19.04.2026 - ಪವಿತ್ರ ಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೇ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:14, 22-33


ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನ ಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಇಸ್ರಯೇಲ್ ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತ ಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ. ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ. ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ. ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮತ್ರ್ಯದೇಹ. ಏಕೆನೆ, ದೂಡಲಾರೆ ಪಾತಾಳಕ್ಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು. ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀ ಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’ “ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ‘ಆತನನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’ ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಯೇಸು, ದೇವರ ಬಲಪಾಶ್ರ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನ ಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.

ಕೀರ್ತನೆ: 16:1-2, 5, 7-8, 9-10, 11

ನೀಡು ದೇವಾ ರಕ್ಷಣೆಯನು I
ನಾ ನಿನಗೆ ಶರಣಾಗತನು II
ನೀನೇ ನನ್ನೊಡೆಯ"ನೆಂದು ನಾ ನುಡಿದೆ I
ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II

ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I
ನಿನ್ನ ಕೈಯಲ್ಲಿದೆ ಪ್ರಭುನನ್ನ ವಿಮೆ I

ಪ್ರಭುವಿಗೆನ್ನ ಧನ್ಯವಾದ ಆತನೇ ನನಗೆ ಮಾರ್ಗದರ್ಶಕ I
ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II

ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I
ಆನಂದಗೊಂಡಿದೆ ಮನಸುರಕ್ಷಿತವಿದೆ ಕಾಯ II
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I
ಬಿಟ್ಟುಕೊಡುವುದಿಲ್ಲ ನಿನ್ನ  ಭಕ್ತನನು ಪಾತಾಳಕೆ II

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I

ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I

ಶ್ಲೋಕ: ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು

ಎರಡನೇ ವಾಚನ: 1 ಪೇತ್ರ 1:17-21

ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ. ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿ ಹೋಗುವ ಬೆಳ್ಳಿಬಂಗಾರವಲ್ಲ. ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ. ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು. ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.

ಶುಭಸಂದೇಶ: ಲೂಕ 24:13-35


ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೋಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು. ಹೀಗೆ ಮಾತನಾಡಿಕೊಂಡು ಚರ್ಚೆಮಾಡುತ್ತಾ ಹೋಗುತ್ತಿರುವಾಗ, ಯೇಸುಸ್ವಾಮಿಯೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು. ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು. “ನೀವು ತರ್ಕ ಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು. “ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ನಮ್ಮ ಮುಖ್ಯ ಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು. ಇಸ್ರಯೇಲನ್ನು ಬಿಡುಗಡೆ ಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟು ಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರುದಿನಗಳು ಆಗಿವೆ. ಆದರೂ ನಮ್ಮಲ್ಲಿ ಕೆಲವು ಮಂದಿ ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು. ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು. ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು! ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ದಿಯನ್ನು ಪಡೆಯಬೇಕಾಗಿತ್ತು ಅಲ್ಲವೇ?” ಎಂದರು. ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರ ಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು. ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು. ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು. ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರ ಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೇ?” ಎಂದುಕೊಂಡರು. ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. “ಪ್ರಭು ಜೀವಂತರಾಗಿ ಎದ್ದಿರುವುದು ನಿಜ ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು.

17.04.2026 - “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,”

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:34-42


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದು ನಿಂತು ಪ್ರೇಷಿತರನ್ನು ಸ್ವಲ್ಪ ಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಬಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ. ಸ್ವಲ್ಪ ಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು. ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದುರಿಹೋದರು. ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು. ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು. ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು. ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು. ಯೇಸುವೇ ಲೋಕೋದ್ದಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.

ಕೀರ್ತನೆ: 27:1, 4, 13-14
ಶ್ಲೋಕ: ನಾನೊಂದನು ಕೋರಿದೆ ಪ್ರಭುವಿನಿಂದ, ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ 


ನನಗೆ ಬೆಳಕುನನಗೆ ರಕ್ಷೆಪ್ರಭುವೆ I

ನಾನಾರಿಗೂ ಅಳುಕೆನು II
ನನ್ನ ಬಾಳಿಗಾಧಾರ ಪ್ರಭುವೆ I
ನಾನಾರಿಗೂ ಅಂಜೆನು II

ನಾನೊಂದನು ಕೋರಿದೆ ಪ್ರಭುವಿನಿಂದ I
ನಾನದನ್ನೇ ನಿರೀಕ್ಷಿಸಿದೆ ಆತನಿಂದ I
ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I
ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II

ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I
ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II
ಪ್ರಭುವನು ಎದುರುನೋಡುತ್ತಿರು ಮನವೇ I
ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಶುಭಸಂದೇಶ: ಯೊವಾನ್ನ 6:1-15


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು. ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ  ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದ್ದನ್ನು ಆ ಜನರು ನೋಡಿದ್ದರು. ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು. ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು. ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು. ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು. ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು. ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು, “ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ವಿೂನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತವೆ?” ಎಂದನು. ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು. ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ವಿೂನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು. ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು. ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು. ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

ಮನಸಿಗೊಂದಿಷ್ಟು 

ಇಂದಿನ ಶುಭ ಸಂದೇಶವು ಹಳೆಯ ಒಡಂಬಡಿಕೆಯ ಪ್ರವಾದಿ ಎಲೀಷನ ಇದೇ ರೀತಿಯ  ಘಟನೆಯನ್ನು (2 ಅರಸರು 4:42:44) ನೆನಪಿಸುತ್ತದೆ. ಈ ಶುಭ ಸಂದೇಶದ ಭಾಗದಲ್ಲಿ ನಾವು ಅನೇಕ ಪಾತ್ರಗಳನ್ನು ಕಾಣಬಹುದು. ಈ ಪಾತ್ರಗಳಲ್ಲಿ ನಾವು ಯಾವ ಪಾತ್ರಕ್ಕೆ ಹತ್ತಿರವಾಗಿದ್ದೇವೆ ಎಂಬುದಾಗಿ ಪ್ರಶ್ನಿಸಿಕೊಳ್ಳಲು ಸಹಾಯ ಮಾಡುತ್ತದೆ.

ಯೇಸುವನ್ನು ನೋಡಲು, ಅವರ ಮಾತುಗಳನ್ನು ಕೇಳಲು ಗುಣವಾಗಲು ಬಂದವರ ಜೊತೆ ಪಾಸ್ಕ ಹಬ್ಬಕ್ಕೆ ಹೊರಟಿದ್ದ ಪ್ರವಾಸಿಗರು ಎಲ್ಲರೂ ಅಲ್ಲಿ ಬಂದು ಸೇರಿದ್ದರು. ಯೇಸು ಜನರನ್ನು ನೋಡಿ ಮರುಕ ಗೊಳ್ಳುತ್ತಾರೆ ಅವರಿಗೆ ತಿನ್ನಲು ಏನಾದರೂ ನೀಡಬೇಕು ಎಂದುಕೊಳ್ಳುತ್ತಾರೆ. ಆದರೆ ಪರೀಕ್ಷಿಸಲೋ ಎಂಬಂತೆ ಫಿಲೀಪನನ್ನು ಕೇಳುತ್ತಾರೆ.

ಫೀಲಿಪ್ಪನದು ನಮ್ಮಂತೆಯೇ ಮನೋಭಾವ. ಅಲ್ಲಿ ಸೇರಿದ ದೊಡ್ಡ ಜನಸಮೂಹಇರುವ ೨೦೦ ದಿನಾರಿಯಷ್ಟು ಸಣ್ಣ ಹಣ ಅವನನ್ನು ನಿರುತ್ಸಾಹಗೊಳಿಸುತ್ತದೆ. ಯೇಸುವೇ ತನ್ನ ಜೊತೆ ಇದ್ದಾರೆ ಎನ್ನುವುದನ್ನು ಆತ ಮರೆಯುತ್ತಾನೆ. ಅಂದ್ರೆಯ ಎಂದಿನಂತೆ ಉತ್ಸಾಹ ತೋರುತ್ತಾನೆ. 5 ರೊಟ್ಟಿ 2 ಮೀನು ಇಟ್ಟಿದ್ದ ಹುಡುಗನನ್ನು ಹುಡುಕಿ ಯೇಸುವಿನ ಬಳಿ ಕರೆ ತರುತ್ತಾನೆ. ಹುಡುಗ ತನ್ನ ಬಳಿಯಿದ್ದ ಆಹಾರವನ್ನು ಹಂಚಿಕೊಳ್ಳಲು ಒಪ್ಪುತ್ತಾನೆ. ಮುಂದಿನದು ಇತಿಹಾಸ. 5000ಕ್ಕಿಂತ ಹೆಚ್ಚಿನ ಜನರ ಹಸಿವು ನೀಗುತ್ತದೆ.

ಈ ಶುಭ ಸಂದೇಶದಲ್ಲಿ ಬರುವ ವಿವಿಧ ರೀತಿಯ ಜನರಲ್ಲಿ ನಾವು ಯಾವ ರೀತಿಯ ವ್ಯಕ್ತಿತ್ವದವರು ಎಂಬುದನ್ನು ಪ್ರಶ್ನಿಸಿಕೊಳ್ಳಬಹುದು. ಯೇಸುವಿನ ಮಾತನ್ನು ಕೇಳಲು ಮಾತ್ರ ಬಂದವರೇ, ಅವರ ಕಾರ್ಯಗಳನ್ನು ನೋಡಲು ಬಂದವರೇ? ನಿಜ ಪ್ರೀತಿಯಿಂದ ಹಾತೊರೆದು ಬಂದವರೇ? ಕೇವಲ ಕುತೂಹಲದಿಂದ ನೊಡಲು ಬಂದ ಪಯಣಿಗರೇಅವರ ಅಗಾಧ ಮಹಿಮೆಯನ್ನು ಕಾಣದ ಫಿಲಿಪ್ ನಂಥವರೇ? ಅದ್ಭುತಕ್ಕೆ ಮುನ್ನುಡಿಯಾದ ಅಂದ್ರೆಯನಂಥವರೇ ಹಂಚಿಕೊಳ್ಳಲು ಸಿದ್ಧನಾಗಿ ಅದ್ಭುತಕ್ಕೆ ಕಾರಣನಾದ ಆ ಹುಡುಗನಂತೆಯೇ?

ಕೊನೆಗೆ ತಮ್ಮ ಅದ್ಭುತ ಕಾರ್ಯದಿಂದ ಸೃಷ್ಟಿಯಾದ ಆಹಾರವು ಸ್ವಲ್ಪವೂ ಹಾಳಾಗದಂತೆ ಎಲ್ಲವನ್ನು ಯೇಸು ಒಟ್ಟುಗೂಡಿಸುತ್ತಾರೆ.  ಅವರ ಅದ್ಭುತ ಹಸ್ತದಲ್ಲಿ ಬಾಳುತ್ತಿರುವ ನಮ್ಮ ಜೀವನ ಹಾಳಾಗದಂತೆ ಅವರಲ್ಲಿ ಒಟ್ಟುಗೂಡೋಣ


16.04.2026 - ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:27-33



ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನ ಯಾಜಕನು ಅವರನ್ನು ಉದ್ದೇಶಿಸಿ, “ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿ ಹರಡಿದೆ. ಅಷ್ಟು ಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು. ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ. ನೀವು ಶಿಲುಬೆಗೇರಿಸಿ ಕೊಂದು ಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ. ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ  ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪ ಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ. ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು. ಇದನ್ನು ಕೇಳಿದ ಸಭಾಸದಸ್ಯರು ಕ್ರೋದಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.

ಕೀರ್ತನೆ: 34:2, 9, 17-18, 19-20
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು

ಪ್ರಭುವಿನಲ್ಲಿದೆ ನನ್ನ ಮನದಭಿಮಾನ 
ದೀನರಿದನು ಕೇಳಿಪಡೆಯಲಿ ಸುಮ್ಮಾನ 
ದೇವಜನರೆನಿಮಗಿರಲಿ ಪ್ರಭುವಿನ ಭಯಭಕುತಿ 
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ 

ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ 
ನೆರವೀವನವರ ಕಷ್ಟನಿವಾರಣೆಗೆ 
ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ 
ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ 

ಸಜ್ಜನನಿಗೊದಗುವ ಸಂಕಟಗಳು ವಿಪರೀತ
ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ 
ಕಾಪಾಡುವನು ಅವನೆಲಬುಗಳೆಲ್ಲವನ್ನೂ 
ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ 

ಶುಭಸಂದೇಶ: ಯೊವಾನ್ನ 3:31-36



ಸ್ನಾನಿಕ ಯೊವನ್ನನು ತನ್ನ ಶಿಷ್ಯರಿಗೆ ಹೀಗೆಂದು ಹೆಳಿದನು: “ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು. ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ. ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ. ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ. ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” 

15.04.2026 - ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:17-26



ಪ್ರಧಾನ ಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು. ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು. ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು. “ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು. ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನ ಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು. ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು; “ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು. ದೇವಾಲಯದ ದಳಪತಿ ಮತ್ತು ಮುಖ್ಯ ಯಾಜಕರು ಇದನ್ನು ಕೇಳಿ ಇದರಿಂದೇನಾಗುವುದೋ ಎಂದು ಕಳವಳಗೊಂಡರು. ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿ ಇಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ.” ಎಂದನು. ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲುತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ

ಕೀರ್ತನೆ: 34:2-3, 4-5, 6-7, 8-9 
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು

ಪ್ರಭುವಿನಲ್ಲಿದೆ ನನ್ನ ಮನದಭಿಮಾನ 
ದೀನರಿದನು ಕೇಳಿಪಡೆಯಲಿ ಸುಮ್ಮಾನ 
ಬನ್ನಿಕೊಂಡಾಡುವ ಪ್ರಭು ದೇವನನು 
ಘನಪಡಿಸೋಣ ಅವನ ಶ್ರೀನಾಮವನು

ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು 
ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು 
ಆತನತ್ತ ತಿರುಗಿದ ಮುಖ ಅರಳುವುದು 
ಲಜ್ಜೆಯಿಂದೆಂದಿಗು ಕುಂದಿಹೋಗದು 

ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು
ಸರ್ವಾಪತ್ತಿನಿಂದವನು ಮುಕ್ತಗೊಂಡನು
ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು
ಕಾಯುವನು ಪ್ರಭುವಿನ ದೂತನೆ ಬಂದಿಳಿದು

ಸವಿದು ನೋಡು ಪ್ರಭುವಿನ ಮಾಧುರ್ಯವನು
ಆತನನು ಆಶ್ರಯಿಸಿಕೊಂಡವನು ಧನ್ಯನು 
ದೇವಜನರೆನಿಮಗಿರಲಿ ಪ್ರಭುವಿನ ಭಯಭಕುತಿ 
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ 

ಶುಭಸಂದೇಶ: ಯೊವಾನ್ನ 3:16-21

ಯೇಸುಸ್ವಾಮಿ ನಿಕೊದೇಮನಿಗೆ ಹೀಗೆಂದರು: "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು. ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ. ಈ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು; ಮಾನವರಾದರೋ ತಮ್ಮ ದುಷ್ಕತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಬಿಸಿದರು. ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ, ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ."

13.04.2026 - ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31



ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್ರಜಾ ಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು. ಈ ಸಮಾಚಾರವನ್ನು ಕೇಳಿದ ಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರ ಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ. ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ. “ಅಂತೆಯೇ, ನಿಮ್ಮ ಪರಮಪೂಜ್ಯ ದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು. ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು. ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ. ಸ್ವಸ್ಥಪಡಿಸುವ ನಿಮ್ಮ ಅಮೃತ ಹಸ್ತವನ್ನು ಚಾಚಿರಿ; ನಿಮ್ಮ ಪರಮ ಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.” ಹೀಗೆ ಪ್ರಾರ್ಥನೆ ಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.

ಕೀರ್ತನೆ: 2:1-3, 4-7, 7-9
ಶ್ಲೋಕ: ದೇವರನ್ನು ಆಶ್ರಯಿಸುವವರಿಗಿದೆ ಸೌಭಾಗ್ಯ,  ಸಂತೋಷ

ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I
ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II
ದೇವನಿಗುಅವನಭಿಷಿಕ್ತನಿಗು ವಿರುದ್ಧವಾಗಿ I
ನಿಂತಿಹರು ನೃಪರು ಸಮರ ಸನ್ನದ್ಧರಾಗಿ I
ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II
ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I
ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II

ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I
ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II
ಅನಂತರ ಸಿಡಿದೆದ್ದು ಹೀಗೆಂದು ನುಡಿವನು:
ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I
ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I
 ಪರಿ ಕೆರಳಿ ಕಳವಳಗೊಳಿಸುವನು ಅವರನು II

ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆಂದನುI
 ದಿನ ನಾನಿನ್ನ ಹಡೆದಿಹೆನುನೀನೆನಗೆ ಮಗನು II
ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I
ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II
ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I
ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II

ಶುಭಸಂದೇಶ: ಯೊವಾನ್ನ 3:1-8


ನಿಕೊದೇಮನೆಂಬ ಫರಿಸಾಯನು ಇದ್ದನು. ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸುಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿದಂಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು. ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು. ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ. ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.

19.04.2026 - ಪವಿತ್ರ ಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:14, 22-33 ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನ ಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನ...