ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:14, 22-33
ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನ ಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಇಸ್ರಯೇಲ್ ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತ ಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ. ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ. ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ. ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮತ್ರ್ಯದೇಹ. ಏಕೆನೆ, ದೂಡಲಾರೆ ಪಾತಾಳಕ್ಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು. ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀ ಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’ “ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ‘ಆತನನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’ ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಯೇಸು, ದೇವರ ಬಲಪಾಶ್ರ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನ ಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.
ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೋಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು. ಹೀಗೆ ಮಾತನಾಡಿಕೊಂಡು ಚರ್ಚೆಮಾಡುತ್ತಾ ಹೋಗುತ್ತಿರುವಾಗ, ಯೇಸುಸ್ವಾಮಿಯೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು. ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು. “ನೀವು ತರ್ಕ ಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು. “ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ನಮ್ಮ ಮುಖ್ಯ ಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು. ಇಸ್ರಯೇಲನ್ನು ಬಿಡುಗಡೆ ಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟು ಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರುದಿನಗಳು ಆಗಿವೆ. ಆದರೂ ನಮ್ಮಲ್ಲಿ ಕೆಲವು ಮಂದಿ ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು. ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು. ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು! ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ದಿಯನ್ನು ಪಡೆಯಬೇಕಾಗಿತ್ತು ಅಲ್ಲವೇ?” ಎಂದರು. ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರ ಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು. ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು. ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು. ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರ ಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೇ?” ಎಂದುಕೊಂಡರು. ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. “ಪ್ರಭು ಜೀವಂತರಾಗಿ ಎದ್ದಿರುವುದು ನಿಜ ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು.










