11.02.2026 - ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ

 ಮೊದಲನೇ ವಾಚನ: 1 ಅರಸುಗಳು 10:1-10


ಸರ್ವೇಶ್ವರನ ನಾಮ ಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು. ಆಕೆ ಸುಗಂಧ ದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು. ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಷಿಷ್ಟವಾದ ಒಗಟು ಒಂದೂ ಇರಲಿಲ್ಲ. ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು; ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ. ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನ ವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ. ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನ ವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು! ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು. ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.

ಕೀರ್ತನೆ
37:5-6,30-31,39-40. v. 30

ಶ್ಲೋಕ:  ಸಜ್ಜನರ ಬಾಯಿ ಆಡುವುದು ಸುಜ್ಞಾನವನು.

1.  ಪ್ರಭುವಿಗೆ ಬಿಡು ನಿನ್ನ ಜೀವನಯಾತ್ರ ಚಿಂತೆಯನು|
ಭರವಸೆಯಿಂದಿರು, ಆತನದನು ಸಾಗಿಸುವನು||
ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ|
ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ||
ಶ್ಲೋಕ

2.  ಸಜ್ಜನರ ಬಾಯಿ ಆಡುವುದು ಸುಜ್ಞಾನವನು|
ಅವನ ನಾಲಿಗೆ ನುಡಿವುದು ನ್ಯಾಯನೀತಿಯನು||
ಅವನ ಎದೆಯಲ್ಲಿದೆ ದೇವರ ನಿಯಮ|
ನೆಲೆ ತಪ್ಪದು ಅವನ ನಡತೆಯ ಕ್ರಮ||
ಶ್ಲೋಕ

3.  ಸಜ್ಜನರ ಜೀವೋದ್ಧಾರ ಪ್ರಭುವಿನಿಂದ|
ಆಪತ್ಕಾಲದಲಿ ಆಶ್ರಯ ಆತನಿಂದ|
ತನ್ನ ಆಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು|
ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು||
ಶ್ಲೋಕ

🌹✝️🌹

ಘೋಷಣೆ
ಮತ್ತಾಯ 11:25

ಅಲ್ಲೆಲೂಯ, ಅಲ್ಲೆಲೂಯ!
ಪಿತನೇ, ಭೂಸ್ವರ್ಗಗಳ ಒಡೆಯನೇ, | ಈ ವಿಷಯಗಳನ್ನು ಮಕ್ಕಳಂಥವರಿಗೆ ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 7:14-23

ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.

10.02.2026 - ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು

 ಮೊದಲನೆಯ ವಾಚನ - ಅದಿಕಾಂಡ 1: 20-2:4


ಆ ಬಳಿಕ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು. ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು. ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು. ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು. ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ-ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.
ಪ್ರಭುವಿನ ವಾಕ್ಯ

ಕೀರ್ತನೆ - 8: 3-4, 5-6, 7-8
ಹರಡಿದೆ ಪ್ರಭೂ, ನಿನ್ನ ಸಿರಿನಾಮ ಜಗದಾದ್ಯಂತ I

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I
ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I
ಏತರದವನು ನರಮಾನವನು ನೀನವನನು ಪರಾಮರಿಸಲು? II

ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I
ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I
ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II

ಕುರಿಗಳನು, ಕರುಗಳನು, ಕಾಡುಮೃಗಗಳನು I
ಗರಿಗಳನು, ಮೀನುಗಳನು, ಜಲಚರಗಳನು I
ಕರಗತ ಮಾಡಿದೆ ನೀ ಅವನಿಗೆಲ್ಲವನು II

ಘೋಷಣೆ                  ಕೀರ್ತನೆ 145:14

ಅಲ್ಲೆಲೂಯ, ಅಲ್ಲೆಲೂಯ!
ನುಡಿಯಲಿ  ಪ್ರಭು  ಸದಾ  ಪ್ರಾಮಾಣಿಕನು,  ನಡೆಯಲಿ  ಆತನು  ಸದಾ  ಪ್ರೀತಿಮಯನು,,
ಅಲ್ಲೆಲೂಯ!

ಶುಭಸಂದೇಶ - ಮಾರ್ಕ 7: 1-13


ಆ ಕಾಲದಲ್ಲಿ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿ ಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
ಪ್ರಭುವಿನ ಶುಭಸಂದೇಶ

09.02.2026 - ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣ ಹೊಂದುತ್ತಿದ್ದರು.

 ಮೊದಲನೇ ವಾಚನ: 1 ಅರಸುಗಳು 8:1-7, 9-13


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು. ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಆಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು. ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿ ಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು. ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರ ವಸ್ತುಗಳನ್ನು ಹೊತ್ತರು. ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿ ಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಬಲಿದಾನ ಮಾಡಿದರು. ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು. ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು. ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು. ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು. ಸರ್ವೇಶ್ವರನ ತೇಜಸ್ವಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾಗಲಿಲ್ಲ. ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರ, ರವಿಯನು ಆಗಸದಲ್ಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”

ಕೀರ್ತನೆ: 132:6-7, 8-10
ಶ್ಲೋಕ: ಪ್ರಭೂ, ನಿನ್ನ ವಾಸಸ್ಥಾನವನು ಬಂದು ಸೇರು ಬೇಗನೆ.

ಶುಭಸಂದೇಶ: ಮಾರ್ಕ 6:53-56


ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು. ಯೇಸು ಹಳ್ಳಿಗಳಿಗಾಗಲಿ ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆ ಬೀದಿ ಚೌಕಗಳಿಗೆ ಕರೆ ತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.

08.02.2026 - ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು?

 ಮೊದಲನೇ ವಾಚನ: ಯೆಶಾಯ 58:7-10


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ? “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.

ಕೀರ್ತನೆ: 112:4-5, 6-7, 8-9
ಶ್ಲೋಕ: ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು.

1.  ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು|
ನ್ಯಾಯಪ್ರಿಯನು ಆತ, ದಯಾವಂತ ಕೃಪಾಳು||
ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ|
ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ||
ಶ್ಲೋಕ

2.  ಅಚಲನಾಗಿರುವನು ನೀತಿವಂತನು|
ಮರೆಯಲಾರರು ಎಂದಿಗೂ ಆತನನು||
ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ|
ಪ್ರಭುವಿನಲ್ಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ||
ಶ್ಲೋಕ

3.  ದೃಢವಿದೆ ಅವನ ಮನ, ಎದೆಗುಂದನವನು|
ಉದಾರತೆಯಿಂದ ಕೊಡುವನು ಬಡವರಿಗೆ||
ಫಲಿಸುವುದು ಅವನಾ ನೀತಿ ಸದಾಕಾಲಕೆ|
ಮಹಿಮೆತರುವ ಕೋಡು ಮೂಡುವುದು ಅವನಿಗೆ||
ಶ್ಲೋಕ

ಎರಡನೇ ವಾಚನ: 1 ಕೊರಿಂಥಿಯರಿಗೆ 2:1-5

ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ. ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ. ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ. ನನ್ನ ಬೋಧನೆ ಹಾಗೂ ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು, ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು. ಅಂತೆಯೇ ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

ಶುಭಸಂದೇಶ: ಮತ್ತಾಯ 5:13-16

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಇಂತೆಂದರು: "ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ." "ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು. ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ. ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ."

07.02.2026 - ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ

 ಮೊದಲನೆಯ ವಾಚನ: ಅರಸರುಗಳ ಮೊದಲನೆಯ ಗ್ರಂಥ 3:4-13


ಒಮ್ಮೆ ಆರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ, ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿಯ ಪೀಠದ ಮೇಲೆ ಸಹಸ್ರ ಬಲಿಗಳನ್ನು ಸಮರ್ಪಿಸಿದಾಗ, ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡರು; " ನಿನಗೆ ಯಾವ ವರ ಬೇಕು ಕೇಳಿಕೋ, " ಎಂದು ಹೇಳಿದರು. ಸೊಲೋಮೋನನು, "ನಿಮಗೆ ಪ್ರಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ. ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು. ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ. ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾ ಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ, " ಎಂದು ಬೇಡಿಕೊಂಡನು. ಸೊಲೋಮೋನನು ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು. ಅವರು ಆತನಿಗೆ, " ದೀರ್ಘಾಯುಷ್ಯನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ. ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ. ಇದಲ್ಲದೆ, ನೀನು ಕೇಳುವಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ, "ಎಂದರು.


ಕೀರ್ತನೆ: 119: 9-10, 11-12,13-14
ಶ್ಲೋಕ: ನಿನ್ನ ಆಜ್ಞೆಗಳನು ಕಲಿಸು ಎನಗೆ |

ನಡತೆಯಲಿ ಶುದ್ದವಿರಲು ಯುವಜನಕೆ ಹೇಗೆ ಸಾಧ್ಯ|
ನಿನ್ನಯ ವಾಕ್ಯಾನುಸರಣೆಯಿಂದಲೇ ಅವರಿಗದು ಸಾಧ್ಯ||
ತುಂಬು ಹೃದಯದಿಂದ ಹಂಬಲಿಸುತ್ತಿರುವೆನಯ್ಯಾ|
ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ||

ನಿನಗೆ ವಿರುದ್ಧ ನಾ ಪಾಪಮಾಡದಂತೆ|
ನಿನ್ನ ನುಡಿಯನು ನನ್ನೆದೆಯಲ್ಲಿರಿಸಿದೆ||
ಸ್ತುತಿ ಸಲ್ಲಲಿ ಪ್ರಭೂ, ನಿನಗೆ|
ನಿನ್ನ ಆಜ್ಞೆಗಳನು ಕಲಿಸು ಎನಗೆ||

ಬಂದುವು ಆ ವಿಧಿಗಳು ನಿನ್ನ ಬಾಯಿಂದ|
ವರ್ಣಿಸುವೆನು ಅವನ್ನು ನನ್ನ ಬಾಯಿಂದ||
ಸಿರಿಸಂಪತಿಗಿಂತ ಮಿಗಿಲಾಗಿ|
ಆನಂದಿಪೆ ನಿನ್ನ ಮಾರ್ಗಿಯಾಗಿ||

ಘೋಷಣೆ: ಕೀರ್ತನೆ 119:105
ಅಲ್ಲೆಲೂಯ, ಅಲ್ಲೆಲೂಯ!

ನಿನ್ನ ವಾಕ್ಯ ನನಗೆ ದಾರಿದೀಪ | ನನ್ನ ಕಾಲಿನ ನಡೆಗೆ ಕೈದೀಪ ||

ಅಲ್ಲೆಲೂಯ!

ಶುಭಸಂದೇಶ: ಮಾರ್ಕ 6:30-34


ಆ ಕಾಲದಲ್ಲಿ ಪ್ರೇಷಿತರು ಯೇಸುವಿನ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದ್ದರು. ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟ ಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, "ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ, "ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು. ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.

