17.04.2026 - “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,”

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:34-42


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದು ನಿಂತು ಪ್ರೇಷಿತರನ್ನು ಸ್ವಲ್ಪ ಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಬಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ. ಸ್ವಲ್ಪ ಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು. ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದುರಿಹೋದರು. ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು. ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು. ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು. ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು. ಯೇಸುವೇ ಲೋಕೋದ್ದಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.

ಕೀರ್ತನೆ: 27:1, 4, 13-14
ಶ್ಲೋಕ: ನಾನೊಂದನು ಕೋರಿದೆ ಪ್ರಭುವಿನಿಂದ, ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ 


ನನಗೆ ಬೆಳಕುನನಗೆ ರಕ್ಷೆಪ್ರಭುವೆ I

ನಾನಾರಿಗೂ ಅಳುಕೆನು II
ನನ್ನ ಬಾಳಿಗಾಧಾರ ಪ್ರಭುವೆ I
ನಾನಾರಿಗೂ ಅಂಜೆನು II

ನಾನೊಂದನು ಕೋರಿದೆ ಪ್ರಭುವಿನಿಂದ I
ನಾನದನ್ನೇ ನಿರೀಕ್ಷಿಸಿದೆ ಆತನಿಂದ I
ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I
ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II

ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I
ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II
ಪ್ರಭುವನು ಎದುರುನೋಡುತ್ತಿರು ಮನವೇ I
ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಶುಭಸಂದೇಶ: ಯೊವಾನ್ನ 6:1-15


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು. ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ  ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದ್ದನ್ನು ಆ ಜನರು ನೋಡಿದ್ದರು. ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು. ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು. ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು. ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು. ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು. ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು, “ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ವಿೂನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತವೆ?” ಎಂದನು. ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು. ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ವಿೂನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು. ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು. ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು. ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

ಮನಸಿಗೊಂದಿಷ್ಟು 

ಇಂದಿನ ಶುಭ ಸಂದೇಶವು ಹಳೆಯ ಒಡಂಬಡಿಕೆಯ ಪ್ರವಾದಿ ಎಲೀಷನ ಇದೇ ರೀತಿಯ  ಘಟನೆಯನ್ನು (2 ಅರಸರು 4:42:44) ನೆನಪಿಸುತ್ತದೆ. ಈ ಶುಭ ಸಂದೇಶದ ಭಾಗದಲ್ಲಿ ನಾವು ಅನೇಕ ಪಾತ್ರಗಳನ್ನು ಕಾಣಬಹುದು. ಈ ಪಾತ್ರಗಳಲ್ಲಿ ನಾವು ಯಾವ ಪಾತ್ರಕ್ಕೆ ಹತ್ತಿರವಾಗಿದ್ದೇವೆ ಎಂಬುದಾಗಿ ಪ್ರಶ್ನಿಸಿಕೊಳ್ಳಲು ಸಹಾಯ ಮಾಡುತ್ತದೆ.

ಯೇಸುವನ್ನು ನೋಡಲು, ಅವರ ಮಾತುಗಳನ್ನು ಕೇಳಲು ಗುಣವಾಗಲು ಬಂದವರ ಜೊತೆ ಪಾಸ್ಕ ಹಬ್ಬಕ್ಕೆ ಹೊರಟಿದ್ದ ಪ್ರವಾಸಿಗರು ಎಲ್ಲರೂ ಅಲ್ಲಿ ಬಂದು ಸೇರಿದ್ದರು. ಯೇಸು ಜನರನ್ನು ನೋಡಿ ಮರುಕ ಗೊಳ್ಳುತ್ತಾರೆ ಅವರಿಗೆ ತಿನ್ನಲು ಏನಾದರೂ ನೀಡಬೇಕು ಎಂದುಕೊಳ್ಳುತ್ತಾರೆ. ಆದರೆ ಪರೀಕ್ಷಿಸಲೋ ಎಂಬಂತೆ ಫಿಲೀಪನನ್ನು ಕೇಳುತ್ತಾರೆ.

ಫೀಲಿಪ್ಪನದು ನಮ್ಮಂತೆಯೇ ಮನೋಭಾವ. ಅಲ್ಲಿ ಸೇರಿದ ದೊಡ್ಡ ಜನಸಮೂಹಇರುವ ೨೦೦ ದಿನಾರಿಯಷ್ಟು ಸಣ್ಣ ಹಣ ಅವನನ್ನು ನಿರುತ್ಸಾಹಗೊಳಿಸುತ್ತದೆ. ಯೇಸುವೇ ತನ್ನ ಜೊತೆ ಇದ್ದಾರೆ ಎನ್ನುವುದನ್ನು ಆತ ಮರೆಯುತ್ತಾನೆ. ಅಂದ್ರೆಯ ಎಂದಿನಂತೆ ಉತ್ಸಾಹ ತೋರುತ್ತಾನೆ. 5 ರೊಟ್ಟಿ 2 ಮೀನು ಇಟ್ಟಿದ್ದ ಹುಡುಗನನ್ನು ಹುಡುಕಿ ಯೇಸುವಿನ ಬಳಿ ಕರೆ ತರುತ್ತಾನೆ. ಹುಡುಗ ತನ್ನ ಬಳಿಯಿದ್ದ ಆಹಾರವನ್ನು ಹಂಚಿಕೊಳ್ಳಲು ಒಪ್ಪುತ್ತಾನೆ. ಮುಂದಿನದು ಇತಿಹಾಸ. 5000ಕ್ಕಿಂತ ಹೆಚ್ಚಿನ ಜನರ ಹಸಿವು ನೀಗುತ್ತದೆ.

ಈ ಶುಭ ಸಂದೇಶದಲ್ಲಿ ಬರುವ ವಿವಿಧ ರೀತಿಯ ಜನರಲ್ಲಿ ನಾವು ಯಾವ ರೀತಿಯ ವ್ಯಕ್ತಿತ್ವದವರು ಎಂಬುದನ್ನು ಪ್ರಶ್ನಿಸಿಕೊಳ್ಳಬಹುದು. ಯೇಸುವಿನ ಮಾತನ್ನು ಕೇಳಲು ಮಾತ್ರ ಬಂದವರೇ, ಅವರ ಕಾರ್ಯಗಳನ್ನು ನೋಡಲು ಬಂದವರೇ? ನಿಜ ಪ್ರೀತಿಯಿಂದ ಹಾತೊರೆದು ಬಂದವರೇ? ಕೇವಲ ಕುತೂಹಲದಿಂದ ನೊಡಲು ಬಂದ ಪಯಣಿಗರೇಅವರ ಅಗಾಧ ಮಹಿಮೆಯನ್ನು ಕಾಣದ ಫಿಲಿಪ್ ನಂಥವರೇ? ಅದ್ಭುತಕ್ಕೆ ಮುನ್ನುಡಿಯಾದ ಅಂದ್ರೆಯನಂಥವರೇ ಹಂಚಿಕೊಳ್ಳಲು ಸಿದ್ಧನಾಗಿ ಅದ್ಭುತಕ್ಕೆ ಕಾರಣನಾದ ಆ ಹುಡುಗನಂತೆಯೇ?

ಕೊನೆಗೆ ತಮ್ಮ ಅದ್ಭುತ ಕಾರ್ಯದಿಂದ ಸೃಷ್ಟಿಯಾದ ಆಹಾರವು ಸ್ವಲ್ಪವೂ ಹಾಳಾಗದಂತೆ ಎಲ್ಲವನ್ನು ಯೇಸು ಒಟ್ಟುಗೂಡಿಸುತ್ತಾರೆ.  ಅವರ ಅದ್ಭುತ ಹಸ್ತದಲ್ಲಿ ಬಾಳುತ್ತಿರುವ ನಮ್ಮ ಜೀವನ ಹಾಳಾಗದಂತೆ ಅವರಲ್ಲಿ ಒಟ್ಟುಗೂಡೋಣ


16.04.2026 - ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:27-33



ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನ ಯಾಜಕನು ಅವರನ್ನು ಉದ್ದೇಶಿಸಿ, “ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿ ಹರಡಿದೆ. ಅಷ್ಟು ಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು. ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ. ನೀವು ಶಿಲುಬೆಗೇರಿಸಿ ಕೊಂದು ಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ. ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ  ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪ ಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ. ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು. ಇದನ್ನು ಕೇಳಿದ ಸಭಾಸದಸ್ಯರು ಕ್ರೋದಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.

ಕೀರ್ತನೆ: 34:2, 9, 17-18, 19-20
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು

ಪ್ರಭುವಿನಲ್ಲಿದೆ ನನ್ನ ಮನದಭಿಮಾನ 
ದೀನರಿದನು ಕೇಳಿಪಡೆಯಲಿ ಸುಮ್ಮಾನ 
ದೇವಜನರೆನಿಮಗಿರಲಿ ಪ್ರಭುವಿನ ಭಯಭಕುತಿ 
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ 

ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ 
ನೆರವೀವನವರ ಕಷ್ಟನಿವಾರಣೆಗೆ 
ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ 
ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ 

ಸಜ್ಜನನಿಗೊದಗುವ ಸಂಕಟಗಳು ವಿಪರೀತ
ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ 
ಕಾಪಾಡುವನು ಅವನೆಲಬುಗಳೆಲ್ಲವನ್ನೂ 
ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ 

ಶುಭಸಂದೇಶ: ಯೊವಾನ್ನ 3:31-36



ಸ್ನಾನಿಕ ಯೊವನ್ನನು ತನ್ನ ಶಿಷ್ಯರಿಗೆ ಹೀಗೆಂದು ಹೆಳಿದನು: “ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು. ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ. ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ. ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ. ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ. ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” 

15.04.2026 - ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:17-26



ಪ್ರಧಾನ ಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು. ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು. ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು. “ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು. ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನ ಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು. ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು; “ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು. ದೇವಾಲಯದ ದಳಪತಿ ಮತ್ತು ಮುಖ್ಯ ಯಾಜಕರು ಇದನ್ನು ಕೇಳಿ ಇದರಿಂದೇನಾಗುವುದೋ ಎಂದು ಕಳವಳಗೊಂಡರು. ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿ ಇಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ.” ಎಂದನು. ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲುತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ

ಕೀರ್ತನೆ: 34:2-3, 4-5, 6-7, 8-9 
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು

ಪ್ರಭುವಿನಲ್ಲಿದೆ ನನ್ನ ಮನದಭಿಮಾನ 
ದೀನರಿದನು ಕೇಳಿಪಡೆಯಲಿ ಸುಮ್ಮಾನ 
ಬನ್ನಿಕೊಂಡಾಡುವ ಪ್ರಭು ದೇವನನು 
ಘನಪಡಿಸೋಣ ಅವನ ಶ್ರೀನಾಮವನು

ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು 
ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು 
ಆತನತ್ತ ತಿರುಗಿದ ಮುಖ ಅರಳುವುದು 
ಲಜ್ಜೆಯಿಂದೆಂದಿಗು ಕುಂದಿಹೋಗದು 

ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು
ಸರ್ವಾಪತ್ತಿನಿಂದವನು ಮುಕ್ತಗೊಂಡನು
ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು
ಕಾಯುವನು ಪ್ರಭುವಿನ ದೂತನೆ ಬಂದಿಳಿದು

ಸವಿದು ನೋಡು ಪ್ರಭುವಿನ ಮಾಧುರ್ಯವನು
ಆತನನು ಆಶ್ರಯಿಸಿಕೊಂಡವನು ಧನ್ಯನು 
ದೇವಜನರೆನಿಮಗಿರಲಿ ಪ್ರಭುವಿನ ಭಯಭಕುತಿ 
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ 

ಶುಭಸಂದೇಶ: ಯೊವಾನ್ನ 3:16-21

ಯೇಸುಸ್ವಾಮಿ ನಿಕೊದೇಮನಿಗೆ ಹೀಗೆಂದರು: "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು. ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ. ಈ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು; ಮಾನವರಾದರೋ ತಮ್ಮ ದುಷ್ಕತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಬಿಸಿದರು. ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ, ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ."

13.04.2026 - ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31



ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್ರಜಾ ಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು. ಈ ಸಮಾಚಾರವನ್ನು ಕೇಳಿದ ಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರ ಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ. ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ. “ಅಂತೆಯೇ, ನಿಮ್ಮ ಪರಮಪೂಜ್ಯ ದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು. ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು. ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ. ಸ್ವಸ್ಥಪಡಿಸುವ ನಿಮ್ಮ ಅಮೃತ ಹಸ್ತವನ್ನು ಚಾಚಿರಿ; ನಿಮ್ಮ ಪರಮ ಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.” ಹೀಗೆ ಪ್ರಾರ್ಥನೆ ಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.

ಕೀರ್ತನೆ: 2:1-3, 4-7, 7-9
ಶ್ಲೋಕ: ದೇವರನ್ನು ಆಶ್ರಯಿಸುವವರಿಗಿದೆ ಸೌಭಾಗ್ಯ,  ಸಂತೋಷ

ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I
ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II
ದೇವನಿಗುಅವನಭಿಷಿಕ್ತನಿಗು ವಿರುದ್ಧವಾಗಿ I
ನಿಂತಿಹರು ನೃಪರು ಸಮರ ಸನ್ನದ್ಧರಾಗಿ I
ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II
ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I
ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II

ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I
ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II
ಅನಂತರ ಸಿಡಿದೆದ್ದು ಹೀಗೆಂದು ನುಡಿವನು:
ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I
ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I
 ಪರಿ ಕೆರಳಿ ಕಳವಳಗೊಳಿಸುವನು ಅವರನು II

ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆಂದನುI
 ದಿನ ನಾನಿನ್ನ ಹಡೆದಿಹೆನುನೀನೆನಗೆ ಮಗನು II
ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I
ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II
ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I
ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II

ಶುಭಸಂದೇಶ: ಯೊವಾನ್ನ 3:1-8


ನಿಕೊದೇಮನೆಂಬ ಫರಿಸಾಯನು ಇದ್ದನು. ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸುಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿದಂಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು. ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು. ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ. ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.

12.04.2026 - ನನ್ನ ಪ್ರಭುವೇ, ನನ್ನ ದೇವರೇ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47


ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು. ಭಕ್ತರ ಸಭಾಜೀವನ ಪ್ರೇಷಿತರ ಮುಖಾಂತರ ಅನೇಕ ಅದ್ಭುತ ಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು. ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು. ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು. ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.

ಕೀರ್ತನೆ: 118:2-4, 13-15, 22-24

ಶ್ಲೋಕ: ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ

ಸಾರಲಿ ಇಸ್ರಯೇಲಿನ ಜನತೆ I
ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆರೋನನ ವಂಶಲತೆI
ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆತನ ಭಕ್ತರ ಪಂಥ I
ಆತನ ಪ್ರೀತಿ ಶಾಶ್ವತ ಅಂಥ II

ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I
ಆದರೆ ಪ್ರಭು ನೆರವು ನೀಡಿದನು ಎನಗೆ II
ಪ್ರಭುವೇ ನನಗೆ ಬಲವುಧೈರ್ಯವು I
ಆತನಿಂದಲೇ ನನಗೆ ಉದ್ಧಾರವು II
ಜಯಘೋಷಹರ್ಷಸುನಾದ ಸಜ್ಜನರ ಬಿಡಾರದಿಂದ I
ಪರಾಕ್ರಮಪ್ರದರ್ಶನ ಪ್ರಭುವಿನ ಬಲಗೈಯಿಂದ II

ಮನೆಕಟ್ಟುವವರು ಮೂಲೆಗೆಸೆದ ಕಲ್ಲು I
ಆಯಿತು ನೋಡುಮುಖ್ಯವಾದ ಮೂಲೆಗಲ್ಲು II
ಪ್ರಭುವಿನಿಂದಲೆ ಆದ  ಕಾರ್ಯ I
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯII
ಪ್ರಭುವೇ ನಿಯೋಜಿಸಿದ ದಿನವಿದು I

ಹರ್ಷಿಸಿ ಆನಂದಿಸೋಣ ಇಂದು II   

ಎರಡನೇ ವಾಚನ: 1 ಪೇತ್ರ 1:3-9

ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ. ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ. ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ. ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ. ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿ ಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ. ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ. ಇದರ ಅಂತಿಮ ಫಲವಾಗಿ ಜೀವೋದ್ಧಾರವನ್ನು ಪಡೆಯುತ್ತೀರಿ. ಈ ಕಾರಣದಿಂದ ಅವರ್ಣನೀಯವಾದ ಮಹದಾನಂದದಿಂದ ನಲಿಯುತ್ತೀರಿ.

ಶುಭಸಂದೇಶ: ಯೊವಾನ್ನ 20:19-31


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು; ಯಾರ ಪಾಪಗಳನ್ನು ನೀವು ಕ್ಷಮಿಸದೆ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸುಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು, ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು. ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು; ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು. ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ: ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.

11.04.2026 - ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:13-21

ಅವಿದ್ಯಾವಂತರು ಹಾಗೂ ಜನ ಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತುಹಚ್ಚಿದರು. ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು. ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು: ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದು ಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ. ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು. ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, “ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು,” ಎಂದು ಕಟ್ಟಪ್ಪಣೆ ಮಾಡಿದರು. ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ. ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯವನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು. ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆ ಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.

ಕೀರ್ತನೆ: 118:1, 14-15, 16-18, 19-21

ಶ್ಲೋಕ: ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ

ಪ್ರಭುವೇ ನನಗೆ ಬಲವುಧೈರ್ಯವು I
ಆತನಿಂದಲೇ ನನಗೆ ಉದ್ಧಾರವು II
ಜಯಘೋಷಹರ್ಷಸುನಾದ ಸಜ್ಜನರ ಬಿಡಾರದಿಂದ I
ಪರಾಕ್ರಮಪ್ರದರ್ಶನ ಪ್ರಭುವಿನ ಬಲಗೈಯಿಂದ II

ವಿಜಯಸಾಧನ ಪ್ರಭುವಿನಾ ಬಲಗೈಯಿಂದ I
ಪರಾಕ್ರಮಪ್ರದರ್ಶನವೂ ಅದರಿಂದ” II
ಸಾಯೆನುಜೀವದಿಂದಿರುವೆನು ನಾನು I
ಪ್ರಭುವಿನ ಕಾರ್ಯಗಳನು ಸಾರುವೆನು II
ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I
ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ I

ತೆರೆಯಿರಿ ಎನಗೆ ನೀತಿದ್ವಾರಗಳನು I
ಒಳನುಗ್ಗಿ ಹೊಗಳುವೆನು ಪ್ರಭುವನು II
ಇದುವೇ ದ್ವಾರ ಪ್ರಭುವಿನ ಮಂದಿರಕೆ I
ಇದುವೇ ಪ್ರವೇಶಮಾರ್ಗ ಸಜ್ಜನರಿಗೆ II
ಸದುತ್ತರ ಪಾಲಿಸಿದ ಪ್ರಭೂನಿನಗೆ ವಂದನೆ I

ಉದ್ಧಾರ ಮಾಡಿದೆನಿನಗೆ ಕೃತಜ್ಞತಾವಂದನೆ II

ಶುಭಸಂದೇಶ: ಮಾರ್ಕ 16:9-15


ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ. ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತಿದ್ದರು. ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ. ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು. ಇವರಿಬ್ಬರೂ ಹಿಂದಿರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆ ಹೋದರು. ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟ ಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು. ಬಳಿಕ ಅವರಿಗೆ, ‘ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ", ಎಂದರು.

17.04.2026 - “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,”

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 5:34-42 ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ...