20.09.2026 - ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು





ಮೊದಲನೇ ವಾಚನ: ಯೆಶಾಯ 55:6-9

ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ. ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ. “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ. “ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.

ಕೀರ್ತನೆ:145:2-3, 8-9, 17-18

ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ 

1.  ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ|
ಹೊಗಳುವೆನು ನಾ ದಿನ ದಿನವೂ ನಿನ್ನನು||
ಪ್ರಭು ಮಹಾತ್ಮನು, ಸ್ತುತ್ಯಾರ್ಹನು|
ಆತನ ಮಹಿಮೆ ಅಗಮ್ಯವಾದುದು||
ಶ್ಲೋಕ

2.  ಪ್ರಭು ದಯಾನಿಧಿ, ಕೃಪಾಸಾಗರನು|
ಸಹನಶೀಲನು, ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

3.  ಪ್ರಭುವಿನ ಮಾರ್ಗ ಧರ್ಮಸಮ್ಮತ|
ಆತನ ಕಾರ್ಯವೆಲ್ಲ ಪುನೀತ||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||
ಶ್ಲೋಕ

ಎರಡನೇ ವಾಚನ: ಫಿಲಿಪ್ಪಿಯರಿಗೆ 1:20-24, 27

ಸಹೋದರರೇ, ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.  ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.  ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.  ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.  ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ. ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.

ಶುಭಸಂದೇಶ: ಮತ್ತಾಯ 20:1-16

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ. ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ. ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ. ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು. ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ. ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ. ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ. “ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ. ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.  ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.  ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.  ‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.  ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?  ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.  ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.  ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು.”

19.09.2026 -IIಶನಿವಾರII ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ


ಮೊದಲನೇ ವಾಚನ: 1ತಿಮೊಥೇಯನಿಗೆ 6:13-16



ಅತಿ ಪ್ರಿಯನೇ, ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ, ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸಿಸುವುದೇನೆಂದರೆ: ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು: ಸೂಕ್ತಕಾಲದಲ್ಲಿ ಕ್ರಿಸ್ತ ಯೇಸುವಿನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವನು ಪರಮಾನಂದನು, ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ, ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.

ಕೀರ್ತನೆ 100:1-2, 3, 4, 5
ಶ್ಲೋಕ: ಹಾಡುತ, ಪಾಡುತ, ಬನ್ನಿ ಪ್ರಭುವಿನ ಸನ್ನಿಧಿಗೆ.

ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|
ಅತಿ ಸಂತೋಷದಿಂದ ಸೇವೆಮಾಡಿ ಆತನಿಗೆ|
ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ||

ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ ಆತನೇ ಮೇಯಿಸುವ ಕುರಿಗಳು ನಾವು||

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ||

ಹೌದು ಪ್ರಭುವೆನಿತೋ ಒಳ್ಳೆಯವನು|
ಇರುವುದು ಆತನ ಪ್ರೀತಿ ಯುಗಯುಗಕೂ|
ಆತನ ಸತ್ಯತೆ ತಲತಲಾಂತರಕು||

ಘೋಷಣೆ
(ಯೊವಾನ್ನ 6: 63, 68)

ಅಲ್ಲೆಲೂಯ, ಅಲ್ಲೆಲೂಯ.
ಸಜ್ಜೀವವನ್ನು ಕೊಡುವಂಥದ್ದು ದೇವರ ಆತ್ಮವೇ | ನಿತ್ಯ ಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ||
ಅಲ್ಲೆಲೂಯ.

ಶುಭಸಂದೇಶ:  ಲೂಕ 8:4-15


ಜನರು ಊರುರುಗಳಿಂದ ಹೊರಟು ಯೇಸುವಿನ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: " ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲುತುಳಿತಕ್ಕೆ ಸಿಕ್ಕಿ ಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟನು. ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿ ಹೋದವು. ಇನ್ನೂ ಕೆಲವು ಮುಳ್ಳು ಪೂದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು, " ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, " ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, "ಎಂದು ಒತ್ತಿ ಹೇಳಿದರು. ಶಿಷ್ಯರು, 'ಈ ಸಾಮತಿಯ ಅರ್ಥವೇನು?' ಎಂದು ಕೇಳಿದಾಗ, ಯೇಸು ಇಂತೆಂದರು: " ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು. ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ. ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು, ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ. ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು, ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪ ಕಾಲ ವಿಶ್ವಾಸಿಸುತ್ತಾರೆ, ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ. ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲ ಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿ ಬಿಡುತ್ತವೆ, ಇವರ ಫಲ ಪಕ್ವವಾಗುವುದಿಲ್ಲ. ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲತರುವವರು, " ಎಂದರು.

18.09.2026 -IIಶುಕ್ರವಾರIIII ಇಂದಿನ ಬೈಬಲ್ ವಾಚನಗಳುIIಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

  ಮೊದಲನೇ ವಾಚನ: 1 ಕೊರಿಂಥಿಯರಿಗೆ 15:12-20


ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ? ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು. ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು. ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು. ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು. ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ; ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು. ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ. ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.

ಕೀರ್ತನೆ: 17:1, 6-7, 8, 15

ಶ್ಲೋಕ: ಪ್ರಭೂ, ನಿನ್ನ ಮಖದರ್ಶನದಿಂದ ನಾನು ಎಚ್ಚತ್ತು ತೃಪ್ತನಾಗುವೇನು. 

ಶುಭಸಂದೇಶ: ಲೂಕ 8:1-3

ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.  ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,  ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.

17.09.2026 - IIಗುರುವಾರII ಇಂದಿನ ಬೈಬಲ್ ವಾಚನಗಳುIIನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ; ಸಮಾಧಾನದಿಂದ ಹೋಗು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-11


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.  ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.  ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.  ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.  ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.  ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.  ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.  ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.

ಕೀರ್ತನೆ: 118:1-2, 16-17, 28

ಶ್ಲೋಕ: ಸಲ್ಲಿಸಿ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ 

1.  ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ||
ಸಾರಲಿ ಇಸ್ರಯೇಲಿನ ಜನತೆ|
ಆತನ ಪ್ರೀತಿ ಶಾಶ್ವತ ಎಂದೆ||
ಶ್ಲೋಕ

2.  ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ|
ವಿಜಯ ಸಾಧನ ಪ್ರಭುವಿನ ಬಲಗೈಯಿಂದ||
ಸಾಯೆನು, ಜೀವದಿಂದಿರುವೆನು ನಾನು|
ಪ್ರಭುವಿನ ಕಾರ್ಯಗಳನು ಸಾರುವೆನು||
ಶ್ಲೋಕ

3.  ಪ್ರಭುವೇ ದೇವನು, ನಮ್ಮ ಮೇಲೆ|
ಜ್ಯೋತಿಯನು ಬೆಳಗಿದವನು||
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ||
ಸದುತ್ತರ ಪಾಲಿಸಿದ ಪ್ರಭೂ,  ನಿನಗೆ ವಂದನೆ|
ಉದ್ಧಾರಮಾಡಿದೆ, ನಿನಗೆ ಕೃತಜ್ಞತಾವಂದನೆ||
ಶ್ಲೋಕ

ಘೋಷಣೆ
(ಮತ್ತಾಯ 11: 25)
ಅಲ್ಲೆಲೂಯ, ಅಲ್ಲೆಲೂಯ.
ಪಿತನೇ, ಭೂಸ್ವರ್ಗಗಳ  ಒಡೆಯನೇ, ಈ ವಿಷಯಗಳನ್ನು ಮಕ್ಕಳಂತವರಿಗೆ ನೀವು ಶ್ರುತಪಡಿಸಿದ್ದೀರಿ| ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ||
ಅಲ್ಲೆಲೂಯ.

ಶುಭಸಂದೇಶ: ಲೂಕ 7:36-50

ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.  ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.  ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.  ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.  ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.  ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.  ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.  ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.  ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.  ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;  ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.  ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.  ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.  ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.  ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.

16.09.2026 - IIಬುಧವಾರII ಇಂದಿನ ಬೈಬಲ್ ವಾಚನಗಳುIIದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ

 ಮೊದಲನೇ ವಾಚನ: 1 ಕೊರಿ0ಥಿಯರಿಗೆ: 12:31--13:13

ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ: ಸುರನರರ ನುಡಿಗಳ ನಾನಾಡಬಲ್ಲೆ ನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ. ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ? ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ. ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ. ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ. ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರರಲಿ ಪ್ರೀತಿಯೇ ಪರಮೋನ್ನತ ವೆಂಬುದ ನೀನರಿ.

ಕೀರ್ತನೆ: 33:2-3, 4-5, 12, 22

ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
1.  ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ|
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ||
ನೂತನ ಕೀರ್ತನೆಯನು ಆತನಿಗೆ ಹಾಡಿರಿ|
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ||
ಶ್ಲೋಕ

2.  ಸತ್ಯವಾದುದು ಆತನ ಪವಿತ್ರ ವಾಕ್ಯ|
ಸ್ತುತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು| 
ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು||
ಶ್ಲೋಕ

3.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ||
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ|
ನೂತನ ಕೀರ್ತನೆಯನು ಆತನಿಗೆ ಹಾಡಿರಿ|
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ||
ಶ್ಲೋಕ

4.  ಸತ್ಯವಾದುದು ಆತನ ಪವಿತ್ರ ವಾಕ್ಯ|
ಸ್ತುತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು|
ಅಚಲ ಪ್ರೀತಿಯಿಂದ ಜಗವನು ತುಂಬಿಹನು||
ಶ್ಲೋಕ

5.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ||
ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ||
ಶ್ಲೋಕ

ಘೋಷಣೆ
(ಮತ್ತಾಯ 4: 4)
ಅಲ್ಲೆಲೂಯ, ಅಲ್ಲೆಲೂಯ.
ಮಾನವನು  ಜೀವಿಸುವುದು  ಆಹಾರದಿಂದ  ಮಾತ್ರವಲ್ಲ,| ದೇವರಾಡುವ ಪ್ರತಿಯೊಂದು ನುಡಿಯಿಂದ||
ಅಲ್ಲೆಲೂಯ.

ಶುಭಸಂದೇಶ: ಲೂಕ 7:31-35

ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?  ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.  ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;  ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.  ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.

15.09.2026 - IIಮಂಗಳವಾರII ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು

 ಮೊದಲನೇ ವಾಚನ: 1 ಕೊರಿಂಥಿಯರಿಗೆ  12:12-14, 27-31


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ - ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ. ದೇಹವು ಏಕ ಅಂಗದಿಂದ ಅಲ್ಲ, ಅನೇಕ ಅಂಗಗಳಿಂದ ಕೂಡಿದೆ. ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ. ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾ ಪಂಡಿತರನ್ನು ನೇಮಿಸಿದ್ದಾರೆ. ಎಲ್ಲರೂ ಪ್ರೇಷಿತರಲ್ಲ, ಎಲ್ಲರೂ ಪ್ರವಾದಿಗಳಲ್ಲ, ಎಲ್ಲರೂ ಬೋಧಕರಲ್ಲ, ಎಲ್ಲರೂ ಪವಾಡಪುರುಷರಲ್ಲ, ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ. ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. 

ಕೀರ್ತನೆ: 100:1-2, 3, 4, 5

ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು

ಭೊನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|
ಅತಿಸಂತೋಷದಿಂದ ಸೇವೆಮಾಡಿ ಆತನಿಗೆ||
ಹಾಡುತಾ, ಪಾಡುತಾ, ಬನ್ನಿ ಆತನ ಸನ್ನಿಧಿಗೆ||

ಪಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು||

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರ ಸ್ಮರಣೆಯೊಂದಿಗೆ||

ಹೌದು, ಪ್ರಭುವೆನಿತೋ ಒಳ್ಳೆಯವನು|
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಅಲ್ಲೆಲೂಯ, ಅಲ್ಲೆಲೂಯ!

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು, ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ,,
ಅಲ್ಲೆಲೂಯ!

ಶುಭಸಂದೇಶ: ಲೂಕ 7:11-17


ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು. ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು. 

ಕ್ಷಮೆಯ ಕುರಿತು ಬೈಬಲ್ ವಾಕ್ಯಗಳು



ಕೋಪವು ನಿಮ್ಮ ಹೃದಯವನ್ನು ನಿಯಂತ್ರಿಸುತ್ತಿರುವಾಗ - ಮತ್ತಾಯ 5:44 

ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; 
ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ

************************


ದೇವರ ಕ್ಷಮೆ ಅಗತ್ಯವಿರುವಾಗ - 1 ಯೊವಾನ್ನ 1:9 

ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ 
ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು 
ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು

************************


 ಮನಸ್ಸಿನಲ್ಲಿ ಶಾಂತಿಯನ್ನು ಬಯಸಿದಾಗ - ರೋಮನರಿಗೆ 12:18 

ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. 

************************


 ಪದೇ ಪದೇ ಕ್ಷಮಿಸುವುದು ಕಷ್ಟವಾಗುತ್ತಿರುವಾಗ - ಮತ್ತಾಯ 18:21–22

ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ

************************

20.09.2026 - ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು

ಮೊದಲನೇ ವಾಚನ: ಯೆಶಾಯ 55:6-9 ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ. ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದು...