01.04.2026 “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,”

 


 ಮೊದಲನೇ ವಾಚನ: ಯೆಶಾಯ 50: 4-9

ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು. ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು. ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ. ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ. ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ. ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದು ಹೋಗುವರವರು ಜೀರ್ಣವಾಗಿ.

ಕೀರ್ತನೆ: 69:8-10, 21-22, 31, 33-34
ಶ್ಲೋಕ: ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ, ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ.

ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I
ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II
ನನ್ನವರಿಗೇ ನಾನನ್ಯನಾದೆನಯ್ಯಾ I
ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II

ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I
ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II
ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I
ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I
ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II

ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I
ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II
ಸಂಕೀರ್ತಿಸುವೆನು ದೇವರ ಶ್ರೀನಾಮವನು I
ಕೃತಜ್ಞತೆಯಿಂದಾತನನು ಕೊಂಡಾಡುವೆನು II

ಇದನರಿತು ದೀನದಲಿತರು ಆನಂದಗೊಳ್ಳಲಿ I
ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II
ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I
ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II

ಶುಭಸಂದೇಶ: ಮತ್ತಾಯ 26:14-25


ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯ ಯಾಜಕರ ಬಳಿಗೆ ಹೋದನು. “ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ನಿಗದಿ ಮಾಡಿ ಕೊಟ್ಟರು. ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯುತ್ತಾ ಇದ್ದನು. ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು. ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ, ‘ನನ್ನ ಕಾಲ ಸವಿೂಪಿಸಿತು, ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು. ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕ ಭೋಜನವನ್ನು ತಯಾರಿಸಿದರು. ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು. ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು. ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾವಿೂ, ನಾನೋ? ನಾನೋ?” ಎಂದು ಕೇಳತೊಡಗಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ. ನರಪುತ್ರನೇನೋ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು. ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.




ಮನಸ್ಸಿಗೊಂದಿಷ್ಟು :  ಕಾಲು ತೊಳೆದು ದಾಸನ ವಿನಯ ತೋರಿದ ಯೇಸುವನ್ನು ಸಣ್ಣ ಮೊತ್ತಕ್ಕೆ ಜೂದಾಸ ದ್ರೋಹ ಮಾಡುತ್ತಾನೆ. ದೇವರ ಚಿತ್ತಕ್ಕಿಂತ ನಮ್ಮ ಯೋಜನೆಗಳಲ್ಲೇ ನಾವು ಬದುಕಿದರೆ ಜೂದಾಸನಂತೆ ನಿರಾಸರಾಗಬಹುದುಭ್ರಮನಿರಸನಗೊಳ್ಳಬಹುದು ಹಾಗೂ ದೈವ ಯೋಜನೆಗೆ ನಮ್ಮದೇ ಆದ ರೀತಿಯಲ್ಲಿ ದ್ರೋಹ ಬಗೆಯಬಹುದುದೈವ ಚಿತ್ತಕ್ಕೆ ಅನುಗುಣವಾಗಿ ಬಾಳೋಣ. ಇಂದಿನ ಶುಭಸಂದೇಶದಲ್ಲಿ ಶಿಷ್ಯರೆಲ್ಲರೂ ಯೇಸುವನ್ನು ಸ್ವಾಮಿಪ್ರಭು ಎಂದು ಕರೆದರೆ ಜೂದಾಸ ಮಾತ್ರ ಇನ್ನೂ ‘ಗುರುವೇ?’ ಎನ್ನುತ್ತಿದ್ದಾನೆ.

ಪ್ರಶ್ನೆ : ಯೇಸು ನಮಗೆ ಗುರು ಮಾತ್ರವೇ ಅಥವಾ ನಮ್ಮ ಸಕಲವೂ ಆದ ಪ್ರಭು ದೇವರೇ

ಪ್ರಭುವೇ,
ಜೂದಾಸ ದ್ರೋಹವೆಸಗಲು
ಪಡೆದದ್ದು ಮೂವತ್ತು
ಬೆಳ್ಳಿ ನಾಣ್ಯ
ನಾವಾದರೋ ಹೃದಯದೊಳು
ನೀಡಿರುವೆವು ನಿಮಗೆಷ್ಟು
ಮೌಲ್ಯ
ನಮ್ಮೊಳಗಿನ ಜೂದಾಸನ
ಕ್ಷಮಿಸಿರಿ
ನಿಮ್ಮೊಳಗಿನ ಪ್ರೇಮವ
ಕಲಿಸಿರಿ.

31.03.2026 - "ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ"

 


 ಮೊದಲನೇ ವಾಚನ: ಯೆಶಾಯ 49:1-6

ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರಲ್ಲಿದ್ದಾಗಲೇ. ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಿಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ. ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.” ಇಂತೆಂದುಕೊಂಡೆ ನಾನಾಗ: ವ್ಯರ್ಥವಾಯಿತು ನನ್ನ ಸಾಮಥ್ರ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮಥ್ರ್ಯ ಇರುವುದು ಆ ದೇವರಲಿ. ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”

ಕೀರ್ತನೆ: 71:1-2, 3-4, 5-6, 15, 17

ಶ್ಲೋಕ: ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು

ಆಶ್ರಯಕೋರಿ ಹೇ ಪ್ರಭು ನಾ ಬಂದಿರುವೆ |
ಆಶಾ ಭಂಗವಾಗದಿರಲೆಂದು ನಾ ಬೇಡುವೆ ||

ಸತ್ಯ ಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಲಯ್ಯಾ |
ನನಗೆ ಕಿವಿಗೊಟ್ಟು ನನ್ನನುದ್ಧರಿಸಯ್ಯ ||
ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು |
ನೀನೇ ನನ್ನ ದುರ್ಗ ,ಕೋಟೆ ನನ್ನನು ರಕ್ಷಿಸಲು ||

ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯ |
ಕ್ರೂರ ಕೇಡಿಗರ ವಶದಿಂದೆನ್ನನು ತಪ್ಪಿಸಯ್ಯ ||
ಸ್ವಾಮಿ ದೇವಾ, ನೀನೇ ನನ್ನ ಭರವಸೆ |
ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ ||

ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯ ನೀತಿಯನು |
ವಿತರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು ||
ದೇವಾ ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ ?  |

ನಿನ್ನ ಅದ್ಭುತ ಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ ||

ಶುಭಸಂದೇಶ: ಯೊವಾನ್ನ 13:21-33, 36-38


ಯೇಸುಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು. ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು. ಯೇಸುವಿನ ಪಕ್ಕದಲ್ಲೇ ಒರಗಿ ಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ, ಸಿಮೋನ ಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆ ಮಾಡಿದನು. ಅಗ ಆ ಶಿಷ್ಯನು, ಯೇಸುವಿನ ಮಗ್ಗುಲಿಗೆ ಸರಿದು, “ಅಂತವನು ಯಾರು ಪ್ರಭೂ?” ಎಂದು ಕೇಳಿದನು. ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು. ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು. ಆಗ ಯೇಸು, “ನೀನು ಮಾಡಬೇಕೆಂದಿರುವುದನ್ನು ಬೇಗನೆ ಮಾಡಿಮುಗಿಸು,” ಎಂದರು. ಊಟಕ್ಕೆ ಕುಳಿತಿದ್ದ ಶಿಷ್ಯರಿಗೆ, ಯೇಸು ಹಾಗೇಕೆ ಹೇಳಿದರೆಂದು ಅರ್ಥವಾಗಲಿಲ್ಲ. ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,” ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು. ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು. ಹೊಸ ಕಟ್ಟಳೆ ಯೂದನು ಹೊರಟುಹೋದಮೇಲೆ ಯೇಸುಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು. ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು, ತಕ್ಷಣವೇ ಪ್ರಕಟಪಡಿಸುವರು. ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ. ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು ಪೇತ್ರನು, “ಈಗಲೇ ನಿಮ್ಮ ಹಿಂದೆ ಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು. ಆಗ ಯೇಸು, “ನನಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು.

ಮನಸ್ಸಿಗೊಂದಿಷ್ಟು : ತಿಳಿದೂ ತಿಳಿದೂ ಸೈತಾನನ ಆಣತಿಗೆ ಓಗೊಟ್ಟ ಜೂದಾಸ, ಮಾನವ ಸಹಜ ಭಯಕ್ಕೆ ತನ್ನ ಪ್ರೀತಿ ಪಾತ್ರರನ್ನು ಅಲ್ಲಗೆಳೆದ ಪೇತ್ರ. ಎಲ್ಲವೂ ತಿಳಿದಿದ್ದರೂ ಪ್ರೀತಿಯಲ್ಲಿ ವ್ಯತ್ಯಾಸ ಮಾಡದ ಯೇಸು, ಎಲ್ಲರೂ ಇಂದಿನ ಶುಭಸಂದೇಶದಲ್ಲಿದ್ದಾರೆ. ಮಾನವ ಸಹಜ ಭಯ, ಆಸೆ, ದುರಾಸೆಗಳಿಗೆ ನಾವು ಶರಣಾಗುತ್ತೇವೆ, ಸೈತಾನನನ್ನು ನಾವೇ ಆಹ್ವಾನಿಸುತ್ತೇವೆ. ಕೊನೆಗೆ ಯೇಸುವಿನ ಆ ಪ್ರೀತಿಯೇ ನಮ್ಮನು ಪೊರಯಬೇಕು, ಅದನ್ನೇ ನಾವು ನೆಚ್ಚಿಕೊಳ್ಳಬೇಕು.

ಪ್ರಶ್ನೆ : ಯೇಸುವನ್ನು ದಿನಕೆಷ್ಟು ಬಾರಿ ಅಲ್ಲಗಳೆಯುತ್ತೇವೆ.

ಪ್ರಭುವೇ,
ಅರಿಯನೆಂದು 
ಅಲ್ಲಗಳೆದಿರುವೆ 
ನಿನ್ನ ಅನುದಿನ
ಬಗೆದಿರುವೆ ದ್ರೋಹ 
ಹೃದಯದಲ್ಲಿ ನಾ
ಪಶ್ಚಾತ್ತಾಪದಲ್ಲಿ
ಯೂದನಂತಾಗದೆ
ಪೇತ್ರನಂತಾಗಲು
ಆತ್ಮರ ವರವಿರಿಸಿ
ಬಂಡೆಯಲ್ಲದಿದ್ದರೂ
ನಿಮ್ಮ ರಾಜ್ಯದ ಕೋಟೆಯ
ಒಂದು ಸಣ್ಣ ಕಲ್ಲಾಗಿಸಿ

30.03.2026 - ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ

ಮೊದಲನೇ ವಾಚನ: ಯೆಶಾಯ 42:1-7


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು. ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ. ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು. ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ- ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು. ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದು ದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು: ಸರ್ವೇಶ್ವರಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ. ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.

ಕೀರ್ತನೆ: 27:1, 2, 3, 13-14
ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ ಪ್ರಭುವೆ

ನನಗೆ ಬೆಳಕು‌ ನನಗೆ ರಕ್ಷೆ ಪ್ರಭುವೆ |
ನಾನಾರಿಗೂ ಅಳುಕೆನು ||

ನನ್ನ ಬಾಳಿಗಾಧಾರ ಪ್ರಭುವೆ |
ನಾನಾರಿಗೂ ಅಂಜೆನು ||
ಕೇಡು ಮಾಡಬಂದರೆನಗೆ ಕೊಲೆಕಡುಕರು |
ಎಡವಿಬಿದ್ದರು, ತಾವೇ ಅಳಿದುಹೋದರು ||

ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು |
ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು‌ ||

ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು |
ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು ||
ಪ್ರಭುವನು ಎದುರುನೋಡುತ್ತಿರು ಮನವೇ
ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ ||

ಶುಭಸಂದೇಶ: ಯೊವಾನ್ನ 12:1-11



ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸುಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು. ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ. ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು. ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು, “ಈ ಸುಗಂಧ ತೈಲವನ್ನು ಮುನ್ನೂರು ದೆನಾರಿ ನಾಣ್ಯಗಳಿಗೆ ಮಾರಿ, ಬಂದ ಹಣವನ್ನು ಬಡಬಗ್ಗರಿಗೆ ಕೊಡಬಹುದಿತ್ತಲ್ಲಾ?” ಎಂದನು. ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು. ಆಗ ಯೇಸು, “ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ. ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು. ಲಾಸರನ ಕೊಲೆಗೆ ಹಂಚಿಕೆ ಯೇಸುಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು. ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು. ಜೆರುಸಲೇಮಿಗೆ ರಾಜಪ್ರವೇಶ ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು.

ಮನಸ್ಸಿಗೊಂದಿಷ್ಟು : ಸುಮಾರು 300 ದಿನಗಳ ಅಥವಾ 9 ತಿಂಗಳ ದಿನಗೂಲಿಯಷ್ಟು ಭಾರಿ ಬೆಲೆಯ ಸುಗಂಧ ದ್ರವ್ಯವನ್ನು ಮರಿಯಳು ಯೇಸುವಿಗಾಗಿ ವ್ಯಯಿಸುತ್ತಾಳೆ. ಯಹೂದ್ಯ ಸಂಪ್ರದಾಯದಲ್ಲಿ ಒಬ್ಬ ಮಹಿಳೆ ಕೂದಲನ್ನು ಕಟ್ಟದೆ ಬಿಡಬಾರದು ಎಂಬುದನ್ನೂ ಲೆಕ್ಕಿಸದೆ ತನ್ನ ಕೂದಲಿನಿಂದ ಯೇಸುವಿನ ಪಾದವನ್ನು ಒರೆಸಿ ಯೇಸುವಿಗಿಂತ ಶ್ರೇಷ್ಠವಾದುದು ಮತ್ತೇನಿಲ್ಲ ಎಂಬ ಸಂದೇಶವನ್ನು ಲೋಕಕ್ಕೆ ನೀಡುತ್ತಾಳೆ. ಈ ಲೋಕದ ಸರ್ವವೂ ಅದೆಷ್ಟೇ ಮೌಲ್ಯದ್ದಾಗಿದ್ದರೂ, ಸಂಪ್ರದಾಯದ ಹಿನ್ನಲೆಯದ್ದಾಗಿದ್ದರೂ ಯೇಸುವಿನ ಮುಂದೆ ಗೌಣ್ಯವಾಗಬೇಕು ಎಂಬ ಸಂದೇಶ ನಮ್ಮ ಹೃದಯದಲ್ಲಿ ಆ ಸುಗಂಧ ದ್ರವ್ಯದ ಪರಿಮಳದಂತೆ ಹರಡಿ, ವ್ಯಾಪಿಸಿ ಉಳಿದುಕೊಳ್ಳಲಿ.

ಪ್ರಶ್ನೆ : ಯೇಸುವಿಗೆ ನಮ್ಮ ಜೀವನದಲ್ಲಿ ನಾವು ಕೊಟ್ಟಿರುವ ಮೌಲ್ಯವೆಷ್ಟು?

29.03.2026 - ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!

 ಗರಿಗಳ ಭಾನುವಾರ   


ಗರಿಗಳ ಭಾನುವಾರ   
 ಮೊದಲನೇ ವಾಚನ: ಯೆಶಾಯ: 50:4-7

ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು. ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು. ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ. ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.

ಕೀರ್ತನೆ: 22:8-9, 17-18, 19-20, 23-24

ಶ್ಲೋಕ: ದೇವಾ, ಓ ಎನ್ನ ದೇವಾ, ಏಕೆನ್ನ ಕೈ ಬಿಟ್ಟೆ?

ದೇವಾ ಓ ಎನ್ನ ದೇವಾ ಏಕೆನ್ನ ಕೈ ಬಿಟ್ಟೆ ? |
ಕಿವಿಗೊಡದೆ ಏಕೆ ದೂರವಾಗಿ ಬಿಟ್ಟೆ ? ||

ಇತ್ತನಿವನು ಭರವಸೆ , ಪ್ರಭುವೆ ತನ್ನುದ್ಧಾರಕ ನೆಂದು |
ಅತನಿಗಿವನು ಮೆಚ್ಚುಗೆಯಾದರೆ
ರಕ್ಷಿಸಲಿ ಇಂತೆಂದು ||

ಮಾತೆಯುದರದಿಂದ ಎನ್ನನು ಹೊರ ಬರಿಸಿದವನು ನೀನು |
ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಿನಲಿ ಇರಿಸಿದವನು ನೀನು ||

ಎಣಿಸಬಹುದಿದೆ ನನ್ನೆಲುಬುಗಳನ್ನೆಲ್ಲವನು |
ಹಿಗ್ಗುತ್ತಹರು ದುರುಗುಟ್ಟಿ ನೋಡೆನ್ನನು ||
ನನ್ನ ಉಡುಗೆಗಳನ್ನು ಹಂಚಿಕೊಂಡರು |
ನನ್ನ ಅಂಗಿಗೋಸ್ಕರ ಚೀಟು ಹಾಕಿದರು ||

ನನ್ನಿಂದ ದೂರ ಸರಿಯಲು ಬೇಡ, ಪ್ರಭು |
ನೀನೆನ್ನ ಶಕ್ತಿ, ನೆರವಾಗಲು ತ್ವರೆ ಮಾಡು ||
ಕತ್ತಿಗೆ ತುತ್ತಾಗದಂತೆ ತಪ್ಪಿಸು |
ಕುಕ್ಕುರಗಳಿಂದ ಪ್ರಾಣವನುಳಿಸು ||

ಮಣಿಯಿರಿ, ಪ್ರಭುವಿನಲಿ ಭಯ ಭಕುತಿಯುಳ್ಳವರೆ  |
ಭಜಿಸಿರಿ ಇಸ್ರಯೇಲರೆ , ಯಾಕೋಬ ಕುಲಜರೇ ||

ತೃಣೀಕರಿಸನು, ತಿರಸ್ಕರಿಸನು ದಲಿತನನು |
ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು ||


ಎರಡನೇ ವಾಚನ: ಪಿಲಿಪ್ಪಿಯರಿಗೆ: 2:6-11

ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನೇ ಬರಿದು ಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತ ಯೇಸುವೇ ಪ್ರಭು’ ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.

ಶುಭಸಂದೇಶ: ಮತ್ತಾಯ 26:14-27;66


ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯ ಯಾಜಕರ ಬಳಿಗೆ ಹೋದನು. “ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ನಿಗದಿಮಾಡಿ ಕೊಟ್ಟರು. ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯುತ್ತಾ ಇದ್ದನು. ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು. ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ, ‘ನನ್ನ ಕಾಲ ಸವಿೂಪಿಸಿತು, ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು. ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕ ಭೋಜನವನ್ನು ತಯಾರಿಸಿದರು. ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು. ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು. ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾವಿೂ, ನಾನೋ? ನಾನೋ?” ಎಂದು ಕೇಳತೊಡಗಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ. ನರಪುತ್ರನೇನೋ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು. ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು. ಅವರೆಲ್ಲರೂ ಊಟ ಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿ ಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು. ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾ ಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ; ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ. ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು. ಆಗ ಯೇಸು ತಮ್ಮ ಶಿಷ್ಯರಿಗೆ, “ ‘ ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ. ನಾನಾದರೋ ಪುನರುತ್ಥಾನಹೊಂದಿ ನಿಮಗಿಂತ ಮುಂದಾಗಿ ಗಲಿಲೇಯಕ್ಕೆ ಹೋಗುವೆನು,” ಎಂದರು. ಇದನ್ನು ಕೇಳಿದ ಪೇತ್ರನು, “ಎಲ್ಲರು ತಮ್ಮಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಎಂದಿಗೂ ಹಾಗೆ ಮಾಡುವುದಿಲ್ಲ” ಎಂದು ಸಾರಿ ಹೇಳಿದನು. ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು. ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು. ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆ ಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು. ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆ ಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು. “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು. ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆ ಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು. ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ? ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆ ಮಾಡಿರಿ. ಆತ್ಮಕ್ಕೇನೋ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು. ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ.” ಯೇಸು ಮರಳಿ ಆ ಶಿಷ್ಯರ ಬಳಿಗೆ ಬಂದಾಗ ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು. ಅವರ ಕಣ್ಣುಗಳು ಭಾರವಾಗಿ ಇದ್ದವು. ಪುನಃ ಅವರನ್ನು ಬಿಟ್ಟು ಹಿಂದಿರುಗಿ ಮೂರನೆಯ ಬಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು .

ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ. ಎದ್ದೇಳಿ, ಹೋಗೋಣ. ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ, ನೋಡಿ,” ಎಂದರು. ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯ ಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು. ‘ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಆ ವ್ಯಕ್ತಿ. ಆತನನ್ನು ಹಿಡಿದುಕೊಳ್ಳಿ,’ ಎಂದು ಆ ಗುರುದ್ರೋಹಿ ಅವರಿಗೆ ಮೊದಲೇ ಸೂಚನೆ ಕೊಟ್ಟಿದ್ದನು. ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು. ಯೇಸು ಅವನಿಗೆ, “ಮಿತ್ರಾ, ನೀನು ಮಾಡಬಂದ ಕಾರ್ಯವನ್ನು ಮಾಡಿ ಮುಗಿಸು,” ಎಂದರು. ಆಗ ಆ ಜನರು ಹತ್ತಿರಕ್ಕೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು. ಕೂಡಲೆ ಯೇಸುವಿನ ಸಂಗಡ ಇದ್ದ ಒಬ್ಬನು ತನ್ನ ಖಡ್ಗವನ್ನು ಹಿರಿದು, ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು. ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು. ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದು ಕೊಂಡೆಯಾ? ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರ ಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು. ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆ ಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು. ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು. ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆ ಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನ ಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು. ಇತ್ತ ಮುಖ್ಯ ಯಾಜಕರೂ ಉಚ್ಚನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು. ಹಲವಾರು ಸುಳ್ಳುಸಾಕ್ಷಿಗಳು ಮುಂದೆ ಬಂದರು. ಆದರೂ ಸರಿಯಾದ ಒಂದು ಸಾಕ್ಷ್ಯವೂ ಅವರಿಗೆ ದೊರಕಲಿಲ್ಲ. ಕಡೆಗೆ ಇಬ್ಬರು ಮುಂದೆ ಬಂದು, “ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು. ಆಗ ಪ್ರಧಾನಯಾಜಕನು ಎದ್ದುನಿಂತು ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರ ಏನು?” ಎಂದು ಪ್ರಶ್ನಿಸಿದನು. ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ: ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು. ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ? ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣ ದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು. ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು. ಕೆಲವರು ಅವರ ಕೆನ್ನೆಗೆ ಹೊಡೆದು, “ಎಲೈ ಕ್ರಿಸ್ತಾ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದಿಸಿ ಹೇಳು,” ಎಂದರು. ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತಿದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು. “ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು. ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು. ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನ್ನೊಮ್ಮೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು. ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು. ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ನೆಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು. 

ಬೆಳಗಾಯಿತು. ಎಲ್ಲ ಮುಖ್ಯ ಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆ ಮಾಡಿದರು. ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು. ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು. “ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ‘ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು. ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು. ಮುಖ್ಯ ಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು. ಕಡೆಗೆ ಒಂದು ನಿರ್ಧಾರಕ್ಕೆ ಬಂದರು. ಪರದೇಶಿಗಳನ್ನು ಹೂಳುವುದಕ್ಕೋಸ್ಕರ ‘ಕುಂಬಾರನ ಹೊಲ’ವನ್ನು ಆ ಹಣಕೊಟ್ಟು ಕೊಂಡುಕೊಂಡರು. ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ, “ಮೂವತ್ತು ಬೆಳ್ಳಿ ನಾಣ್ಯಗಳನ್ನೆತ್ತಿ ಸರ್ವೇಶ್ವರಸ್ವಾಮಿ ನನಗಿತ್ತ ಆದೇಶದಂತೆ ‘ಕುಂಬಾರನ ಹೊಲ’ ಕೊಳ್ಳಲು ಅದನ್ನು ತೆತ್ತರು. ಅಮೂಲ್ಯ ವ್ಯಕ್ತಿಗೆ ಕಟ್ಟಿದ ಬೆಲೆಯದು, ಇಸ್ರಯೇಲ ಜನರು ಒಪ್ಪಿದ ಮೊತ್ತವದು,” ಎಂದು ವಚನಿಸಿದ ಪ್ರವಾದಿ ಯೆರೆವಿೂಯನ ಮಾತುಗಳು ಈಡೇರಿದವು. ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು. ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರ ಕೊಡಲಿಲ್ಲ. ಆಗ ಪಿಲಾತನು, “ಇವರು ನಿನಗೆ ವಿರುದ್ಧ ಇಷ್ಟೆಲ್ಲಾ ಹೇಳುತ್ತಿರುವುದು ನಿನಗೆ ಕೇಳಿಸುತ್ತಿಲ್ಲವೆ?” ಎಂದನು. ಯೇಸು ಯಾವುದಕ್ಕೂ ಉತ್ತರ ಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು. ಪ್ರತಿ ಪಾಸ್ಕ ಹಬ್ಬದ ಸಂದರ್ಭದಲ್ಲಿ ಜನರು ಬಯಸುವ ಒಬ್ಬ ಕೈದಿಯನ್ನು ಬಿಡುಗಡೆ ಮಾಡುವುದು ರಾಜ್ಯಪಾಲನ ಪದ್ಧತಿಯಾಗಿತ್ತು. ಆಗ ಬರಬ್ಬನೆಂಬ ಕುಪ್ರಸಿದ್ಧ ಕೈದಿಯೊಬ್ಬನು ಸೆರೆಯಲ್ಲಿದ್ದನು. ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?” ಎಂದು ಕೇಳಿದನು. ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು. ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು. ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯ ಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು. ರಾಜ್ಯಪಾಲನು ಪುನಃ ಜನರ ಗುಂಪನ್ನು ನೋಡಿ, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಲಿ?” ಎಂದು ಕೇಳಿದನು. ಅದಕ್ಕೆ ಅವರು “ಬರಬ್ಬನನ್ನೇ” ಎಂದು ಉತ್ತರಕೊಟ್ಟರು. “ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು. “ಏಕೆ? ಇವನೇನು ಕೇಡು ಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು. ಕೈ ತೊಳೆದುಕೊಂಡರೆ ಕರ್ತವ್ಯ ನೀಗೀತೆ? ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು. ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು. ಬಳಿಕ ಪಿಲಾತನು ಅವರ ಇಷ್ಟದಂತೆಯೇ ಬರಬ್ಬನನ್ನು ಬಿಟ್ಟುಕೊಟ್ಟನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೇರಿಸಲು ಒಪ್ಪಿಸಿಬಿಟ್ಟನು. ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು. ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆ ಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯ ಮಾಡಿದರು. ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯ ಮೇಲೆ ಹೊಡೆದರು. ಹೀಗೆ ಪರಿಹಾಸ್ಯ ಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು. ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತು ಬರುವಂತೆ ಅವನನ್ನು ಬಲವಂತಮಾಡಿದರು. ಅವರೆಲ್ಲರು ಗೊಲ್ಗೊಥ ಎಂಬ ಸ್ಥಳಕ್ಕೆ ಬಂದು ಸೇರಿದರು. (ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ). ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ. ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು. ಅನಂತರ ಅಲ್ಲೇ ಕುಳಿತು ಕಾವಲುಕಾಯುತ್ತಾ ಇದ್ದರು. “ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು. ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು. ಪಕ್ಕದಲ್ಲಿ ಹಾದು ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ “ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು. ಅಂತೆಯೇ ಮುಖ್ಯ ಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಪ್ರಮುಖರು, “ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ. ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯ ಮಾಡುತ್ತಿದ್ದರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಕೂಡ ಅದೇ ರೀತಿ ಅಣಕಿಸಿದರು. ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು. ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು. ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು. ಕೂಡಲೇ ಅವರಲ್ಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡುಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು. ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ ನೋಡೋಣ,” ಎಂದರು. ಯೇಸುಸ್ವಾಮಿ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಅಸುನೀಗಿದರು.

ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು, ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು. ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆ ಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರ ನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು. ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು. ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆ ಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು. ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು. ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು. ಈಗ ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಬೇಡಿದನು. ಪಿಲಾತನು ಅದನ್ನು ಕೊಡುವಂತೆ ಅಪ್ಪಣೆಮಾಡಿದನು. ಜೋಸೆಫ್ ಅದನ್ನು ತೆಗೆದುಕೊಂಡು ಶುದ್ಧವಾದ ನಾರುಮಡಿ ವಸ್ತ್ರದಿಂದ ಸುತ್ತಿದನು. ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು. ಸಾವಿಗೆ ಸಮಾಧಿಯ ಸಾಕ್ಷಿ ಮಾರನೆಯ ದಿನ, ಅಂದರೆ, ‘ಸಿದ್ಧತೆಯ ದಿನ’ ಕಳೆದ ಮೇಲೆ, ಮುಖ್ಯ ಯಾಜಕರು ಮತ್ತು ಫರಿಸಾಯರು ಕೂಡಿ ಪಿಲಾತನ ಬಳಿಗೆ ಬಂದರು. “ಸ್ವಾವಿೂ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ. ಆದ್ದರಿಂದ ಮೂರನೆಯ ದಿನದ ತನಕ ಅವನ ಸಮಾಧಿಗೆ ಭದ್ರವಾದ ಕಾವಲಿರಿಸಲು ಅಪ್ಪಣೆಯಾಗಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಅವನನ್ನು ಕದ್ದುಕೊಂಡು ಹೋಗಿ, ಸತ್ತವನು ಬದುಕಿಬಂದಿದ್ದಾನೆ ಎಂದು ಜನರಿಗೆ ಹೇಳಬಹುದು; ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡುಮೋಸವಾದೀತು,” ಎಂದು ಕೇಳಿಕೊಂಡರು. ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲವೆ? ಹೋಗಿ ನಿಮಗೆ ಬೇಕಾದಂತೆ ಭದ್ರಪಡಿಸಿಕೊಳ್ಳಿ” ಎಂದನು.  ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆ ಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರ ಪಡಿಸಿದರು.
ಮನಸ್ಸಿಗೊಂದಿಷ್ಟು : ಯೇಸುಕ್ರಿಸ್ತರು ಜೆರುಸಲೇಮನ್ನು ಪ್ರವೇಶಿಸಿದ ಘಟನೆ ಮೈನವಿರೇಳಿಸುವಂಥದ್ದು.  ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನ ಯೇಸುವಿಗೆ ಕೊಟ್ಟ ಸ್ವಾಗತ ಐತಿಹಾಸಿಕ. ಯೇಸು ಬದುಕಿದ್ದ ಸುಮಾರು 160 ವರ್ಷಗಳ ಹಿಂದೆ ತಮ್ಮ ವೈರಿಗಳನ್ನು ಬಗ್ಗು ಬಡಿದ ಸೈಮನ್ ಮೆಕಾಭಿಯಸ್ ಎಂಬ ಸೈನ್ಯಾಧಿಕಾರಿಗೆ ಇದೇ ರೀತಿಯ ಸ್ವಾಗತವನ್ನು ಜನ ಜೆರುಸಲೇಮಿನಲ್ಲಿ ಕೊಟ್ಟಿದ್ದರು. ಯೇಸು ಸಹಾ ತಮ್ಮನ್ನು ಕಷ್ಟಗಳಿಂದ ಬಿಡಿಸುವ ಅದೇ ರೀತಿಯ ಕ್ರಾಂತಿಕಾರಿ ರಾಜ ಎಂಬ ಬಲವಾದ ನಂಬಿಕೆಯಿಂದಲೇ, ಒಬ್ಬ ರಾಜನಿಗೆ ಕೊಡುವ ಸ್ವಾಗತವನ್ನು ಗೌರವವನ್ನು ಯೇಸುವಿಗೆ ನೀಡುತ್ತಾರೆ.

ಆದರೆ ಯೇಸುವಿನ ಆಶಯವೇ ಬೇರೆಯಾಗಿತ್ತು ಯೇಸು ಒಂದು ಕತ್ತೆಯ ಮೇಲೆ ಶಾಂತಿದೂತನಾಗಿ ಪ್ರವೇಶಿಸುತ್ತಾರೆ. ಅಂದಿನಸಮಾಜದಲ್ಲಿ ಕತ್ತೆಗೆ ಮಹತ್ವದ ಸ್ಥಾನವಿತ್ತು. ಯುದ್ಧಕ್ಕೆ ಹೊರಟ ರಾಜ ಕುದುರೆಯ ಮೇಲೂ, ಶಾಂತಿಯನ್ನು ಸಾರುವ ರಾಜ ಕತ್ತಯ ಮೇಲೆ ಕೂತು ಸಾಗುವ ಪದ್ಧತಿಯಿತ್ತು. ಜನ ಅಂದು ಸಂಭ್ರಮಿಸಿದರೂ, ಕೆಲವೇ ದಿನಗಳ ಅಂತರದಲ್ಲಿ ಯೇಸು ನಿಸ್ಸಹಾಯಕರಾಗಿ ಪಿಲಾತನ ಎದುರು ನಿಂತಿರುವುದನ್ನು ಕಂಡು ಅವರ ನಿರೀಕ್ಷೆಗೆ ಪೆಟ್ಟು ಬಿತ್ತು. ಇಂದು ಗರಿಗಳನ್ನು ಹಿಡಿದು ಸ್ತುತಿಗೀತೆ ಹಾಡುತ್ತಿರುವ ನಾವು ಯೇಸುವಿನಿಂದ ಏನನ್ನು ನಿರೀಕ್ಷಿಸುತ್ತಿದ್ದೇವೆ?

ಹೊಸಾನ್ನ  ಎಂಬುದರ ಮೂಲ ಅರ್ಥ ’ರಕ್ಷಿಸು’  ಎಂದು ಪಂಡಿತರ ಅಭಿಪ್ರಾಯ. ಅನೇಕ ತಲ್ಲಣಗಳ ಈ ಸಮಯದಲ್ಲಿ ಹೊಸಾನ್ನದ ’ರಕ್ಷಿಸು’ ಎಂಬ ಮಾತೇ ನಮ್ಮದಾಗಲಿ. 

ಪ್ರಭುವೇ,
ಜೆರುಸಲೇಮ್ ದ್ವಾರಕ್ಕೆ
ಬಂದಿರಿ ಗರಿ ಜಯಘೋಷಗಳ 
ನಡುವೆ ರಾಜನಂತೆ

ದಿನಗಳಂತರದಲ್ಲಿ ನಿಂತಿರಿ  
ಮೌನದಿ ಪಿಲಾತನ 
ಮುಂದೆ ಅಪರಾಧಿಯಂತೆ

ಹೊತ್ತಿರಿ ಶಿಲುಬೆಯನ್ನು  
ಕಲ್ವಾರಿಯೆಡೆಗೆ ದೀನನಂತೆ
ತೂಗಿ ಮಡಿದಿರಿ ಘೋರ
ನೋವಿನಿಂದ ಕಳ್ಳನಂತೆ

ನಾನಾದರೋ ಇರುವೆ
ಏನೂ ಅಗಿಲ್ಲದಂತೆ
ಬನ್ನಿರಿ ಈ ಮನದ ದ್ವಾರಕ್ಕೆ
ನನ್ನ ಪಶ್ಚಾತ್ತಾಪದ
ಗರಿಗಳ ನಡುವೆ
ನಿಮ್ಮೊಡನೆ ನಾನೂ 
ಬರುವೆ ಸಿಮೋನನಂತೆ

28.03.2026 - ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ

 ಮೊದಲನೇ ವಾಚನ: ಯೆಜೆಕಿಯೇಲ 37:21-28



ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು: "ನರಪುತ್ರನೇ, ಇದನ್ನು ಅವರಿಗೆ ನುಡಿ. ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು. ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು. ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು. ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು. ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು. ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು. ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ವಿೂಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು”.

ಯೆರೆಮೀಯ: 31:10, 11, 12, 13
ಶ್ಲೋಕ: ಕುರಿಮಂದೆಯನ್ನು ಕಾಯುವ ಕುರುಬನಂತೆ,
ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ

ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ
ನಿನ್ನ ಶರಣನಾದೆ ನನಗಾಗದಿರಲಿ ತಾತ್ಸಾರ
ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ |
ಸವೆದು ಹೋಗುತ್ತವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ ||

ಶತ್ರುಗಳ ದೂಷಣೆಗೆ ಗುರಿಯಾದೆ,
ನೆರೆಯವರಿಗೆ ನಿಂದಾಸ್ಪದನಾದೆ |
ಮಿತ್ರರೂ ಬೆದರುವಂತಾದೆ;
ದಾರಿಹೋಕರು ದೂರವಾಗುವಂತಾದೆ ||

ನುಚ್ಚು ನೂರಾದೆ, ಮಡಕೆಚಿಪ್ಪಿನಂತಾದೆ |
ಸತ್ತವರಂತಾದೆ : ನೆನಪಿಗೆ ಬಾರದಾದೆ ||
ನನಗೆ ವಿರುದ್ಧ ಜನರಾಡುವ ಗುಸುಗುಸು
ಮಾತು ಕೇಳಿ ಬರುತಿದೆ |
ಭಯಭೀತಿ ಎನ್ನನಾವರಿಸಿದೆ, ಒಳಸಂಚು,
ಪ್ರಾಣಹರಣ ನಡೆಯುತಿವೆ ||

ಶುಭಸಂದೇಶ: ಯೊವಾನ್ನ 11:45-57


ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು. ಕೆಲವರಾದರೋ ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದೆಲ್ಲವನ್ನೂ ತಿಳಿಸಿದರು. ಮುಖ್ಯ ಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ; ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು. ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮ ಮಾಡುವರು,” ಎಂದು ವಾದಿಸಿದರು. ಆ ವರ್ಷ ಪ್ರಧಾನ ಯಾಜಕನಾಗಿದ್ದ ಕಾಯಫನು, “ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು. ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನ ಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು. ಆ ಜನತೆಗಾಗಿ ಮಾತ್ರವಲ್ಲ, ಚದರಿ ಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ. ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು. ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು. ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ದೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು. ಯೇಸುವನ್ನು ನೋಡಬೇಕೆಂಬ ಆಸೆ ಅವರಿಗಿತ್ತು. “ಆತ ಹಬ್ಬಕ್ಕೆ ಬರುತ್ತಾನೋ ಇಲ್ಲವೋ ನಿಮ್ಮ ಎಣಿಕೆ ಏನು?” ಎಂದು ಮಹಾದೇವಾಲಯದಲ್ಲಿ ತಮ್ಮತಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದರು. ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.

ಮನಸ್ಸಿಗೊಂದಿಷ್ಟು : ಯೇಸುವಿನ ಮರಣದ ಬಗ್ಗೆ ಶತ್ರು ಕಾಯಿಫನೇ ಪ್ರವಾದಿಸುವಂತೆ ದೇವರ ಚಿತ್ತವಾಗಿರುವುದನ್ನು ಕಾಣುತ್ತೇವೆ. ದೇವರ ಸಾಧನವಾಗುವುದು ಎಲ್ಲರಿಗೂ ಸಾಧ್ಯ. ನಾವೂ ಸಹ ದೇವರ ಸಾಧನಗಳಾಗುವ ಅವಕಾಶವಿದೆ. ಆ ಅವಕಾಶಕ್ಕಾಗಿ ಹಾತೊರೆಯೋಣ. "ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ" ಎಂಬ ಇಂದಿನ ಕೀರ್ತನೆ ನಮ್ಮ ಬಾಳಿನ ಧ್ಯೇಯವಾಗಲಿ.

ಪ್ರಶ್ನೆ : ಪ್ರಭುವಿನ ನೀತಿ ನಮ್ಮ ಬಾಳಿನ ರೀತಿಯಾಗಿದೆಯೇ?

ಪ್ರಭುವೇ,
ನಿನ್ನ ನೀತಿಗನುಸಾರ
ಬಾಳುವುದಾಗಲಿ
ನನ್ನ ಬಾಳ ಸಾರ!

ನಿನ್ನ ರೀತಿಗನುಸಾರ
ನಡೆವುದಾಗಲಿ
ಗಮ್ಯ ಅದೆಷ್ಟೇ ಇದ್ದರು ದೂರ!

ಕ್ಷಣ ಕ್ಷಣವೂ ಆಗುತ್ತಾ
ನಿನ್ನ ಸಾಧನ
ನಲಿಯಲಿ ಈ ಮನ
ನಿತ್ಯ ನೂತನ

27.03.2026 - ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು

 ಮೊದಲನೇ ವಾಚನ: ಯೆರೆಮಿಯ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವರ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹು ಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿ ನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’  ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯ ಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.

ಕೀರ್ತನೆ: 18:2-3, 3-4, 5-6, 7
ಶ್ಲೋಕ: ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ
ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ

ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ |
ಆತನೇ ನನ್ನ ದೇವ, ನನ್ನಾಶ್ರಯ ದುರ್ಗ |
ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ ||
ಪ್ರಭು ಸ್ತುತ್ಯಾರ್ಹನು |
ಶತ್ರುಗಳಿಂದ ಕಾಪಾಡುವನು,
ನಾನವಗೆ ಮೊರೆಯಿಡಲು ||

ಪ್ರಭು ಸ್ತುತ್ಯಾರ್ಹನು |
ಶತ್ರುಗಳಿಂದ ಕಾಪಾಡುವನು,
ನಾನವಗೆ ಮೊರೆಯಿಡಲು ||
ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು |
ನಡುಕ ಹುಟ್ಟಿಸಿದ್ದವು
ವಿನಾಶಪ್ರವಾಹಗಳು ||
ಆವರಿಸಿಕೊಂಡವು ಪಾತಾಳ ಪಾಶಗಳು|
ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು||

ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ |
ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ |
ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ ||
ಆಗ ಕಂಪಿಸಿತು ಭೂಮಿ ಗಡಗಡನೆ |
ಕದಲಿದವು ಬೆಟ್ಟದ ಬುಡಗಳು
ಮಿಲಮಿಲನೆ |
ಏಕೆನೆ, ಸಿಟ್ಟೇರಿತ್ತು ಆತನಿಗೆ ||

ಶುಭಸಂದೇಶ: ಯೊವಾನ್ನ 10:31-42

ಆಗ ಯೆಹೂದ್ಯರು, ಯೇಸುವಿನತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು. ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು. ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದೀಯೇ,” ಎಂದು ಉತ್ತರಕೊಟ್ಟರು. ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ? ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರ ಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ. ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ? ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ. ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆ ಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು. ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು. ಬಳಿಕ ಯೇಸುಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತ ಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು. ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕ ಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು. ಅಲ್ಲಿ ಹಲವರಿಗೆ ಯೇಸುವಿನಲ್ಲಿ ವಿಶ್ವಾಸ ಹುಟ್ಟಿತು.

ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದದಲ್ಲಿನ ಯೆಹೂದ್ಯರ ತಿರಸ್ಕಾರ ನಿಜಕ್ಕೂ ದೌರ್ಭಾಗ್ಯಕರ . ' ತಾವು ದೇವರ ಪುತ್ರ' ಎಂದು ಯೇಸು ಸಾರಿ ಸಾರಿ ಹೇಳುತ್ತಿದ್ದರೂ ನಂಬದಂಥ ಕಲ್ಲು ಹೃದಯ ಅವರದಾಗಿತ್ತು. ನಮ್ಮ ಹೃದಯಗಳು ಪ್ರಭು ಕ್ರಿಸ್ತರನ್ನು ತಿರಸ್ಕರಿಸದಂತೆ ಎಚ್ಚರವಹಿಸೋಣ

ಪ್ರಶ್ನೆ : ನಮ್ಮ ಹೃದಯ ಯೇಸುವಿಗಾಗಿ ತೆರೆದಿದೆಯೇ?

26.03.2026 - ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ

ಮೊದಲನೆಯ ವಾಚನ: ಆದಿಕಾಂಡದಿಂದ ಇಂದಿನ ವಾಚನ 17:3-9


ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ದೇವರು ಅವನಿಗೆ, " ನಾನು ನಿನಗೆ ವಾಗ್ಧಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ. ಇನ್ನು ಮುಂದೆ ನಿನಗೆ 'ಅಬ್ರಾಮ' ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲ ಪುರುಷನನ್ನಾಗಿ ನೇಮಿಸುವುದರಿಂದ ನಿನಗೆ 'ಅಬ್ರಹಾಮ' ಎಂಬ ಹೆಸರಿರುವುದು. ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರ ಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ. ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ. " ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: " ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರೂ ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು."


ಕೀರ್ತನೆ 105:4,6,5,7,8-9,V.8
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು |

ಅರಸಿರಿ ಪ್ರಭುವನೂ ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ನೆನೆಯಿರಿ ಆತನದ್ಭುತಗಳನು; ಮಹತ್ಕಾರ್ಯಗಳನು|
ಆತನ ವದನ ವಿಧಿಸಿದಾ ಆ ನ್ಯಾಯನಿರ್ಣಯಗಳನು.||

ಆತನ ದಾಸ ಅಬ್ರಹಾಮನ ಸಂತತಿಯವರೇ|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಪ್ರಭು ನಮ್ಮ ದೇವರೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ.||

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು|
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು||
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು|
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು.||

ಘೋಷಣೆ ಯೊವಾನ್ನ 6:63,68
ದೇವರ ವಾಕ್ಯವಾದ ಪ್ರಭು ಯೇಸುವೇ, ನಿಮಗೆ ಸದಾ ಸ್ತೋತ್ರವು, ಮಹಿಮೆಯೂ ಸಲ್ಲಲಿ!
ನಿಮ್ಮ ಮಾತುಗಳು ಪ್ರಭೂ, ಆತ್ಮ ಮತ್ತು ಜೀವವಾಗಿವೆ, ನಿತ್ಯ ಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ,,
ದೇವರ ವಾಕ್ಯವಾದ ಪ್ರಭು ಯೇಸುವೇ ನಿಮಗೆ ಸದಾ ಸ್ತೋತ್ರವು, ಮಹಿಮೆಯೂ ಸಲ್ಲಲಿ!

ಶುಭಸಂದೇಶ: ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 8:51-59


ಆ ಕಾಲದಲ್ಲಿ ಯೇಸು ಯೆಹೂದ್ಯರಿಗೆ: "ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯ ಮರಣಕ್ಕೆ ತುತ್ತಾಗನು, ' ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ, " ಎಂದರು. " ನೀನು ದೆವ್ವ ಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, 'ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು, ' ಎಂದು ಹೇಳುತ್ತಿರುವೆ; ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೊ? ಆತನೂ ಸಾವಿಗೀಡಾದನು, ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ? " ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು. ಯೇಸು ಪ್ರತ್ಯುತ್ತರವಾಗಿ, " ನನ್ನ ಘನತೆ ಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ' ಅವರು ನಮ್ಮ ದೇವರು' ಎಂದು ನೀವು ಹೇಳಿಕೊಳ್ಳುತ್ತೀರಿ. ಆದರೆ ಅವರ ಅರಿವು ನಿಮಗಿಲ್ಲ ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ. ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು, " ಎಂದು ಉತ್ತರ ಕೊಟ್ಟರು. ಯೆಹೂದ್ಯರು, " ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ? " ಎಂದರು. ಯೇಸು ಅವರಿಗೆ, "ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ, " ಎಂದು ಮರು ನುಡಿದರು. ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟು ಹೋದರು.

01.04.2026 “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,”

    ಮೊದಲನೇ ವಾಚನ: ಯೆಶಾಯ 50: 4-9 ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತ...