13.04.2026 - ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31



ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್ರಜಾ ಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು. ಈ ಸಮಾಚಾರವನ್ನು ಕೇಳಿದ ಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರ ಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ. ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ. “ಅಂತೆಯೇ, ನಿಮ್ಮ ಪರಮಪೂಜ್ಯ ದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು. ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು. ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ. ಸ್ವಸ್ಥಪಡಿಸುವ ನಿಮ್ಮ ಅಮೃತ ಹಸ್ತವನ್ನು ಚಾಚಿರಿ; ನಿಮ್ಮ ಪರಮ ಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.” ಹೀಗೆ ಪ್ರಾರ್ಥನೆ ಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.

ಕೀರ್ತನೆ: 2:1-3, 4-7, 7-9
ಶ್ಲೋಕ: ದೇವರನ್ನು ಆಶ್ರಯಿಸುವವರಿಗಿದೆ ಸೌಭಾಗ್ಯ,  ಸಂತೋಷ

ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I
ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II
ದೇವನಿಗುಅವನಭಿಷಿಕ್ತನಿಗು ವಿರುದ್ಧವಾಗಿ I
ನಿಂತಿಹರು ನೃಪರು ಸಮರ ಸನ್ನದ್ಧರಾಗಿ I
ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II
ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I
ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II

ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I
ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II
ಅನಂತರ ಸಿಡಿದೆದ್ದು ಹೀಗೆಂದು ನುಡಿವನು:
ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I
ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I
 ಪರಿ ಕೆರಳಿ ಕಳವಳಗೊಳಿಸುವನು ಅವರನು II

ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆಂದನುI
 ದಿನ ನಾನಿನ್ನ ಹಡೆದಿಹೆನುನೀನೆನಗೆ ಮಗನು II
ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I
ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II
ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I
ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II

ಶುಭಸಂದೇಶ: ಯೊವಾನ್ನ 3:1-8


ನಿಕೊದೇಮನೆಂಬ ಫರಿಸಾಯನು ಇದ್ದನು. ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸುಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿದಂಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು. ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು. ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ. ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.

12.04.2026 - ನನ್ನ ಪ್ರಭುವೇ, ನನ್ನ ದೇವರೇ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47


ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು. ಭಕ್ತರ ಸಭಾಜೀವನ ಪ್ರೇಷಿತರ ಮುಖಾಂತರ ಅನೇಕ ಅದ್ಭುತ ಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು. ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು. ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು. ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.

ಕೀರ್ತನೆ: 118:2-4, 13-15, 22-24

ಶ್ಲೋಕ: ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ

ಸಾರಲಿ ಇಸ್ರಯೇಲಿನ ಜನತೆ I
ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆರೋನನ ವಂಶಲತೆI
ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆತನ ಭಕ್ತರ ಪಂಥ I
ಆತನ ಪ್ರೀತಿ ಶಾಶ್ವತ ಅಂಥ II

ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I
ಆದರೆ ಪ್ರಭು ನೆರವು ನೀಡಿದನು ಎನಗೆ II
ಪ್ರಭುವೇ ನನಗೆ ಬಲವುಧೈರ್ಯವು I
ಆತನಿಂದಲೇ ನನಗೆ ಉದ್ಧಾರವು II
ಜಯಘೋಷಹರ್ಷಸುನಾದ ಸಜ್ಜನರ ಬಿಡಾರದಿಂದ I
ಪರಾಕ್ರಮಪ್ರದರ್ಶನ ಪ್ರಭುವಿನ ಬಲಗೈಯಿಂದ II

ಮನೆಕಟ್ಟುವವರು ಮೂಲೆಗೆಸೆದ ಕಲ್ಲು I
ಆಯಿತು ನೋಡುಮುಖ್ಯವಾದ ಮೂಲೆಗಲ್ಲು II
ಪ್ರಭುವಿನಿಂದಲೆ ಆದ  ಕಾರ್ಯ I
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯII
ಪ್ರಭುವೇ ನಿಯೋಜಿಸಿದ ದಿನವಿದು I

ಹರ್ಷಿಸಿ ಆನಂದಿಸೋಣ ಇಂದು II   

ಎರಡನೇ ವಾಚನ: 1 ಪೇತ್ರ 1:3-9

ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ. ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ. ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ. ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ. ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿ ಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ. ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ. ಇದರ ಅಂತಿಮ ಫಲವಾಗಿ ಜೀವೋದ್ಧಾರವನ್ನು ಪಡೆಯುತ್ತೀರಿ. ಈ ಕಾರಣದಿಂದ ಅವರ್ಣನೀಯವಾದ ಮಹದಾನಂದದಿಂದ ನಲಿಯುತ್ತೀರಿ.

ಶುಭಸಂದೇಶ: ಯೊವಾನ್ನ 20:19-31


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು; ಯಾರ ಪಾಪಗಳನ್ನು ನೀವು ಕ್ಷಮಿಸದೆ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸುಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು, ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು. ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು; ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು. ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ: ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.

11.04.2026 - ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:13-21

ಅವಿದ್ಯಾವಂತರು ಹಾಗೂ ಜನ ಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತುಹಚ್ಚಿದರು. ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು. ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು: ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದು ಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ. ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು. ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, “ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು,” ಎಂದು ಕಟ್ಟಪ್ಪಣೆ ಮಾಡಿದರು. ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ. ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯವನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು. ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆ ಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.

ಕೀರ್ತನೆ: 118:1, 14-15, 16-18, 19-21

ಶ್ಲೋಕ: ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ

ಪ್ರಭುವೇ ನನಗೆ ಬಲವುಧೈರ್ಯವು I
ಆತನಿಂದಲೇ ನನಗೆ ಉದ್ಧಾರವು II
ಜಯಘೋಷಹರ್ಷಸುನಾದ ಸಜ್ಜನರ ಬಿಡಾರದಿಂದ I
ಪರಾಕ್ರಮಪ್ರದರ್ಶನ ಪ್ರಭುವಿನ ಬಲಗೈಯಿಂದ II

ವಿಜಯಸಾಧನ ಪ್ರಭುವಿನಾ ಬಲಗೈಯಿಂದ I
ಪರಾಕ್ರಮಪ್ರದರ್ಶನವೂ ಅದರಿಂದ” II
ಸಾಯೆನುಜೀವದಿಂದಿರುವೆನು ನಾನು I
ಪ್ರಭುವಿನ ಕಾರ್ಯಗಳನು ಸಾರುವೆನು II
ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I
ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ I

ತೆರೆಯಿರಿ ಎನಗೆ ನೀತಿದ್ವಾರಗಳನು I
ಒಳನುಗ್ಗಿ ಹೊಗಳುವೆನು ಪ್ರಭುವನು II
ಇದುವೇ ದ್ವಾರ ಪ್ರಭುವಿನ ಮಂದಿರಕೆ I
ಇದುವೇ ಪ್ರವೇಶಮಾರ್ಗ ಸಜ್ಜನರಿಗೆ II
ಸದುತ್ತರ ಪಾಲಿಸಿದ ಪ್ರಭೂನಿನಗೆ ವಂದನೆ I

ಉದ್ಧಾರ ಮಾಡಿದೆನಿನಗೆ ಕೃತಜ್ಞತಾವಂದನೆ II

ಶುಭಸಂದೇಶ: ಮಾರ್ಕ 16:9-15


ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ. ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತಿದ್ದರು. ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ. ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು. ಇವರಿಬ್ಬರೂ ಹಿಂದಿರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆ ಹೋದರು. ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟ ಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು. ಬಳಿಕ ಅವರಿಗೆ, ‘ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ", ಎಂದರು.

10.04.2026 - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ವಿೂನುಗಳಿದ್ದರೂ ಬಲೆಯು ಹರಿದಿರಲಿಲ್ಲ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:1-12


ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು. ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು. ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ, ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ವಿೂರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು. ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು. ಪ್ರಧಾನ ಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನ ಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು. ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು. ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ, ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ: ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ. ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ. ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”

ಕೀರ್ತನೆ: 118:1-2, 4, 22-24, 25-27
ಶ್ಲೋಕ: ಮನೆಕಟ್ಟುವವರು ಮೂಲೆಗೆಸೆದ ಕಲ್ಲು, ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು

ಮನೆಕಟ್ಟುವವರು ಮೂಲೆಗೆಸೆದ ಕಲ್ಲು I
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II
ಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II

ಸಾರಲಿ ಇಸ್ರಯೇಲಿನ ಜನತೆ I
‘ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆತನ ಭಕ್ತರ ಪಂಥ I
ಆತನ ಪ್ರೀತಿ ಶಾಶ್ವತ ಅಂಥ II

ಮನೆಕಟ್ಟುವವರು ಮೂಲೆಗೆಸೆದ ಕಲ್ಲು I
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II
ಪ್ರಭುವಿನಿಂದಲೆ ಆದ ಈ ಕಾರ್ಯ I
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II

ಪ್ರಭುವೇ ನಿಯೋಜಿಸಿದ ದಿನವಿದು I
ಹರ್ಷಿಸಿ ಆನಂದಿಸೋಣ ಇಂದು II
ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು I
ಸುಕ್ಷೇಮ ನೀಡು ಪ್ರಭು ಕರುಣೆಯಿಟ್ಟು II

ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I
ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II
ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I
ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II

ಶುಭಸಂದೇಶ: ಯೊವಾನ್ನ 21:1-14


ತರುವಾಯ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು: ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿದ್ದರು. ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ವಿೂನೂ ಸಿಗಲಿಲ್ಲ. ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ. ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು. “ದೋಣಿಯ ಬಲಗಡೆಗೆ ಬಲೆ ಬೀಸಿರಿ; ವಿೂನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ವಿೂನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆ ಹೋಯಿತು. ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು. ಮಿಕ್ಕ ಶಿಷ್ಯರು ವಿೂನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿದ್ದ ದಡಕ್ಕೆ ದೋಣಿಯಲ್ಲೇ ಬಂದರು. ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ವಿೂನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು. ಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ವಿೂನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರು. ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದು ತಂದನು. ಬಲೆಯ ತುಂಬ ದೊಡ್ಡ ವಿೂನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ವಿೂನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ. ಯೇಸು ಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು; ಹಾಗೆಯೇ ವಿೂನನ್ನೂ ಕೊಟ್ಟರು. ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. 

08.04.2026 - ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 3:1-10


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು. ' ಸುಂದರ ದ್ವಾರ ' ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಬಿಕ್ಷೆ ಬೇಡುತ್ತಿದ್ದನು. ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆಕೊಡಬೇಕೆಂದು ಬೇಡಿದನು. ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು, " ಎಲ್ಲಿ, ನಮ್ಮನ್ನು ನೋಡು, " ಎಂದನು. ಕುಂಟನು ಅವರಿಂದ ಬಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು. ಆದರೆ ಪೇತ್ರನು, " ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ, ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ " ಎನ್ನುತ್ತಾ, ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯ ಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು. ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು. ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು. ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆ ಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.

ಕೀರ್ತನೆ 105:1-5, 7-9.
ಶ್ಲೋಕ: ಹೆಮ್ಮೆಪಡಿ, ನೆನೆದಾತನ ಶ್ರೀನಾಮ, ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ.

ಸಲ್ಲಿಸಿ ಪ್ರಭುವಿಗೆ ಕೃತಜ್ಞತಾ ಸ್ತೋತ್ರವನು|
ಮಾಡಿರಿ ಆತನ ನಾಮಸ್ಮರಣೆಯನು ||
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು ||
ಹಾಡಿ ಪಾಡಿ ಹೊಗಲಿರಿ ಪ್ರಭುವನು |
ಧ್ಯಾನಿಸಿ ನೀವು ಆತನ ಪವಾಡಗಳನು ||

ಹೆಮ್ಮೆಪಡಿ, ನೆನೆದಾತನ ಶ್ರೀನಾಮ |
ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ ||
ಅರಸಿರಿ ಪ್ರಭುವನೂ ಆತನ ಶಕ್ತಿಯನೂ |
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು ||

ಆತನ ದಾಸ ಅಬ್ರಹಾಮನ ಸಂತತಿಯವರೇ |
ಆತನಾರಿಸಿಕೊಂಡ ಯಕೋಬನ ವಂಶದವರೇ ||
ಪ್ರಭು ನಮ್ಮ ದೇವನೆಂಬುದು ಶ್ರುತ |
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ ||

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು |
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು ||
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು |
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು||

ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ !
ಪ್ರಭುವೇ ನಿಯೋಜಿಸಿದ ದಿನವಿದು, ಹರ್ಷಿಸಿ ಆನಂದಿಸೋಣ ಇಂದು|| ಅಲ್ಲೆಲೂಯ!

ಶುಭಸಂದೇಶ: ಲೂಕ 24:13-35


ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು. ಇತ್ತಿಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆಮಾಡುತ್ತಾ ನಡೆಯುತ್ತಿದ್ದರು. ಹೀಗೆ ಮಾತನಾಡಿಕೊಂಡು ಚರ್ಚೆ ಮಾಡುತ್ತಾ ಹೋಗುತ್ತಿರುವಾಗ, ಯೇಸುವೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು. ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ, ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು. " ನೀವು ತರ್ಕ ಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ? " ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, " ಇತ್ತಿಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ, ನಿನಗೊಬ್ಬನಿಗೇ ಅವು ತಿಳಿಯದೆ ? " ಎಂದನು. " ಏನು ನಡೆಯಿತು ? " ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, " ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು. ನಮ್ಮ ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿ ಶಿಲುಬೆಗೆ ಜಡಿಸಿದರು. ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟು ಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರುದಿನಗಳಾಗಿವೆ. ಆದರೂ ಆದರೂ ನಮ್ಮಲ್ಲಿ ಕೆಲವು ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು. ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದುರಿಗಿ ಬಂದು, ' ನಮಗೆ ದೇವದೂತರು ಪ್ರತ್ಯಕ್ಷರಾದರು, ಇವರು ಯೇಸು ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು, ' ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು. ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಒಳಗೆ ನೋಡಿದರು, ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುವನ್ನು ಮಾತ್ರ ಕಾಣಲಿಲ್ಲ " ಎಂದರು. ಆಗ ಯೇಸು " ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು! ಕಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತಲ್ಲವೇ? " ಎಂದರು. ಆನಂತರ ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು. ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸು ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು. ಆಗ ಶಿಷ್ಯರು, " ಸಂಜೆಯಾಯಿತು, ಕತ್ತಲಾಗುತ್ತ ಬಂದಿತು, ಬಂದು ನಮ್ಮೊಡನೆ ತಂಗಿರಿ, " ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು. ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು. ಆಗಲೇ ಶಿಷ್ಯರ ಕಣ್ಣುಗಳು ತೆರೆದವು, ಯೇಸುವನ್ನು ಗುರುತು ಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಶಿಷ್ಯರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ಪವಿತ್ರಗ್ರಂಥದ ಅರ್ಥವನ್ನು. ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಿತ್ತಲ್ಲವೇ? ಎಂದುಕೋಂಡರು. ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. " ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು, " ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು. ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿ ಮುರಿದುಕೊಡುವಾಗ ಯೇಸುವನ್ನು ತಾವು ಗುರುತು ಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿ ಮಾಡಿದರು.

07.04.2026 - ನನ್ನನ್ನು ಹಿಡಿದುಕೊಂಡಿರಬೇಡ. ನಾನು ಇನ್ನೂ ಪಿತನ ಬಳಿಗೆ ಏರಿಹೋಗುವುದಿಲ್ಲ


 ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ 2:36-41

ಪೇತ್ರನು ಜನಸಮೂಹವನ್ನು ಉದ್ದೇಶಿಸಿ ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: " ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಪ್ರಭುವನ್ನಾಗಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸೀದ್ದಾರೆ. " ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, " ಸಹೋದರರೇ, ಈಗ ನಾವು ಮಾಡಬೇಕಾದುದು ಏನು? " ಎಂದು ಕೇಳಿದರು. ಅದಕ್ಕೆ ಪೇತ್ರನು, " ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ, ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ, ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ, " ಎಂದನು. ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. 'ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ, ' ಎಂದು ಎಚ್ಚರಿಸಿದನು. ಅವನ ಬೋಧನೆಯನ್ನು ಅಂಗಿಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೋಂಡರು.

ಕೀರ್ತನೆ 33:4-5, 18-20,22.
ಶ್ಲೋಕ: ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು.

ಸತ್ಯವಾದುದು ಆತನ ಪವಿತ್ರ ವಾಕ್ಯ |
ಸ್ತುತ್ಯವಾದುದು ಆತನ ಪುನೀತ ಕಾರ್ಯ ||
ಸತ್ಯಸಂಧನು ನ್ಯಾಯಪ್ರಿಯನು ಆತನು |
ಅಚಲ ಪ್ರೀತಿಯಿಂದ ಜಗವನು ತುಂಬಿಹನು||

ಪ್ರಭುವಾದರೋ ಕಟಾಕ್ಷಿಸುವನು ತನಗಂಜಿನಡೆದವರನು|
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು ||
ತಪ್ಪಿಸುವನವರ ಪ್ರಾಣವನು ಮರಣದಿಂದ |
ಉಳಿಸುವನು ಜೀವವನು ಕ್ಷಾಮಡಾಮರದಿಂದ ||

ಕಾದಿದೆ ಎನ್ನ ಮನ ಪ್ರಭುವಿಗಾಗಿ |
ಆತನಿಹನು ಎನಗೆ ಗುರಾಣಿಯಾಗಿ ||
ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ |
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ ||

ಘೋಷಣೆ ಕೀರ್ತನೆ 118:24

ಅಲ್ಲೆಲೂಯ, ಅಲ್ಲೆಲೂಯ !
ಪ್ರಭುವೇ ನಿಯೋಜಿಸಿದ ದಿನವಿದು | ಹರ್ಷಿಸಿ ಆನಂದಿಸೋಣ ಇಂದು ||
ಅಲ್ಲೆಲೂಯ ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 20:11-18


ಆ ಕಾಲದಲ್ಲಿ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು. ಅವರು ಆಕೆಯನ್ನು, " ಏಕಮ್ಮಾ ಅಳುತ್ತಿರುವೇ ? " ಎಂದು ಕೇಳಿದರು. " ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿಟ್ಟಿದ್ದಾರೋ ತಿಳಿಯದು, " ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, " ಏಕಮ್ಮಾ ಅಳುತ್ತಿರುವೇ ? ಏನನ್ನು ಹುಡುಕುತಿರುವೇ ? " ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ, ನಾನು ತೆಗೆದುಕೊಂಡು ಹೋಗುತ್ತೇನೆ, " ಎಂದು ಹೇಳಿದಳು. ಆಗ ಯೇಸು, " ಮರಿಯಾ " ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, " ರಬ್ಬೂನಿ " ಎಂದಳು. ( ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ " ಗುರುದೇವಾ " ಎಂದರ್ಥ ). ಯೇಸು ಆಕೆಗೆ " ನನ್ನನ್ನು ಹಿಡಿದುಕೊಂಡಿರಬೇಡ. ನಾನು ಇನ್ನೂ ಪಿತನ ಬಳಿಗೆ ಏರಿಹೋಗುವುದಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ' ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆ ಎಂದು ತಿಳಿಸು, " ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, " ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲ ಹೇಳಿದರು, " ಎಂದು ತಿಳಿಸಿದಳು.

06.04.2026 - ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ

 ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 2:14, 22-33


ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: "ಯೆಹೂದ್ಯ ಸ್ವಜನರೇ, ಜೆರಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಇಸ್ರಯೇಲ್ ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸು ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಬುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ,  ಕೊಲ್ಲಿಸೀದಿರಿ. ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ-ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ:
'ಪ್ರಭು ಇಹನು ಎನ್ನ
ಕಣ್ಮುಂದೆ ಸತತ,
ನಾ ಹೆದರದಂತೆ ಆತನಿಹನು
ಎನ್ನ ಹತ್ತಿರ.
ಇದಕಾರಣ ಹರ್ಷಿಸಿತು
ಎನ್ನ ಹೃದಯ,
ತುಳುಕಿತು ಸಂತಸ ಎನ್ನ
ನಾಲಗೆಯಿಂದ,
ನಂಬಿ ನಿರೀಕ್ಷೆಯಿಂದಿರು
ವುದು ಎನ್ನ ಮರ್ತ್ಯದೇಹ.
ಏಕೆನೆ, ದೂಡಲಾರೆ
ಪಾತಾಳಕೆ ನೀನೆನ್ನ
ಜೀವಾತ್ಮವನು.
ಕೊಳೆಯಬಿಡಲಾರೆ
ನೀನೊಲಿದಾತನನು.
ಅಮರ ಜೀವಮಾರ್ಗವನೆನಗೆ
ತೋರ್ಪಡಿಸಿದೆ,
ನಿನ್ನ ಶ್ರೀ ಸಾನ್ನಿಧ್ಯ
ಸಂತಸದಿಂದೆನ್ನ
ಭರಿತನಾಗಿಸುವೆ.'
"ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಥಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು, ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: 'ಆತನನ್ನು ಪಾತಾಳಕ್ಕೆ ದೂಡಲಿಲ್ಲ, ದೇಹ ಕೊಳೆತುಹೋಗಲು ಬಿಡಲಿಲ್ಲ. ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸೀದ್ದಾರೆ, ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಯೇಸು ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು."

ಕೀರ್ತನೆ 16:1-2, 5, 7-11
ಶ್ಲೋಕ: ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು.


ನೀಡು ದೇವಾ ರಕ್ಷಣೆಯನು|
ನಾ ನಿನಗೆ ಶರಣಾಗತನು||
"ನೀನೇ ನನ್ನೊಡೆಯ" ಎಂದು ನಾ ನುಡಿದೆ|
ನಿನ್ನ ಹೊರತು ನನಗಿಲ್ಲ ಒಳಿತು ಎಂದೆ||
ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ|
ನಿನ್ನ ಕೈಯಲ್ಲಿದೆ ಪ್ರಭೂ, ನನ್ನ ವಿಮೆ||

ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ|
ಅಂದಕಾರದೊಳೂ ನನ್ನ ಮನಸ್ಸಾಕ್ಷಿಯೇ ನನಗೆ ಬೋಧಕ||
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ|
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ?||

ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ|
ಆನಂದಗೊಂಡಿದೆ ಮನ ಸುರಕ್ಷಿತವಿದೆ ಕಾಯ||
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ|
ಬಿಟ್ಟುಕೊಡುವುದಿಲ್ಲ ನಿನ್ನ ಈ ಭಕ್ತನನು ಪಾತಾಳಕೆ||

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು|
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು|
ನಿನ್ನ ಬಲಗೈ ನೀಡುವುದು ಭಾಗ್ಯವನು||

ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ ! ಪ್ರಭುವೇ ನಿಯೋಜಿಸಿದ ದಿನವಿದು | ಷರ್ಷಿಸಿ ಆನಂದಿಸೋಣ ಇಂದು || ಅಲ್ಲೆಲೂಯ !

ಶುಭಸಂದೇಶ: ಮತ್ತಾಯ 28:8-15



ಆ ಕಾಲದಲ್ಲಿ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು. ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, "ನಿಮಗೆ ಶುಭವಾಗಲಿ! ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು. ಆಗ ಯೇಸು ಅವರಿಗೆ, "ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ, " ಎಂದು ಹೇಳಿದರು. ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲಕಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯ ಯಾಜಕರಿಗೆ ವರದಿ ಮಾಡಿದರು. ಇವರು ಪ್ರಮುಖರೊಂದಿಗೆ ಸಭೆ ಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚ ಕೊಟ್ಟು, " ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದ ಕೊಂಡು ಹೋದರೆಂದು ಜನರಿಗೆ ಹೇಳಿರಿ, ಈ ಸುದ್ದಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನ ಪಡಿಸುತ್ತೇವೆ, ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ, "ಎಂದು ಹೇಳಿದರು. ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿ ಕೋಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.

13.04.2026 - ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31 ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್...