05.06.2026 - ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?”

 ಮೊದಲನೇ ವಾಚನ: 2 ತಿಮೊಥೇಯನಿಗೆ 3:10-17

ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ. ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು. ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ. ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ. ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು. ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ. ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ. ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.

ಶ್ಲೋಕ: ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ

ಕೀರ್ತನೆ: 119:157,160, 161, 165, 166, 168

ದ್ವೇಷಿಸಿದರು, ಹಿಂಸಿಸಿದರು, ಹಲವರು ನನ್ನನು I
ಆದರೂ ಬಿಟ್ಟಿಲ್ಲ ನಾನು ನಿನ್ನ ಕಟ್ಟಳೆಗಳನು II
ಸತ್ಯವೇ ನಿನ್ನ ವಾಕ್ಯದ ಸಾರಾಂಶ I
ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ 

ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I
ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II 
ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರ ಪ್ರಿಯರಿಗೆ I
ವಿಘ್ನಕರವಾದುದೇನೂ ಇರದು ಅಂಥವರಿಗೆ II 

ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I
ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II 
ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I
ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II


ಶುಭಸಂದೇಶ: ಮಾರ್ಕ 12:35-37













ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು? ‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ  ವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದಾನಲ್ಲಾ! ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.

04.06.2026 - ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು

 ಮೊದಲನೇ ವಾಚನ: 2 ತಿಮೊಥೇಯನಿಗೆ 2:8-15



ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ. ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ. ಈ ಮಾತು ನಂಬತಕ್ಕದ್ದಾಗಿದೆ: ನಾವು ಆತನೊಡನೆ ಸತ್ತಿದ್ದರೆ,  ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ. ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ. ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು. ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.

ಕೀರ್ತನೆ: 25:4-5, 8-9, 10, 14

ಶ್ಲೋಕ: ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು

ಶುಭಸಂದೇಶ: ಮಾರ್ಕ 12:28-34

ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು. ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ," ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗಳ್ಳಲಿಲ್ಲ. 

03.06.2026 - ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ

 ಮೊದಲನೇ ವಾಚನ: 2 ತಿಮೊಥೇಯನಿಗೆ 1:1-3, 6-12


ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು. ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು. ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ. ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ. ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.

ಕೀರ್ತನೆ: 12:1-3

ಶ್ಲೋಕ: ನನ್ನ ಕಣ್ಣುಗಳನು ಪ್ರಭೂ, ನಿನ್ನ ಕಡೆಗೆ ಎತ್ತಿರುವೆ

1.  ಸ್ವರ್ಗದಲಿ  ಆಸೀನಾಗಿರುವ  ಪ್ರಭೂ,|
ನನ್ನ  ಕಣ್ಣುಗಳನು  ನಿನ್ನ  ಕಡೆಗೆ  ಎತ್ತಿರುವೆ|
ದಾಸನ  ಕಣ್ಣು  ಯಜಮಾನನತ್ತ||
ಶ್ಲೋಕ

2.  ದಾಸಿಯ  ಕಣ್ಣು  ಯಜಮಾನಿಯತ್ತ|
ನನ್ನ  ಕಣ್ಣು  ಪ್ರಭು  ದೇವನತ್ತ|
ಆತನ  ಕಟಾಕ್ಷವನು  ನಿರೀಕ್ಷಿಸುತ್ತಾ||

ಶುಭಸಂದೇಶ ಮಾರ್ಕ 12:18-27


ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು, “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ? ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು. ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು. ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆ ಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣ ಹೊಂದಿದಳು. ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ. ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ. ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.

02.06.2026 - ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ

ಮೊದಲನೇ ವಾಚನ: 2 ಪೇತ್ರ 3:12-15, 17-18

ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ದರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು. ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು. ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು. ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ. ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ. ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.

ಕೀರ್ತನೆ: 90:2, 3-4, 10, 14, 16

ಶ್ಲೋಕ: ಪ್ರಭೂ, ತಲತಲಾಂತರಕ್ಕೆ ಶ್ರೀನಿವಾಸ ನೀನೆಮಗೆ

1.  ಬೆಟ್ಟಗಳು  ಹುಟ್ಟುವುದಕೆ  ಮುಂಚಿನಿಂದ|
ಭೂದೇಶಗಳು  ಆಗುವುದಕ್ಕೆ  ಮೊದಲಿಂದ|
ನೀನೆಮಗೆ  ದೇವರು  ಯುಗಯುಗಗಳಿಂದ||
ಶ್ಲೋಕ

2.  'ನರಪುತ್ರರೇ,  ಮರಳಿ  ಮಣ್ಣಿಗೆ  ಸೇರಿರಿ'  ಎನ್ನುತಿಹೆ|
ನಿನ್ನ  ದೃಷ್ಟಿಯಲ್ಲಿ  ಪ್ರಭೂ,  ಸಹಸ್ರ  ವರುಷ|
ಇರುಳಿನೊಂದು  ಜಾವ,  ಗತಿಸಿಹೋದ  ಒಂದು  ದಿವಸ||
ಶ್ಲೋಕ

3.  ನಮ್ಮ  ಆಯುಷ್ಕಾಲ  ಎಪ್ಪತ್ತು  ವರುಷ|
ಹೆಚ್ಚಾಗಿದ್ದರೆ  ಬಲ  ಎಂಭತ್ತು  ವರುಷ||
ಶ್ಲೋಕ

4.  ಉದಯದಲೆ  ತೋಯಿಸೆಮ್ಮನು  ನಿನ್ನ  ಕೃಪೆಯಿಂದ|
ಹರ್ಷಿಸಿ  ಆನಂದಿಸುವೆವು  ಆಗ  ದಿನದಾದ್ಯಂತ||
ಪ್ರಕಟವಾಗಲಿ  ನಿನ್ನ  ರಕ್ಷಾಕಾರ್ಯ    ಭಕ್ತರಿಗೆ|
ನಿನ್ನ  ಮಹಿಮಾಶಕ್ತಿ  ಅವರ  ಸಂತಾನಕೆ||
ಶ್ಲೋಕ


ಶುಭಸಂದೇಶ: ಮಾರ್ಕ12:13-17


ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು. ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು. ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್ ಚಕ್ರವರ್ತಿಯವು,” ಎಂದರು. ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.

01.06.2026 - ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು

 ಮೊದಲನೇ ವಾಚನ: 2 ಪೇತ್ರನು1:2-7


ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ! ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ. ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ. ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ. ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ. ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.

ಕೀರ್ತನೆ: 91:1-2, 14-15, 15-16

ಶ್ಲೋಕ: ಪ್ರಭುವೇ ದುರ್ಗವೂ ನಾ ನಂಬಿದ ದೇವನೂ

1.  ಪರಾತ್ಪರ  ಪ್ರಭುವಿನ  ಮೊರೆ  ಹೊಕ್ಕಿರುವವನು|
ಸರ್ವಶಕ್ತನ  ಆಶ್ರಯದಲ್ಲಿ  ಸುರಕ್ಷಿತನು||
ನಾನಾತನಿಗೆ  'ನೀನೇ  ನನ್ನ  ರಕ್ಷಕನೂ ದುರ್ಗವೂ|
ನಾ  ನಂಬಿದ  ದೇವನೂ' ಎನ್ನುವೆನು||
ಶ್ಲೋಕ

2.  ನನ್ನ  ಭಕ್ತನಾದ್ದರಿಂದ  ವಿಮೋಚಿಸುವೆನು  ಅವನನು|
ನನ್ನ  ನಾಮವನು  ಅರಿತವನಾದ್ದರಿಂದ  ರಕ್ಷಿಸುವೆನು|
ನನಗೆ  ಮೊರೆಯಿಟ್ಟಾಗ  ಕಿವಿಗೊಡುವೆನು||
ಶ್ಲೋಕ

3.  ಸಂಕಟದೊಳು  ಅವನ  ಸಂಗಡವಿರುವೆನು|
ದೀರ್ಘಾಯುಸ್ಸನ್ನಿತ್ತು  ತೃಪ್ತಿಪಡಿಸುವೆನು|
ನಾನು  ನೀಡುವ  ಮುಕ್ತಿಯವನಿಗೆ  ಮನಗಾಣಿಸುವೆನು||
ಶ್ಲೋಕ

ಘೋಷಣೆ: ಕೀರ್ತನೆ 119: 18

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಶಾಸ್ತ್ರದ  ಮಹಿಮೆಯನು  ಅರಿಯುವಂತೆ | ನನ್ನ  ಕಣ್ಗಳಿಂದ  ನೀ  ತೆಗೆದುಬಿಡು  ಅಂಧತೆ ||
ಅಲ್ಲೆಲೂಯ!

ಶುಭಸಂದೇಶ: ಮಾರ್ಕ 12:1-12


ಅನಂತರ ಯೇಸು ಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ. ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ. ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು. ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು. ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು. ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆ ಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ. ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ, ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು. ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ : ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.

31.05.2026 - ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು

 ಮೊದಲನೇ ವಾಚನ ವಿಮೋಚನಕಾಂಡ 34:4-6, 8-9


ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು. ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು. ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು, ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ, ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.

ಕೀರ್ತನೆ: 1:29-34

ಶ್ಲೋಕ: ನೀವು ಪರಮಪೂಜ್ಯರು, ಎಂದೆಂದಿಗೂ ಮಹೋನ್ನತರು

1.  ನಮ್ಮ ಪೂರ್ವಜರ ದೇವರಾದ ಸರ್ವೇಶ್ವರಾ|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಮಹಿಮಾಯುತವಾದ ನಿಮ್ಮ ನಾಮ ಸ್ತುತ್ಯಾರ್ಹವಾದುದು|
ಪರಮ ಪೂಜ್ಯವಾದುದು ಎಂದೆಂದಿಗೂ ಘನತರವಾದುದು||
ಶ್ಲೋಕ

2.  ಪರಮ ವೈಭವದಿಂದ ಕೂಡಿದ ಮಂದಿರದಲಿ|
ನೀವು ಸ್ತುತಿಸ್ತೋತ್ರಕ್ಕೆ ಪಾತ್ರರು|
ನೀವು ಪರಮಪೂಜ್ಯರು ಎಂದೆಂದಿಗೂ ಮಹೋನ್ನತರು||
ಸಾಗರಾದಿಗಳನ್ನು ಸಮೀಕ್ಷಿಸುವ ನಿಮಗೆ ಸ್ತೋತ್ರ|
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು||
ಶ್ಲೋಕ

3.  ನಿಮ್ಮ ಸಾಮ್ರಾಜ್ಯದ ಸಿಂಹಾಸನದ ಮೇಲೆ|
ಮಂಡಿಸಿರುವ ನಿಮಗೆ ಸ್ತೋತ್ರ||
ನೀವು ಪರಮ ಪೂಜ್ಯರು, ಎಂದೆಂದಿಗೂ ಮಹೋನ್ನತರು|
ಗಗನ ಮಂಡಲದಲ್ಲಿ ಸ್ತೋತ್ರಪಾತ್ರರು|
ನೀವು ಸ್ತುತ್ಯರು, ಎಂದೆಂದಿಗೂ ಮಹಿಮಾನಿತ್ವರು||
ಶ್ಲೋಕ

ಎರಡನೇ ವಾಚನ: 2 ಕೊರಿಂಥಿಯರಿಗೆ 13:11-13

ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ. ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!

ಶುಭಸಂದೇಶ: ಯೊವಾನ್ನ 3:16-18


ಯೇಸು ನಿಕೋದೇಮನಿಗೆ ಎಂತೆಂದರು: "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು. ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.

30.05.2026 - "ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,

 ಮೊದಲನೇ ವಾಚನ: ಯೂದ 1:20-25



ಪ್ರಿಯರೇ,  ನೀವಾದರೋ  ಅತಿ  ಪರಿಶುದ್ಧ  ವಿವ್ವಾಸದ  ಆಧಾರದ  ಮೇಲೆ  ನಿರ್ಮಿಸಲಾದ  ಮಂದಿರದಂತೆ  ಪ್ರವರ್ಧಿಸಿರಿ;  ಪವಿತ್ರಾತ್ಮ  ಅವರಿಂದ  ಪ್ರೇರಿತರಾಗಿ  ಪ್ರಾರ್ಥಿಸಿರಿ.  ನಿತ್ಯ  ಜೀವವನ್ನು  ದಯಪಾಲಿಸುವ  ಕರುಣಾಮಯ  ಪ್ರಭು  ಯೇಸು  ಕ್ರಿಸ್ತರನ್ನು  ಎದುರು  ನೋಡುತ್ತಾ  ದೇವರ  ಪ್ರೀತಿಯಲ್ಲಿ  ನೆಲಗೊಂಡಿರಿ.  ಸಂಶಯಪಡುವವರಿಗೆ  ಸಹೃದಯದಿಂದ  ನೆರವಾಗಿರಿ.  ಬೆಂಕಿಯ  ಬಾಯಲ್ಲಿ  ಇರುವವರನ್ನು  ಎಳೆದು  ಸಂರಕ್ಷಿಸಿರಿ.  ಕೆಲವರಿಗೆ  ದಯೆತೋರಿಸುವಾಗ  ಭಯವಿರಲಿ.  ಪಾಪದ  ನಡತೆಯಿಂದ  ಹೊಲಸಾದ  ಅವರ  ಬಟ್ಟೆಬರೆಗಳನ್ನೂ  ಮುಟ್ಟದಿರಿ.  ಪಾಪದಲ್ಲಿ  ಎಡವಿ  ಬೀಳದಂತೆ  ನಿಮ್ಮನ್ನು  ಕಾಪಾಡುವ,  ತಮ್ಮ  ಮಹಿಮಾಸನ್ನಿಧಿಯಲ್ಲಿ  ನಿಮ್ಮನ್ನು  ನಿರ್ದೋಷಿಗಳನ್ನಾಗಿಯೂ  ಹರ್ಷಭರಿತರನ್ನಾಗಿಯೂ  ನಿಲ್ಲಿಸಲು  ಶಕ್ತರಾಗಿರುವ,  ನಮ್ಮ  ಉದ್ಧಾರಕರಾದ  ಏಕೈಕ  ದೇವರಿಗೆ  ನಮ್ಮ  ಪ್ರಭು  ಯೇಸು  ಕ್ರಿಸ್ತರ  ಮುಖಾಂತರ  ಮಹಿಮೆ,  ಮಹತ್ವ,  ಅಧಿಪತ್ಯ,  ಅಧಿಕಾರ  ಆಧಿಯಲ್ಲಿ  ಇದ್ದ  ಹಾಗೆ  ಈಗಲೂ  ಯಾವಾಗಲೂ  ಸಲ್ಲಲಿ!  ಆಮೆನ್.

ಕೀರ್ತನೆ
(63: 1, 2-3, 4-5, v. 1

ಶ್ಲೋಕ:  ದೇವಾ,  ನೀ  ಎನ್ನ  ದೇವ,  ನಿನಗಾಗಿ  ನಾ  ಕಾದಿರುವೆ|

1.  ದೇವಾ,  ನೀ  ಎನ್ನ  ದೇವ,  ನಿನಗಾಗಿ  ನಾ  ಕಾದಿರುವೆ|
ನಿರ್ಜಲ  ಮರುಭೂಮಿಯಲಿ  ನೀರಿಗಾಗಿ  ಹಾತೊರೆವಂತೆ||
ನಿನಗೋಸ್ಕರ  ಎನ್ನ  ತನು  ಸೊರಗಿದೆ,  ಮನ  ಬಾಯಾರಿದೆ|
ನಿನ್ನ  ಮಂದಿರದಲಿ  ನನಗಾದ   ದರ್ಶನದಲಿ||
ಶ್ಲೋಕ

2.  ನಿನ್ನ  ಶಕ್ತಿ  ಪ್ರತಿಭೆಯನ್ನು  ಕಂಡಿರುವೆನಲ್ಲಿ|
ಪ್ರಾಣಕ್ಕಿಂತ  ಮಿಗಿಲಾದುದು  ನಿನ್ನಚಲ  ಪ್ರೀತಿ||
ಎಡೆಬಿಡದೆ  ಮಾಳ್ವುದು  ನನ್ನೀ  ತುಟಿ  ನಿನ್ನ  ಸ್ತುತಿ|
ನಿನ್ನ  ಸ್ತುತಿಸುವೆ  ಜೀವಮಾನ  ಪರಿಯಂತ|
ಕೈ  ಮುಗಿವೆ  ನಿನ್ನ  ನಾಮದ   ಸ್ಮರಣಾರ್ಥ||
ಶ್ಲೋಕ

3.  ಮೃಷ್ಟಾನ್ನ  ತಿಂದಂತೆ  ಎನ್ನ  ಮನ  ಸಂತೃಪ್ತ|
ಸಂಭ್ರಮದಿಂದ  ನಿನ್ನ  ಹೊಗಳುವುದು  ಬಾಯ್ತುಂಬ||
ಶ್ಲೋಕ

🌻✝️🌻

ಘೋಷಣೆ
(ಕೀರ್ತನೆ 119: 27)

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ನಿಯಮಗಳ  ಪಥವೆನಗೆ  ತಿಳಿಯಪಡಿಸಯ್ಯಾ | ನಿನ್ನ  ಅದ್ಭುತ  ಕಾರ್ಯಗಳನು  ನಾ  ಧ್ಯಾನಿಸುವೆನಯ್ಯಾ ||
ಅಲ್ಲೆಲೂಯ!

ಶುಭಸಂದೇಶ:ಮಾರ್ಕ 11:27-33

ಮಹಾ ದೇವಾಲಯದಲ್ಲಿ ಯೇಸು 

ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯ ಯಾಜಕರು, ಧರ್ಮಶಾಸ್ತ್ರಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು, " ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?" ಎಂದಿ ಕೇಳಿದರು. ಅದಕ್ಕೆ ಯೇಸು, "ನಾನೂ ನಿಮಗೆ ಒಂದು ಪ್ರಶ್ನ ಹಾಕುತ್ತೇನೆ; ಅದಕ್ಕೆ ಉತ್ತರ ಕೊಡಿ. ಆಗ ಯಾವ ಅಧಿಕಾರದಿಂದ ನಾನು ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಸ್ನಾನದಿಕ್ಷೆ ಕೊಡುವ ಅಧಿಕಾರ ಯೊವಾನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ? ಮನುಷ್ಯರಿಂದಲೋ? ಉತ್ತರಕೊಡಿ," ಎಂದರು. ಇದನ್ನು ಕೇಳಿದ ಅವರು ತಮ್ಮ ತಮ್ಮೊಳಗೇ ತರ್ಕ ಮಾಡುತ್ತಾ, "ದೇವರಿಂದ ಬಂದಿತೆಂದು ಹೇಳಿದರೆ, "ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?" ಎಂದು ಕೇಳುವನು. 'ಮನುಷ್ಯರಿಂದ ಬಂದಿತು" ಎಂದು ಹೇಳೋಣ ಎಂದರೆ ಅದೂ ಅಗದು, "ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು. ಆದುದರಿಂದ ಅವರು, "ನಮಗೆ ಗೊತ್ತಿಲ್ಲ" ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು ,"ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ," ಎಂದರು.

05.06.2026 - ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?”

  ಮೊದಲನೇ ವಾಚನ: 2 ತಿಮೊಥೇಯನಿಗೆ 3:10-17 ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದ...