ಮೊದಲನೇ ವಾಚನ: ಯೆರೆಮೀಯ 18:1-6
ಸರ್ವೇಶ್ವರ ಸ್ವಾಮಿ ನನಗೆ : “ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು, ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುತ್ತೇನೆ,” ಎಂದು ತಿಳಿಸಿದರು. ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ. ಅವನು ಜೇಡಿ ಮಣ್ಣಿನಿಂದ ಮಾಡುತ್ತಿದ್ದ ಒಂದು ಪಾತ್ರೆ ಕೆಟ್ಟುಹೋಗುತ್ತಿದ್ದಾಗಲೆಲ್ಲ ಅದನ್ನು ಮತ್ತೆ ತನಗೆ ಸರಿತೋಚಿದ ಹಾಗೆ ಹೊಸ ಪಾತ್ರೆಯನ್ನಾಗಿ ಮಾಡುತ್ತಿದ್ದ. ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ : “ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.
ಕೀರ್ತನೆ:146:1-2, 2-4, 5-6
ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ದಾರಕನೋ ಅವನೇ ಧನ್ಯನು
ಕೀರ್ತನೆ
146: 1-6. v.5
ಶ್ಲೋಕ: ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ ಅವನೇ ಧನ್ಯನು.
1. ಮನವೇ, ವಂದಿಸು ಪ್ರಭುವನು|
ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು|
ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು||
ಶ್ಲೋಕ
2. ನಂಬಬೇಡ ಅಧಿಕಾರಿಯನು, ನೆಚ್ಚಬೇಡ ನರಮಾನವನನು|
ಉದ್ಧರಿಸಲು ಅಸಮರ್ಥನವನು||
ಉಸಿರು ಹೋದುದೇ ಮರಳುತ್ತಾನವನು ಮಣ್ಣಿಗೆ| ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ||
ಶ್ಲೋಕ
3. ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ ಅವನೇ ಧನ್ಯನು|
ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ ಅವನೇ ಧನ್ಯನು||
ಭೂಮ್ಯಾಕಾಶ, ಸಾಗರ, ಚರಾಚರಗಳು ನಿರ್ಮಿಸಿದವ ಆತನೇ|
ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೇ||
ಶ್ಲೋಕ
ಘೋಷಣೆ
(111: 7, 8)
ಅಲ್ಲೆಲೂಯ, ಅಲ್ಲೆಲೂಯ.
ಸುಸ್ಥಿರವಾದವು ಪ್ರಭುವಿನ ನಿಯಮ ನಿಬಂಧನೆಗಳು,| ಯುಗಯುಗಾಂತರಕೂ ದೃಢವಾಗಿರುವುವು ||
ಅಲ್ಲೆಲೂಯ.
ಶುಭಸಂದೇಶ: ಮತ್ತಾಯ 3:47-53
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ. ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು. ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.










