21.06.2026 - ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು

 ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ. 

ಕೀರ್ತನೆ: 69:8-10, 14, 17, 33-35

ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

1.  ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ|
ನಾಚಿಕೆಯಿಂದಲೇ ಮುಖ ಮುಚ್ಚಿಕೊಂಡೆನಯ್ಯಾ||
ನನ್ನವರಿಗೇ ನಾನು ಅನ್ಯನಾದೆನಯ್ಯಾ|
ಒಡಹುಟ್ಟಿದವರಿಗೇ ಹೊರಗಿನವನಾದೆನಯ್ಯಾ||
ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದ ಅಭಿಮಾನ|
ಎನ್ನ ಮೇಲೆರಗಿದೆ ನಿನ್ನ ಕಡು  ದ್ರೋಹಿಗಳ ದೂಷಣ||
ಶ್ಲೋಕ

2.  ಪ್ರಸನ್ನಕಾಲದಲ್ಲಿ ಪ್ರಭೂ, ನಾ ಮೊರೆಯಿಡುತ್ತಿರುವೆ ನಿನಗೆ|
ಪ್ರೀತಿಮಯ ದೇವಾ, ಜೀವೋದ್ಧಾರಕಾ, ಸದುತ್ತರ ನೀಡೆನಗೆ||
ಆಲಿಸೆನ್ನ ಪ್ರಭೂ, ನಿನ್ನ ಪ್ರೀತಿ ಸುಮಧುರ|
ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ||
ಶ್ಲೋಕ

3.  ಇದನರಿತು ದೀನದಲಿತರು ಆನಂದಗೊಳ್ಳಲಿ|
ದೇವನನು ಅರಸುವವರು ಪುನಶ್ಚೇತನಗೊಳ್ಳಲಿ||
ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು|
ಭೂಮ್ಯಾಕಾಶಗಳು ಆತನನು ಕೊಂಡಾಡಲಿ|
ಸಾಗರಗಳು, ಜಲಚರಗಳು ಆತನನ್ನು ಭಜಿಸಲಿ||
ಶ್ಲೋಕ

ಎರಡನೇ ವಾಚನ: ರೋಮನರಿಗೆ  5:12-15

ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ. ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

ಘೋಷಣೆ
(ಯೊವಾನ್ನ 15: 15)

ಅಲ್ಲೆಲೂಯ, ಅಲ್ಲೆಲೂಯ!
ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ | ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ ||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 10:26-33

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.

20.06.2026 - ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ

 ಮೊದಲನೇ ವಾಚನ: 2 ಪೂರ್ವಕಾಲದ ಇತಿಹಾಸ 24:17-25 


 ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡ ಬಿದ್ದು ಅವನನ್ನು ಒಲಿಸಿಕೊಂಡರು. ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಆಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸತೊಡಗಿದರು. ಅವರ ಈ ಆಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವ ಕೋಪ ಎರಗಿತು. ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ, ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನು ದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತ ಸ್ಥಾನದಲ್ಲಿ ನಿಂತು, "ದೇವರ ಮಾತುಗಳನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶರಸ್ವಾಮಿಯನ್ನು ಬಿಟ್ಟಿದ್ದರಿಂದ ಅವರೂ ನಿಮ್ಮನ್ನು ಬಿಟ್ಟು ಬಿಟ್ಟಿದ್ದಾರೆ." ಎಂದನು. ಆಗ ಅವರು ಆತನಿಗೆ ವಿರೋಧವಾಗಿ ಹೊಳಸಂಚು ಮಾಡಿ, ಸರ್ವೇಶ್ವರನ ಆಲಯದ  ಪ್ರಾಕಾರದಲ್ಲಿ ಅವನನ್ನ ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು. ಜೆಕರಿಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, "ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ" ಎಂದನು. ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿ ಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮ ಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.     

ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು ಬಿಟ್ಟಿದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ  ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು. ಕಠಿಣವಾಗಿ ಗಾಯಗೊಂಡದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದವನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದ ನಗರದೊಳಗೆ ಸಮಾಧಿ ಮಾಡಿದರು; ಆದರೆ ರಾಜ ಸ್ಮಶಾನದಲ್ಲಿ ಮಾಡಲಿಲ್ಲ. 

ಕೀರ್ತನೆ 89:4-5, 29-30, 31-32, 33-34 
ಶ್ಲೋಕ : ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ. 

ಶುಭಸಂದೇಶ: ಮತ್ತಾಯ 6:24-34 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆ ಮಾಡಲು ನಿಮ್ಮಿಂದಾಗದು."  "ನಾನು ಹೇಳುವುದನ್ನು ಕೇಳಿ; "ಪ್ರಾಣದಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು" ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದಲ್ಲವೇ? ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನು ಗಮನಿಸಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೇ? ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ , ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಲ್ಪ ವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆ ಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ  ಎಂದು ಸ್ವರ್ಗದಲ್ಲಿವ ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು. ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು."

19.06.2026 - ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ.

 ಮೊದಲನೇ ವಾಚನ: 2 ಅರಸುಗಳು 11:1-4, 8-18, 20 


ಏಳನೆಯ ವರ್ಷದಲ್ಲಿ ಯೆಹೋಯಾದವನು 'ಕಾರಿ' ಎಂಬ ಸಿಪಾಯಿಗಳ ಮತ್ತು ಕಾವಲು ದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು. ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು. ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಭರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು. ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ, ಸಾಲಾಗಿ ನಿಂತರು. ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೇ ಜನರು ಚಪ್ಪಾಳೆ ಹೊಡೆದು 'ಅರಸನು ಚಿರಂಜೀವಿಯಾಗಲಿ!' ಎಂದು ಜಯಕಾರ ಮಾಡಿದರು. ಅತಲ್ಯಳು ಕಾವಲು ದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು. ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನ ಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡಕೂಡಲೇ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, "ದ್ರೋಹ! ದ್ರೋಹ!" ಎಂದು ಕೂಗಿದಳು. ಆಗ ಯಾಜಕನಾದ ಯೆಹೋಯಾದವನು ಸೇನಾನಿಗಳಾದ ಶತಾಧಿಪತಿಗಳಿಗೆ, "ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂತವರನ್ನು ಕತ್ತಿಯಿಂದ ಕೊಲ್ಲಿರಿ," ಎಂದು ಆಜ್ಞಾಪಿಸಿದನು. 

ಕೀರ್ತನೆ:132:11-12, 13-14, 17-18 

ಶ್ಲೋಕ : ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನ್ನು. 

ಶುಭಸಂದೇಶ: ಮತ್ತಾಯ 6:19-23


"ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದಿಯಾರು. ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ. ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲಾ  ಕಾಂತಿಮಯವಾಗುವುದು. ಅದು ಕೆಟ್ಟದ್ದರೆ ನಿನ್ನ ದೇಹವೆಲ್ಲ ಕತ್ತಲಮಯವಾಗುವುದು!" ಎಂದು ಯೇಸುಸ್ವಾಮಿ ಹೇಳಿದರು.

18.06.2026 - ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ

 ಮೊದಲನೇ ವಾಚನ: ಸಿರಾಖನು 48:1-14

ಎಲೀಯನು ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ. ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕುಂದಿಸಿದನು ತನ್ನ ರೋಷದಿಂದಲೆ. ಆಕಾಶವನ್ನೇ ಮುಚ್ಚಿಬಿಟ್ಟನು ಸರ್ವೇಶ್ವರನ ಹೆಸರಿನಲ್ಲಿ ಬೆಂಕಿಯಿಳಿಯುವಂತೆ ಮಾಡಿದನು ಮೂರುಸಾರಿ. ಎಲೈ ಎಲೀಯನೇ, ಮಹತ್ಕಾರ್ಯಗಳಲ್ಲಿ ನೀನು ಎಷ್ಟು ಘನವಂತನಾಗಿದ್ದೆ ! ನಿನ್ನಂತೆ ಹೆಚ್ಚಳಪಡುವವರು ಯಾರಿದ್ದಾರೆ? ಸತ್ತವನನ್ನು ನೀನೆಬ್ಬಿಸಿದೆ ಮರಣದಿಂದ, ಪಾತಾಳದಿಂದ ಇದು ಸಾಧ್ಯವಾಯಿತು ಮಹೋನ್ನತನ ವಾಕ್ಯ ಶಕ್ತಿಯಿಂದ. ಅರಸುಗಳನ್ನು ನಾಶನಕ್ಕೆ ಗುರಿಮಾಡಿದವನು ನೀನು ಗಣ್ಯವ್ಯಕ್ತಿಗಳನ್ನು ಮಂಚದಿಂದ ಇಳಿಸಿದವನು ನೀನು. ಸೀನಾಯಿನಲ್ಲಿ ಗದರಿಸಿಕೊಂಡವನು ನೀನು ಹೋರೇಬಿನಲ್ಲಿ ಮುಯ್ಯಿತೀರಿಸುವ ನಿರ್ಣಯ ಕೇಳಿಸಿಕೊಂಡವನು ನೀನು. ಪ್ರತೀಕಾರ ಮಾಡುವುದಕ್ಕೆ ಅರಸರನ್ನು, ನಿನ್ನಾನಂತರ ಇರಬೇಕಾದ ಪ್ರವಾದಿಯನ್ನು ಅಭಿಷೇಕಿಸಿದವನು ನೀನು. ನೀ ಒಯ್ಯಲ್ಪಟ್ಟೆ ಬೆಂಕಿಯ ಬಿರುಗಾಳಿಯಲ್ಲಿ ಅಗ್ನಿಮಯ ಕುದುರೆಗಳೆಳೆದ ರಥದಲ್ಲಿ. ಕೋಪ ರೌದ್ರಕ್ಕೇರುವುದಕ್ಕೆ ಮುಂಚೆ ಅದನ್ನು ಶಾಂತಪಡಿಸುವುದಕ್ಕಾಗಿ ತಂದೆಯ ಹೃದಯವನ್ನು ಮಗನ ಕಡೆಗೆ ತಿರುಗಿಸುವುದಕ್ಕಾಗಿ ಇಸ್ರಯೇಲಿನ ಕುಲಗಳನ್ನು ಯಥಾಸ್ಥಿತಿಗೆ ತರುವುದಕ್ಕಾಗಿ ತಕ್ಕಕಾಲದಲ್ಲಿ ಗದರಿಸುವಾತ ನೀನೆಂದು ಬರೆದಿದೆ ನಿನ್ನ ವಿಷಯವಾಗಿ. ನಿನ್ನನು ನೋಡುವವರು ಧನ್ಯರು ಪ್ರೀತಿಯಿಂದ ನಿಧನರಾದವರು ಧನ್ಯರು ! ಕಾರಣ, ನಾವು ಸಹ ನಿಜವಾಗಿ ಜೀವಿಸುವೆವು. ಎಲೀಷ ಸುಳಿಗಾಳಿಯಿಂದ ಆವರಿಸಲ್ಪಟ್ಟವನು ಎಲೀಯನು ಅವನ ಆತ್ಮದಿಂದ ತುಂಬಿಕೊಂಡವನು ಎಲೀಷನು. ಇವನು ತನ್ನ ಜೀವನದಲ್ಲಿ ಜಗ್ಗಲಿಲ್ಲ ಯಾವ ಅರಸನ ಬೆದರಿಕೆಗು ಇವನನ್ನು ಅಧೀನದಲ್ಲಿಟ್ಟುಕೊಳ್ಳುವ ಶಕ್ತಿ ಇರಲಿಲ್ಲ ಯಾರಿಗು. ಇವನು ಸೋಲಲಿಲ್ಲ ಯಾವ ಮಾತಿಗು ಇವನ ದೇಹ ಪ್ರವಾದಿಸಿತು ಸತ್ತ ಮೇಲೂ. ಜೀವಮಾನಕಾಲದಲ್ಲಿ ಎಸಗಿದನು ಮಹತ್ಕಾರ್ಯಗಳನ್ನು ಸತ್ತಮೇಲೂ ಅವನ ಕಾರ್ಯಗಳು ಅಗಾಧವಾಗಿದ್ದವು.

ಕೀರ್ತನೆ: 97:1-2, 3-4, 5-6, 7

ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ

1.  ಇದೆ ಪ್ರಭುವಿನ ಕೈಯಲಿ  ರಾಜ್ಯಾಧಿಕಾರ|
ಉಲ್ಲಾಸಿಸಲಿ  ಧರಣಿಮಂಡಲದಾದ್ಯಂತ||
ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ|
ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು|
ನ್ಯಾಯ ನೀತಿ ಆತನ ಗದ್ದುಗೆಯಸ್ತಿವಾರಗಳು||
ಶ್ಲೋಕ

2.  ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ|
ಸುಡುತ್ತದೆ ಆತನ ವೈರಿಗಳನ್ನು ಎಲ್ಲೆಡೆ||
ಇಳೆಯನು ಬೆಳಗಿಸುತ್ತದೆ ಆತನ ಮಿಂಚು|
ನಡುಗುತ್ತದೆ  ಭೂಮಿ ಅದಕ್ಕೆ ಬೆಚ್ಚುಬಿದ್ದು||
ಶ್ಲೋಕ

3.  ಸಾರ್ವಭೌಮನಾದ ಪ್ರಭುವಿನ ಮುಂದೆ|
ಕರಗುತ್ತವೆ ಬೆಟ್ಟಗುಡ್ಡಗಳು  ಮೇಣದಂತೆ||
ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು|
ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು||
ನಾಚಲಿ ವ್ಯರ್ಥ ವಿಗ್ರಹಗಳನ್ನು ಪೂಜಿಸಿ ಹಿಗ್ಗುವವರು|
ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು||
ಶ್ಲೋಕ

ಘೋಷಣೆ
(ಯೊವಾನ್ನ 10: 27)

ಅಲ್ಲೆಲೂಯ, ಅಲ್ಲೆಲೂಯ!
ನನ್ನ  ಕುರಿಗಳಾದರೋ  ನನ್ನ  ಸ್ವರವನ್ನು  ಗುರುತಿಸುತ್ತೇವೆ;| ನಾನು  ಅವನ್ನು  ಬಲ್ಲೆನು,  ಅವು  ನನ್ನನ್ನು  ಹಿಂಬಾಲಿಸುತ್ತವೆ||
ಅಲ್ಲೆಲೂಯ!



ಶುಭಸಂದೇಶ: ಮತ್ತಾಯ 6:7-15


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ. ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ: ‘ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ. ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’ “ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು. ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.”

17.06.2026 - ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ

 ಮೊದಲನೇ ವಾಚನ: 2 ಅರಸುಗಳು 2:1, 6-14



ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು. ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು. ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು. ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು. ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು. ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು. ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು. “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು. 

ಕೀರ್ತನೆ: 31:20, 21, 24
ಶ್ಲೋಕ: ಪ್ರಭುವಿಗಾಗಿ ಕಾದಿಹೆ ಜನರೇ, ನಿಮಗಿರಲಿ ಅಭಯ

ಶುಭಸಂದೇಶ: ಮತ್ತಾಯ 6:1-6, 16-18


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿ ಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನ ಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”

16.06.2026 - ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ

 ಮೊದಲನೇ ವಾಚನ: 1 ಅರಸುಗಳು 21:17-29



ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು. “ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ; ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.” ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ. ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು. ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ. ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು; ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು. ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ. ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು. ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು. ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ, “ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.

ಕೀರ್ತನೆ: 51:3-4, 5-6, 11, 16

ಶ್ಲೋಕ: ಕೃಪಾಳು ದೇವಾ, ಕರುಣಿಸೆನ್ನನು, ನಿನಗೆ ದ್ರೋಹವೆಸಗಿದೆ

ಶುಭಸಂದೇಶ: ಮತ್ತಾಯ 5:43-48


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ: “ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”

15.06.2026 - ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ.

 ಮೊದಲನೇ ವಾಚನ: 1 ಅರಸುಗಳು 21:1-16



ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು. ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು. ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು. ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು. ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು. ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು. ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು. ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು. ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ; ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು. ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು. ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು; ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು. ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು. ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.

ಕೀರ್ತನೆ: 5:2-3, 4-6, 6-7

ಶ್ಲೋಕ: ಕಿವಿಗೊಡು ಪ್ರಭೂ, ಎನ್ನ ನುಡಿಗೆ 

ಶುಭಸಂದೇಶ: ಮತ್ತಾಯ 5:38-42

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”

21.06.2026 - ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು

  ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13 ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್...