29.06.2026 - ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು,

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11


ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು. ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು). ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು. ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು. ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು. ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು. ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು. ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು. ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು. ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.

ಕೀರ್ತನೆ: 34:2-3, 4-5, 6-7, 8-9

ಶ್ಲೋಕ: ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು

1.  ಪ್ರಭುವನು ನಾ ಕೊಂಡಾಡುವ ಎಲ್ಲ ಕಾಲದೊಳು|
ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು||
ಪ್ರಭುವಿನಲ್ಲಿದೆ ನನ್ನ ಮನದಭಿಮಾನ|
ದೀನರಿದನು ಕೇಳಿ, ಪಡೆಯಲಿ ಸುಮ್ಮಾನ||
ಶ್ಲೋಕ

2.  ಬನ್ನಿ, ಕೊಂಡಾಡುವ ಪ್ರಭು ದೇವನನು|
ಘನಪಡಿಸೋಣ ಅವನ ಶ್ರೀ ನಾಮವನು||
ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು|
ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು||
ಶ್ಲೋಕ

3.  ಆತನತ್ತ ತಿರುಗಿದ ಮುಖ ಅರಳುವುದು|
ಲಜ್ಜೆಯಿಂದೆಂದಿಗು ಕುಂದಿಹೋಗದು||
ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು|
ಸರ್ವಾಪತ್ತಿನಿಂದವನು ಮುಕ್ತಗೊಂಡನು||
ಶ್ಲೋಕ

4.  ಭಯಭಕುತಿಯುಳ್ಳವರು ಸುತ್ತಲು  ಕಾವಲಿದ್ದು|
ಕಾಯುವನು ಪ್ರಭುವಿನ ದೂತನೇ ಬಂದಿಳಿದು||
ಸವಿದು ನೋಡು ಪ್ರಭುವಿನ ಮಾಧುರ್ಯವನು|
ಆತನನು ಆಶ್ರಯಿಸಿಕೊಂಡವನು ಧನ್ಯನು||
ಶ್ಲೋಕ

ಎರಡನೇ ವಾಚನ: 2 ತಿಮೊಥೇಯನಿಗೆ 4:6-8, 17-18

ಅತಿ ಪ್ರಿಯನೇ, ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ. ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು. ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.

ಶುಭಸಂದೇಶ: ಮತ್ತಾಯ 16:13-19


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು. ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು. ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ. ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು. ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,

28.06.2026 - ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ

 ಮೊದಲನೇ ವಾಚನ: 2 ಅರಸುಗಳು 4:8-11, 14-16

ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು. ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು. ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು. ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು. ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು. ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು. ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. 

ಕೀರ್ತನೆ: 89:2-3, 16-17, 18-19

ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು

ಎರಡನೇ ವಾಚನ: ರೋಮನರಿಗೆ 6:3-4, 8-11

ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ. ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.

ಶುಭಸಂದೇಶ:  ಮತ್ತಾಯ 10:37-42


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ. “ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”

26.06.2026 - ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು.

 ಮೊದಲನೇ ವಾಚನ: 2 ಅರಸುಗಳು 25:1-12

ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು. ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು. ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು. ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು. ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು. ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು. ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು. ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.

ಕೀರ್ತನೆ: 137:1-2, 3, 4-5, 6

ಶ್ಲೋಕ: ಜೆರುಸಲೇಮನು ನಾ ಸ್ಮರಣೆಮಾಡದಿದ್ದಲಿ, ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ

1.  ಬಾಬಿಲೋನಿನ  ನದಿಗಳ  ತೀರದಲಿ  ಕುಳಿತು |
ಅತ್ತು  ಪ್ರಲಾಪಿಸಿದೆವು  ಸಿಯೋನನ್ನು   ನೆನೆದು ||
ಆ  ನಾಡಿನಲ್ಲಿ  ಕಿನ್ನರಿಗಳನ್ನೆ  ತೂಗುಹಾಕಿದೆವು|
ನೀರವಂಜಿ  ಮರಗಳಿಗೆ ಅವನ್ನು  ನೇತುಹಾಕಿದೆವು||
ಶ್ಲೋಕ

2.  ಸೆರೆಹಿಡಿದು  ಬಂಧಿಸಿದ ಆ ಜನ  ಈ  ಪರಿ  ಪೀಡಿಸಿದರೆಮ್ಮನು:|
"ಹಾಡಿ,  ನಮ್ಮ  ವಿನೋದಕ್ಕಾಗಿ  ಸಿಯೋನಿನ  ಗೀತೆಗಳಲೊಂದನು"||
ಶ್ಲೋಕ

3.  ಪ್ರಭು  ಗೀತೆಗಳ  ನಾವು  ಗಾನ  ಮಾಡುವುದೆಂತು|
ಅನ್ಯ  ನಾಡಿನೊಳು  ಅವುಗಳನು  ಹಾಡುವುದೆಂತು||
ಜೆರುಸಲೇಮ್, ನಾನು  ನಿನ್ನ   ಮರೆತಲ್ಲಿ|
ನನ್ನ  ಬಲ  ಹಸ್ತ  ಬತ್ತಿಹೋಗಿಬಿಡಲಿ||
ಶ್ಲೋಕ

4.  ಜೆರುಸಲೇಮನು  ನಾ  ಸ್ಮರಣೆಮಾಡದಿದ್ದಲಿ |
ಫಆ  ಸ್ಮರಣೆ  ಸರ್ವೋತ್ತಮ  ನಲಿವು  ನನಗಾಗದಿದ್ದಲಿ|
ಸೇದಿಹೋಗಲಿ  ನಾಲಿಗೆ  ನನ್ನ  ಬಾಯಲಿ ||
ಶ್ಲೋಕ

🌺✝️🌺

ಘೋಷಣೆ
(ಎಫೆಸಿಯರಿಗೆ 1: 17-18)

ಅಲ್ಲೆಲೂಯ, ಅಲ್ಲೆಲೂಯ!
ನಮ್ಮ  ಪ್ರಭು  ಯೇಸು  ಕ್ರಿಸ್ತರ  ದೇವರೂ,  ಮಹಿಮಾನ್ವಿತ ತಂದೆಯೂ ಆದವರು ನಿಮಗೆ  ಜ್ಞಾನವನ್ನು ವಿವೇಚನೆಯನ್ನು ನೀಡುವ ಆತ್ಮವನ್ನು ದಯಪಾಲಿಸಲಿ ಮತ್ತು ನಿಮ್ಮ ಮನೋನೇತ್ರಗಳನ್ನು ತೆರೆಯಲಿ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 8:1-4


ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು. ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು. ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

25.06.2026 - ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ

 ಮೊದಲನೇ ವಾಚನ: ೨ ಅರಸುಗಳು 24:8-17


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆ ಇವನ ತಾಯಿ. ಇವನು ತನ್ನ ತಂದೆಯಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು. ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು. ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು. ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು. ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ. ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ, ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು. ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.

ಕೀರ್ತನೆ: 79:1-2, 3-5, 8, 9

ಶ್ಲೋಕ: ದೇವಾ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ

1.  ಹೊಕ್ಕಿದರು  ದೇವಾ,  ಮ್ಲೇಚ್ಛರು ನಿನ್ನ ಸ್ವಂತ ನಾಡನು |
ಹೊಲೆಮಾಡಿಹರು  ನಿನ್ನ  ಪವಿತ್ರ  ದೇವಾಲಯವನು |
ಹಾಳು ದಿಬ್ಬವನ್ನಾಗಿಸಿಹರು  ಜೆರುಸಲೇಮ್  ನಗರವನು ||
ಅರ್ಪಿಸಿದರು  ನಿನ್ನ  ದಾಸರ  ಶವಗಳನು  ಗಗನ  ಪಕ್ಷಿಗಳಿಗೆ |
ಹಾಕಿದರು  ನಿನ್ನ  ಭಕ್ತರ   ಮಾಂಸವನು  ಕಾಡು  ಮೃಗಗಳಿಗೆ ||
ಶ್ಲೋಕ

2.  ನೀರಂತೆ  ಚೆಲ್ಲಿಹರಾ  ನೆತ್ತರನು  ಜೆರುಸಲೇಮ್   ಸುತ್ತಲು |
ನಮ್ಮವರ  ಶವಗಳನು  ಹೂಳಲು  ಯಾರೂ  ಇಲ್ಲದಿರಲು ||
ನಿಂದಾಸ್ಪದರಾದೆವು  ನೆರೆಹೊರೆಯ  ಜನಾಂಗಗಳಿಗೆ |
ಗುರಿಯಾದೆವು  ಸುತ್ತಣವರ  ಹಾಸ್ಯ  ಕುಚೋದ್ಯಗಳಿಗೆ ||
ನಿನ್ನ  ಕೋಪತಾಪ  ಹೇ  ಪ್ರಭೂ,  ಇನ್ನೆಷ್ಟರವರೆಗೆ?|
ಉರಿಯುತ್ತಿರಬೇಕೆ  ಸದಾ  ನಿನ್ನ  ರೋಷಾಗ್ನಿಯ ಧಗೆ?||
ಶ್ಲೋಕ

3.  ಹೊರಿಸಬೇಡ  ಪೂರ್ವಿಕರ  ತಪ್ಪುಗಳನು  ನಮ್ಮ  ಮೇಲೆ|  ಉರಿ  ಸಂಕಟದಲ್ಲಿರುವೆವು  ತೋರೆಮಗೆ  ಕರುಣೆಯನೀಗಲೆ  ||
ದೇವಾ,  ಮುಕ್ತಿದಾತ,  ನೆರವಾಗು ನಿನ್ನ ನಾಮ  ಮಹಿಮೆಯ ನಿಮಿತ್ತ |
ಪಾಪಗಳನು  ಅಳಿಸಿ  ನಮ್ಮನ್ನುದ್ದರಿಸು  ನಿನ್ನ  ನಾಮದ  ಪ್ರಯುಕ್ತ||
ಶ್ಲೋಕ

ಘೋಷಣೆ
(2 ಕೊರಿಂಥಿ 5: 19)

ಅಲ್ಲೆಲೂಯ, ಅಲ್ಲೆಲೂಯ!
ದೇವರು  ಕ್ರಿಸ್ತ  ಯೇಸುವಿನಲ್ಲಿ  ಇಡೀ  ಜಗತ್ತನ್ನೇ  ತಮ್ಮೊಡನೆ  ಸಂಧಾನಗೊಳಿಸುತ್ತಿದ್ದಾರೆ| ಈ  ಸಂಧಾನದ  ಸಂದೇಶವನ್ನು  ಸಾರುವ  ಸೌಭಾಗ್ಯವನ್ನು  ಅವರೇ  ನಮಗೆ  ಕೊಟ್ಟಿದ್ದಾರೆ ||
ಅಲ್ಲೆಲೂಯ!




ಶುಭಸಂದೇಶ: ಮತ್ತಾಯ 7:21-29

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು. ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.” “ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!” ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು. ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.

24.06.2026 - "ಇವನ ಹೆಸರು ಯೊವಾನ್ನ

 ಮೊದಲನೆಯ ವಾಚನ

ಪ್ರವಾದಿ ಯೆಶಾಯನ  ಗ್ರಂಥ  49:1-6

                                      

ಕಿವಿಗೊಡಿ  ನನ್ನ  ದ್ವೀಪ  ನಿವಾಸಿಗಳೇ,  ಆಲಿಸಿ  ನನ್ನನ್ನು  ದೂರದ  ಜನಾಂಗಗಳೇ.  ಸರ್ವೇಶ್ವರ  ಕರೆದನೆನ್ನನ್ನು  ಗರ್ಭದಲ್ಲಿದ್ದಾಗಲೇ,  ಹೆಸರಿಟ್ಟನೆನಗೆ  ನಾನು  ತಾಯಿಯ  ಉದರದಲ್ಲಿದ್ದಾಗಲೇ.  ಮಾಡಿದನು  ನನ್ನ  ನುಡಿಯನ್ನು  ಹರಿತವಾದ  ಖಡ್ಗವನ್ನಾಗಿ.  ಮುಚ್ಚಿಟ್ಟಿಹನು  ನನ್ನನ್ನು  ತನ್ನ  ಕರದ  ನೆರಳಿನಲ್ಲಿ.  ರೂಪಿಸಿಹನು  ನನ್ನನ್ನು  ಚೂಪಾದ  ಬಾಣವನ್ನಾಗಿ,  ಬಚ್ಚಿಟ್ಟಿಹನು  ನನ್ನನ್ನು  ತನ್ನ  ಬತ್ತಳಿಕೆಯಲ್ಲಿ.  ಆತನೆನಗೆ  ಇಂತೆಂದ:

"ನೀನೆನ್ನ  ದಾಸ;  ನನ್ನ  ಮಹಿಮೆ  ಬೆಳಗಿಸುವ  ಇಸ್ರಯೇಲ,  "ಇಂತೆಂದುಕೊಂಡೆ  ನಾನಾಗ.  ವ್ಯರ್ಥವಾಯಿತು  ನನ್ನ  ಸಾಮರ್ಥ್ಯವೆಲ್ಲ,  ಶೂನ್ಯವಾಗಿ  ಹೋಯಿತು  ನನ್ನ  ಶಕ್ತಿಯೆಲ್ಲ.  ನನಗೆ  ದೊರಕುವುದು  ನ್ಯಾಯ  ಸರ್ವೇಶ್ವರನ  ಕೈಯಲ್ಲೇ,  ನನಗೆ  ಬರುವುದು  ಬಹುಮಾನ  ಆ  ದೇವರಿಂದಲೇ.  ಯಕೋಬ್ಯರನ್ನು  ತನ್ನ  ಬಳಿಗೆ  ಕರೆತರಲು,  ಇಸ್ರಯೇಲರನ್ನು  ತನ್ನೊಂದಿಗೆ  ಸೇರಿಸಿಕೊಳ್ಳಲು,  ತನ್ನ  ದಾಸನನ್ನಾಗಿ  ನನ್ನ  ರೂಪಿಸಿದನು.  ತಾಯ  ಗರ್ಭದಲ್ಲಿದ್ದಾಗಲೇ  ಮಾಡಿದನಿದನು.  ಸನ್ಮಾನ್ಯನು  ನಾನು  ಸರ್ವೇಶ್ವರನ  ದೃಷ್ಟಿಯಲ್ಲಿ;  ನನ್ನ  ಶಕ್ತಿಸಾಮರ್ಥ್ಯ  ಇರುವುದು  ಆ  ದೇವರಲ್ಲಿ.  ಮತ್ತೆ  ಆತ  ಇಂತೆಂದನು  ನನಗೆ:

"ಮಹಾತ್ಕಾರ್ಯವೇನೂ  ಅಲ್ಲ.  ನನ್ನ  ದಾಸನಾದ  ನಿನಗೆ  ಕುಲಗಳನ್ನು  ಉದ್ದರಿಸುವ  ಮಾತ್ರಕೆ,    ಇಸ್ರಯೇಲರಲ್ಲಿ  ರಕ್ಷಿತರಾದವರನ್ನು  ಮರಳಿ  ಬರಮಾಡುವ  ಮಾತ್ರಕೆ.  ನೇಮಿಸಿರುವೆನು  ನಿನ್ನನ್ನು  ಜ್ಯೋತಿಯನ್ನಾಗಿ  ಸರ್ವ  ಜನಾಂಗಗಳಿಗೆ,  ನನ್ನ  ರಕ್ಷಣೆ  ವ್ಯಾಪಿಸಿರುವಂತೆ  ಮಾಡಲು  ಜಗದ  ಕಟ್ಟ  ಕಡೆಯವರೆಗೆ."

- ಪ್ರಭುವಿನ  ವಾಕ್ಯ

ಕೀರ್ತನೆ: 139: 1-3,13-14,15

ಶ್ಲೋಕ:  ನಿನಗೆ  ವಂದನೆ, ನೀ  ನನ್ನ  ಭಯಭಕ್ತಿಗೆ  ಪಾತ್ರ,  ನಿನ್ನ  ಕೃತ್ಯಗಳು  ಅದ್ಭುತಕರ  ಹಾಗೂ  ವಿಚಿತ್ರ.

1.  ಪ್ರಭೂ, ಪರಿಶೋಧಿಸಿರುವೆ ನೀ ನನ್ನನು|

ನೀ ಅರಿತುಕೊಂಡಿರುವ ಅಂತರಂಗವನು||

ನಾ ಕೂರುವುದೂ ಏಳುವುದು ನಿನಗೆ ಗೊತ್ತಿದೆ|

ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||

ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|

ನನ್ನ ನಡೆತೆಯಲ್ಲವು ನಿನಗೆ ಸುಪರಿಚಿತ||

  

2.  ನನ್ನ ಅಂತರಂಗವನು ಉಂಟುಮಾಡಿದಾತ ನೀನು|

ತಾಯಗರ್ಭದಲೇ ನನ್ನ ರೂಪಿಸಿದಾತ ನೀನು||

ನಿನಗೆ ವಂದನೆ, ನೀ ನನ್ನ  ಭಯಭಕ್ತಿಗೆ ಪಾತ್ರ|

ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||

 

3.  ನನ್ನ ಅಸ್ಥಿಪಂಜರವನು ರೂಪಿಸುವಾಗ|

ತಾಯಗರ್ಭದೊಳು ಅಚ್ಚರದಿ ರಚಿಸುವಾಗ||

ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ|

ಮರೆಯಾಗಿರಲಿಲ್ಲ ನಾನು ನಿನಗಾಗ||

ಎರಡನೆಯ ವಾಚನ : ಪ್ರೇಷಿತರ ಕಾರ್ಯಕಲಾಪ 13:22-26


"ದೇವರು  ಸೌಲನನ್ನು  ತ್ಯಜಿಸಿ  ದಾವೀದನನ್ನು  ಅರಸನನ್ನಾಗಿ  ನೇಮಿಸಿದರು.  ಇವನ  ಬಗ್ಗೆ  ದೇವರು,  'ಜೆಸ್ಸೆಯನ  ಮಗ  ದಾವೀದನು  ನನಗೆ  ಮೆಚ್ಚುಗೆಯಾದ  ವ್ಯಕ್ತಿ;   ಇವನು  ನನ್ನ  ಆಶೆ  ಆಕಾಂಕ್ಷೆಗಳನೆಲ್ಲಾ  ಪೂರೈಸುವನು' ಎಂದು  ತಮ್ಮ  ಒಪ್ಪಿಗೆಯನ್ನು  ಸೂಚಿಸಿದರು.  ಈ  ದಾವೀದನ  ಸಂತತಿಯಿಂದಲೇ  ದೇವರು  ತಮ್ಮ  ವಾಗ್ಧನದ  ಪ್ರಕಾರ  ಇಸ್ರಯೇಲ್  ಜನರಿಗೆ  ಒಬ್ಬ  ಉದ್ಧಾರಕನನ್ನು  ಕಳುಹಿಸಿದರು.  ಇವರೇ  ಯೇಸು.  ಇವರ  ಆಗಮನಕ್ಕೆ  ಸಿದ್ಧತೆಯಾಗಿ  ಪಶ್ಚಾತ್ತಾಪಪಟ್ಟು  ಪಾಪಕ್ಕೆ  ವಿಮುಖರಾಗಿ  ದೇವರಿಗೆ  ಅಭಿಮುಖರಾಗಿ  ಸ್ನಾನದೀಕ್ಷೆಯನ್ನು  ಪಡೆಯಬೇಕೆಂದು  ಯೊವಾನ್ನನು  ಇಸ್ರಯೇಲಿನ  ಎಲ್ಲಾ ಜನರಿಗೆ  ಸಾರಿದನು.  ಯೊವಾನ್ನನು  ತನ್ನ  ನಿಯೋಗವನ್ನು  ಪೂರೈಸುತ್ತಿದ್ದಂತೆ  ಜನರಿಗೆ,  'ನಾನು  ಯಾರೆಂದು  ನೀವು  ನೆನಸುತ್ತೀರಿ?  ನೀವು  ಎದುರು  ನೋಡುತ್ತಿರುವ  ವ್ಯಕ್ತಿ  ನಾನಲ್ಲ.  ನನ್ನ  ಅನಂತರ  ಒಬ್ಬರು  ಬರುವರು;  ಅವರ  ಪಾದರಕ್ಷೆಗಳನ್ನು  ಬಿಚ್ಚುವುದಕ್ಕೂ  ನಾನು  ಯೋಗ್ಯನಲ್ಲ'  ಎಂದನು.  "ನನ್ನ  ಸಹೋದರರೇ,  ಅಬ್ರಹಾಮನ  ಸಂತತಿಯವರೇ  ಮತ್ತು  ದೇವರಲ್ಲಿ  ಭಯಭಕ್ತಿಯುಳ್ಳ  ಇನ್ನಿತರರೇ,  ಈ  ಜೀವೋದ್ದಾರದ  ಸಂದೇಶವನ್ನು  ಕಳುಹಿಸಿರುವುದು  ನಮಗಾಗಿಯೇ."

ಪ್ರಭುವಿನ ವಾಕ್ಯ

ಅಲ್ಲೆಲೂಯ, ಅಲ್ಲೆಲೂಯ!

"ಸುಕುಮಾರ,  ನೀನೆನಿಸಿಕೊಳ್ಳುವೆ  ಪರಾತ್ಪರನ  ಪ್ರವಾದಿ | ಸರ್ವೇಶ್ವರನ  ಮಾರ್ಗವನು  ಸಜ್ಜುಗೊಳಿಸುವೆ  ಮುಂದಾಗಿ  ತೆರಳಿ ||

ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66,80

                               


ದಿನ  ತುಂಬಿದಾಗ  ಎಲಿಜಬೇತಳು  ಗಂಡು  ಮಗುವಿಗೆ  ಜನ್ಮವಿತ್ತಳು.  ಸರ್ವೇಶ್ವರ  ಆಕೆಗೆ  ವಿಶೇಷ  ಕೃಪೆ  ತೋರಿದ್ದಾರೆಂದು  ಅರಿತುಕೊಂಡ  ನೆರೆಹೊರೆಯವರೂ  ಬಂಧುಬಳಗದವರೂ  ಬಂದು  ಆಕೆಯೊಡನೆ  ಸೇರಿ  ಸಂತೋಷಪಟ್ಟರು.  ಎಂಟನೆಯ  ದಿನ  ಮಗುವಿನ  ಸುನ್ನತಿಗಾಗಿ  ಅವರು  ಬಂದು  ಅದಕ್ಕೆ,  ತಂದೆಯ  ಹೆಸರನ್ನು  ಅನುಸರಿಸಿ,  ಜಕರೀಯನೆಂದು  ನಾಮಕರಣ  ಮಾಡುವುದರಲ್ಲಿದ್ದರು.  ಆದರೆ  ಮಗುವಿನ  ತಾಯಿ,  "ಇಲ್ಲ,  ಅದು  ಕೂಡದು,  ಅವನಿಗೆ  'ಯೊವಾನ್ನ'  ಎಂಬ  ಹೆಸರಿಡಬೇಕು, " ಎಂದಳು.  ಅದಕ್ಕೆ  ಅವರು,  "ನಿನ್ನ  ಬಂಧು  ಬಳಗದವರಲ್ಲಿ  ಯಾರಿಗೂ  ಈ  ಹೆಸರು  ಇಲ್ಲವಲ್ಲಾ‌,  "ಎಂದು  ಹೇಳಿ,  "ಮಗುವಿಗೆ  ಏನು. ಹೆಸರಿಡಬೇಕೆನ್ನುತ್ತೀರಿ?  "ಎಂದು  ಮಗುವಿನ  ತಂದೆಗೆ  ಸನ್ನೆ ಮಾಡಿ  ಕೇಳಿದರು.  ಆಗ  ಜಕರೀಯನು  ಬರೆಯುವ  ಒಂದು  ಹಲಗೆಯನ್ನು  ತರಿಸಿಕೊಂಡು,  "ಇವನ  ಹೆಸರು  ಯೊವಾನ್ನ " ಎಂದು  ಬರೆದನು.  ಎಲ್ಲರೂ  ಬೆರಗಾದರು.  ತಕ್ಷಣವೇ  ಅವನಿಗೆ  ಬಾಯಿ  ಬಂದಿತು.  ನಾಲಿಗೆ  ಸಡಿಲವಾಯಿತು;  ಅವನು  ಮಾತನಾಡಲು  ಆರಂಭಿಸಿ  ದೇವರನ್ನು  ಸ್ತುತಿಸಿದನು.  ನೆರೆಹೊರೆಯವರೆಲ್ಲರೂ  ತಲ್ಲಣಗೊಂಡರು.  ಈ  ಸಮಾಚಾರ  ಜುದೇಯದ  ಗುಡ್ಡಗಾಡು  ಪ್ರಾಂತ್ಯದಲ್ಲೆಲ್ಲಾ  ಹರಡಿತು.  ಕೇಳಿದವರೆಲ್ಲರೂ  ಈ  ವಿಷಯಗಳನ್ನು  ಮನಸ್ಸಿನಲ್ಲಿಟ್ಟುಕೊಂಡು,  ಈ  ಮಗು  ಮುಂದೆ  ಎಂಥವನಾಗುವನೋ! " ಎಂದುಕೊಂಡರು.  ನಿಶ್ಚಯವಾಗಿಯೂ  ಸರ್ವೇಶ್ವರನ  ಅಭಯ  ಹಸ್ತವು  ಈ  ಮಗುವಿನ    ಮೇಲಿತ್ತು.  ಬಾಲಕನು  ಬೆಳೆದಂತೆ  ಆತ್ಮಶಕ್ತಿಯುತನಾದನು.  ಇಸ್ರಯೇಲ್  ಜನರಿಗೆ  ಬಹಿರಂಗವಾಗಿ  ಕಾಣಿಸಿಕೊಳ್ಳುವವರೆಗೂ  ಅವನು  ಬೆಂಗಾಡಿನಲ್ಲೇ  ವಾಸಿಸುತ್ತಿದ್ದನು.

- ಪ್ರಭುಕ್ರಿಸ್ತರ  ಶುಭಸಂದೇಶ

23.06.2026 - ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿ ಬಿಟ್ಟಾವು

 ಮೊದಲನೇ ವಾಚನ: 2 ಅರಸುಗಳು 19:9-11, 14-21, 31-35, 36



ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ, “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು. ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?  ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು: “ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ. ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ. ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ. ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು. ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.” ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ:” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ: ‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು. ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು. “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ. ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು. ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ". ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು. ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.

ಕೀರ್ತನೆ: 48:2-4, 10-11
ಶ್ಲೋಕ: ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು

ಸರ್ವ ಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ|
ದೇವನಖರದಲ್ಲಿ ಆತನ ಪವಿತ್ರ ಪರ್ವತ||
ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ|
ಆನಂದದಾಯಕ ರಾಜಾಧಿರಾಜನ ಆ ನಗರ||

ಅದರ ಕೋಟೆಕೊತ್ತಲಗಳ ನಡುವೆ ದೇವನು|
ತಾನೇ ಸುಭದ್ರ ದುರ್ಗವೆಂದು ತೋರಿಹನು||

ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು|
ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು||
ನಿನ್ನ ನಾಮದಂತೆ ನಿನ್ನಾ ಹೊಗಳಿಕೆ|
ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ ||

ಘೋಷಣೆ ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ!

ಪಿತನೇ, ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ 7:6, 12-14


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.” “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.” “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”

22.06.2026 - ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ

 ಮೊದಲನೇ ವಾಚನ: 2 ಅರಸುಗಳು 17:5-8, 13-15, 18

ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು. ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು. ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು. ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು. ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು. ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು. ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.  ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.

ಕೀರ್ತನೆ: 60:3, 4-5, 12-13

ಶ್ಲೋಕ: ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು

1.  ಕೈಬಿಟ್ಟೆ ದೇವಾ, ನಮ್ಮನ್ನು ಕೈಬಿಟ್ಟೆ|
ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ|
ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ||
ಶ್ಲೋಕ

2.  ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ|
ಅದರೊಡಕನು ಸರಿಮಾಡು ತಡವರಿಸದೆ||
ನಿನ್ನ ಜನರನ್ನು ಗುರಿಪಡಿಸಿದೆ  ಸಂಕಟಕೆ|
ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ||
ಶ್ಲೋಕ

3.  ದೇವಾ ನೀ, ನಮ್ಮನ್ನು ಕೈ ಬಿಟ್ಟಿರುವುದು ಸರಿಯೋ?|
ನಮ್ಮ ಸೈನಸಮೇತ ನೀ ಬರದೆ ಹೋದೆಯೋ?||
ಶತ್ರುವಿರುದ್ದ ಸಹಾಯ ಮಾಡಯ್ಯಾ|
ಮಾನವ ನೆರವು ನಮಗೆ ವ್ಯರ್ಥವಯ್ಯಾ||
ಶ್ಲೋಕ

ಘೋಷಣೆ
(ಯೊವಾನ್ನ 15: 15)

ಅಲ್ಲೆಲೂಯ, ಅಲ್ಲೆಲೂಯ!
ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ | ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ ||
ಅಲ್ಲೆಲೂಯ!



ಶುಭಸಂದೇಶ: ಮತ್ತಾಯ 7:1-5


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ, “ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.” ಎಂದು ಹೇಳಿದರು.

29.06.2026 - ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು,

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11 ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಯೊವಾನ್ನನ ಸಹೋದರ ಯಕ...