06.02.2026 - ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ

  ಮೊದಲನೇ ವಾಚನ: ಸಿರಾಖನು 47:2-11

ಶಾಂತಿ ಬಲಿಪಶುವಿನಿಂದ ಕೊಬ್ಬನ್ನು ಬೇರ್ಪಡಿಸುವಂತೆ ಇಸ್ರಯೇಲರಿಂದ ಮೀಸಲಾದವನು ದಾವೀದನೆ. ಸಿಂಹಗಳನ್ನು ಆಡಿಸಿದನಿವನು ಆಡುಮರಿಗಳಂತೆ ಕರಡಿಗಳೊಂದಿಗೆ ಆಡಿದನು ಕುರಿಮರಿಗಳೊಂದಿಗೆ ಆಡುವಂತೆ. ಈತನೇ ಅಲ್ಲವೆ ತಾರುಣ್ಯದಲಿ ಕವಣೆಕಲ್ಲನು ಕೈಗೆತ್ತಿಕೊಂಡವನು? ಬಲಾಢ್ಯನೂ ಜಂಬಕೋರನೂ ಆದ ಗೊಲ್ಯಾತನನ್ನು ಸಂಹರಿಸಿ ನೆಲಕ್ಕುರುಳಿಸಿದವನು? ಈ ಪರಿ ತನ್ನ ಜನಾಂಗದ ಅವಮಾನವನ್ನು ಹೋಗಲಾಡಿಸಿದವನು? ಇವನು ಮೊರೆಯಿಡಲು ಮಹೋನ್ನತ ಸರ್ವೇಶ್ವರನಿಗೆ ಶಕ್ತಿ ನೀಡಿದನಾತ ಇವನ ಭುಜಬಲಕ್ಕೆ ಯುದ್ಧವೀರನಾದ ಆ ವ್ಯಕ್ತಿಯನ್ನು ಸಂಹರಿಸುವುದಕ್ಕೆ ತನ್ನ ಜನಾಂಗದವರ ಕೀರ್ತಿಪತಾಕೆಯನು ಮೇಲೆತ್ತುವುದಕ್ಕೆ. ಎಂತಲೇ ಜನರು ಗೌರವಿಸಿದರವನನು ‘ಹತ್ತು ಸಾವಿರಗಟ್ಟಲೆ’ ಕೊಂದುದಕ್ಕಾಗಿ ಹೊಗಳಿದರವನನ್ನು ಸರ್ವೇಶ್ವರನ ಆಶೀರ್ವಾದಗಳಿಗಾಗಿ ಮಹಿಮೆಯ ಮುಕುಟ ಕೊಡಲಾಯಿತವನಿಗೆ ಅದಕ್ಕಾಗಿ. ನಾಶಗೊಳಿಸಿದನು ಸುತ್ತಲೂ ಇದ್ದ ಶತ್ರುಗಳನ್ನು ಸೋಲಿಸಿದನು ತನ್ನ ವಿರೋಧಿಗಳಾದ ಫಿಲಿಷ್ಟಿಯರನ್ನು ಮುರಿದು ಪುಡಿಪುಡಿಮಾಡಿದನು ಅವರ ಕಳಸಕೊಂಬನ್ನು ಹಾಗೆಯೇ ಇರುವುದದು ಇಂದಿನವರೆಗು. ಪರಿಶುದ್ಧನು, ಮಹೋನ್ನತನು ಆದಾತನಿಗೆ ಸಲ್ಲಿಸಿದನು ಧನ್ಯವಾದ ತನ್ನ ಎಲ್ಲ ಕಾರ್ಯಗಳಲ್ಲೂ ಗಂಭೀರ ವಚನಗಳಿಂದ. ಆತನನ್ನು ಕೀರ್ತಿಸಿ ಹಾಡಿದನು ಪೂರ್ಣಹೃದಯದಿಂದ, ತನ್ನ ಸೃಷ್ಟಿಕರ್ತನನ್ನು ಪ್ರೀತಿವಾತ್ಸಲ್ಯದಿಂದ. ಇದಲ್ಲದೆ ಗಾಯಕರನ್ನಿರಿಸಿದನು ಬಲಿಪೀಠದ ಮುಂದೆ ಮಧುರ ಗೀತವನ್ನು ಹಾಡಿ ವಂದಿಸುವಂತೆ. ವಿಜೃಂಭಣೆಯನ್ನು ತಂದನು ಉತ್ಸವಗಳಿಗೆ ಉತ್ಸವಕಾಲಗಳಿಗಿತ್ತನು ಪೂರ್ಣವಾದ ಕ್ರಮಬದ್ಧತೆ. ಏರ್ಪಡಿಸಿದನು ಆ ಸಂದರ್ಭಗಳಲ್ಲಿ ಸರ್ವೇಶ್ವರನ ಶ್ರೀನಾಮವನ್ನು ಕೀರ್ತಿಸುವಂತೆ ಪವಿತ್ರಾಲಯದಲ್ಲಿ ಬೆಳಗಿನಿಂದ ಆ ಧ್ವನಿ ಕೇಳಿಬರುವಂತೆ. ಸರ್ವೇಶ್ವರ ಪರಿಹರಿಸಿದನು ಇವನ ಪಾಪವನ್ನು ಶಾಶ್ವತವಾಗಿಸಿದನು ಅವನ ಕೀರ್ತಿ ಪತಾಕೆಯನ್ನು. ಒಡಂಬಡಿಕೆಮಾಡಿ ಶಾಶ್ವತಗೊಳಿಸಿದನು ಅರಸೊತ್ತಿಗೆಯನ್ನು ದಯಪಾಲಿಸಿದನವನಿಗೆ ಇಸ್ರಯೇಲರಲ್ಲಿ ಮಹಿಮಾ ಸಿಂಹಾಸನವನ್ನು.

ಕೀರ್ತನೆ: 18:31, 47, 50, 51

ಶ್ಲೋಕ: ನನ್ನ ಉದ್ಧಾರಕನಾದ ಸರ್ವೇಶ್ವರನಿಗೆ ಸ್ತುತಿಸ್ತೊತ್ರವು

ಶುಭಸಂದೇಶ: ಮಾರ್ಕ 6:14-29

ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು. ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು. ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನ ಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು. ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು. ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು. ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ. ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲ ಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನ್ನು ಕಿವಿಗೊಟ್ಟು ಕೇಳುತ್ತಿದ್ದನು. ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು. ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣಶಾಲೆಗೆ ಬಂದು ನರ್ತನ ಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು. ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನು ಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು. ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು. ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು. ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು. ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆ ತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು. ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. 

05.02.2026 - ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ

 ಮೊದಲನೆಯ ವಾಚನ: ಅರಸುಗಳ ಮೊದಲನೆಯ ಗ್ರಂಥದಿಂದ ವಾಚನ 2:1-4,10-12



ದಾವೀದನ ಮರಣ ಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು: ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು. ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರು ಕೃತಾರ್ಥನಾಗುವೆ. ಇದಲ್ಲದೆ ಸರ್ವೇಶ್ವರ, ನಿನ್ನ ಸಂತಾನದವರು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,' ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು. ಅನಂತರ ದಾವೀದನು ಮರಣ ಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ದಾವೀದನು ಇಸ್ರಯೇಲರನ್ನು ಆಳಿದ್ದು ನಲ್ವತ್ತು ವರ್ಷ: ಹೆಬ್ರೋನಿನಲ್ಲಿ ಏಳು ವರ್ಷ, ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.


ಕೀರ್ತನೆ: 1 ಪೂರ್ವಕಾಲದ ವೃತ್ತಾಂತ 29:11-12,
ಶ್ಲೋಕ: ಸರ್ವಾಧಿಕಾರ ಬಲಪರಾಕ್ರಮ ಇರುವುದು ಪ್ರಭು ನಿಮ್ಮ ಕೈಯಲ್ಲೇ.

ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ|
ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ||
ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ,ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ|
ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ||

ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ|
ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ||
ಆಸ್ತಿ-ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ|
ಸರ್ವಾಧಿಕಾರ ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ|
ಪಟ್ಟ ಪದವಿಗೆಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ||

ಶುಭಸಂದೇಶ: ಮಾರ್ಕ 6: 7-13


ಆ ಕಾಲದಲ್ಲಿ ಯೇಸು ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು. ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು. ಕಳುಹಿಸುವಾಗ, ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ. ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ, ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು, ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿ, ಎಂದು ಅಪ್ಪಣೆ ಮಾಡಿದರು. ಇದಲ್ಲದೆ, ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ. ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ, ಎಂದರು. ಶಿಷ್ಯರು ಹೊರಟು ಹೋಗಿ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಎಂದು ಜನರಿಗೆ ಸಾರಿ ಹೇಳಿದರು. ದೆವ್ವಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲ ಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.


ಮನಸ್ಸಿಗೊಂದಿಷ್ಟು - 05.02.2026 

'ದೇವರ ಕಾರ್ಯಗಳು ನಮ್ಮಿಂದ ಕೈಗೂಡುವುದು, ನಮ್ಮ ಬಳಿ ಎಷ್ಟಿದೆ ಎನ್ನುದಕ್ಕಿಂತ ನಮ್ಮ ವಿಶ್ವಾಸ ಎಷ್ಟಿದೆ ಎನ್ನುವದರ ಮೇಲೆ'  ಎಂಬುದು ಇಂದಿನ ಶುಭಸಂದೇಶದ ಒಂದು ವಾಕ್ಯದ ಸಂದೇಶ. "ದೇವರು ಜೊತೆಗಿದ್ದಾಗ ನಮ್ಮ ಅಗತ್ಯಗಳು ಎಷ್ಟು ಕಡಿಮೆಯಾಗುತ್ತದೆ ಎಂಬುದನ್ನು ಶಿಷ್ಯರು ಅಂದು ಕಲಿತರು" ಎನ್ನುತ್ತಾರೆ ವಿಲಿಯಮ್ ಬಾರ್ಕಲೇ.

ಇಂದಿನ ಶುಭಸಂದೇಶದ ವಿಷಯದಲ್ಲಿ, ಏನನ್ನೂ ಜೊತೆಗೆ ತೆಗದುಕೊಂಡು ಹೋಗದೆ ಬೋಧಿಸಲು ಹೊರಟ ಶಿಷ್ಯರು ಅಂದು ಕಲಿತದ್ದು ಅದೇ, ಒಂದು ಸಂಪೂರ್ಣ ದೇವರ ಮೇಲೆ ಅವಲಂಬಿತವಾಗುವುದು, ಮತ್ತೊಂದು ಜನರ ಮೇಲೆ ಭರವಸೆ ಇಟ್ಟುಕೊಳ್ಳುವುದು. ದೇವರ ಮೇಲಿನ ಅವಲಂಬನೆ, ಪರರ ಮೇಲಿನ ಭರವಸೆ ನಮ್ಮನ್ನು ಮುನ್ನಡೆಸಲಿ.
         
ಮತ್ತೊಂದು ವಿಷಯ - "ಬೋಧನೆಗೆ ಕಿವಿಗೊಡದೆ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ"  ಎಂದು ಯೇಸು ಹೇಳಿದ್ದು ಕೋಪದಿಂದಲ್ಲ. ಅಂದಿನ ಯಹೂದ್ಯರು ಅನ್ಯ ಜನರ ನಾಡಿಗೆ ಹೋಗಿ ಅಲ್ಲಿಂದ ಮರಳುವಾಗ ಪಾದರಕ್ಷೆಯ ಧೂಳನ್ನು ಅಲ್ಲೇ ಝಾಡಿಸುವುದು ವಾಡಿಕೆಯಾಗಿತ್ತು. ಅದಕ್ಕೆ ಕಾರಣ ಆ ನಾಡು ದೇವರ ಒಡಂಬಡಿಕೆಯಲ್ಲಿ ಇಲ್ಲ ಎಂಬ ಭಾವದಿಂದ. ಯಾರು ದೇವರ ಬೋಧನೆಗೆ ಕಿವಿಗೊಡುವುದಿಲ್ಲವೋ, ಅವರು ದೇವರಿಗೆ ಹತ್ತಿರವಲ್ಲ ಎಂಬ ಸಂದೇಶ ಇದರಲ್ಲಿ ಇರಬಹುದು.
    
-ಚಿತ್ತ

11.02.2026 - ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ

  ಮೊದಲನೇ ವಾಚನ: 1 ಅರಸುಗಳು 10:1-10 ಸರ್ವೇಶ್ವರನ ನಾಮ ಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ...