ  ನಾನಾದರೂ|
ಮೇಲೆ  ಬೀಳಲಿದೋ  ಸಜ್ಜುಗೊಂಡಿಹರು||
ಶ್ಲೋಕ

3.  ನನ್ನ  ಶಕ್ತಿಯೇ,  ನಿನಗಾಗಿ  ನಾ  ಕಾದಿರುವೆ|
ನನ್ನಶ್ರಯ  ದುರ್ಗ  ದೇವಾ,  ನೀನೇ  ಅಲ್ಲವೇ?|
ಪ್ರೀತಿಯಿಂದ  ನೆರವಾಗುವನು  ದೇವನೆನಗೆ||
ಶ್ಲೋಕ

4.  ನಾನಾದರೋ  ಹೊಗಳಿ  ಹಾಡುವೆ  ದೇವಾ,  ನಿನ್ನ  ಸಾಮರ್ಥ್ಯವನು|
ಉದಯಕಾಲದಲೆ  ನಾ  ಸಂಕೀರ್ತಿಸುವೆ  ನಿನ್ನ  ಪ್ರೀತಿ ಪ್ರೇಮವನು||
ಸಂಕಟದಲ್ಲೆನಗಾದ  ಆಶ್ರಯಗಿರಿ,  ದುರ್ಗ  ನೀನಲ್ಲವೇನು?||
ನೀನೆನ್ನ  ಶಕ್ತಿ  ದೇವಾ.,  ನಿನಗೆನ್ನ  ಸ್ತುತಿ|  ನೀನೆನ್ನ  ದುರ್ಗ,  ತೋರಿಸು  ಎನಗೆ  ಪ್ರೀತಿ||
ಶ್ಲೋಕ

ಘೋಷಣೆ     ಕೀರ್ತನೆ 95: 8

ಅಲ್ಲೆಲೂಯ, ಅಲ್ಲೆಲೂಯ.
ಆತನ  ಕರೆಗೆ  ಕಿವಿಗೊಟ್ಟರೆನಿತೋ  ಒಳಿತು  ನೀವಿಂದೇ, |  ಕಲ್ಲಾಗಿಸಿಕೊಳ್ಳದಿರಿ  ಹೃದಯವನು  ನಿಮ್ಮ  ಪೂರ್ವಜರಂತೆ||
ಅಲ್ಲೆಲೂಯ

ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 13:  44-46


ಆ  ಕಾಲದಲ್ಲಿ  ಯೇಸು  ಇನ್ನೊಂದು ಸಾಮತಿಯನ್ನು  ಹೇಳಿದರು:  "ಸ್ವರ್ಗಸಾಮ್ರಾಜ್ಯವನ್ನು  ಹೊಲದಲ್ಲಿ  ಹೂಳಿಟ್ಟ  ನಿಧಿಗೆ  ಹೋಲಿಸಬಹುದು.  ಇದನ್ನು  ಒಬ್ಬನು  ಪತ್ತೆ  ಹಚ್ಚಿ  ಅಲ್ಲಿಯೇ  ಮುಚ್ಚಿಡುತ್ತಾನೆ.  ತನಗಾದ  ಸಂತೋಷದಿಂದ  ಹೋಗಿ  ತನಗೆ  ಇದ್ದುದೆಲ್ಲವನ್ನೂ  ಮಾರಿ  ಈ  ಹೊಲವನ್ನೇ  ಕೊಂಡುಬಿಡುತ್ತಾನೆ.  ಸ್ವರ್ಗಸಾಮ್ರಾಜ್ಯವನ್ನು  ಉತ್ತಮವಾದ  ಮುತ್ತು  ರತ್ನಗಳನ್ನು  ಹುಡುಕಿಕೊಂಡು  ಹೋಗುವ  ವರ್ತಕನಿಗೂ  ಹೋಲಿಸಬಹುದು.  ಅನಘ್ಗೃವಾದ  ಒಂದು  ಮುತ್ತನ್ನು  ಕಂಡ  ಕೂಡಲೆ  ವರ್ತಕ  ತನ್ನ  ಆಸ್ತಿಪಾಸ್ತಿಯನ್ನೆಲ್ಲಾ  ಮಾರಿ  ಆ  ಮುತ್ತನ್ನು  ಕೊಂಡುಕೊಳ್ಳುತ್ತಾನೆ." 

28.07.26 - "ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು"

 ಮೊದಲನೇ ವಾಚನ: ಯೆರೆಮೀಯ: 14:17-22  



ಸರ್ವೇಶ್ವರ ಯೆರೆಮೀಯನಿಗೆ ಈ ಮಾತುಗಳನ್ನು ಹೇಳಿದರು: “ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿ ಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ. ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.” “ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ. ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು. ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ. ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.

ಕೀರ್ತನೆ: 79:8, 9, 11, 13

ಶ್ಲೋಕ: ದೇವಾ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ

ಶುಭಸಂದೇಶ: ಮತ್ತಾಯ13:36-43


ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು. ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು. ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!

27.07.2026 - ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ

 ಪ್ರವಾದಿ ಯೆರೇಮಿಯನ ಗ್ರಂಥದಿಂದ ವಾಚನ 13: 1-11



ಸರ್ವೇಶ್ವರಸ್ವಾಮಿ ನನಗೆ : “ನೀನು ಹೋಗಿ ನಾರಿನ ನಡುಕಟ್ಟೊಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನಸಬೇಡ,’’ ಎಂದು ಅಪ್ಪಣೆಕೊಟ್ಟರು. ನಾನು ಅವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ. ಆಮೇಲೆ, ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂಧಿನೊಳಗೆ ಬಚ್ಚಿಡು,’’ ಎಂಬುದಾಗಿ ಸರ್ವೇಶ್ವರಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು. ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ. ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, ಹೊರಡು, ಯೂಫ್ರೆಟಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,’’ ಎಂದು ಹೇಳಿದರು. ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು. ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ : ಇದು ಸರ್ವೇಶ್ವರನಾದ ನನ್ನ ನುಡಿ, ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು. ಈ ದುಷ್ಟ ಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬಿಡುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಇಸ್ರಯೇಲ್ ವಂಶವೆಲ್ಲವು ಹಾಗೂ ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕಟ್ಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನನಗೆ ಕಿವಿಗೊಡದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.’’

ಕೀರ್ತನೆ 32 : 18-21

ಶ್ಲೋಕ  : ಜನ್ಮವಿತ್ತ ದೇವರನ್ನು ನೀವು ಸ್ಮರಿಸಲಿಲ್ಲ |

1.  ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು?| 
ಸ್ಮರಿಸಲಿಲ್ಲ ನೀವು ಹೆತ್ತ ತಾಯಂತಿದ್ದಾ ದೇವರನು||
ಇದಕಂಡು ಸರ್ವೇಶ್ವರ ಬೇಸರಗೊಂಡ|
ತನ್ನ ಆ ಕುವರ ಕುವರಿಯರ ನಡತೆಯ ನೋಡಿ ನೊಂದುಕೊಂಡ||
ಶ್ಲೋಕ

2.  ಎಂದೇ ಇಂತೆಂದುಕೊಂಡನು: ಇವರಿಗೆ ವಿಮುಖನಾಗುವೆನು|
ಇವರಿಗೊದಗಲಿರುವ ಗತಿಯನು ನೋಡುವೆನು||
ಸತ್ಯವರಿತೂ ಅನುಸರಿಸದೆ ಹೋದರು|
ಈ ವಿದ್ರೋಹ ಮಕ್ಕಳಂತವರು||
ಶ್ಲೋಕ

3.  ರೇಗಿಸಿದರೆನ್ನನು ದೇವರಲ್ಲದವರ ಮೂಲಕ|
ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ||
ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ|
ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದ ಆ ಜನರ ಮುಖಾಂತರ||
ಶ್ಲೋಕ


ಘೋಷಣೆ
(ಕೀರ್ತನೆ 145: 14)

ಅಲ್ಲೆಲೂಯ, ಅಲ್ಲೆಲೂಯ.
ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು | ನಡೆಯಲಿ ಆತನು ಸದಾ ಪ್ರೀತಿಮಯನು ||
ಅಲ್ಲೆಲೂಯ.


ಸಂತ ಮತ್ತಾಯ ಬರೆದ ಶುಭಸಂದೇಶದಿಂದ ವಾಚನ 13: 31-35


ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು
: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಅಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ.’’ ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು : ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.’’ ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು,’’ ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು

26.07.2026 - ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು

 ಮೊದಲನೇ ವಾಚನ: ಅರಸರು 3:5, 7-12



ದೇವರಾದ ಸರ್ವೇಶ್ವರ ಆ ರಾತ್ರಿ ಗಿಬ್ಯೋನಿನಲ್ಲಿ ಸೊಲೊಮೋನನಿಗೆ ಕನಸಿನಲ್ಲಿ ಕಾಣಿಸಿಕೊಂಡು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು. ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು. ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು. ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ. ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು. ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.

ಕೀರ್ತನೆ: 119:57, 72, 76-77, 127-128, 129-130

ಶ್ಲೋಕ:  ನಿನ್ನ ಧರ್ಮಶಾಸ್ತ್ರ ಪ್ರಭೂ, ನನಗೆ ಪರಮ ಪ್ರಿಯ.

1.  ಹೇ ಪ್ರಭೂ, ನೀನೇ ನನ್ನ ಪಾಲಿನ ಸ್ವಾಸ್ತ್ಯ|
ನಿನ್ನ ವಾಕ್ಯದ ಪಾಲನೆಯೇ ನಾ ಗೈದ ನಿರ್ಣಯ||
ಸಾವಿರಾರು ಚಿನ್ನ ಬೆಳ್ಳಿ ನಾಣ್ಯಗಳಿಗಿಂತ|
ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ||
ಶ್ಲೋಕ

2.  ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ|
ಸಾಂತ್ವನ ನೀಡಲಿ ಎನಗೆ ನಿನ್ನಚಲ ಪ್ರೀತಿ||
ನಾ ಬದಕುವಂತೆ ತೋರೆನಗೆ ನಿನ್ನ ದಯ|
ನಿನ್ನ ಧರ್ಮಶಾಸ್ತ್ರ ನನಗೆ ಪರಮ ಪ್ರಿಯ||
ಶ್ಲೋಕ

3.  ಚಿನ್ನ ಅಪರಂಜಿಗಿಂತಲೂ ಪ್ರಿಯ| ನಿನ್ನ ಆಜ್ಞೆಗಳು ನನಗೆ ಸುಪ್ರಿಯ||
ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ|
ನನಗೆ ಹಗೆ ಮಿಥ್ಯ ಮಾರ್ಗಗಳೆಲ್ಲ||
ಶ್ಲೋಕ

4.  ಅಪೂರ್ವವಾದ ನಿನ್ನ ಕಟ್ಟಳೆಗಳನು|
ಹೃತ್ಪೂರ್ವಕವಾಗಿ ನಾ ಪಾಲಿಪೆನು||
ತರುವುದು ನಿನ್ನ ವಾಕ್ಯೋಪದೇಶ|
ಸರಳ ಜನರಿಗೆ ಜ್ಞಾನ ಪ್ರಕಾಶ||
ಶ್ಲೋಕ

ಎರಡನೇ ವಾಚನ: ರೋಮನರಿಗೆ 8:28-30


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಶುಭಸಂದೇಶ: ಮತ್ತಾಯ 13:44-52



“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದು ಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ. “ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ. “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.  ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟು ಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.  ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.

01.08.2026 - ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ

  ಪ್ರವಾದಿ ಯೆರೆಮೀಯನ ಗ್ರಂಥ 26:11-16, 24 ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರ...