23.07.2026 - ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು

 ಮೊದಲನೇ ವಾಚನ: ಯೆರೆಮೀಯ 2:1-3, 7-8, 12-13 


ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು : “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು: ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ. “ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.” ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ. ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’ ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ. “ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”

ಕೀರ್ತನೆ: 36:6-7, 8-9, 10-11
ಶ್ಲೋಕ: ಪ್ರಭೂ, ನಿನ್ನಲ್ಲಿದೆ ಜೀವದ ಬುಗ್ಗೆ

ಶುಭಸಂದೇಶ: ಮತ್ತಾಯ 13:10-17

ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ. ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’ “ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ. ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ."ಎಂದರು.

22.07.2026 - ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು

 

ಮೊದಲನೇ ವಾಚನ: ಪರಮಗೀತೆ  3:1-4 

ನಲ್ಲೆ: ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ, ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ ಎದ್ದು ಊರೆಲ್ಲಾ  ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ. ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದ "ನನ್ನ ಪ್ರಾಣಕಾಂತನನ್ನು ಕಂಡಿರಾ?"  ಎಂದು ವಿಚಾರಿಸಿದೆ; ಅವರನ್ನು ಬಿಟ್ಟು ತುಸು ಹೊತ್ತಿನಲ್ಲೇ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯಿಯ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಅಥವಾ

ಪರ್ಯಾಯ  ವಾಚನ: 2,ಕೊರಿಂಥಿಯರಿಗೆ 5:14-17

ಸಹೋದರರೇ,  ಯೇಸು  ಕ್ರಿಸ್ತರ  ಪ್ರೀತಿಯ  ಪಾಲನೆಗೆ  ನಾವು  ಒಳಗಾಗಿದ್ದೇವೆ.  ಎಲ್ಲಾ  ಮಾನವರಿಗೋಸ್ಕರ  ಒಬ್ಬನು  ಮರಣಹೊಂದಿದನು.  ಆದ್ದರಿಂದ  ನಾವೆಲ್ಲರೂ  ಆ  ಮರಣದಲ್ಲಿ  ಪಾಲುಗಾರರು.  ಸರ್ವರಿಗಾಗಿ ಯೇಸು ಪ್ರಾಣತ್ಯಾಗ  ಮಾಡಿದರು.  ಪರಿಣಾಮವಾಗಿ,  ಇನ್ನು   ಮುಂದೆ   ಜೀವಿಸುವವರು   ತಮಗಾಗಿ  ಜೀವಿಸದೆ,  ಸತ್ತು  ಪುನರುತ್ಥಾನರಾದ  ಯೇಸುವಿಗಾಗಿ  ಜೀವಿಸಬೇಕು.  ಇನ್ನು  ಮುಂದೆ  ನಾವು  ಯಾರನ್ನೂ  ಕೇವಲ  ಮಾನವ  ದೃಷ್ಟಿಯಿಂದ  ಪರಿಗಣಿಸುವುದಿಲ್ಲ.  ಒಂದು  ಕಾಲದಲ್ಲಿ,  ಕ್ರಿಸ್ತ  ಯೇಸುವನ್ನು  ನಾವು  ಹಾಗೆ  ಪರಿಗಣಿಸಿದ್ದುಂಟು.  ಆದರೆ  ಇನ್ನು  ಮುಂದೆ  ಹಾಗೆ  ಮಾಡುವುದಿಲ್ಲ.  ಯಾರಾದರೂ  ಯೇಸು  ಕ್ರಿಸ್ತರೊಡನೆ  ಒಂದಾದರೆ ಅವನು  ನೂತನ  ಸೃಷ್ಟಿಯಾಗುತ್ತಾನೆ.  ಹಳೆಯದೆಲ್ಲಾ  ಅಳಿದುಹೋಗುತ್ತದೆ.  ಹೊಸದಿದೋ,  ಜನ್ಮ  ತಳೆದಿದೆ.

ಕೀರ್ತನೆ: 63:2, 3-4, 5-6, 8-9
ಶ್ಲೋಕ: ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ

ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ
ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ
ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ.

ನಿನ್ನ ಮಂದಿರದಲಿ ನನಗಾದ ದರ್ಶನದಲಿ
ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ
ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ
ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ.

ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ
ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ
ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ
ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ.

ನನಗೆ ನೀನು ನಿರಂತರದ ಸಹಾಯಕ
ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ
ನನ್ನಾತ್ಮ ನಿನಗಾತುಕೊಂಡಿದೆ
ನಿನ್ನ ಬಲಗೈ ನನಗಿಂಬಾಗಿದೆ.

ಶುಭಸಂದೇಶ: ಯೊವಾನ್ನ  20:1-2, 11-18


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದು ಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿ ಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತ ವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿ ಬಿಟ್ಟಿದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು.  ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ) ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.

21.07.2026 - ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ

 ಮೊದಲನೇ ವಾಚನ: ಪ್ರವಾದಿ ಮೀಕನ ಗ್ರಂಥ 7:14-15, 18-20


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ. ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ. ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ. ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.

ಕೀತನೆ: 85:2-4, 5-6, 7-8

ಶ್ಲೋಕ: ತೋರಿಸೆಮಗೆ ಪ್ರಭೂ ಕರುಣೆಯನು

೧. ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ |
     ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ ||
     ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು |
     ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು ||
     ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು |
     ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು ||

೨. ಪುನಶ್ಚೇತನಗೊಳಿಸೆಮ್ಮನು ದೇವಾ ಉದ್ಧಾರಕ |
     ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ ||
     ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ |
     ತಲಾತಲಾಂತರಗಳಿಗೂ ಕೋಪವನು ಬೆಳೆಸುವೆಯಾ? ||

೩. ನವಜೀವವನು ತುಂಬಿಸಲಾರೆಯಾ ನಮ್ಮಲಿ? |
     ಆಗ ನಿನ್ನ ಜನರು ಆನಂದಿಸುವರು ನಿನ್ನಲಿ ||
     ತೋರಿಸೆಮಗೆ ಪ್ರಭೂ ಕರುಣೆಯನು |
      ಅನುಗ್ರಹಿಸೆಮಗೆ ರಕ್ಷಣೆಯನು ||


ಶುಭಸಂದೇಶ: ಮತ್ತಾಯ12:46-50


ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು. “ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು. ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ, ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು; ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.

20.07.2026 - ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ

 ಮೊದಲನೇ ವಾಚನ: ಮೀಕ 6:1-4, 6-8


ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ. “ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.” ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು. ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ. ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ? ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ? ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.

ಕೀರ್ತನೆ: 50:5-6, 8-9, 16-17, 21, 23

ಶ್ಲೋಕ: ಸನ್ಮಾರ್ಗಿಗೆ ತೋರುವೆ ಪರಮ ಜೀವೋದ್ದಾರವನು

ಶುಭಸಂದೇಶ: ಮತ್ತಾಯ12:38-42


ಕೆಲವು ಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ."

19.07.2026 - ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು

 ಮೊದಲನೇ ವಾಚನ: ಸುಜ್ಞಾನಗ್ರಂಥ 12:13, 16-19


ಸರ್ವಜನರ ಸುಖ ಕೋರುವ ದೇವರು ನೀವಲ್ಲದೆ ಇನ್ನಾರೂ ಇಲ್ಲ. ನೀವು ವಿಧಿಸಿದ ದಂಡನೆ ಅನ್ಯಾಯವಲ್ಲ ಎಂದು ನೀವು ತೋರಿಸಬೇಕಾಗಿಲ್ಲ. ನಿಮ್ಮ ಶಕ್ತಿಯೇ ನ್ಯಾಯನೀತಿಗೆ ಆಧಾರ ನಿಮ್ಮ ಸಾರ್ವಭೌಮತ್ವವೇ ಎಲ್ಲ ಸಹನೆಗೆ ಮೂಲ ಕಾರಣ. ನೀವು ಸರ್ವಶಕ್ತರೆಂದು ಜನರು ನಂಬದಿರುವಾಗ ನೀವು ಶಕ್ತಿಯನ್ನು ತೋರಿಸುತ್ತೀರಿ; ಅದನು ಬಲ್ಲವರೊಂದಿಗೆ ವರ್ತಿಸುವಾಗ ಅವರ ಉದ್ಧಟತನವನ್ನು ಖಂಡಿಸುತ್ತೀರಿ. ಶಕ್ತಿಯಲ್ಲಿ ನೀವೇ ಸಾರ್ವಭೌಮ ಎಂದೇ, ತೀರ್ಪಿಡುತ್ತೀರಿ ಸಾಮ್ಯತೆಯಿಂದ ನಮ್ಮನ್ನಾಳುತ್ತೀರಿ ಬಹು ತಾಳ್ಮೆಯಿಂದ ನಿಮ್ಮ ಶಕ್ತಿ ನಿಮ್ಮಲ್ಲಿದೆ ಇಚ್ಛಿಸಿದಾಗಲೆಲ್ಲ ಇಂಥ ಕಾರ್ಯಗಳಿಂದ ಸಜ್ಜನನು ಜನಪ್ರಿಯ ನಾಗಿರಲು ಕಲಿಸಿಕೊಟ್ಟಿರುವಿರಿ ಪಾಪಗಳಿಗೆ ಪಶ್ಚಾತ್ತಾಪದ ಅವಕಾಶವಿತ್ತು ನಿಮ್ಮ ಮಕ್ಕಳನು ಭರವಸೆಯುಳ್ಳವರಾಗಿಸಿದಿರಿ.

ಕೀರ್ತನೆ: 86:5-6, 9-10, 15-16

ಶ್ಲೋಕ: ಪ್ರಭೂ, ನೀನು ದಯಾವಂತನು ಕ್ಷಮಿಸುವವನು

ಪ್ರಭು, ನೀನು ದಯಾವಂತನು, ಕ್ಷಮಿಸುವವನು 
ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು 
ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ
ನನ್ನ ವಿಜ್ಞಾಪನೆಗಳ ಕೋರಿಕೆಗೆ. ಶ್ಲೋಕ

ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು 
ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು 
ಪ್ರಭು, ನೀನೊಬ್ಬನೇ ದೇವನು 
ಅದ್ಭುತಶಾಲಿ, ಮಹೋನ್ನತನು. ಶ್ಲೋಕ

ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ
ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ 
ಕಟಾಕ್ಷವಿಟ್ಟು ಕರುಣಿಸೆನ್ನನು. ಶ್ಲೋಕ

ಎರಡನೇ ವಾಚನ: ರೋಮನರಿಗೆ 8:26-2

ಸಹೋದರರೇ, ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.




ಶುಭಸಂದೇಶ: ಮತ್ತಾಯ13:24-43


ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ. ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು. ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು. ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು. ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ. ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.” ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.” ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.” ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು. ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು. ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು. ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!" ಎಂದರು.

18.07.2026 - “ಇಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು

 



ಪ್ರವಾದಿ ಮೀಕನ ಗ್ರಂಥದಿಂದ ವಾಚನ 2 : 1-5

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ. ಇತರರ ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ. ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ : “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತಾನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು. ಆ ದಿನಗಳಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯ ಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ, ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವ ದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋಧಿಸುವರು. ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.

ಕೀರ್ತನೆ 10 : 1-2, 3-4, 7-8,14

ಶ್ಲೋಕ : ಪ್ರಭೂ, ದಲಿತನನು ಮರೆಯದಿರಯ್ಯಾ|

1.  ನನ್ನಿಂದೇಕೆ  ಪ್ರಭೂ,  ಅಷ್ಟು  ದೂರವಿರುವೆ?|
ಕಷ್ಟಕಾಲದಲೇಕೆ  ಕಣ್ಮರೆಯಾಗಿರುವೆ?||
ಸೊಕ್ಕಿನಿಂದ  ಶೋಷಿಸುತಿಹರು  ದಲಿತರನು  ದುರುಳರು|
ಸಿಕ್ಕಿಬೀಳಲಿ  ತಾವೇ  ಒಡ್ಡಿದ  ಉರಿಳಿನೊಳವರು||
ಶ್ಲೋಕ

2.  ಕೇಡಿಗನು  ತನ್ನ  ಮನದಾಶೆಗಾಗಿ  ಹೆಮ್ಮೆಪಡುತಿಹನು|
ಲಾಭಬಡುಕನು  ಪ್ರಭುವನು  ಶಪಿಸಿ  ತಿರಸ್ಕರಿಸುತಿಹನು||
ಸೊಕ್ಕೇರಿದ  ಮುಖದಾತನು  ಪ್ರಭುವನು  ಅರಸುವುದಿಲ್ಲ|
ಅವನ  ಮನದೊಳಿದೊಂದೇ  ಭಾವನೆ: "ದೇವರೇ  ಇಲ್ಲ"! ||
ಶ್ಲೋಕ

3.  ತುಂಬಿದೆ  ಶಾಪಕೋಪ,  ಕುತಂತ್ರ  ಅವನ  ಬಾಯಲಿ|
ಅವಿತಿದೆ  ಪಾಪ  ಅತಿ  ವಿನಾಶ  ನಾಲಿಗೆಯಡಿಯಲಿ||
ಊರು  ಸಂದುಗೊಂದುಗಳಲೆ  ಅವಿತಿದ್ದು| ನಿರ್ಗತಿಕರಿಗಾಗಿ ಅಲ್ಲೇ ಕಾದಿದ್ದು 
ಕೊಲೆಗೈವನು  ಮರೆಯಲ್ಲೇ  ಮೇಲೆಬಿದ್ದು||
ಶ್ಲೋಕ

4.  ಹೌದು  ದೇವಾ,  ನೀ  ವಿಚಾರಿಪವನು;  ದುಃಖದುಗುಡ  ಲೆಕ್ಕಿಸುವವನು|
ತಬ್ಬಲಿಗಳಿಗೆ  ತಂದೆ  ನೀನು,  ನಿರ್ಗತಿಕ  ನಿನಗೆ  ಶರಣಾಗತನು||
ಶ್ಲೋಕ

ಶುಭಸಂದೇಶ ಮತ್ತಾಯ 12:14-21


ಫರಿಸಾಯರು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು. ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು. ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನೂ ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆ ಮಾಡಿದರು. ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: ಇಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು. ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಮುರಿದ ಜೊಂಡಿನಂತಹ ದುರ್ಬಲರಿಗಿಂತ ದೀನಬಂಧು, ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು, ನ್ಯಾಯನೀತಿಗೆ ಜಯದೊರಕಿಸದೆ ಬಿಡನಿವನು. ನೆನೆಯುವರು ಅನ್ಯ ಜನರೆಲ್ಲರು ಇವನ ನಾಮವನು."

17.07.2026 - ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ

 ಪ್ರವಾದಿ ಯೆಶಾಯನ ಗ್ರಂಥ 38:1-6, 21-22, 7-8


ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆ ಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು. ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು, “ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆ ಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು. ಆಗ ಸರ್ವೇಶ್ವರ ಯೆಶಾಯನಿಗೆ, “ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ. ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.” ಯೆಶಾಯನು ಹಿಜ್ಕೀಯನಿಗೆ, ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕರುವಿನ ಮೇಲೆ ಕಟ್ಟು, ಆಗ ನೀನು ಗುಣ ಹೊಂದುವೆ,” ಎಂದು ಹೇಳಲು ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು. ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ: ಇಗೋ, ಅಹಾಜನು ಕಟ್ಟಿಸಿದ ನೆರಳುಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. 

ಕೀರ್ತನೆ: 38:10, 11, 12, 16

ಶ್ಲೋಕ: ನನ್ನಾತ್ಮವನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ

1.  ನನ್ನ ರೋಗದಲ್ಲಿ  ನಾನು ಇಂತೆಂದುಕೊಂಡೆ:|
ಮಧ್ಯಪ್ರಾಯದಲ್ಲೇ,  ಮೃತ್ಯುಲೋಕವನು ಸಮೀಪಿಸಿರುವೆ|
ನನ್ನ ಆಯುಷ್ಯವನು, ನಾ  ಕಳೆದುಕೊಂಡಿರುವೆ||
ಶ್ಲೋಕ

2.  ಜೀವಲೋಕದಲಿ ಇನ್ನು ದೇವರನು ಕಾಣೆನೆಂದುಕೊಂಡೆ|
ಭೂಲೋಕ ನಿವಾಸಗಳಲಿ ಒಬ್ಬನನ್ನೂ   ನೋಡಲಾರೆನೆಂದುಕೊಂಡೆ|| ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ|
ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ|
ಬೆಳಗು ಬೈಗಿನೊಳಗೆ ನನ್ನ ಆಯುಷ್ಯವನು ನೀ ಮುಗಿಸುತ್ತಿರುವೆನೆಂದು||
ಶ್ಲೋಕ

ಶ್ಲೋಕ
 
3.  ಸರ್ವೇಶ್ವರಾ, ಮಾನವನ ಜೀವನ ಇಂತಿದೆ|
ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ|
ನೀನೀಗ ಗುಣಪಡಿಸು ನಾ ಬಾಳುವೆ||
ಶ್ಲೋಕ


ಘೋಷಣೆ
(ಕೀರ್ತನೆ 119: 135)

ಅಲ್ಲೆಲೂಯ, ಅಲ್ಲೆಲೂಯ.
ತೋರು  ಪ್ರಭೂ,  ನಿನ್ನ ಮುಖದರ್ಶನ ಈ ದಾಸನಿಗೆ| ನೀ  ಕಲಿಸು  ನಿನ್ನ  ನಿಬಂಧನೆಗಳನು  ಎನಗೆ ||
ಅಲ್ಲೆಲೂಯ

ಶುಭಸಂದೇಶ: ಮತ್ತಾಯ 12:1-8


ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು. ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ? ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ? ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ? ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ. ‘ನನಗೆ ಬೇಕಾದುದು ದಯೆ, ಯಜ್ಞ ಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ. ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.

23.07.2026 - ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು

  ಮೊದಲನೇ ವಾಚನ: ಯೆರೆಮೀಯ 2:1-3, 7-8, 12-13  ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು : “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು: ...