05.02.2026 - ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ

 ಮೊದಲನೆಯ ವಾಚನ: ಅರಸುಗಳ ಮೊದಲನೆಯ ಗ್ರಂಥದಿಂದ ವಾಚನ 2:1-4,10-12



ದಾವೀದನ ಮರಣ ಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು: ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು. ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರು ಕೃತಾರ್ಥನಾಗುವೆ. ಇದಲ್ಲದೆ ಸರ್ವೇಶ್ವರ, ನಿನ್ನ ಸಂತಾನದವರು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,' ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು. ಅನಂತರ ದಾವೀದನು ಮರಣ ಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ದಾವೀದನು ಇಸ್ರಯೇಲರನ್ನು ಆಳಿದ್ದು ನಲ್ವತ್ತು ವರ್ಷ: ಹೆಬ್ರೋನಿನಲ್ಲಿ ಏಳು ವರ್ಷ, ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು. ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.


ಕೀರ್ತನೆ: 1 ಪೂರ್ವಕಾಲದ ವೃತ್ತಾಂತ 29:11-12,
ಶ್ಲೋಕ: ಸರ್ವಾಧಿಕಾರ ಬಲಪರಾಕ್ರಮ ಇರುವುದು ಪ್ರಭು ನಿಮ್ಮ ಕೈಯಲ್ಲೇ.

ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ|
ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ||
ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ,ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ|
ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ||

ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ|
ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ||
ಆಸ್ತಿ-ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ|
ಸರ್ವಾಧಿಕಾರ ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ|
ಪಟ್ಟ ಪದವಿಗೆಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ||

ಶುಭಸಂದೇಶ: ಮಾರ್ಕ 6: 7-13


ಆ ಕಾಲದಲ್ಲಿ ಯೇಸು ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು. ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು. ಕಳುಹಿಸುವಾಗ, ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ. ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ, ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು, ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿ, ಎಂದು ಅಪ್ಪಣೆ ಮಾಡಿದರು. ಇದಲ್ಲದೆ, ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ. ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟು ಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ, ಎಂದರು. ಶಿಷ್ಯರು ಹೊರಟು ಹೋಗಿ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಎಂದು ಜನರಿಗೆ ಸಾರಿ ಹೇಳಿದರು. ದೆವ್ವಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲ ಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.

04.02.2026 - ಆ ಜನರ ಅವಿಶ್ವಾವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು

 ಮೊದಲನೆಯ ವಾಚನ: 2 ಸಮುವೇಲ 24:2,9-17



ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, " ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷಬದವರೆಗೆ ಸಂಚರಿಸಿ ಇಸ್ರಾಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ, " ಎಂದು ಆಜ್ಞಾಪಿಸಿದನು. ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ದಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು. ಜನರ ಎಣಿಕೆ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, " ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ, " ಎಂದು ಪ್ರಾರ್ಥಿಸಿದನು. ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು, "ನೀನು ದಾವೀದನ ಹತ್ತಿರ ಹೋಗಿ ಅವನಿಗೆ, 'ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಿಕೋ ಅದನ್ನು ಆರಿಸಿಕೋ, 'ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು, " ಎಂದು ಆಜ್ಞಾಪಿಸಿದರು. ಆಗ ಗಾದನು ದಾವೀದನ ಬಳಿಗೆ ಬಂದು, "ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ನಾಡಿನಲ್ಲಿ ಮೂರುದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು, " ಎಂದನು. ಅದಕ್ಕೆ ದಾವೀದನು, " ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ, "ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು. ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು. ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, " ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ, ," ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, "ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ, "ಎಂದು ಬೇಡಿಕೊಂಡನು.

