14.08.2026 - ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 16:1-15, 60, 63

ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ - “ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ - ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು. ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ. ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು. “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ. ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ. “ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ. “ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.  ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.  ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,  ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ.  ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.  ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ. “ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ. ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.

ಕೀರ್ತನೆ: 12:2-3, 4, 5-6

ಶ್ಲೋಕ: ನಿನಗಿತ್ತು ಎನ್ನ ಮೇಲೆ ಕೋಪ ಮನ; ಆದರೆ ಆದೀಗ ಆಗಿದೆ ಶಮನ

1.  ದೇವರೇ ಉದ್ಧಾರಕನೆನಗೆ|
ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ||
ದೇವಾದಿದೇವನೇ ಎನಗೆ ಶಕ್ತಿ|
ಆತನೆನ್ನ ಕೀರ್ತನೆಯ ವ್ಯಕ್ತಿ|
ತಂದಿಹನಾತ ಎನಗೆ ಮುಕ್ತಿ||
ಶ್ಲೋಕ

2.  ಉದ್ಧರಿಸುವಾ ಒರತೆಗಳಿಂದ|
ಸೇದುವಿರಿ ನೀರನ್ನು ಹರುಷದಿಂದ||
ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು|
ಸ್ಮರಿಸಿರಿ ಆತನ ಶ್ರೀ  ನಾಮವನು||
ಸಾರಿರಿ ಜನತೆಗೆ ಆತನ ಕಾರ್ಯಗಳನು|
ಘೋಷಿಸಿರಿ ಆತನ ನಾಮಘನತೆಯನು||
ಶ್ಲೋಕ

3.  ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು|
ಎಸಗಿಹನಾತ ಮಹಿಮಾಕಾರ್ಯಗಳನು|  ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು||
ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ|  ನಿಮ್ಮ ಮಧ್ಯೆಯಿರುವ ಆ ಘನವಂತನ|
ಇಸ್ರಯೇಲಿನಾ ಸ್ವಾಮಿ ಪರಮ ಪಾವನ||
ಶ್ಲೋಕ

ಘೋಷಣೆ
(ಹಿಬ್ರಿಯರಿಗೆ 4: 12)

ಅಲ್ಲೆಲೂಯ, ಅಲ್ಲೆಲೂಯ.
ದೇವರ  ವಾಕ್ಯ  ಜೀವಂತವಾದುದು,  ಕ್ರಿಯಾತ್ಮಕವಾದುದು;| ಹೃದಯದ  ಆಶೆ  ಆಲೋಚನೆಗಳನ್ನು  ವಿವೇಚಿಸುವಂತಾದ್ದು||
ಅಲ್ಲೆಲೂಯ.

ಶುಭಸಂದೇಶ: ಮತ್ತಾಯ 19:3-12

ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ, ‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೇ? ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು. "ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು. “ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ. ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.” ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆ ಮಾಡಿಕೊಳ್ಳದಿರುವುದೇ ಲೇಸು,” ಎಂದರು.  ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ. ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.

13.08.2026 - ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು

  ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 12:1-12



ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:  “ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು. “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು. ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು. ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು. ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆಹಾಕಿ, ಕತ್ತಲಲ್ಲಿ ಹೊತ್ತುಕೊಂಡುಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.” ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ. ಬೆಳಿಗ್ಗೆ ಸರ್ವೇಶ್ವರನಿಂದ ಈ ವಾಣಿ ನನಗೆ ಕೇಳಿಸಿತು: “ನರಪುತ್ರನೇ, ದ್ರೋಹಿವಂಶದವರಾದ ಇಸ್ರಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ? ನೀನು ಅವರಿಗೆ ಹೀಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಈ ಹೊರೆ ಜೆರುಸಲೇಮಿನಲ್ಲಿರುವ ರಾಜನಿಗೂ ಅಲ್ಲಿನ ಇಸ್ರಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ; ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು. ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು: ಅವನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ಸಾಮಗ್ರಿಗಳನ್ನು ಆಚೆಗೆ ಸಾಗಿಸುವನು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸದು.

ಕೀರ್ತನೆ: 78:56-57, 58-59, 61-62

ಶ್ಲೋಕ: ಮರೆಯರು ನನ್ನ ಮಹತ್ಕಾರ್ಯಗಳನು

1.  ಆದರೂ  ಬಂಡೆದ್ದು  ಪರೀಕ್ಷಿಸಿದರು  ಪರಾತ್ಪರ  ದೇವರನು|
ಕೈಗೊಂಡು  ನಡೆಯದೆ  ಹೋದರು  ಆತನ  ವಿಧಿನಿಯಮಗಳನು||
ನಂಬಿಕೆಗೆಟ್ಟು  ದ್ರೋಹಿಗಳಾದರು  ತಮ್ಮ  ಹಿರಿಯರಂತೆ|
ಆತನಿಗೆ  ಎದುರುಬಿದ್ದರು  ಹಿಮ್ಮುಖವಾದ  ಬಿಲ್ಲಿನಂತೆ||

2.  ಬೇಸರಗೊಳಿಸಿದರು  ತಮ್ಮ  ಪೂಜಾಸ್ಥಾನದಿಂದ|
ರೇಗಿಸಿದರಾತನನು  ಕೆತ್ತನೆಯ  ವಿಗ್ರಹಗಳಿಂದ||
ರಣರೌದ್ರನಾದನು  ಇದನರಿತ  ದೇವನು|
ತೊರೆದನು  ಅಸಹ್ಯದಿಂದ  ಇಸ್ರಯೇಲರನು||

3.  ಒಪ್ಪಿಸಿದನು  ತನ್ನ  ಬಲುಮೆಯನು  ಕೈಸೆರೆಗೆ|
ತನ್ನ  ಮಹಿಮೆಯನು  ವಿರೋಧಿಗಳ  ಕೈವಶಕ್ಕೆ||
ಗುರಿಮಾಡಿದನು  ತನ್ನ  ಪ್ರಜೆಯನು  ಖಡ್ಗಕೆ|
ಉಗ್ರವಾದನು  ತನ್ನ  ವಾರಸುದಾರರಿಗೆ||

ಘೋಷಣೆ                 ಕೀರ್ತನೆ 119:88

ಅಲ್ಲೆಲೂಯ, ಅಲ್ಲೆಲೂಯ!
ನಿನ್ನಚಲ  ಪ್ರೀತಿಗನುಸಾರ  ಚೈತನ್ಯಗೊಳಿಸೆನ್ನನು,  
ಕೈಗೊಳ್ಳುವೆನಾಗ  ನಿನ್ನ  ಬಾಯುಸುರಿದ  ಕಟ್ಟಳೆಗಳನು,
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ 18:21-19:1

ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳು ಸಲವೇ?” ಎಂದು ಕೇಳಿದನು. “ಏಳು ಸಲವಲ್ಲ, ಏಳೆಪ್ಪತ್ತು ಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ. ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ. “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ. ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ. ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು. ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು.

12.08.2026 - ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 9:1-7; 10:18-22



ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು. ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು. ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ, “ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು. ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿ ಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು. ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು. ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು. ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು. ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;  ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಕೀರ್ತನೆ: 113:1-2, 3-4, 5-6

ಶ್ಲೋಕ: ಪ್ರಭುವಿನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ

ಶುಭಸಂದೇಶ: ಮತ್ತಾಯ 18:15-20


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ, “ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.  ಅವರಿಗೂ ಅವನು ಕಿವಿಗೊಡದೆ ಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು. “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ. “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.  ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

11.08.2026 - ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು

 ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 2:8-3:4

ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದು ಬಿಡು,” ಎಂದರು. ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು. ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು. ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು. ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು. ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದು ಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು. ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು."

ಕೀರ್ತನೆ: 119:14, 24, 72, 103, 111, 131

ಶ್ಲೋಕ:  ನಿನ್ನ  ನುಡಿ  ಎನಿತೊ  ರುಚಿ  ನನ್ನ  ನಾಲಿಗೆಗೆ.

1.  ಸಿರಿಸಂಪತ್ತಿಗಿಂತ  ಮಿಗಿಲಾಗಿ
ಆನಂದಿಪೆ  ನಿನ್ನ  ಮಾರ್ಗಿಯಾಗಿ
ನಿನ್ನಾಜ್ಞೆಯು   ಆನಂದದಾಯಕ
ಅವೇ  ನನಗೆ  ಮಂತ್ರಾಲೋಚಕ

2.  ಸಾವಿರಾರು  ಚಿನ್ನ  ಬೆಳ್ಳಿ  ನಾಣ್ಯಗಳಿಗಿಂತ
ನಿನ್ನ  ಬಾಯಿಂದ  ಬಂದ  ಧರ್ಮಶಾಸ್ತ್ರ  ಉಚಿತ
ನಿನ್ನ  ನುಡಿ  ಎನಿತೊ  ರುಚಿ  ನನ್ನ  ನಾಲಿಗೆಗೆ
ಜೇನುತುಪ್ಪಕ್ಕಿಂತ  ಸಿಹಿ  ನನ್ನ  ಬಾಯಿಗೆ

3.  ಹೃದಯಾನಂದಕರ  ನಿನ್ನ  ಕಟ್ಟಳೆಗಳು
ನನಗಮರ  ಸ್ವಾಸ್ಥ್ಯವಾದುವುವು   ಅವುಗಳು
ಬಾಯ್ದೆರೆದು  ಹಾತೊರೆಯುತ್ತಿರುವೆ
ನಿನ್ನ  ಆಜ್ಞೆಗಳನು  ಅರಸುತಿರುವೆ

ಘೋಷಣೆ                   ಕೀರ್ತನೆ 119:34

ಅಲ್ಲೆಲೂಯ, ಅಲ್ಲೆಲೂಯ!
ನೀಡೆನಗೆ  ನಿನ್ನ  ಶಾಸ್ತ್ರದ  ಅರಿವನು,
ಪೂರ್ಣಮನದಿಂದ  ಆಚರಿಸುವೆನದನು,,
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 18:1-5, 10, 12-14


ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.” “ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.  ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ. “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ."

09.08.2026 - ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ

ಮೊದಲನೇ ವಾಚನ: 1 ಅರಸುಗಳು 19:9, 11-13



ಎಲೀಯನು ಪ್ರಯಾಣಮಾಡಿ ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.  ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ!  ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. 

ಕೀರ್ತನೆ: 85:9, 10, 11-12, 13-14

ಶ್ಲೋಕ: ತೋರಿಸೆಮಗೆ ಪ್ರಭೂ, ಕರುಣೆಯನು

1.  ನಾ ಕೇಳುತ್ತಿರುವೆನು ಪ್ರಭು ಹೇಳುವುದನು|
ತನ್ನ ಜನರಿಗಾತ ನುಡಿವುದು ಶಾಂತಿಯನು||
ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ|
ಇದರಿಂದಾತನ ಮಹಿಮೆ ನಾಡಿನಲಿರುವುದು ನಿರುತ||
ಶ್ಲೋಕ

2.  ಪ್ರೀತಿಯೂ ಸತ್ಯವೂ ಒಂದನೊಂದು ಕೂಡಿರುವುವು|
ನೀತಿಯೂ ಶಾಂತಿಯೂ ಒಂದನೊಂದು ಚುಂಬಿಸುವುವು||
ಸತ್ಯತೆಯು ಹುಟ್ಟುವುದು ಭೂಮಿಯಿಂದ|
ನೀತಿಯೂ ದೃಷ್ಟಿಸುವುದು ಗಗನದಿಂದ||
ಶ್ಲೋಕ

3.  ಪ್ರಭೂ ಕೊಟ್ಟೇ ತೀರುವನು  ಒಳಿತನು|
ನಮ್ಮ ನಾಡು ನೀಡುವುದು ಬೆಳೆಯನು||
ನಡೆವುದು ಪ್ರಭುವಿನ ಮುಂದೆ ನೀತಿ|
ಮಾಡುವುದು ಆತನ ಹೆಜ್ಜೆಗೆ ಹಾದಿ||
ಶ್ಲೋಕ

ಎರಡನೇ ವಾಚನ: ರೋಮನರಿಗೆ 9:1-5


ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.  ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ. 3ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.  ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.  ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.

ಘೋಷಣೆ
(ಎಫೆಸಿ 1: 18)

ಅಲ್ಲೆಲೂಯ, ಅಲ್ಲೆಲೂಯ.
ಯೇಸು ಕ್ರಿಸ್ತರ  ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ;| ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 14:22-33


ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.  ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.  ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.  ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.  ಹೀಗೆ ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು, “ಭೂತ, ಭೂತ!” ಎಂದು ಚೀರಿದರು.  ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.  ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.  ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.  ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.  ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.  ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.

08.08.2026 - ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು

 ಮೊದಲನೇ ವಾಚನ: ಪ್ರವಾದಿ ಹಬಕ್ಕೂಕನ ಗ್ರಂಥ 1:12--2:4


ಸರ್ವೇಶ್ವರಾ, ನನ್ನ ದೇವರೇ, ಪರಮ ಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ. ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಷ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿ ಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ? ಮನುಜರನ್ನು ಕಡಲ ಮೀನುಗಳಿಗೆ ಸಮನಾಗಿಸಿರುವಿರಿ, ಏಕೆ? ನಾಯಕನಿಲ್ಲದ ಕ್ರಿಮಿಕೀಟಗಳ ಗತಿಗೆ ಇಳಿಸಿರುವಿರಿ, ಏಕೆ? ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿ ಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ. ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ. ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶ ಮಾಡುತ್ತಿರಬೇಕೋ? “ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.” ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು. ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು. ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು. 
ಕೀರ್ತನೆ: 9:8-9, 10-11, 12-13

ಶ್ಲೋಕ: ನಿನ್ನನು ಅರಸುವವರನು ಹೇ ಪ್ರಭೂ, ನೀ ಕೈ ಬಿಡುವವನಲ್ಲ.

ಶುಭಸಂದೇಶ: ಮತ್ತಾಯ 17:14-20


ಜನರ ಗುಂಪು ಇದ್ದಲ್ಲಿಗೆ ಅವರೆಲ್ಲರು ಮರಳಿಬಂದರು. ಆಗ ಒಬ್ಬನು ಯೇಸುಸ್ವಾಮಿಯ ಬಳಿಗೆ ಬಂದು,  “ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ.  ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ,” ಎಂದು ಮೊಣಕಾಲೂರಿ ಯಾಚಿಸಿದನು. ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು. ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು. ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಆ ದೆವ್ವವನ್ನು ಬಿಡಿಸಲು ನಮ್ಮಿಂದಾಗಲಿಲ್ಲವಲ್ಲ, ಅದೇಕೆ?” ಎಂದು ಕೇಳಿದರು.  ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ. ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು," ಎಂದರು.

07.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ

 ಮೊದಲನೇ ವಾಚನ: ನಹೂಮ2:1 , 3; 3:1-3, 6-7


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಐ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನೆಂದಿಗೂ ನಿನಗೆ ಮುತ್ತಿಗೆ ಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ! ಸರ್ವೇಶ್ವರ, ಕೊಳ್ಳೇಗಾರರು ಸುಲಿಗೆ ಮಾಡಿದ್ದನ್ನು ಮುರಿದುಹಾಕಿದೆ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಾಕೋಬಿನ ಮಹತ್ವವನ್ನು ಹಾಗು ಇಸ್ರಾಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ.  ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ. ಕೇಳಿ, ಚಕ್ರಗಳಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ. ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ. ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು. ನಿನ್ನ ನೋಡುವವರು ನಿನ್ನಿಂದ ದೂರ ಓಡುವರು “ನಿನೆವೆ ಹಾಳುಬಿದ್ದಿದೆ, ಅದಕ್ಕೆ ಗೋಳಿಡುವರಾರು? ಅದನ್ನು ಸಂತೈಸುವವರು ನಮಗೆಲ್ಲಿ ಸಿಕ್ಕಿಯಾರು?, ಎಂದುಕೊಳ್ಳುವರು.”

ಧರ್ಮೋಪದೇಶಕಾಂಡ: 32:35-36, 39, 41

ಶ್ಲೋಕ: ಬದುಕಿಸುವವನು, ಕೊಲ್ಲುವವನು ನಾನೇ.

ಶುಭಸಂದೇಶ: ಮತ್ತಾಯ 16:24-28


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.  ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.  ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?  ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.  ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ”.

14.08.2026 - ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು

  ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 16:1-15, 60, 63 ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ - “ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ...