18.02.2026 - ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ

 









ಮೊದಲನೇ ವಾಚನ: ಯೊವೇಲ 2:12-18

ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.” ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ. ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು. ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು. ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ. ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ. ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರ ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ” ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆ ತೋರಿ ಹೀಗೆಂದರು:

ಕೀರ್ತನೆ: 51:3-4, 5-6, 12-13, 14, 17

ಶ್ಲೋಕ: ಕೃಪಾಳು ದೇವಾ ಕರುಣಿಸೆಮ್ಮನು ನಿಮ್ಮ ವಿರುದ್ಧ ನಾವು ಪಾಪ ಮಾಡಿದ್ದೇವೆ.

ಎರಡನೇ ವಾಚನ: 2 ಕೊರಿಂಥಿಯರಿಗೆ 5:20-6:2

ಸಹೋದರರೇ, ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ. ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು. ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ. "ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.

ಶುಭಸಂದೇಶ: ಮತ್ತಾಯ 6:1-6, 16-18

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನಧರ್ಮ ಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು." "ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆ ಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು."  "ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."

ಮನಸ್ಸಿಗೊಂದಿಷ್ಟು : ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳಾದ ದಾನ-ಧರ್ಮ ಪ್ರಾರ್ಥನೆ ಹಾಗೂ ಉಪವಾಸ ವ್ರತ ಹೇಗಿರಬೇಕೆಂಬುದನ್ನು ಯೇಸು ಇಂದು ಹೇಳುವುದನ್ನು ನಾವು ಕಾಣುತ್ತೇವೆ. ಆಚರಣೆಗಳು ತಮ್ಮ ಮೂಲ ಅರ್ಥವನ್ನೇ ಕಳೆದುಕೊಂಡು ಕೇವಲ ತೋರ್ಪಡಿಕೆಗೆ ಸೀಮಿತವಾದಾಗ ಅದು ಮನುಷ್ಯರ ಮೆಚ್ಚುಗೆಗಷ್ಟೇ  ಪಾತ್ರವಾಗುತ್ತದೆ. ಆದರೆ ದೇವರನ್ನು ಮೆಚ್ಚಿಸುವುದು ಅವುಗಳ ನಿಜ ಕಾರಣವಾಗಬೇಕು ಎಂಬುದು ಯೇಸುವಿನ ಕರೆ.

ಪ್ರಶ್ನೆ : ನಮ್ಮ ದಿನ ನಿತ್ಯದ ಕಾರ್ಯಗಳು ಯಾರನ್ನು ಹೆಚ್ಚು ಮೆಚ್ಚಿಸುವತ್ತ ಸಾಗುತ್ತಿದೆ? ಮನುಷ್ಯರನ್ನೋ ? ದೇವರನ್ನೋ ?

ಪ್ರಭುವೇ,
ಇಂದಿನವರೆಗಿನ 'ನನ್ನನ್ನು' ಸರಿಸಿ 
ಈಗಿಂದಲೇ  ನಿಮ್ಮನ್ನು ನನ್ನಲಿರಿಸಿ 
-ಚಿತ್ತ 

20.02.2026 - ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ?

 




ಮೊದಲನೇ ವಾಚನ: ಯೆಶಾಯ  58:1-9

ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು; ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೊ ಎಂಬಂತೆ, ಇವರು ದಿನ ದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವ ದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.” ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ. ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ? “ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು, ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತ ಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸ ವ್ರತ? “ಇದನ್ನು ಆಚರಿಸುವಾಗ ನೀವು ಉದಯ ಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು. ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. 

ಕೀರ್ತನೆ: 51:3-4, 5-6, 18-19

ಶ್ಲೋಕ: ನೊಂದ ಬೆಂದ ಮನವನಾತ ಬಲ್ಲೆಯೆನನು

ಶುಭಸಂದೇಶ: ಮತ್ತಾಯ 9: 14-15

ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?" ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, "ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.

ಮನಸ್ಸಿಗೊಂದಿಷ್ಟು : ಕೇವಲ ಆಚರಣೆಗಾಗಿ ಮಾತ್ರವೇ ಮಾಡುವ ಉಪವಾಸ ವ್ರತದ ಬಗ್ಗೆ ಇಂದಿನ ಎರಡೂ ವಾಚನಗಳು ಮಾತನಾಡುತ್ತವೆ.   ದೇವರಿಗೆ ಇಷ್ಟವಾದ  ಉಪವಾಸ ವ್ರತ ಯಾವುದೆಂದು ಯೆಶಾಯ ಪ್ರವಾದಿ ಹೇಳಿದರೆ, "ನಾನು ಜೊತೆಗಿರುವಾಗ ಉಪವಾಸವೇಕೆ ಬೇಕು" ಎನ್ನುತ್ತಾರೆ ಯೇಸು. ನಮ್ಮ ಉಪವಾಸ, ತ್ಯಾಗದಿಂದ ನಮಗೆ ಮಾತ್ರವೇ ಒಳ್ಳೆಯದಾಗಿ ಮತ್ತೊಬ್ಬರಿಗೆ ಅದರಿಂದ ಪ್ರಯೋಜನವಾಗದಿದ್ದರೆ ಅದು ನಿರರ್ಥಕ ಎಂಬ ಪೋಪ್ ಫ್ರಾನ್ಸಿಸ್ ರ  ಮಾತು ಚಿಂತನೆಗೆ ಯೋಗ್ಯವಾಗಿದೆ. 

ಪ್ರಭುವೇ,
ನೀ ನನ್ನ ಜೊತೆಯಿರೇ ದುಃಖವೇಕೆ 
ಕರುಣೆ ಪ್ರೀತಿಯಿಲ್ಲದ ಉಪವಾಸವೇಕೆ?
-ಚಿತ್ತ 

19.02.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ.....

 ಮೊದಲನೇ ವಾಚನ: ಧರ್ಮೋಪದೇಶಕಾಂಡ 30:15-20


ಮೋಶೆಯು ಜನರಿಗೆ ಹೀಗೆಂದು ಹೇಳಿದನು: “ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ. ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿ ಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು. ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ, ಇತರ ದೇವರುಗಳನ್ನು ಪೂಜಿಸಿ ಅವಲಂಬಿಸಿದರೆ ನೀವು ಸ್ವಾಧೀನ ಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿ ಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ. ನಾನು ಸಾವು ಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”

ಕೀರ್ತನೆ: 1:1-2, 3, 4, 6

ಶ್ಲೋಕ: ಪ್ರಭುವಿನಲ್ಲೇ ಭರವಸೆಯಿಟ್ಟು ನಡೆವಾತನು ಧನ್ಯನು

ಶುಭಸಂದೇಶ: ಲೂಕ 9:22-25


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾ ಪ್ರಮುಖರಿಂದಲೂ ಮುಖ್ಯ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಅವರಿಗೆ ತಿಳಿಸಿದರು. ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು. ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?

ಮನಸ್ಸಿಗೊಂದಿಷ್ಟು :  ಆಯ್ಕೆಗಳು ನಮ್ಮನ್ನು ಗೊಂದಲಕ್ಕೆ ತಳ್ಳಬಹುದು. ಸುಖ-ಸಮೃದ್ಧಿ, ಆಸೆ-ಸೌಲಭ್ಯಗಳ ನಡುವೆ ಶಿಲುಬೆಯನ್ನು ಹೊತ್ತು ತಮ್ಮ ಹಿಂದೆ  ಬರಲು ಯೇಸು ನೀಡುವ ಕರೆ ಕಷ್ಟದ ಆಯ್ಕೆಯೇ. ಇಂದಿನವರೆಗಿನ ನಮ್ಮ ಆಯ್ಕೆ ಯಾವುದಾಗಿತ್ತು. ಮುಂದೆ ಯಾವುದಾಗಬಹುದು? ಯೇಸುವಿನ ಹಿಂದೆ ಸಾಗಲು ನಮಗಿರುವ ಅಡ್ಡಿಗಳೇನು?

ಪ್ರಶ್ನೆ : ಇಂದಿನ ಶುಭಸಂದೇಶದಲ್ಲಿನ ಯೇಸುವಿನ ಕರೆ ನಮ್ಮನ್ನು ಯೋಚಿಸುವಂತೆ ಮಾಡಿದೆಯೇ ಅಥವಾ ಪ್ರತಿ ನಿತ್ಯದ ವಾಕ್ಯದಂತೆ ಇದೂ ಓದಿಗೆ ಮಾತ್ರವೇ?

ಪ್ರಭುವೇ,
ಹೊರಬೇಕಾದ ಶಿಲುಬೆ, ಭಾರವೇ ಸರಿ 
ಹೊತ್ತು ನಿನ್ನ ಹಿಂದೆ ಬರುವುದಾಗಲಿ 
ಈ ನನ್ನ ಜೀವನದ ಗುರಿ
-ಚಿತ್ತ  

17.02.2026

ಮೊದಲನೇ ವಾಚನ: ಯಕೋಬ 1:12-18


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ. ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ. ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ. ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ. ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ. ಪ್ರಿಯ ಸಹೋದರರೇ, ಮೋಸಹೋಗಬೇಡಿ. ಎಲ್ಲಾ ಯೋಗ್ಯ ವರಗಳೂ ಉತ್ತಮಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ. ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.

ಕೀರ್ತನೆ
94: 12-13, 14-15, 18-19, v. 12

ಶ್ಲೋಕ:  ಪ್ರಭೂ, ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ

1.  ಪ್ರಭೂ, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ|
ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ|
ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ||
ಶ್ಲೋಕ

2.  ತಳ್ಳಿಬಿಡಲು ಪ್ರಭು ತನ್ನ ಜನರನ್ನು ಕೈಬಿಡನವನು|
ತನ್ನ ಸ್ವಕೀಯರನು ನ್ಯಾಯತೀರ್ಪು ಮರಳಿ ತಿರುಗುವುದು|
ನೀತಿಯತ್ತ ನೇರ ಮನಸ್ಕರೆಲ್ಲ ಮಾಡುವರು ಅದನು ಸಮರ್ಥ||
ಶ್ಲೋಕ

3.  ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ|
ನಿನ್ನ ಅಚಲ ಪ್ರೀತಿ, ಪ್ರಭೂ, ನೆರವಾಯಿತೆನಗೆ||
ನನ್ನ ಅಂತರಂಗದಲಿ ಏಳಲು ಅಂದೋಲನ|
ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ||
ಶ್ಲೋಕ

ಘೋಷಣೆ
(2 ಕೊರಿಂಥಿ 5:19)

ಅಲ್ಲೆಲೂಯ, ಅಲ್ಲೆಲೂಯ!
ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ | ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂದಾನಗೊಳಿಸುತ್ತಾರೆ ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 8:14-21


ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು. ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು. ಆ ಚರ್ಚೆಯನ್ನು ಯೇಸು ಗಮನಿಸಿ “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ? ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ? ನಾನು ಐದು ರೊಟ್ಟಿಗಳಿಂದ ಐದುಸಾವಿರ ಜನರನ್ನು ತೃಪ್ತಿಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?” ಎಂದು ಕೇಳಿದರು. “ಹನ್ನೆರಡು ಬುಟ್ಟಿಗಳು” ಎಂದು ಅವರು ಉತ್ತರವಿತ್ತರು. “ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕುಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆತುಂಬಾ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?” ಎಂದು ಪುನಃ ಅವರನ್ನು ಕೇಳಲು, “ಏಳು ಕುಕ್ಕೆಗಳು,” ಎಂದರು. ಆಗ ಯೇಸು, “ಇಷ್ಟಾದರೂ ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.  

16.02.2026 - “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?

 ಮೊದಲನೇ ವಾಚನ: ಯಕೋಬ 1:1-11


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು. ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ. ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತೇವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ. ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ. ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ. ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ. ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ. ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಅನಂದಿಸಲಿ. ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ. ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿ ಹೋಗುತ್ತಾರೆ. ಸೂರ್ಯನ ಸುಡು ಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ, ಅದರ ಹೂವು ಉದುರಿ ಹೋಗುವುದು, ಅದರ ಅಂದ ಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿ ಹೋಗುತ್ತಾನೆ.

ಕೀರ್ತನೆ: 119:67, 68, 71, 72, 75, 76

ಶ್ಲೋಕ: ನಾ ಬದುಕುವಂತೆ ತೋರೆನಗೆ ನಿನ್ನ ದಯೆ

ಶುಭಸಂದೇಶ: ಮಾರ್ಕ 8:11-13


ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು. ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.

15.02.25 - ಕೋಪ ಕೊಲೆಗೆ ಮೂಲ

 ಮೊದಲನೇ ವಾಚನ: ಸಿರಾಖನು 15:15-50


ನೀನು ಇಚ್ಛಿಸಿದೆಯಾದರೆ ಆತನ ಆಜ್ಞೆಗಳನ್ನು ಅನುಸರಿಸಿ ನಡೆವೆ ಹೀಗೆ ನಂಬಿಗಸ್ಥನಾಗಿ ದೇವರ ಚಿತ್ತಾನುಸಾರ ಬಾಳುವೆ. ನಿನ್ನ ಮುಂದೆ ಇಟ್ಟಿರುವರು ಬೆಂಕಿಯನ್ನು ಹಾಗು ನೀರನ್ನು ನೀನು ಆಯ್ದುಕೊಳ್ಳಬಹುದು ನಿನಗೆ ಬೇಕಾದುದನ್ನು. ಜೀವನ್ಮರಣಗಳು ಇರಿಸಲಾಗಿವೆ ಮನುಷ್ಯನ ಎದುರಿನಲ್ಲೆ ಅವನು ಇಷ್ಟಪಟ್ಟದ್ದನ್ನು ಕೊಡಲಾಗುವುದು ಅವನಿಗೆ. ಏಕೆಂದರೆ ದೇವರ ಜ್ಞಾನ ಅಪರಿಮಿತ ಆತ ಅಪೂರ್ವ ಬಲವಂತ, ಎಲ್ಲವನು ವೀಕ್ಷಿಸುವಂಥವ. ದೇವರಿಗೆ ಭಯಪಡುವವರ ಮೇಲಿದೆ ಆತನ ಕೃಪಾಕಟಾಕ್ಷ ಮನುಷ್ಯನು ಮಾಡುವ ಪ್ರತಿಯೊಂದೂ ಆತನಿಗೆ ವ್ಯಕ್ತ. ದುರುಳನಾಗೆಂದು ದೇವರು ಯಾರಿಗೂ ಆಜ್ಞಾಪಿಸಲಿಲ್ಲ, ಪಾಪಮಾಡಲು ಯಾರಿಗೂ ಅನುಮತಿ ಕೊಟ್ಟಿಲ್ಲ.

ಕೀರ್ತನೆ: 119:1-2, 4-5, 17-18, 33-34

ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೇದವರು ಧನ್ಯರು

ಎರಡನೇ ವಾಹನ: 1 ಕೊರಿಂಥಿಯರಿಗೆ 2:6-10

ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದು ಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ. ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ. ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.” ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.

ಶುಭಸಂದೇಶ: ಮತ್ತಾಯ 5:17-37


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೇಳಿದ್ದೇನೆಂಡರೆ: "ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದು ಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದು ಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ವಿೂರುವವನು, ವಿೂರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು. ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." ಕೋಪ ಕೊಲೆಗೆ ಮೂಲ " ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ, ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು." "ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ; ಆದರೆ ನಾನು ಹೇಳುತ್ತೇನೆ, ಕೇಳಿ: ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ. ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು. ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು." "ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡ ಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ." " ‘ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇ ಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ. ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ; ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ; ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು. ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು."

14.02.26 - “ಏಳು ಇವೆ"

 ಮೊದಲನೇ ವಾಚನ: 1 ಅರಸುಗಳು 12:26-32; 13:33-34


ಯಾರೊಬ್ಬಾಮನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ; ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು. ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದು ತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು. ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು. ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನ ಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು. ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು. ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನ ಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು. ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ಕೀರ್ತನೆ: 106:6-7, 19-20, 21-22

ಶ್ಲೋಕ: ಮರೆಯಬೇಡೆನ್ನನು ಪ್ರಭೂ, ನಿನ್ನ ಪ್ರಜೆಗೆ ದಯೆತೋರುವಾಗ


1.  ನಮ್ಮ ಪಿತೃಗಳಂತೆಯೇ ಪಾಪಿಗಳು ನಾವು|
ಅಕ್ರಮಗೈದೆವು, ಅಪರಾಧಿಗಳಾದೆವು||
ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನ್ನು ಈಜಿಪ್ಟಿನಲಿ|
ಸ್ಮರಿಸಲಿಲ್ಲ ಅವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ||
ಶ್ಲೋಕ

2.  ಹೋರೇಬಿನಲಿ ಮಾಡಿದರು ಬಸವನನು|
ಆರಾಧಿಸಿದರು ಆ ಎರಕದ ಶಿಲೆಯನು||
ಈ ಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು|
ಆರಿಸಿಕೊಂಡರು ಹುಲ್ಲು ತಿನ್ನುವ ಬಸವನ ವಿಗ್ರಹವನು||
ಶ್ಲೋಕ

3.  ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು|
ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು||
ಹಾಮ ನಾಡಿನಲಿ ಮಾಡಿದ ಅದ್ಭುತಗಳನು|
ಕೆಂಗಡಲ ಬಳಿ ನಡೆದ ಘೋರ ಕೃತ್ಯಗಳನು||
ಶ್ಲೋಕ

ಘೋಷಣೆ
(ಯೊವಾನ್ನ 14:23)

ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು | ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು ||
ಅಲ್ಲೆಲೂಯ!


ಶುಭಸಂದೇಶ: ಮಾರ್ಕ 8:1-10

ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು. ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು. ಅವರಲ್ಲಿ ಕೆಲವು ಸಣ್ಣ ವಿೂನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು. ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.

18.02.2026 - ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ

  ಮೊದಲನೇ ವಾಚನ: ಯೊವೇಲ 2:12-18 ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.” ನಿಮ್ಮ ಉ...