ಕೀರ್ತನೆ: 32:1-2,5,6-7
ಶ್ಲೋಕ: ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ |

ಯಾರ ಪಾಪ ಪರಿಹಾರವಾಗಿದೆಯೋ|
ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು||
ಯಾರಪರಾಧವನು ಪ್ರಭು ಎಣಿಸಿಲ್ಲವೋ|
ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು||

ಆಗ ನಾನು ನಿವೇದಿಸಿದೆ ನಿನಗೆ ನನ್ನ ಪಾಪವನು|
ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು||
ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ ಎಂದೆನು|
ಆಗ ನೀ ಪರಿಹರಿಸಿದೆ ನನ್ನ ಪಾಪ ದೋಷವನು||

ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ|
ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ||
ನೀನೇ ನನಗೆ ಮರೆಯು, ಆಪತ್ತಿನಲಾಸರೆಯು|
ನನ್ನನ್ನು ಆವರಿಸುವ ಉದ್ದಾರಕ ನಾದವು||

ಘೋಷಣೆ ಕೀರ್ತನೆ 110:7,8

ಅಲ್ಲೆಲೂಯ, ಅಲ್ಲೆಲೂಯ!

ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು | ಯುಗಯುಗಾಂತರಕು ದೃಢವಾಗಿರುವುವು, ಸತ್ಯನೀತಿಗಳು ಅವುಗಳಿಗೆ ಅಡಿಪಾಯವು ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 6:1-6


ಆ ಕಾಲದಲ್ಲಿ ಯೇಸು ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್ ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. "ಇದೆಲ್ಲ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ? " ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. ಆಗ ಯೇಸು, " ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು, " ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.


ಮನಸ್ಸಿಗೊಂದಿಷ್ಟು 

'ಹಿತ್ತಲ ಗಿಡ ಮದ್ದಲ್ಲ' ಎನ್ನುವುದು ಕನ್ನಡದ ಜನಪ್ರಿಯ ಗಾದೆ. ನಮ್ಮವರೇ ನಮ್ಮ ಪ್ರತಿಭೆ, ಸಾಮರ್ಥ್ಯವನ್ನು ಗುರುತಿಸದಿದ್ದಾಗ, ಹೊಗಳದಿದ್ದಾಗ ನಾವೂ ಹೀಗೆ ಯೋಚನೆ ಮಾಡುತ್ತೇವೆ. ಕೆಲವೊಮ್ಮೆ ಅದರಲ್ಲಿ ನಮ್ಮ ಸ್ವಾರ್ಥವೂ ಇರುತ್ತದೆ. ಇಂದಿನ  ಶುಭ ಸಂದೇಶದಲ್ಲಿನ ಯೇಸುವಿನ ನೋವು ಸಹಜವಾದದ್ದು. ನಾವು ನಮ್ಮ ನಡುವಿನ ಜನರನ್ನು ಬೇರೆ ಬೇರೆ ಹಿನ್ನೆಲೆಯಿಂದ ನೋಡುತ್ತಾ, ನಿಜವಾದ ಸಾಮರ್ಥ್ಯವನ್ನು ನೋಡಲು ಮರೆಯುತ್ತೇವೆ. ಯೇಸುವಿಗೆ ಸ್ವಂತ ಊರಿನಲ್ಲಿ ಆದದ್ದು ಇದೇ. ಬೇರೆ ಬೇರೆ ಪ್ರದೇಶದ ಜನರು ಯೇಸುವಿನ ಮಹಿಮೆಯ ಪ್ರಯೋಜನ ಪಡೆಯುತ್ತಿದ್ದಾಗ, ಸ್ವಂತ ಊರಿನ ಜನರು ಹೆಚ್ಚಿನದನ್ನು ಮಾಡಿಸಿಕೊಳ್ಳಲು ಆಗದೆ ಇರಲು ಕಾರಣ ಅವರ ತಾತ್ಸಾರ ಮನೋಭಾವ. 
 
ಮತ್ತೊಂದು ವಿಷಯ, ಮರಿಯಮ್ಮನವರು ಕನ್ಯೆಯಾಗಿ ಉಳಿಯಲಿಲ್ಲ, ಬೇರೆ ಮಕ್ಕಳಿದ್ದರು ಎಂದು ವಾದಿಸಲು ಕೆಲವು ಪಂಗಡಗಳು ಇಂದಿನ ಶುಭ ಸಂದೇಶವನ್ನು ಉಲ್ಲೇಖಿಸುತ್ತಾರೆ. ಅಂದಿನ ಕಾಲದಲ್ಲಿ 'ಕಸಿನ್ಸ್' ಅಥವಾ ಸೋದರ ಸಂಬಂಧಿಗಳನ್ನು 'ಸೋದರರು' 'ಸೋದರಿಯರು' ಎಂದು ಕರೆಯುವುದು ವಾಡಿಕೆಯಾಗಿತ್ತು.ಇಂದಿಗೂ ಅನೇಕ ಸಂಸ್ಕೃತಿಗಳಲ್ಲಿ ಅದು ಮುಂದುವರಿದಿದೆ. ಆದ್ದರಿಂದ ಇಂದಿನ ಶುಭ ಸಂದೇಶದಲ್ಲಿ ಉಲ್ಲೇಖವಾದವರು ಒಡ ಹುಟ್ಟಿದವರಲ್ಲ. ಇದೇ ನಮ್ಮ ಕಥೋಲಿಕ ಧರ್ಮಸಭೆಯ ನಂಬಿಕೆ ಹಾಗೂ ವಾಸ್ತವ ಕೂಡ. 

03.02.2026 - ತಲಿಥಾಕೂಮ್

ಮೊದಲನೇ ವಾಚನ: 2 ಸಮುವೇಲ 18:9-10, 14, 24-25, 30-19:3




ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್‍ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು. ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್‍ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು. ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ದಾವೀದನು ಎರಡು ಬಾಗಿಲುಗಳ ಮಧ್ಯೆ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ವ್ಯಕ್ತಿಯನ್ನು ಕಂಡನು. ಅವನು ಕೂಡಲೆ ದಾವೀದನಿಗೆ ತಿಳಿಸಿದನು. ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು,” ಎಂದನು. ಆ ವ್ಯಕ್ತಿ ಬರಬರುತ್ತಾ ಸಮೀಪವಾದನು. ಆಗ ಅರಸನು, “ನೀನು ಇತ್ತ ನಿಲ್ಲು,” ಎಂದು ಆಜ್ಞಾಪಿಸಿದನು; ಅವನು ಅಂತೆಯೇ ನಿಂತನು. ಅಷ್ಟರಲ್ಲಿ ಆ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು. ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?” ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು. ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು. ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು. ಅರಸನು ಮಗನಿಗಾಗಿ ಪ್ರಲಾಪಿಸುತ್ತಿದ್ದಾನೆಂಬುದು ಎಲ್ಲ ಜನರಿಗೂ ಗೊತ್ತಾಗಿ ಅವರ ಜಯಘೋಷ ಗೋಳಾಟವಾಗಿ ಮಾರ್ಪಟ್ಟಿತು. ಜನರು ಆ ದಿನದ ಯುದ್ಧದಲ್ಲಿ ಸೋತು ಓಡಿಬಂದಿರುವವರೋ ಎಂಬಂತೆ, ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು.


ಕೀರ್ತನೆ: 86:1-2, 3-4, 5-6

ಶ್ಲೋಕ:  ಹೇ ಪ್ರಭೂ, ನೀಡೆನಗೆ ಸದುತ್ತರವನು."

1.  ಹೇ ಪ್ರಭೂ, ನೀಡೆನಗೆ ಸದುತ್ತರವನು|
ಕಿವಿಗೊಡು, ದೀನನು, ದಲಿತನು ನಾನು||
ಕಾಪಾಡು ಪ್ರಭೂ, ನಾ ನಿನ್ನ ಭಕ್ತನು|
ಉದ್ಧರಿಸು, ನಿನ್ನ ನಂಬಿದ ದಾಸನನು||
ಶ್ಲೋಕ

2.  ನೀನೆನಗೆ ದೇವನು, ಕರುಣಿಸೆನ್ನನು|
ದಿನವೆಲ್ಲ ಪ್ರಭೂ ನಿನಗೆ ಮೊರೆಯಿಡುವೆನು||
ನಿನ್ನ ದಾಸನಿಗೆ ನೀಡು ಮನದಾನಂದವನು|
ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು||
ಶ್ಲೋಕ

3.  ಪ್ರಭೂ, ನೀನು ದಯಾವಂತನೂ ಕ್ಷಮಿಸುವವನೂ|
ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು||
ಕಿವಿಗೊಡು ಪ್ರಭೂ, ನನ್ನ ಪ್ರಾರ್ಥನೆಗೆ|
ನನ್ನ ವಿಜ್ಞಾಪನೆಗಳ ಕೋರಿಕೆಗೆ||
ಶ್ಲೋಕ

🌻✝️🌻

ಘೋಷಣೆ
ಕೀರ್ತನೆ 27:11

ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 5:21-43


ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು. ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ. ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು. ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು. ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು. ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯ ಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು. “ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು. ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು. ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು. ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು?’ ಎಂದು ಕೇಳುತ್ತೀರಲ್ಲಾ” ಎಂದರು. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು. ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು. ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು. ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯಿರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು. ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯಿರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು. ಅನಂತರ ಪೇತ್ರ, ಯಕೋಬ ಹಾಗೂ ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯಿರನ ಮನೆಯನ್ನು ತಲುಪಿದರು. ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು. ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು. ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್” ಎಂದರು. (‘ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ) ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯ ಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು. ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.

02.02.2026 - ನಿನ್ನ ಮಾತು ಸರ್ವೇಶ್ವರ, ನೆರವೇರಿತಿಂದು

 ಮೊದಲನೆಯ ವಾಚನ - ಮಲಾಕಿ 3: 1-4


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.” “ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು? ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನು ಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು. ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”
ಪ್ರಭುವಿನ ವಾಕ್ಯ

ಕೀರ್ತನೆ: 24: 7-10
ಶ್ಲೋಕ: ಯಾರಿವನು ಮಹಿಮಾವಂತ ರಾಜಾಧಿರಾಜನು? ಇವನೇ ಪ್ರಭು.

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II

ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I
ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II

ಯಾರಿವನು ಮಹಿಮಾವಂತ ರಾಜಾಧಿರಾಜನು? I
ಇವನೇ ಸೇನಾಧೀಶ್ವರನು, ಮಹಿಮಾರಾಜನು II

ಎರಡನೆಯ ವಾಚನ - ಹಿಬ್ರಿಯರಿಗೆ 2: 14-18

ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.
ಪ್ರಭುವಿನ ವಾಕ್ಯ

ಶುಭಸಂದೇಶ - ಲೂಕ 2: 22-40 


ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮ ಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:
“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು
ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.
ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ
ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.
ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ
ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”
ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು. ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,” ಎಂದು ಹೇಳಿದನು. ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು. ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.

ಪ್ರಭುವಿನ ಶುಭಸಂದೇಶ

01.02.2026 - ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು


 ಮೊದಲನೆಯ ವಾಚನ:  ಜೆಫನ್ಯನ 2:3, 3:12-13


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ. ದೀನರೂ ನಮ್ರರೂ ಆದ ಜನರನ್ನು ನಿಮ್ಮಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿ ಹೊಂದಿದವರು. ಇಸ್ರಾಯೇಲಿನಲ್ಲಿ ಅಳಿದುಳಿದವರು ಅನ್ಯಾಯ ಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು, ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.


ಕೀರ್ತನೆ: 146:6-10 ಮತ್ತಾಯ 5:3
ಶ್ಲೋಕ: ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.

ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ|
ದೊರಕಿಸುವನು ನ್ಯಾಯ ಬಡಬಗ್ಗರಿಗೆ||
ಒದಗಿಸುವನು ಆಹಾರ ಹಸಿದವರಿಗೆ|
ನೀಡುವನು ಬಿಡುಗಡೆ ಬಂಧಿತರಿಗೆ||

ಕಣ್ಣನ್ನೀಯುವನು ಪ್ರಭು ಕುರುಡರಿಗೆ|
ಉದ್ಧಾರಕನಾ ಪ್ರಭು ಕುಗ್ಗಿದವರಿಗೆ||
ರಕ್ಷಿಸುವನು ಪ್ರಭು ಪರದೇಶಿಗಳನು|
ಆದರಿಸುವನು ಅನಾಥರನು, ವಿಧವೆಯರನು||

ಆತನ ಒಲವಿರುವುದು ಸಾಧುಸಜ್ಜನರಿಗೆ|
ನಿರ್ಮೂಲಮಾಡುವನು ದುರ್ಜನರ ಮಾರ್ಗವನು||
ಪ್ರಭುವೇ ಆರಸನು ಸದಾಕಾಲಕು|
ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು||

ಎರಡನೆಯ ವಾಚನ: 1 ಕೊರಿಂಥಿಯರಿಗೆ  1:26-31



ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ, ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ. ಜ್ಞಾನಿಗಳನ್ನು ನಾಚಿಕೆಗೀಡು ಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮುರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು. ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು. ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ. ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ' ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ '.

ಘೋಷಣೆ ಯೊವಾನ್ನ 1:12
ಅಲ್ಲೆಲೂಯ, ಅಲ್ಲೆಲೂಯ!
ಆ ದಿವ್ಯವಾಣಿ ಮನುಷ್ಯ ಆದರು; ಅವರಲ್ಲಿ ವಿಶ್ವಾಸ ಇಟ್ಟವರಿಗೆ ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು,,
ಅಲ್ಲೆಲೂಯ!

ಶುಭಸಂದೇಶ ವಾಚನ: ಮತ್ತಾಯ 5:1-12


ಆ ಕಾಲದಲ್ಲಿ ಜನರ ದೊಡ್ಡ ಗುಂಪನ್ನು ಕಂಡು ಯೇಸು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು. " ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು."

31.01.2026 - ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?

 ಮೊದಲನೇಯ ವಾಚನ : 2 ಸಮುವೇಲ 12:1-7, 10-17


ಸರ್ವೇಶ್ವರ ಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು "ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ. ಐಶ್ವರ್ಯವಂತನಿಗೆ ಬಹಳ ಕುರಿ ದನಗಳಿದ್ದವು. ಬಡವನಿಗೆ ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡುತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೂ ಮಗುವಿನಂತೆ ಬೆಳೆಯುತ್ತಿತ್ತು. ಅವರೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲಿ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆ ಒರಗಿಕೊಂಡು ನಿದ್ರೆ ಮಾಡುತ್ತಿತ್ತು. ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿ ದನಗಳಿಂದ ಏನನ್ನೂ ಕೊಲ್ಲಲು ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನು ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ”. ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡು ಕೋಪಗೊಂಡು ನಾತಾನನಿಗೆ “ಸರ್ವೇಶ್ವರನಾಣೆ ಆ ವ್ಯಕ್ತಿ ಸಾಯಲೇಬೇಕು, ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು” ಎಂದನು.
ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ’ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನೂ ನಾನು: ಸೌಲನಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ. ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯರನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು, ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಮತ್ತೊಬ್ಬನಿಗೆ ಕೊಡುವೆನು. ಅವನು ಹಗಲಲ್ಲೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದೆ, ನಾನು ಹೇಳುವ ಮಾತಾದರೂ ಇಸ್ರಯೇಲರ ಮುಂದೆ ಬಹಿರಂಗವಾಗಿ ನೆರವೇರುವುದು,” ಎಂದು ಹೇಳಿದನು. ಆಗ ದಾವೀದನು ನಾತಾನನಿಗೆ “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪ ಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ, ಆದರೂ ನೀನು ಈ ಕೃತ್ಯದಿಂದ ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತು ಹೋಗುವುದು,” ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದ ಬಹು ಅಸ್ವಸ್ಥವಾಗಿತ್ತು. ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ. ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.

ಕೀರ್ತನೆ : 51:12-13,14-15,16-17
ಶ್ಲೋಕ : ಶುದ್ಧ ಹೃದಯವನ್ನು ದೇವಾ, ನಿರ್ಮಿಸು

ಶುಭಸಂದೇಶ : ಮಾರ್ಕ - 4:35-41


 ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ “ಸರೋವರದ ಆಚೆ ದಡಕ್ಕೆ ಹೋಗೋಣ” ಎಂದರು. ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. ಆ ದೋಣಿಯ  ಸಂಗಡ ಬೇರೆ ದೋಣಿಗಳೂ ಇದ್ದವುಸ್ವಲ್ಪ ಮುಂದೆ ಹೋಗುವಷ್ಟರಲ್ಲಿ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿ ಹೋಗುವುದರಲ್ಲಿತ್ತು. ಯೇಸುವಾದರೋ  ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ’ ಗುರುವೇನಾವು ಸಾಯುತ್ತಿದ್ದೇವೆತಮಗೆ ಚಿಂತೆ ಇಲ್ಲವೇ?” ಎಂದರು. ಆಗ ಯೇಸು ಎಚ್ಚೆತ್ತುಬಿರುಗಾಳಿಯನ್ನು ಗದರಿಸಿದರುಸರೋವರಕ್ಕೆ  ಶಾಂತವಾಗಿರುಮೊರೆಯಬೇಡ,” ಎಂದು ಆಜ್ಞಾಪಿಸಿದರುತಕ್ಷಣ ಬಿರುಗಾಳಿ ನಿಂತಿತುವಾತಾವರಣ ಶಾಂತವಾಯಿತುಅನಂತರ ತಮ್ಮ ಶಿಷ್ಯರಿಗೆ  ಏಕೆ ಇಷ್ಟು ಭಯಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರುಶಿಷ್ಯರಾದರೋ ಭಯಭ್ರಾಂತರಾಗಿ ಗಾಳಿಯೂ ಸರೋವರವೂ ಇವರು ಹೇಳಿದಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

30.01.2026 - ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ ಕಾಳಿಗೂ ಅದನ್ನು ಹೋಲಿಸಬಹುದು

 ಮೊದಲನೇಯ ವಾಚನ : 2 ಸಮುವೇಲ 11:1-4, 5-10, 13-17


ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗೂ ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳು ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಸುಂದರಿಯಾದ ಒಬ್ಬ ಸ್ತ್ರೀ ಸ್ನಾನ ಮಾಡುವುದನ್ನು ಕಂಡನು. ಕೂಡಲೇ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು ಆಕೆ “ ಎಲೀಯಾಮನ ಮಗಳೂ ಹಿತ್ತಿಯನಾದ ಉರೀಯನ ಹೆಂಡತಿಯು ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು. ಆಕೆ ಆಗತಾನೆ ಋತು ಸ್ನಾನ ಮಾಡಿ ಕೊಂಡಿದ್ದಳು. ಆಕೆಯನ್ನು ಕರೆದು ತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಆನಂತರ ಆಕೆ ತನ್ನ ಮನೆಗೆ ಹೋದಳು. ಮುಂದೆ ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು. ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ “ ಹಿತ್ತೀಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು. ಊರೀಯನು ಬಂದಾಗ ’ಯೋವಾಬನು, ಸೈನ್ಯದವರು ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ” ಎಂದು ವಿಚಾರಿಸಿದನು. ಅನಂತರ ಅವನಿಗೆ “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೇ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಆದರೆ ಊರೀಯನು ಮನೆಗೆ ಹೋಗದೆ ಅರಸರ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು. ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘ ಪ್ರಯಾಣ ಮಾಡಿ ಬಂದಿರುವೆಯಲ್ಲ , ಏಕೆ ಮನೆಗೆ ಹೋಗಲಿಲ್ಲ”? ಎಂದನು. ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೆ ಹೊರತು ತನ್ನ ಮನೆಗೆ ಹೋಗಲಿಲ್ಲ. ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರ ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟೂ ಕಳುಹಿಸಿದನು. ಅದರಲ್ಲಿ ಹೀಗೆ ಬರೆಯಲಾಗಿತ್ತು “ ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿ.” ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರು ಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತು ಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು. ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.

ಕೀರ್ತನೆ
50:1-5,8-9, v.1

ಶ್ಲೋಕ:  ಕೃಪಾಳು ದೇವಾ, ಕರುಣಿಸೆನ್ನನು.

1.  ಕೃಪಾಳು ದೇವಾ ಕರುಣಿಸೆನ್ನನು|
ಕರುಣಾನಿಧಿ ಅಳಿಸೆನ್ನ ದೋಷವನು||
ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು|
ದೋಷಪರಿಹರಿಸಿ ಶುದ್ಧಗೊಳಿಸೆನ್ನನು||
ಶ್ಲೋಕ

2.  ಒಪ್ಪಿಕೊಂಡೆನಿದೋ ನಾನೇ ಅಪರಾಧಿ|
ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ||
ಹೌದು ದೇವಾ, ನಿನಗೆ ದ್ರೋಹವೆಸಗಿದೆ|
ನಿನ್ನ ಕಣ್ಗೆ ಕೆಟ್ಟದುದನೇ ಮಾಡಿದೆ||
ಶ್ಲೋಕ

3.  ನಿನ್ನ ನಿರ್ಣಯವು ನ್ಯಾಯಯುತ|
ನೀ ನೀಡುವ ತೀರ್ಪು ನಿರ್ಲಿಪ್ತ||
ನಾ ಜನಿಸಿದೆ ಪಾಪದಲ್ಲೇ|
ದ್ರೋಹಿ ನಾ ಮಾತೃ ಗರ್ಭದಿಂದಲೇ||
ಶ್ಲೋಕ

4.  ಹರ್ಷಾನಂದವನು ಮೊಳಗಿಸೆನ್ನೊಳು|
ಪುಳಕಗೊಳ್ಳುವುವು ನೀ ಮುರಿದೆಲುಬುಗಳು||
ನನ್ನ ಪಾಪದೋಷಕೆ ವಿಮುಖನಾಗು|
ಸರ್ವ ದ್ರೋಹಗಳನು ಅಳಿಸಿಹಾಕು||
ಶ್ಲೋಕ

ಘೋಷಣೆ
2 ತಿಮೊತಿ 1:10

ಅಲ್ಲೆಲೂಯ, ಅಲ್ಲೆಲೂಯ!
ನಮ್ಮ ಉದ್ಧಾರಕ ಕ್ರಿಸ್ತಯೇಸು ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ | ಅಮರ ಜೀವವನ್ನು ಶುಭಸಂದೇಸದ ಮೂಲಕ ಬೆಳಕಿಗೆ ತಂದರು ||
ಅಲ್ಲೆಲೂಯ!


ಶುಭಸಂದೇಶ : ಮಾರ್ಕ 4:26-34


ಯೇಸು ಸ್ವಾಮಿ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ ಕಾಳಿಗೂ ಅದನ್ನು ಹೋಲಿಸಬಹುದು. ಸಾಸಿವೆ ಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸಿಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರಂಬೆಗಳನ್ನು ಅದು ತಳೆಯುತ್ತದೆ,” ಎಂದರು. ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. ಅದರೆ ತಮ್ಮ ಆಪ್ತ ಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.

05.02.2026 - ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ

  ಮೊದಲನೆಯ ವಾಚನ: ಅರಸುಗಳ ಮೊದಲನೆಯ ಗ್ರಂಥದಿಂದ ವಾಚನ 2:1-4,10-12 ದಾವೀದನ ಮರಣ ಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು: ಜಗದ ಜನರೆಲ...