03.05.2026 - “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:1-7


ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು. ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ. ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ. ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು. ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು. ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು. ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಕೀರ್ತನೆ: 33:1-2, 4-5, 18-19

ಶ್ಲೋಕ: ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ

ಎರಡನೇ ವಾಚನ: ೧ ಪೇತ್ರನು 2:4-9

ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು. ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ. ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.” ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.” “ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು. ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ. 

ಶುಭಸಂದೇಶ: ಯೊವಾನ್ನ 14:1-12

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು. ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು. ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿ ವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ." ಎಂದರು.

02.05.2026 - ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:44-52


ಮುಂದಿನ ಸಬ್ಬತ್ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು. ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು. ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ. ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’ ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು. ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು. ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು. ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು. ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.

ಕೀರ್ತನೆ: 98:1, 2-3, 3-4

ಶ್ಲೋಕ: ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ, ನಮ್ಮ ದೇವ ಸಾಧಿಸಿದ ಜಯಗಳಿಗೆ

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I
ಎಸಗಿಹನಾತನು ಪವಾಡಕಾರ್ಯಗಳನು I
ಗಳಿಸಿತಾತನ ಕೈ ಪೂತಭುಜ ಗೆಲುವನು II
ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II
ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II

ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I
ನಮ್ಮ ದೇವ ಸಾಧಿಸಿದ ಜಯಗಳಿಕೆ II
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II
ಭೂನಿವಾಸಿಗಳೇಮಾಡಿರಿ ಜಯಕಾರ ಪ್ರಭುವಿಗೆ I
   ಮುದದಿ ಹಾಡಿರಿಮಾಡಿರಿ ಸುಮಧುರ ಭಜನೆ II

ಶುಭಸಂದೇಶ ಯೊವಾನ್ನ 14:7-14

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, "ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು. ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು. ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ? ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ. ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ. ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು." ಎಂದರು

0105.2026 - ಇವನು ಆ ಬಡಗಿಯ ಮಗನಲ್ಲವೇ?

ಮೊದಲನೆಯ ವಾಚನ: ಆದಿಕಾಂಡದಿಂದ ಇಂದಿನ ವಾಚನ 1:26-2:3


ದೇವರು, "ನಮ್ಮಂತೆಯೇ ಇರುವ ಹಾಗೂ ನಮ್ಮನ್ನು ಹೋಲುವ ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ- ಚಿಕ್ಕ ಸಾಕುಪ್ರಾಣಿ ಹಾಗೂ ಕಾಡು ಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ, "ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, "ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿ ಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ ಭೂಮಿಯಲ್ಲಿರುವ ಎಲ್ಲ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ " ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆ ಏಳನೆಯ ದಿನವು ಪರಿಶುದ್ದವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲಾ ಮುಗಿಸಿ, ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಕೀರ್ತನೆ 90:2,3-4,12-13,14,17
ಶ್ಲೋಕ: ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ, ಓ ಪ್ರಭೂ!

ಬೆಟ್ಟಗಳು ಹುಟ್ಟುವುದಕ್ಕೆ ಮುಂಚಿನಿಂದ|
ಭೂದೇಶಗಳು ಆಗುವುದಕ್ಕೆ ಮೊದಲಿನಿಂದ|
ನೀನೆಮಗೆ ದೇವರು ಯುಗಯುಗಗಳಿಂದ||

ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ|
"ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ" ಎನ್ನುತಿಹೆ||
ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ|
ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ||

ಜೀವನಾವಧಿಯನು ಲೆಕ್ಕಿಸುವುದನ್ನು ನಮಗೆ ಕಲಿಸು|
ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು||
ಪ್ರಭೂ, ತಿರುಗಿ ಬಾ, ಕೋಪವೆಷ್ಟರ ತನಕ|
ನಿನ್ನ ಸೇವಕರ ಮೇಲಿರಲಿ ಮರುಕ||

ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ|
ಹರ್ಷಿಸಿ ಆನಂದಿಸುವೆವು ಆಗ ದಿನದಾದ್ಯಂತ||
ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ|
ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ||

ಘೋಷಣೆ (ಕೀರ್ತನೆ 68:20)
ಅಲ್ಲೆಲೂಯ, ಅಲ್ಲೆಲೂಯ!
ನಮ್ಮ ದೇವರು ಜೀವೋದ್ಧಾರಕ ದೇವರು ಹೌದು | ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 13:54-58


ಆ ಕಾಲದಲ್ಲಿ ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು? " ಎಂದು ಮಾತನಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ದೊರಕದು, "ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ. 

30.04.2026 - ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ

ಪ್ರೇಷಿತರ ಕಾರ್ಯಕಲಾಪಗಳಿಂದ ಇಂದಿನ ವಾಚನ 13: 13-25


ಪೌಲ ಮತ್ತು ಸಂಗಡಿಗರು ಪಾಫೂಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು.  ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು.  ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು.  ಸಬ್ಬತ್ ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.  ಧರ್ಮಶಾಸ್ತ್ರ ಮತ್ತು ಪವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, "ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,"  ಎಂದು ಕೇಳಿಕೊಂಡರು.  ಆಗ ಪೌಲನು ಎದ್ದುನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು:  "ಇಸ್ರಯೇಲ್ ಬಾಂಧವರೇ, ಹಾಗು ನಿಜ ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ,  ಕೇಳಿ: ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು.  ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು.  ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.  ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.  ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ಥ್ಯವಾಗಿ ಕೊಟ್ಟರು.  ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು.  ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು  ಕಳುಹಿಸಿದರು.  ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು.  ಇವನು ನಲ್ವತ್ತು ವರ್ಷ ಆಳಿದನು.  ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, "ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ;  ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,"  ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.  ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು.  ಇವರೇ ಯೇಸು.  ಇವರ ಆಗಮನಕ್ಕೆ ಸಿದ್ಧತೆಯಾಗಿ,  ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದನು.  ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದಂತೆ ಜನರಿಗೆ, "ನಾನು ಯಾರೆಂದು ನೀವು ನೆನೆಸುತ್ತೀರಿ?  ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ.  ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ'," ಎಂದನು.

ಕೀರ್ತನೆ:

89: 1-2, 20-21, 24, 26, v. l

ಶ್ಲೋಕ:  ಪ್ರಭೂ, ಕೀರ್ತಿಸುವೆನು ಸದಾ ನಿನ್ನ ಅಚಲ ಪ್ರೀತಿಯನು.


1.  ಪ್ರಭೂ, ಕೀರ್ತಿಸುವೆನು ಸದಾ ನಿನ್ನ ಅಚಲ ಪ್ರೀತಿಯನು|

ಸಾರುವೆನು ತಲೆತಲಾಂತರಕು ನಿನ್ನ ಸತ್ಯತೆಯನು||

ನಿನ್ನಚಲ ಪ್ರೀತಿ ಪ್ರಭೂ, ನನಗೆ ಶಾಶ್ವತ ಸಿದ್ದ|

ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ||

ಶ್ಲೋಕ


2.  ನನ್ನ ದಾಸ ದಾವೀದನನು ಗುರುತಿಸಿರುವೆ|

ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ||

ನನ್ನ ಕೈಯ ಆಸರೆ ಅವನಿಗಿದೆ ಸತತ|

ನನ್ನ ಭುಜಬಲವು ಅವನಿಗೆ ಶಕ್ತಿಯುತ||

ಶ್ಲೋಕ


3.  ನನ್ನ ಪ್ರೀತಿ ಸತ್ಯತೆಗಳು ಇರುವುದು ಅವನೊಂದಿಗೆ|

ನನ್ನ ನಾಮ ನಿಮಿತ್ತ ಕೋಡು ಮೂಡುವುದವನಿಗೆ||

ನನಗೆ ಪಿತ, ದೈವ, ದುರ್ಗ, ಉದ್ಧಾರಕ ನೀನು|

ಇಂತೆಂದೇ ನನ್ನನ್ನು ಸಂಬೋಧಿಸುವನವನು||

ಶ್ಲೋಕ


ಘೋಷಣೆ

ಅಲ್ಲೆಲೂಯ, ಅಲ್ಲೆಲೂಯ!

ಪ್ರಭು ಕ್ರಿಸ್ತರೇ, ನೀವೇ ನಂಬಲರ್ಹವಾದ ಸಾಕ್ಷಿಯೂ, ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ | ನಮ್ಮನ್ನು ಪ್ರೀತಿಸುವವರೂ, ನಿಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ ಆಗಿದ್ದೀರಿ. 

ಅಲ್ಲೆಲೂಯ!

ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 13: 16-20



ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು:  "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ;  ಧಣಿಗಿಂತ ದಾಸನು ದೊಡ್ಡವನಲ್ಲ.  ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.  ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು! ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ.  ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು.  ಆದರೆ  "ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು" ಎಂಬುದಾಗಿ ಪವಿತ್ರ  ಗ್ರಂಥದಲ್ಲಿ ಬರೆದಿದೆ.  ಆ ಮಾತು ಈಡೇರಬೇಕಾಗಿದೆ.  ಅದು ಈಡೇರುವಾಗ  "ಇರುವಾತನು ನಾನೇ"  ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.  ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ.  ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ."

29.04.2026 - ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:24--13:5


ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು. ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ ಎಂದು ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು. ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯಸ್ನೇಹಿತ ಮೆನಹೇನ ಮತ್ತು ಸೌಲ ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ವಿೂಸಲಾಗಿಡಿ,” ಎಂದರು. ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆ ಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು. ಸೈಪ್ರಸ್ ದ್ವೀಪದಲ್ಲಿ ಧರ್ಮಪ್ರಚಾರ ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು. ಅವರು ಸಲವಿೂಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾ ಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.

ಕೀರ್ತನೆ: 67:2-3, 5, 6, 8
ಶ್ಲೋಕ: ನಿನ್ನ ಕೀರ್ತಿಸಲಿ ದೇವಾ, ಜನರು, ಸಂಕೀರ್ತಿಸಲಿ ಅವರೆಲ್ಲರೂ

ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ /
ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ //
ನಿನ್ನ ಕೀರ್ತಿಸಲಿ ದೇವಾಜನರು /ಸಂಕೀರ್ತಿಸಲಿ ಅವರೆಲ್ಲರೂ //

ನಿನ್ನ ಕೀರ್ತಿಸಲಿ ದೇವಾಜನರು / 
ಸಂಕೀರ್ತಿಸಲಿ ಅವರೆಲ್ಲರೂ //

ಇತ್ತನೆಮ್ಮ ದೇವನು ಆಶೀರ್ವಾದವನು /
ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು //

ಶುಭ ಸಂದೇಶ : ಯೊವಾನ್ನ 12:44-50

ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ. ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ. ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ. ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ. ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ. ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ. ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”

28.04.2026 - "ನಿಮಗೆ ಸತ್ಯವಾಗಿ ಹೇಳುತ್ತೇನೆ ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ

 ಮೊದಲನೇ ವಾಚನ: ಪ್ರೇಷಿತರಕಾರ್ಯಕಲಾಪಗಳು 11:19-26


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ. ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು. ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು. ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು. ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು. ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು. ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.  ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.

ಕೀರ್ತನೆ: 87:1-3, 4-5, 6-7
ಶ್ಲೋಕ: ಸ್ತುತಿಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ

ಪವಿತ್ರ ಪರ್ವತದಲಿ ಕರ್ತನು I
ಸ್ಥಾಪಿಸಿಹನು ತನ್ನ ನಗರವನು II
ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I
ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II
ದೈವ ಶ್ರೀನಗರವೇಕೇಳು ಇವನ್ನು I
ನಿನ್ನ ಕುರಿತ ಅತಿಶಯೋಕ್ತಿಗಳನು : II

ನನಗೆ ಮಣಿಯುವ ರಾಷ್ಟ್ರಗಳಲಿ I
ಈಜಿಪ್ಟ್ಬಾಬೆಲ್ ದೇಶಗಳನು ಲೆಕ್ಕಿಸುವೆ II
ಜೆರುಸಲೇಮಿನ ನಿವಾಸಿಗಳಲಿ I
ಪಿಲಿಷ್ಟಿಯಟೈರ್ಎಥಿಯೋಪಿಯ ಜನ ಸೇರಿವೆ II
ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I
ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II

ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I
ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II
ಗಾಯಕ ನರ್ತಕರೂ ಹಾಡುವರೀ ಹಾಡ I

ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II

ಯೊವಾನ್ನ 10:22-30


ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು. ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು. ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು. ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ. ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ. ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು, ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು. ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.

27.04.2026 - ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ

ಮೊದಲನೇ ವಾಚನ: ಪ್ರೇಷಿತರಕಾರ್ಯಕಲಾಪಗಳು 11:1-18


ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು. ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು, “ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟ ಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು. ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು: “ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು. ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು. ಆಗ, ‘ಪೇತ್ರ, ಏಳು, ಕೊಯ್ದು ತಿನ್ನು’ ಎಂಬ ವಾಣಿ ನನಗೆ ಕೇಳಿಸಿತು. ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ. ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು. ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು. ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರು ಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು. ನಾನು ಸಂಕೋಚ ಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರು ಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು. ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು. ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು. ನಾನು ಉಪದೇಶ ಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದು ಬಂದರು. ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು. ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯ ಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯ ಧರ್ಮದವರೂ ಪಶ್ಚಾತ್ತಾಪಪಟ್ಟು ನವ ಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವ ಸ್ತುತಿ ಮಾಡಿದರು.

ಕೀರ್ತನೆ: 42:2-3; 43:3-4
ಶ್ಲೋಕ: ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ,
ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ

ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ /
ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? //
“ಎಲ್ಲಿನಿನ್ನ ದೇವನೆಲ್ಲಿ?” ಎಂದು ಜನ  ಜರೆಯುತಿರಲು /
ಕಂಬನಿಯೆ ನನಗನ್ನಪಾನವಾಗಿಹುದು  ಹಗಲಿರುಳು //

ಕಳುಹಿಸು ನಿನ್ನ ಜ್ಯೋತಿಯನು
ನಿನ್ನ ಸತ್ಯವನ್ನು ನನ್ನ ನಡೆಸಲಿಕೆ /
ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ
ನಿನ್ನಯ ನಿವಾಸಕೆ //
ಬರುವೆನಾಗ ನಿನ್ನ ಬಲಿಪೀಠದ ಬಳಿಗೆ /
ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ /
ವೀಣೆ ನುಡಿಸಿ ದೇವಾನಿನ್ನ ಸ್ತುತಿಸಲಿಕೆ //

ಯೊವಾನ್ನ 10:1-10


ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿ ಬರುವವನು ಕಳ್ಳ ಹಾಗೂ ಕೊಳ್ಳೆಗಾರ. ಬಾಗಿಲ ಮೂಲಕ ಬರುವವನು ಕುರಿಗಾಹಿ. ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ. ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು. ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ.” ಯೇಸುಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ. ಆದುದರಿಂದ ಯೇಸುಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು. ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು, ಕುರಿಗಳು ಅವರಿಗೆ ಕಿವಿಗೊಡಲಿಲ್ಲ. ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ. ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ, ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು. ಎಂದರು.

03.05.2026 - “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 6:1-7 ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾ...