10.05.2026 - ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ. ನಾನೂ ಪಿತನನ್ನು ಕೇಳಿಕೊಳ್ಳುವೆನು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 8:5-8, 14-17


ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು. ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು. ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು. ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ. 

ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು. ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ. ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.

ಕೀರ್ತನೆ: 66:1-3, 4-5, 6-7, 16, 20

ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ I
ಹಾಡಲಿ ಆತನ ಶ್ರೀನಾಮ ಮಹಿಮೆಗೆ II
ನಿನ್ನ ಕಾರ್ಯಗಳೆನಿತೋ ಚೇತೋಹಾರಿ I
ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II

ಜಗವೆಲ್ಲ ಪೂಜಿಪುದು ನಿನ್ನನು I
ಪೊಗಳಿ ಮಾಳ್ಪುದು ಗುಣಗಾನವನು I
ಕೀರ್ತಿಸುವುದು ನಿನ್ನ ನಾಮವನು” II
ಬನ್ನಿದೇವನತಿಶಯ ಕಾರ್ಯಗಳ ನೋಡಬನ್ನಿ I
ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ

ಒಣನೆಲವಾಗಿ ಮಾರ್ಪಡಿಸಿದ ಕಡಲನು I
ಕಾಲು ನಡೆಯಲೇ ದಾಟಿಸಿದ ನದಿಯನು I
ಇದ ನಿಮಿತ್ತ ಪಡೆಯೋಣ ಆನಂದವನು II
ಆತನಾಳ್ವಿಕೆ ಶಕ್ತಿಯುತನಿರಂತರ I
ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I
ಜಂಬ ಕೊಚ್ಚದಿರಲಿ ದಂಗೆಕೋರ II

ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I
ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ I

ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I
ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II

ಶ್ಲೋಕ: ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ

ಎರಡನೇ ವಾಚನ: 1 ಪೇತ್ರನು 3:15-18

ಸಹೋದರರೇ, ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ. ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು. ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು. ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.

ಶುಭಸಂದೇಶ: ಯೊವಾನ್ನ 14:15-21


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ. ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು. ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು. ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ. ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ. ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ. ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”

09.05.2026 - ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 16:1-10


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣ ಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು. ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು. ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು. ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು. ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು. ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ. ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು. ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು. ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.

ಕೀರ್ತನೆ: 100:1-2, 3, 5
ಶ್ಲೋಕ: ಭೂನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ

ಭೂನಿವಾಸಿಗಳೇಜಯಘೋಷ ಮಾಡಿ ಪ್ರಭುವಿಗೆ I
ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I
ಹಾಡುತಪಾಡುತಬನ್ನಿ ಆತನ ಸನ್ನಿಧಿಗೆ II
ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I

ನಮ್ಮ ಸೃಷ್ಟಿಕರ್ತ ಆತನುಆತನವರು ನಾವು I
ಆತನ ಜನಆತನೆ ಮೇಯಿಸುವ ಕುರಿಗಳುನಾವು II

ಹೌದುಪ್ರಭುವೆನಿತೋ ಒಳ್ಳೆಯವನು I
ಇರುವುದಾತನ ಪ್ರೀತಿ ಯುಗಯುಗಕು I
ಆತನ ಸತ್ಯತೆ ತಲತಲಾಂತರಕು II

ಶುಭಸಂದೇಶ: ಯೊವಾನ್ನ 15:18-21

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು. ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು."

 

08.05.2026 - ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31


ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ. ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ. ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು. ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!” ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು. ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.

ಕೀರ್ತನೆ: 57:8-9, 10, 12

ಶ್ಲೋಕ: ನಿನ್ನ ಸ್ತುತಿಸುವೆನು ಪ್ರಭೂ ಜನಾಂಗಗಳ ಮುಂದೆ

1.  ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ|
ಹಾಡುತ ಪಾಡುತ ನಾ ರಚಿಸುವೆ ಗಾಯನ||
ಚೇತನಗೊಳ್ಳು ಮನವೇ, ಚೇತನಗೊಳ್ಳು, ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು|
ಎಬ್ಬಿಸೆ ರವಿಯನು ಪ್ರಾತಃಕಾಲದೊಳು||
ಶ್ಲೋಕ

2.  ನಿನ್ನ ಸ್ತುತಿಸುವೆನು ಪ್ರಭೂ ಜನಾಂಗಗಳ ಮುಂದೆ|
ಸಂಕೀರ್ತಿಸುವೆನು ನಿನ್ನನ್ನು ರಾಷ್ಟ್ರಗಳ ಮಧ್ಯೆ||
ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು|
ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು||
ಶ್ಲೋಕ

3.  ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ|
ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ||
ಶ್ಲೋಕ

ಘೋಷಣೆ:

ಅಲ್ಲೆಲೂಯ, ಅಲ್ಲೆಲೂಯ!
 
"ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ| ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ||
ಅಲ್ಲೆಲೂಯ!

ಶುಭಸಂದೇಶ: ಯೊವಾನ್ನ 15:12-17


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ". ಎಂದರು.

07.05.2026 - ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15: 7-21


ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದು ನಿಂತು ಹೀಗೆಂದನು: “ಸಹೋದರರೇ, ಅನ್ಯ ಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ. ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅವರಿಗೂ ನಮಗೂ ಯಾವ ಭೇದ ಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು. ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ? ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.” ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯ ಧರ್ಮೀಯರ ಮಧ್ಯೆ ಎಸಗಿದ ಸೂಚಕ ಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ಕುರಿತು ಕೇಳಿದರು. ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ, ದೇವರು ಈ ಮೊದಲೇ ಅನ್ಯ ಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ದಾರೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ. ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣ ಸಾಮರಸ್ಯವಿದೆ. ‘ಅಳಿದುಹೋದ ದಾವೀದನ ಮನೆತನವನು ಪುನರ್ಸ್ಥಾಪಿಸಲು ಮರಳಿ ಬರುವೆನು ಪಾಳು ಬಿದ್ದುದನು ಜೀರ್ಣೋದ್ಧಾರ ಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’ “ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯ ಧರ್ಮೀಯರನ್ನು ತೊಂದರೆಗೆ ಈಡು ಮಾಡಬಾರದು. ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು. ಏಕೆಂದರೆ ಪುರಾತನ ಕಾಲಂದಿದಲೂ ಪ್ರತಿಯೊಂದು ಸಬ್ಬತ್‍ ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾ ಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.

ಕೀರ್ತನೆ: 96: 1-3, 10
ಶ್ಲೋಕ: ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ, ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ. 

ಶುಭಸಂದೇಶ: ಯೊವಾನ್ನ 15:9-11


ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. “ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.

06.05.2026 - ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:1-6


ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು. ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು. ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು. ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು. ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು. 

ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ, ಆಯಿತೆನಗೆ ಆನಂದ, ಜನರೆನ್ನ ಕರೆದಾಗ.

ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I
ಆಯಿತೆನಗೆ ಆನಂದಜನರೆನ್ನ ಕರೆದಾಗ II
ನನ್ನ ಕಾಲುಗಳು  ಜೆರುಸಲೇಮೇ I
ತಲುಪಿವೆ ನಿನ್ನ ಪುರದ್ವಾರಗಳನೇ II

ನೋಡುಜೆರುಸಲೇಮ್ ಪಟ್ಟಣವಿದು I
ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II
ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I
ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I
ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II

ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I
ದಾವೀದನ ಮನೆತನದವರ ಸಿಂಹಾಸನಗಳು II

ಶುಭಸಂದೇಶ: ಯೊವಾನ್ನ 15:1-8


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು. ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ. ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ. “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು. “ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

05.05.2026 - ನಾನು ಶಾಂತಿ ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:19-28



ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು. ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು. ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು. ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು. ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು. ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು. ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು. ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು. ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.

ಕೀರ್ತನೆ: 145:10-11, 12-13, 21

ಶ್ಲೋಕ: ಅರಿವರಿಂತು ಜನರು ತನ್ನ ಶೂರಕಾರ್ಯಗಳನು, ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು.

ಪ್ರಭುನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I
ಕೊಂಡಾಡುವುದು ನಿನ್ನನು ಭಕ್ತ ಸಮೂಹವು II
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II


ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II
ಶಾಶ್ವತವಾದುದು ನಿನ್ನ ರಾಜ್ಯವು I
ಇರುವುದೆಂದಿಗು ನಿನ್ನ ಆಳ್ವಿಕೆಯು II

ಸಲಹುವನು ತನ್ನನು ಪ್ರೀತಿಸುವವರೆಲ್ಲರನು I

ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ಶುಭಸಂದೇಶ: ಯೊವಾನ್ನ 14:27-31


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ. ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು. ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ. ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು.” ಎಂದರು.

04.05.26 - ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು.

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 14:5-18


ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು. ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು. ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು. ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ. ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ, “ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು. ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು. ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು. ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು. ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು: “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು. ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು. ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.” ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.

ಕೀರ್ತನೆ: 115:1-2, 3-4, 15-16
ಶ್ಲೋಕ: ನಮಗಲ್ಲ ಹೇ ಪ್ರಭೂ, ನಮಗಲ್ಲ ಮಹಿಮೆ, ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ.

ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ
ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ
ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ
ಅನ್ಯಜನರು ನುಡಿಯುವುದೆಂತು
“ಅವರ ದೇವರೆಲ್ಲಿ?” ಎಂದು

ಪರದಲ್ಲಿಹನು ನಮ್ಮ ದೇವನು
ಗೈವನು ತನಗಿಷ್ಟ ಬಂದುದನು
ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ
ಅವು ಮಾನವನ ಕೈ ಕೆಲಸಗಳು ಮಾತ್ರ

ಇಹಪರಗಳನು ಉಂಟುಮಾಡಿದ ಪ್ರಭುವಿಂದ
ಲಭಿಸುವಂತಾಗಲಿ ನಿಮಗೆ ಆಶೀರ್ವಾದ
ಪ್ರಭುವಿಗೆ ಸ್ವಂತವಾದುದು ಪರಲೋಕ
ನರರಿಗೆ ಕೊಟ್ಟಿಹನಾತನು ಭೂಲೋಕ

ಶುಭಸಂದೇಶ: ಯೊವಾನ್ನ 14:21-26

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ: "ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.” ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು. ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು. ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ. ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು." ಎಂದರು.

10.05.2026 - ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ. ನಾನೂ ಪಿತನನ್ನು ಕೇಳಿಕೊಳ್ಳುವೆನು

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 8:5-8, 14-17 ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂ...