26.06.2026 - ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು.

 ಮೊದಲನೇ ವಾಚನ: 2 ಅರಸುಗಳು 25:1-12

ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು. ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು. ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು. ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು. ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು. ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು. ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು. ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು. ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.

ಕೀರ್ತನೆ: 137:1-2, 3, 4-5, 6

ಶ್ಲೋಕ: ಜೆರುಸಲೇಮನು ನಾ ಸ್ಮರಣೆಮಾಡದಿದ್ದಲಿ, ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ

1.  ಬಾಬಿಲೋನಿನ  ನದಿಗಳ  ತೀರದಲಿ  ಕುಳಿತು |
ಅತ್ತು  ಪ್ರಲಾಪಿಸಿದೆವು  ಸಿಯೋನನ್ನು   ನೆನೆದು ||
ಆ  ನಾಡಿನಲ್ಲಿ  ಕಿನ್ನರಿಗಳನ್ನೆ  ತೂಗುಹಾಕಿದೆವು|
ನೀರವಂಜಿ  ಮರಗಳಿಗೆ ಅವನ್ನು  ನೇತುಹಾಕಿದೆವು||
ಶ್ಲೋಕ

2.  ಸೆರೆಹಿಡಿದು  ಬಂಧಿಸಿದ ಆ ಜನ  ಈ  ಪರಿ  ಪೀಡಿಸಿದರೆಮ್ಮನು:|
"ಹಾಡಿ,  ನಮ್ಮ  ವಿನೋದಕ್ಕಾಗಿ  ಸಿಯೋನಿನ  ಗೀತೆಗಳಲೊಂದನು"||
ಶ್ಲೋಕ

3.  ಪ್ರಭು  ಗೀತೆಗಳ  ನಾವು  ಗಾನ  ಮಾಡುವುದೆಂತು|
ಅನ್ಯ  ನಾಡಿನೊಳು  ಅವುಗಳನು  ಹಾಡುವುದೆಂತು||
ಜೆರುಸಲೇಮ್, ನಾನು  ನಿನ್ನ   ಮರೆತಲ್ಲಿ|
ನನ್ನ  ಬಲ  ಹಸ್ತ  ಬತ್ತಿಹೋಗಿಬಿಡಲಿ||
ಶ್ಲೋಕ

4.  ಜೆರುಸಲೇಮನು  ನಾ  ಸ್ಮರಣೆಮಾಡದಿದ್ದಲಿ |
ಫಆ  ಸ್ಮರಣೆ  ಸರ್ವೋತ್ತಮ  ನಲಿವು  ನನಗಾಗದಿದ್ದಲಿ|
ಸೇದಿಹೋಗಲಿ  ನಾಲಿಗೆ  ನನ್ನ  ಬಾಯಲಿ ||
ಶ್ಲೋಕ

🌺✝️🌺

ಘೋಷಣೆ
(ಎಫೆಸಿಯರಿಗೆ 1: 17-18)

ಅಲ್ಲೆಲೂಯ, ಅಲ್ಲೆಲೂಯ!
ನಮ್ಮ  ಪ್ರಭು  ಯೇಸು  ಕ್ರಿಸ್ತರ  ದೇವರೂ,  ಮಹಿಮಾನ್ವಿತ ತಂದೆಯೂ ಆದವರು ನಿಮಗೆ  ಜ್ಞಾನವನ್ನು ವಿವೇಚನೆಯನ್ನು ನೀಡುವ ಆತ್ಮವನ್ನು ದಯಪಾಲಿಸಲಿ ಮತ್ತು ನಿಮ್ಮ ಮನೋನೇತ್ರಗಳನ್ನು ತೆರೆಯಲಿ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 8:1-4


ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು. ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು. ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು. ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

25.06.2026 - ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ

 ಮೊದಲನೇ ವಾಚನ: ೨ ಅರಸುಗಳು 24:8-17


ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆ ಇವನ ತಾಯಿ. ಇವನು ತನ್ನ ತಂದೆಯಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು. ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು. ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು. ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು. ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ. ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ, ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು. ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.

ಕೀರ್ತನೆ: 79:1-2, 3-5, 8, 9

ಶ್ಲೋಕ: ದೇವಾ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ

1.  ಹೊಕ್ಕಿದರು  ದೇವಾ,  ಮ್ಲೇಚ್ಛರು ನಿನ್ನ ಸ್ವಂತ ನಾಡನು |
ಹೊಲೆಮಾಡಿಹರು  ನಿನ್ನ  ಪವಿತ್ರ  ದೇವಾಲಯವನು |
ಹಾಳು ದಿಬ್ಬವನ್ನಾಗಿಸಿಹರು  ಜೆರುಸಲೇಮ್  ನಗರವನು ||
ಅರ್ಪಿಸಿದರು  ನಿನ್ನ  ದಾಸರ  ಶವಗಳನು  ಗಗನ  ಪಕ್ಷಿಗಳಿಗೆ |
ಹಾಕಿದರು  ನಿನ್ನ  ಭಕ್ತರ   ಮಾಂಸವನು  ಕಾಡು  ಮೃಗಗಳಿಗೆ ||
ಶ್ಲೋಕ

2.  ನೀರಂತೆ  ಚೆಲ್ಲಿಹರಾ  ನೆತ್ತರನು  ಜೆರುಸಲೇಮ್   ಸುತ್ತಲು |
ನಮ್ಮವರ  ಶವಗಳನು  ಹೂಳಲು  ಯಾರೂ  ಇಲ್ಲದಿರಲು ||
ನಿಂದಾಸ್ಪದರಾದೆವು  ನೆರೆಹೊರೆಯ  ಜನಾಂಗಗಳಿಗೆ |
ಗುರಿಯಾದೆವು  ಸುತ್ತಣವರ  ಹಾಸ್ಯ  ಕುಚೋದ್ಯಗಳಿಗೆ ||
ನಿನ್ನ  ಕೋಪತಾಪ  ಹೇ  ಪ್ರಭೂ,  ಇನ್ನೆಷ್ಟರವರೆಗೆ?|
ಉರಿಯುತ್ತಿರಬೇಕೆ  ಸದಾ  ನಿನ್ನ  ರೋಷಾಗ್ನಿಯ ಧಗೆ?||
ಶ್ಲೋಕ

3.  ಹೊರಿಸಬೇಡ  ಪೂರ್ವಿಕರ  ತಪ್ಪುಗಳನು  ನಮ್ಮ  ಮೇಲೆ|  ಉರಿ  ಸಂಕಟದಲ್ಲಿರುವೆವು  ತೋರೆಮಗೆ  ಕರುಣೆಯನೀಗಲೆ  ||
ದೇವಾ,  ಮುಕ್ತಿದಾತ,  ನೆರವಾಗು ನಿನ್ನ ನಾಮ  ಮಹಿಮೆಯ ನಿಮಿತ್ತ |
ಪಾಪಗಳನು  ಅಳಿಸಿ  ನಮ್ಮನ್ನುದ್ದರಿಸು  ನಿನ್ನ  ನಾಮದ  ಪ್ರಯುಕ್ತ||
ಶ್ಲೋಕ

ಘೋಷಣೆ
(2 ಕೊರಿಂಥಿ 5: 19)

ಅಲ್ಲೆಲೂಯ, ಅಲ್ಲೆಲೂಯ!
ದೇವರು  ಕ್ರಿಸ್ತ  ಯೇಸುವಿನಲ್ಲಿ  ಇಡೀ  ಜಗತ್ತನ್ನೇ  ತಮ್ಮೊಡನೆ  ಸಂಧಾನಗೊಳಿಸುತ್ತಿದ್ದಾರೆ| ಈ  ಸಂಧಾನದ  ಸಂದೇಶವನ್ನು  ಸಾರುವ  ಸೌಭಾಗ್ಯವನ್ನು  ಅವರೇ  ನಮಗೆ  ಕೊಟ್ಟಿದ್ದಾರೆ ||
ಅಲ್ಲೆಲೂಯ!




ಶುಭಸಂದೇಶ: ಮತ್ತಾಯ 7:21-29

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು. ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.” “ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!” ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು. ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.

24.06.2026 - "ಇವನ ಹೆಸರು ಯೊವಾನ್ನ

 ಮೊದಲನೆಯ ವಾಚನ

ಪ್ರವಾದಿ ಯೆಶಾಯನ  ಗ್ರಂಥ  49:1-6

                                      

ಕಿವಿಗೊಡಿ  ನನ್ನ  ದ್ವೀಪ  ನಿವಾಸಿಗಳೇ,  ಆಲಿಸಿ  ನನ್ನನ್ನು  ದೂರದ  ಜನಾಂಗಗಳೇ.  ಸರ್ವೇಶ್ವರ  ಕರೆದನೆನ್ನನ್ನು  ಗರ್ಭದಲ್ಲಿದ್ದಾಗಲೇ,  ಹೆಸರಿಟ್ಟನೆನಗೆ  ನಾನು  ತಾಯಿಯ  ಉದರದಲ್ಲಿದ್ದಾಗಲೇ.  ಮಾಡಿದನು  ನನ್ನ  ನುಡಿಯನ್ನು  ಹರಿತವಾದ  ಖಡ್ಗವನ್ನಾಗಿ.  ಮುಚ್ಚಿಟ್ಟಿಹನು  ನನ್ನನ್ನು  ತನ್ನ  ಕರದ  ನೆರಳಿನಲ್ಲಿ.  ರೂಪಿಸಿಹನು  ನನ್ನನ್ನು  ಚೂಪಾದ  ಬಾಣವನ್ನಾಗಿ,  ಬಚ್ಚಿಟ್ಟಿಹನು  ನನ್ನನ್ನು  ತನ್ನ  ಬತ್ತಳಿಕೆಯಲ್ಲಿ.  ಆತನೆನಗೆ  ಇಂತೆಂದ:

"ನೀನೆನ್ನ  ದಾಸ;  ನನ್ನ  ಮಹಿಮೆ  ಬೆಳಗಿಸುವ  ಇಸ್ರಯೇಲ,  "ಇಂತೆಂದುಕೊಂಡೆ  ನಾನಾಗ.  ವ್ಯರ್ಥವಾಯಿತು  ನನ್ನ  ಸಾಮರ್ಥ್ಯವೆಲ್ಲ,  ಶೂನ್ಯವಾಗಿ  ಹೋಯಿತು  ನನ್ನ  ಶಕ್ತಿಯೆಲ್ಲ.  ನನಗೆ  ದೊರಕುವುದು  ನ್ಯಾಯ  ಸರ್ವೇಶ್ವರನ  ಕೈಯಲ್ಲೇ,  ನನಗೆ  ಬರುವುದು  ಬಹುಮಾನ  ಆ  ದೇವರಿಂದಲೇ.  ಯಕೋಬ್ಯರನ್ನು  ತನ್ನ  ಬಳಿಗೆ  ಕರೆತರಲು,  ಇಸ್ರಯೇಲರನ್ನು  ತನ್ನೊಂದಿಗೆ  ಸೇರಿಸಿಕೊಳ್ಳಲು,  ತನ್ನ  ದಾಸನನ್ನಾಗಿ  ನನ್ನ  ರೂಪಿಸಿದನು.  ತಾಯ  ಗರ್ಭದಲ್ಲಿದ್ದಾಗಲೇ  ಮಾಡಿದನಿದನು.  ಸನ್ಮಾನ್ಯನು  ನಾನು  ಸರ್ವೇಶ್ವರನ  ದೃಷ್ಟಿಯಲ್ಲಿ;  ನನ್ನ  ಶಕ್ತಿಸಾಮರ್ಥ್ಯ  ಇರುವುದು  ಆ  ದೇವರಲ್ಲಿ.  ಮತ್ತೆ  ಆತ  ಇಂತೆಂದನು  ನನಗೆ:

"ಮಹಾತ್ಕಾರ್ಯವೇನೂ  ಅಲ್ಲ.  ನನ್ನ  ದಾಸನಾದ  ನಿನಗೆ  ಕುಲಗಳನ್ನು  ಉದ್ದರಿಸುವ  ಮಾತ್ರಕೆ,    ಇಸ್ರಯೇಲರಲ್ಲಿ  ರಕ್ಷಿತರಾದವರನ್ನು  ಮರಳಿ  ಬರಮಾಡುವ  ಮಾತ್ರಕೆ.  ನೇಮಿಸಿರುವೆನು  ನಿನ್ನನ್ನು  ಜ್ಯೋತಿಯನ್ನಾಗಿ  ಸರ್ವ  ಜನಾಂಗಗಳಿಗೆ,  ನನ್ನ  ರಕ್ಷಣೆ  ವ್ಯಾಪಿಸಿರುವಂತೆ  ಮಾಡಲು  ಜಗದ  ಕಟ್ಟ  ಕಡೆಯವರೆಗೆ."

- ಪ್ರಭುವಿನ  ವಾಕ್ಯ

ಕೀರ್ತನೆ: 139: 1-3,13-14,15

ಶ್ಲೋಕ:  ನಿನಗೆ  ವಂದನೆ, ನೀ  ನನ್ನ  ಭಯಭಕ್ತಿಗೆ  ಪಾತ್ರ,  ನಿನ್ನ  ಕೃತ್ಯಗಳು  ಅದ್ಭುತಕರ  ಹಾಗೂ  ವಿಚಿತ್ರ.

1.  ಪ್ರಭೂ, ಪರಿಶೋಧಿಸಿರುವೆ ನೀ ನನ್ನನು|

ನೀ ಅರಿತುಕೊಂಡಿರುವ ಅಂತರಂಗವನು||

ನಾ ಕೂರುವುದೂ ಏಳುವುದು ನಿನಗೆ ಗೊತ್ತಿದೆ|

ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||

ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|

ನನ್ನ ನಡೆತೆಯಲ್ಲವು ನಿನಗೆ ಸುಪರಿಚಿತ||

  

2.  ನನ್ನ ಅಂತರಂಗವನು ಉಂಟುಮಾಡಿದಾತ ನೀನು|

ತಾಯಗರ್ಭದಲೇ ನನ್ನ ರೂಪಿಸಿದಾತ ನೀನು||

ನಿನಗೆ ವಂದನೆ, ನೀ ನನ್ನ  ಭಯಭಕ್ತಿಗೆ ಪಾತ್ರ|

ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||

 

3.  ನನ್ನ ಅಸ್ಥಿಪಂಜರವನು ರೂಪಿಸುವಾಗ|

ತಾಯಗರ್ಭದೊಳು ಅಚ್ಚರದಿ ರಚಿಸುವಾಗ||

ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ|

ಮರೆಯಾಗಿರಲಿಲ್ಲ ನಾನು ನಿನಗಾಗ||

ಎರಡನೆಯ ವಾಚನ : ಪ್ರೇಷಿತರ ಕಾರ್ಯಕಲಾಪ 13:22-26


"ದೇವರು  ಸೌಲನನ್ನು  ತ್ಯಜಿಸಿ  ದಾವೀದನನ್ನು  ಅರಸನನ್ನಾಗಿ  ನೇಮಿಸಿದರು.  ಇವನ  ಬಗ್ಗೆ  ದೇವರು,  'ಜೆಸ್ಸೆಯನ  ಮಗ  ದಾವೀದನು  ನನಗೆ  ಮೆಚ್ಚುಗೆಯಾದ  ವ್ಯಕ್ತಿ;   ಇವನು  ನನ್ನ  ಆಶೆ  ಆಕಾಂಕ್ಷೆಗಳನೆಲ್ಲಾ  ಪೂರೈಸುವನು' ಎಂದು  ತಮ್ಮ  ಒಪ್ಪಿಗೆಯನ್ನು  ಸೂಚಿಸಿದರು.  ಈ  ದಾವೀದನ  ಸಂತತಿಯಿಂದಲೇ  ದೇವರು  ತಮ್ಮ  ವಾಗ್ಧನದ  ಪ್ರಕಾರ  ಇಸ್ರಯೇಲ್  ಜನರಿಗೆ  ಒಬ್ಬ  ಉದ್ಧಾರಕನನ್ನು  ಕಳುಹಿಸಿದರು.  ಇವರೇ  ಯೇಸು.  ಇವರ  ಆಗಮನಕ್ಕೆ  ಸಿದ್ಧತೆಯಾಗಿ  ಪಶ್ಚಾತ್ತಾಪಪಟ್ಟು  ಪಾಪಕ್ಕೆ  ವಿಮುಖರಾಗಿ  ದೇವರಿಗೆ  ಅಭಿಮುಖರಾಗಿ  ಸ್ನಾನದೀಕ್ಷೆಯನ್ನು  ಪಡೆಯಬೇಕೆಂದು  ಯೊವಾನ್ನನು  ಇಸ್ರಯೇಲಿನ  ಎಲ್ಲಾ ಜನರಿಗೆ  ಸಾರಿದನು.  ಯೊವಾನ್ನನು  ತನ್ನ  ನಿಯೋಗವನ್ನು  ಪೂರೈಸುತ್ತಿದ್ದಂತೆ  ಜನರಿಗೆ,  'ನಾನು  ಯಾರೆಂದು  ನೀವು  ನೆನಸುತ್ತೀರಿ?  ನೀವು  ಎದುರು  ನೋಡುತ್ತಿರುವ  ವ್ಯಕ್ತಿ  ನಾನಲ್ಲ.  ನನ್ನ  ಅನಂತರ  ಒಬ್ಬರು  ಬರುವರು;  ಅವರ  ಪಾದರಕ್ಷೆಗಳನ್ನು  ಬಿಚ್ಚುವುದಕ್ಕೂ  ನಾನು  ಯೋಗ್ಯನಲ್ಲ'  ಎಂದನು.  "ನನ್ನ  ಸಹೋದರರೇ,  ಅಬ್ರಹಾಮನ  ಸಂತತಿಯವರೇ  ಮತ್ತು  ದೇವರಲ್ಲಿ  ಭಯಭಕ್ತಿಯುಳ್ಳ  ಇನ್ನಿತರರೇ,  ಈ  ಜೀವೋದ್ದಾರದ  ಸಂದೇಶವನ್ನು  ಕಳುಹಿಸಿರುವುದು  ನಮಗಾಗಿಯೇ."

ಪ್ರಭುವಿನ ವಾಕ್ಯ

ಅಲ್ಲೆಲೂಯ, ಅಲ್ಲೆಲೂಯ!

"ಸುಕುಮಾರ,  ನೀನೆನಿಸಿಕೊಳ್ಳುವೆ  ಪರಾತ್ಪರನ  ಪ್ರವಾದಿ | ಸರ್ವೇಶ್ವರನ  ಮಾರ್ಗವನು  ಸಜ್ಜುಗೊಳಿಸುವೆ  ಮುಂದಾಗಿ  ತೆರಳಿ ||

ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66,80

                               


ದಿನ  ತುಂಬಿದಾಗ  ಎಲಿಜಬೇತಳು  ಗಂಡು  ಮಗುವಿಗೆ  ಜನ್ಮವಿತ್ತಳು.  ಸರ್ವೇಶ್ವರ  ಆಕೆಗೆ  ವಿಶೇಷ  ಕೃಪೆ  ತೋರಿದ್ದಾರೆಂದು  ಅರಿತುಕೊಂಡ  ನೆರೆಹೊರೆಯವರೂ  ಬಂಧುಬಳಗದವರೂ  ಬಂದು  ಆಕೆಯೊಡನೆ  ಸೇರಿ  ಸಂತೋಷಪಟ್ಟರು.  ಎಂಟನೆಯ  ದಿನ  ಮಗುವಿನ  ಸುನ್ನತಿಗಾಗಿ  ಅವರು  ಬಂದು  ಅದಕ್ಕೆ,  ತಂದೆಯ  ಹೆಸರನ್ನು  ಅನುಸರಿಸಿ,  ಜಕರೀಯನೆಂದು  ನಾಮಕರಣ  ಮಾಡುವುದರಲ್ಲಿದ್ದರು.  ಆದರೆ  ಮಗುವಿನ  ತಾಯಿ,  "ಇಲ್ಲ,  ಅದು  ಕೂಡದು,  ಅವನಿಗೆ  'ಯೊವಾನ್ನ'  ಎಂಬ  ಹೆಸರಿಡಬೇಕು, " ಎಂದಳು.  ಅದಕ್ಕೆ  ಅವರು,  "ನಿನ್ನ  ಬಂಧು  ಬಳಗದವರಲ್ಲಿ  ಯಾರಿಗೂ  ಈ  ಹೆಸರು  ಇಲ್ಲವಲ್ಲಾ‌,  "ಎಂದು  ಹೇಳಿ,  "ಮಗುವಿಗೆ  ಏನು. ಹೆಸರಿಡಬೇಕೆನ್ನುತ್ತೀರಿ?  "ಎಂದು  ಮಗುವಿನ  ತಂದೆಗೆ  ಸನ್ನೆ ಮಾಡಿ  ಕೇಳಿದರು.  ಆಗ  ಜಕರೀಯನು  ಬರೆಯುವ  ಒಂದು  ಹಲಗೆಯನ್ನು  ತರಿಸಿಕೊಂಡು,  "ಇವನ  ಹೆಸರು  ಯೊವಾನ್ನ " ಎಂದು  ಬರೆದನು.  ಎಲ್ಲರೂ  ಬೆರಗಾದರು.  ತಕ್ಷಣವೇ  ಅವನಿಗೆ  ಬಾಯಿ  ಬಂದಿತು.  ನಾಲಿಗೆ  ಸಡಿಲವಾಯಿತು;  ಅವನು  ಮಾತನಾಡಲು  ಆರಂಭಿಸಿ  ದೇವರನ್ನು  ಸ್ತುತಿಸಿದನು.  ನೆರೆಹೊರೆಯವರೆಲ್ಲರೂ  ತಲ್ಲಣಗೊಂಡರು.  ಈ  ಸಮಾಚಾರ  ಜುದೇಯದ  ಗುಡ್ಡಗಾಡು  ಪ್ರಾಂತ್ಯದಲ್ಲೆಲ್ಲಾ  ಹರಡಿತು.  ಕೇಳಿದವರೆಲ್ಲರೂ  ಈ  ವಿಷಯಗಳನ್ನು  ಮನಸ್ಸಿನಲ್ಲಿಟ್ಟುಕೊಂಡು,  ಈ  ಮಗು  ಮುಂದೆ  ಎಂಥವನಾಗುವನೋ! " ಎಂದುಕೊಂಡರು.  ನಿಶ್ಚಯವಾಗಿಯೂ  ಸರ್ವೇಶ್ವರನ  ಅಭಯ  ಹಸ್ತವು  ಈ  ಮಗುವಿನ    ಮೇಲಿತ್ತು.  ಬಾಲಕನು  ಬೆಳೆದಂತೆ  ಆತ್ಮಶಕ್ತಿಯುತನಾದನು.  ಇಸ್ರಯೇಲ್  ಜನರಿಗೆ  ಬಹಿರಂಗವಾಗಿ  ಕಾಣಿಸಿಕೊಳ್ಳುವವರೆಗೂ  ಅವನು  ಬೆಂಗಾಡಿನಲ್ಲೇ  ವಾಸಿಸುತ್ತಿದ್ದನು.

- ಪ್ರಭುಕ್ರಿಸ್ತರ  ಶುಭಸಂದೇಶ

23.06.2026 - ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿ ಬಿಟ್ಟಾವು

 ಮೊದಲನೇ ವಾಚನ: 2 ಅರಸುಗಳು 19:9-11, 14-21, 31-35, 36



ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ, “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು. ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?  ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು: “ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ. ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ. ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ. ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು. ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.” ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ:” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ: ‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು. ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು. “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ. ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು. ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ". ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು. ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.

ಕೀರ್ತನೆ: 48:2-4, 10-11
ಶ್ಲೋಕ: ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು

ಸರ್ವ ಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ|
ದೇವನಖರದಲ್ಲಿ ಆತನ ಪವಿತ್ರ ಪರ್ವತ||
ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ|
ಆನಂದದಾಯಕ ರಾಜಾಧಿರಾಜನ ಆ ನಗರ||

ಅದರ ಕೋಟೆಕೊತ್ತಲಗಳ ನಡುವೆ ದೇವನು|
ತಾನೇ ಸುಭದ್ರ ದುರ್ಗವೆಂದು ತೋರಿಹನು||

ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು|
ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು||
ನಿನ್ನ ನಾಮದಂತೆ ನಿನ್ನಾ ಹೊಗಳಿಕೆ|
ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ ||

ಘೋಷಣೆ ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ!

ಪಿತನೇ, ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ 7:6, 12-14


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.” “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.” “ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು. ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”

22.06.2026 - ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ

 ಮೊದಲನೇ ವಾಚನ: 2 ಅರಸುಗಳು 17:5-8, 13-15, 18

ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು. ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು. ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು. ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು. ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು. ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು. ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.  ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.

ಕೀರ್ತನೆ: 60:3, 4-5, 12-13

ಶ್ಲೋಕ: ಪ್ರಭೂ, ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು

1.  ಕೈಬಿಟ್ಟೆ ದೇವಾ, ನಮ್ಮನ್ನು ಕೈಬಿಟ್ಟೆ|
ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ|
ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ||
ಶ್ಲೋಕ

2.  ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ|
ಅದರೊಡಕನು ಸರಿಮಾಡು ತಡವರಿಸದೆ||
ನಿನ್ನ ಜನರನ್ನು ಗುರಿಪಡಿಸಿದೆ  ಸಂಕಟಕೆ|
ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ||
ಶ್ಲೋಕ

3.  ದೇವಾ ನೀ, ನಮ್ಮನ್ನು ಕೈ ಬಿಟ್ಟಿರುವುದು ಸರಿಯೋ?|
ನಮ್ಮ ಸೈನಸಮೇತ ನೀ ಬರದೆ ಹೋದೆಯೋ?||
ಶತ್ರುವಿರುದ್ದ ಸಹಾಯ ಮಾಡಯ್ಯಾ|
ಮಾನವ ನೆರವು ನಮಗೆ ವ್ಯರ್ಥವಯ್ಯಾ||
ಶ್ಲೋಕ

ಘೋಷಣೆ
(ಯೊವಾನ್ನ 15: 15)

ಅಲ್ಲೆಲೂಯ, ಅಲ್ಲೆಲೂಯ!
ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ | ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ ||
ಅಲ್ಲೆಲೂಯ!



ಶುಭಸಂದೇಶ: ಮತ್ತಾಯ 7:1-5


ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ, “ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.” ಎಂದು ಹೇಳಿದರು.

21.06.2026 - ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು

 ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ. 

ಕೀರ್ತನೆ: 69:8-10, 14, 17, 33-35

ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

1.  ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ|
ನಾಚಿಕೆಯಿಂದಲೇ ಮುಖ ಮುಚ್ಚಿಕೊಂಡೆನಯ್ಯಾ||
ನನ್ನವರಿಗೇ ನಾನು ಅನ್ಯನಾದೆನಯ್ಯಾ|
ಒಡಹುಟ್ಟಿದವರಿಗೇ ಹೊರಗಿನವನಾದೆನಯ್ಯಾ||
ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದ ಅಭಿಮಾನ|
ಎನ್ನ ಮೇಲೆರಗಿದೆ ನಿನ್ನ ಕಡು  ದ್ರೋಹಿಗಳ ದೂಷಣ||
ಶ್ಲೋಕ

2.  ಪ್ರಸನ್ನಕಾಲದಲ್ಲಿ ಪ್ರಭೂ, ನಾ ಮೊರೆಯಿಡುತ್ತಿರುವೆ ನಿನಗೆ|
ಪ್ರೀತಿಮಯ ದೇವಾ, ಜೀವೋದ್ಧಾರಕಾ, ಸದುತ್ತರ ನೀಡೆನಗೆ||
ಆಲಿಸೆನ್ನ ಪ್ರಭೂ, ನಿನ್ನ ಪ್ರೀತಿ ಸುಮಧುರ|
ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ||
ಶ್ಲೋಕ

3.  ಇದನರಿತು ದೀನದಲಿತರು ಆನಂದಗೊಳ್ಳಲಿ|
ದೇವನನು ಅರಸುವವರು ಪುನಶ್ಚೇತನಗೊಳ್ಳಲಿ||
ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು|
ಭೂಮ್ಯಾಕಾಶಗಳು ಆತನನು ಕೊಂಡಾಡಲಿ|
ಸಾಗರಗಳು, ಜಲಚರಗಳು ಆತನನ್ನು ಭಜಿಸಲಿ||
ಶ್ಲೋಕ

ಎರಡನೇ ವಾಚನ: ರೋಮನರಿಗೆ  5:12-15

ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

ಘೋಷಣೆ
(ಯೊವಾನ್ನ 15: 15)

ಅಲ್ಲೆಲೂಯ, ಅಲ್ಲೆಲೂಯ!
ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ | ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 10:26-33

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.

20.06.2026 - ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ

 ಮೊದಲನೇ ವಾಚನ: 2 ಪೂರ್ವಕಾಲದ ಇತಿಹಾಸ 24:17-25 


 ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡ ಬಿದ್ದು ಅವನನ್ನು ಒಲಿಸಿಕೊಂಡರು. ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಆಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸತೊಡಗಿದರು. ಅವರ ಈ ಆಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವ ಕೋಪ ಎರಗಿತು. ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ, ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನು ದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತ ಸ್ಥಾನದಲ್ಲಿ ನಿಂತು, "ದೇವರ ಮಾತುಗಳನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶರಸ್ವಾಮಿಯನ್ನು ಬಿಟ್ಟಿದ್ದರಿಂದ ಅವರೂ ನಿಮ್ಮನ್ನು ಬಿಟ್ಟು ಬಿಟ್ಟಿದ್ದಾರೆ." ಎಂದನು. ಆಗ ಅವರು ಆತನಿಗೆ ವಿರೋಧವಾಗಿ ಹೊಳಸಂಚು ಮಾಡಿ, ಸರ್ವೇಶ್ವರನ ಆಲಯದ  ಪ್ರಾಕಾರದಲ್ಲಿ ಅವನನ್ನ ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಜೆಕರಿಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, "ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ" ಎಂದನು. ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿ ಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.     

ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು ಬಿಟ್ಟಿದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ  ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು. ಕಠಿಣವಾಗಿ ಗಾಯಗೊಂಡದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದವನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದ ನಗರದೊಳಗೆ ಸಮಾಧಿ ಮಾಡಿದರು; ಆದರೆ ರಾಜ ಸ್ಮಶಾನದಲ್ಲಿ ಮಾಡಲಿಲ್ಲ. 

ಕೀರ್ತನೆ 89:4-5, 29-30, 31-32, 33-34 
ಶ್ಲೋಕ : ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ. 

ಶುಭಸಂದೇಶ: ಮತ್ತಾಯ 6:24-34 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆ ಮಾಡಲು ನಿಮ್ಮಿಂದಾಗದು."  "ನಾನು ಹೇಳುವುದನ್ನು ಕೇಳಿ; "ಪ್ರಾಣದಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು" ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದಲ್ಲವೇ? ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನು ಗಮನಿಸಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೇ? ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ , ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಲ್ಪ ವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆ ಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ  ಎಂದು ಸ್ವರ್ಗದಲ್ಲಿವ ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು. ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು."

26.06.2026 - ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು.

  ಮೊದಲನೇ ವಾಚನ: 2 ಅರಸುಗಳು 25:1-12 ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನ...