25.08.2026 - ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯ ನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ

 ಮೊದಲನೇ ವಾಚನ: 2 ಥೆಸಲೋನಿಯರಿಗೆ 2:1-3, 14-16


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ: ಪ್ರಭುವಿನ ದಿನವು ಬಂದೇ ಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ. ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪ ಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು. ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.  ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.  ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.

ಕೀರ್ತನೆ: 96:10, 11-12, 13

ಶ್ಲೋಕ: ಪ್ರಭು ಧರಗೆ ನ್ಯಾಯತೀರಿಸಲು ಬಂದೇಬರುವನು ಖರೆಯಾಗಿ

1.  ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ಕದಲದ ಸ್ಥಿರತೆಯನು ಇತ್ತಿಹನು ಧರೆಗೆ|
ನ್ಯಾಯವಾದ ತೀರ್ಪು ಕೊಡುವನು  ಜನಾಂಗಕೆ||
ಶ್ಲೋಕ

2.  ಹರ್ಷಿಸಲಿ  ಆಕಾಶವು, ಸಂತೋಷಿಸಲಿ ಭೂಲೋಕವು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ  ಕಾಡಿನ ಫಲವೃಕ್ಷಗಳು||
ಶ್ಲೋಕ

3.  ಪ್ರಭು ಧರೆಗೆ ನ್ಯಾಯತೀರಿಸಲು ಬಂದೇಬರುವನು ಖಂಡಿತವಾಗಿ|
ಜಗಕು, ಜನತೆಗು ತೀರ್ಪಿಡುವನು ನೀತಿ ನಿಯಮಾನುಸಾರವಾಗಿ||
ಶ್ಲೋಕ

🌻✝️🌻

ಘೋಷಣೆ
(ಕೀರ್ತನೆ 119: 27)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ನಿಯಮಗಳ  ಪಥವನೆನಗೆ  ತಿಳಿಯಪಡಿಸಯ್ಯಾ | ನಿನ್ನ  ಅದ್ಭುತ  ಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 23:23-26


ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನಸಮೂಹವನ್ನೂ ಉದ್ದೇಶಿಸಿ, "ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.  ಅಂಧ ನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.  ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರ ಭಾಗಗಳನ್ನೇನೋ ಶುಚಿ ಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿ ಹೋಗಿದೆ.  ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರ ಭಾಗವೂ ಶುಚಿಯಾಗುವುದು." ಎಂದರು.

24.08.2026 - ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ

  ಮೊದಲನೇ ವಾಚನ: ಪ್ರಕಟನೆ 21:9-14



ದೇವದೂತರುಗಳಲ್ಲಿ  ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.  ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;  ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.  ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.  ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.  ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.

ಕೀರ್ತನೆ: 145:10-11, 12-13, 17-18

ಶ್ಲೋಕ: ಪ್ರಭೂ, ಭಕ್ತಸಮೂಹವು ಪ್ರಸಿದ್ಧಪಡಿಸುವುದು ನಿನ್ನ ರಾಜ್ಯದ ಮಹತ್ವವನು

ಶುಭಸಂದೇಶ: ಯೊವಾನ್ನ 1:45-51


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.  ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.  ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.  ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.  ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.  ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು. ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

23.08.2026 - ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು

 ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 22:15, 19-23


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು : ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು. “ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.  ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.  ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.  ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು."

ಕೀರ್ತನೆ: 138:1-2, 2-3, 6, 8

ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು

1.  ಹೃದಯಪೂರ್ವಕ ವಂದನೆ ಪ್ರಭೂ, ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|

2.  ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||
ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು|
ಅಧಿಕಮಾಡಿದೆ ನೀನು ನನ್ಮಾತ್ಮ ಶಕ್ತಿಯನು||
ಶ್ಲೋಕ

3.  ಉನ್ನತವಾದರೂ ಗಮನಿಸುವನು ಪ್ರಭು ದೀನರನು|
ದೂರದಿಂದಲೇ ಗುರುತಿಸುವಾತನು ಗರ್ವಿಷ್ಠರನು||
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು|
ಮರೆತುಬಿಡಬೇಡ ನಿನ್ನಯ ಕೈ ಕೃತಿಯನು||

ಎರಡನೇ ವಾಚನ: ರೋಮನರಿಗೆ 11:33-36

ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ! “ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು? ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?” ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಶುಭಸಂದೇಶ: ಮತ್ತಾಯ 16:13-20


ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.  ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.  ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.  ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.  ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.  ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.  ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”  ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.

21.08.2026 - ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 37:1-14



ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು. 2ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ: ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ. ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.” ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು. ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ. ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು. ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು. ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ. ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು. ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು. ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಕೀರ್ತನೆ: 107:2-3, 4-5, 6-7, 8-9

ಶ್ಲೋಕ: ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು

ಶುಭಸಂದೇಶ: ಮತ್ತಾಯ 22:34-40


ಯೇಸುಸ್ವಾಮಿ ಸದ್ದುಕಾಯರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು: “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?” ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’ ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ. ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’ ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

20.08.2026 - ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 36:23-28


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.  ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು. ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.  ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.  ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.  ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.

ಕೀರ್ತನೆ: 51:12-13, 14-15, 18-19

ಶ್ಲೋಕ: ಹಿಸ್ಸೋಪಿನಿಂದ ನೀ ಚಿಮುಕಿಸೆ ನಾ ಶುದ್ಧನಾಗುವೆ

ಜೀವೋದ್ಧಾರವನು  ಮರಳಿ  ಸವಿಯುವಂತೆ  ಮಾಡು|
ವಿಧೇಯನಾಗಿ  ನಡೆವ  ಸಿದ್ಧ  ಮನಸ್ಸನು  ನೀಡು||
ಬೋಧಿಸುವೆನಾಗ  ನಿನ್ನ  ಮಾರ್ಗವನು  ದುರುಳರಿಗೆ|
ತಿರುಗಿಕೊಳ್ವರಾಗ  ದ್ರೋಹಿಗಳು  ನಿನ್ನ  ಕಡೆಗೆ||

ತಪ್ಪಿಸೆನ್ನನು  ಸ್ವಾಮಿದೇವಾ,  ರಕ್ತಾಪರಾಧದಿಂದ|
ನಿನ್ನ  ಸತ್ಯಸಂಧತೆಯನು  ಸಾರುವೆ  ಮುಕ್ತಕಂಠದಿಂದ||
ತೆರೆವಂತೆ  ಮಾಡು  ಪ್ರಭೂ, ನನ್ನ  ತುಟಿಗಳನು|
ಸಾರುವುದೆನ್ನ  ಬಾಯಿ  ನಿನ್ನ  ನುಡಿಗಳನು||

ಬಲಿಯರ್ಪಣೆಯಲಿ  ನಿನಗೊಲವಿಲ್ಲ|
ದಹನಬಲಿಯಿತ್ತರೂ  ನಿನಗೆ  ಬೇಕಿಲ್ಲ||
ಮುರಿದ  ಮನವೇ  ದೇವನೊಲಿವ  ಯಜ್ಞವು|
ನೊಂದ  ಬೆಂದ  ಮನವನಾತ  ಒಲ್ಲೆಯೆನನು||

ಘೋಷಣೆ                     
ಕೀರ್ತನೆ  27:11

ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ  ಪ್ರಭೂ,  ನಿನ್ನ  ಮಾರ್ಗವನು,  ಶತ್ರುರಹಿತ  ಹಾದಿಯಲಿ  ನಡೆಸು  ಎನ್ನನು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 22:1-14


ಯೇಸುಸ್ವಾಮಿ ಯಾಜಕರು ಫರಿಸಾಯರನ್ನುದ್ದೇಶಿಸಿ ಈ  ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ; ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ. ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ. ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ. ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ. ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು. ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ. ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು. ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ. ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು. “ಆಮೇಲೆ ರಾಜನು ಅತಿಥಿಗಳನ್ನು ನೋಡಲು ಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ. ‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ. ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ. “ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.

19.08.2026 - ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿ ತೋಟವಿತ್ತು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 34:1-11


ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು. “ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ? ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ. ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ. ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು; 6ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ. “ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ. ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;  ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು. “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು. 

ಕೀರ್ತನೆ: 123:1-3, 3-4, 5, 6

ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ನನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?

1.  ಪ್ರಭು ಕುರಿಗಾಹಿಯಾಗಿರಲು ನನಗೆ|
ಕುಂದುಕೊರತೆಗಳೆಲ್ಲಿಯವು  ಎನಗೆ?||
ಹಸಿರುಗಾವಲುಗಳಲೆನ್ನ   ತಂಗಿಸುವನು|
ತಿಳಿಕೊಳಗಳ  ಬಳಿಗೆನ್ನ   ಕರೆದೊಯ್ಯುವನು|
ಪುನಶ್ಚೇತನಗೊಳಿಸುವನು  ನನ್ನ  ಪ್ರಾಣವನಾತ||
ಶ್ಲೋಕ

2.  ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ|
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲೂ ಅಂಜೆನು ಕೇಡಿಗೆ||
ನಿನ್ನ ಕುರಿಗೋಲು, ಊರುಗೋಲು, ಧ್ಯೆರ್ಯವನು ತರುವುದೆನಗೆ|
ಕಾಣೆನೆಂದಿಗೂ  ನಾ  ದಿಗಿಲನು,  ನೀನಿರಲು  ನನ್ನೊಂದಿಗೆ||
ಶ್ಲೋಕ

3.  ಸಜ್ಜುಗೊಳಿಸುವೆ  ನೀ  ಶತ್ರುಗಳ  ಕಣ್ಣುಂದೆಯೇ ನನಗೌತಣವನು|
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು||
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ|
ದೇವ ಮಂದಿರದಲಿ ನಾ ವಾಸಿಸುವೆ  ಚಿರಕಾಲವೆಲ್ಲ||
ಶ್ಲೋಕ

ಘೋಷಣೆ
(ಕೀರ್ತನೆ 25: 4-5)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ಸನ್ಮಾರ್ಗದಲಿ  ದೇವಾ,  ಎನ್ನ  ಮುನ್ನಡೆಸು ||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 20:1-16


ಯೇಸು ತಮ್ಮ ಶಿಷ್ಯರಿಗೆ ಈ ಸಾಮತಿ ಹೇಳಿದರು, “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.  ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು. 5ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.  ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.  ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.  ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.  ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?  ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.  ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.  ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.

18.08.2026 - ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ

ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 28:1-10

ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಆಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ. ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ! ನಿನ್ನ ಜ್ಞಾನ ವಿವೇಕಿಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿ ಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ. ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ-ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ. ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸು ಮಾಡುವರು. ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು. ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ! ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”

ಕೀರ್ತನೆ: 32:26-27, 28, 30, 35-36

ಶ್ಲೋಕ: ಬದುಕಿಸುವವನು, ಕೊಲ್ಲುವವನು ನಾನೇ

ಶುಭಸಂದೇಶ: ಮತ್ತಾಯ 19:23-30


ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ. ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು. ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು. ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು. ಪರಿತ್ಯಾಗಕ್ಕೆ ನೂರ್ಮಡಿ ಪ್ರತಿಫಲ ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನು.  ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ. ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆ ತಾಯಿಯರನ್ನಾಗಲಿ, ಮಕ್ಕಳು ಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು. ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.

25.08.2026 - ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯ ನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ

  ಮೊದಲನೇ ವಾಚನ: 2 ಥೆಸಲೋನಿಯರಿಗೆ 2:1-3, 14-16 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು...