08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12

ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ. ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು. “ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ. ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು. ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.” ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣು ಹೋಗಬೇಕು.
ಕೀರ್ತನೆ: 105:2-3, 4-5, 6-7

ಶ್ಲೋಕ:  ಅಪೇಕ್ಷಿಸಿ ನಿತ್ಯವೂ ಪ್ರಭುವಿನ ದರ್ಶನವನು

1.  ಹಾಡಿಪಾಡಿ ಹೊಗಳಿರಿ ಪ್ರಭುವನು|
ಧ್ಯಾನಿಸಿ ನೀವು ಆತನ ಪವಾಡಗಳನು||
ಹೆಮ್ಮೆಪಡಿ ನೆನೆದಾತನ ಶ್ರೀ ನಾಮ|
ಹಿಗ್ಗಲಿ ಹೃದಯ ಕೋರಿ ಆತನ ದರ್ಶನ||
ಶ್ಲೋಕ

2.  ಅರಸಿರಿ ಪ್ರಭುವನೂ ಆತನ ಶಕ್ತಿಯನೂ|
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು||
ಆತನ ದಾಸ ಅಬ್ರಹಾಮನ ಸಂತತಿಯವರೇ,|
ಆತನಾರಿಸಿಕೊಂಡ ಯಕೋಬನ ವಂಶದವರೇ||
ಶ್ಲೋಕ

3.  ನೆನೆಯಿರಿ ಆತನದ್ಭುತಗಳನು ಮಹತ್ಕಾರ್ಯಗಳನು|
ಆತನು ವಿಧಿಸಿದಾ ನ್ಯಾಯನಿರ್ಣಯಗಳನು||
ಪ್ರಭು ದೇವನೆಂಬುದು ಶ್ರುತ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||
ಶ್ಲೋಕ

ಘೋಷಣೆ
(ಕೀರ್ತನೆ 95: 8)

ಅಲ್ಲೆಲೂಯ, ಅಲ್ಲೆಲೂಯ.
ಆತನ  ಕರೆಗೆ  ಕಿವಿಗೊಟ್ಟರೆನಿತೋ  ಒಳಿತು  ನೀವಿಂದೇ,|ಕಲ್ಲಾಗಿಸಿಕೊಳ್ಳದಿರಿ  ಹೃದಯವನು  ನಿಮ್ಮ  ಪೂರ್ವಜರಂತೆ||
ಅಲ್ಲೆಲೂಯ.


ಶುಭಸಂದೇಶ: ಮತ್ತಾಯ 10:1-7


ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ."



07.07.2026 - “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ

 ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 8:4-7, 11-13

“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ. ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ? ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು. ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು. “ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ. ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ. ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು."

ಕೀರ್ತನೆ: 115:3-4, 5-6, 7-8, 9-10

ಶ್ಲೋಕ:  ಪ್ರಭುವಿನಲ್ಲಿದೆ ಭರವಸೆ ಇಸ್ರಯೇಲ್ ಜನರಿಗೆ

ಕೀರ್ತನೆ
115: 3-10. v. 9

ಶ್ಲೋಕ:  ಪ್ರಭುವಿನಲ್ಲಿದೆ  ಭರವಸೆ  ಇಸ್ರಯೇಲ್  ಜನರಿಗೆ.

1.  ಪರದಲ್ಲಿಹನು  ನಮ್ಮ  ದೇವನು|
ಗೈವನು  ತನಗಿಷ್ಟ  ಬಂದುದನು||
ಅವರ  ವಿಗ್ರಹ  ಬರೀ  ಬೆಳ್ಳಿ  ಬಂಗಾರ|
ಅವು  ಮಾನವನ  ಕೈ ಕೆಲಸಗಳು  ಮಾತ್ರ||
ಶ್ಲೋಕ

2.  ಬಾಯಿದ್ದರೂ  ಅವು  ಮಾತಾಡುವುದಿಲ್ಲ|
ಕಣ್ಣುಗಳಿದ್ದರೂ  ಅವು  ಕಾಣುವುದಿಲ್ಲ||
ಕಿವಿಯಿದ್ದರೂ  ಅವು  ಕೇಳುವುದಿಲ್ಲ|
ಮೂಗಿದ್ದರೂ  ಅವು  ಮೂಸುವುದಿಲ್ಲ||
ಶ್ಲೋಕ

3.  ಕೈಯಿದ್ದರೂ  ಅವು  ಮುಟ್ಟುವುದಿಲ್ಲ|
ಕಾಲಿದ್ದರೂ  ಅವು  ನಡೆಯುವುದಿಲ್ಲ||
ಅವುಗಳಂತಾಗುವರು  ಅವುಗಳನು  ಮಾಡುವವರು|
ಅವುಗಳಂತಾಗುವರು  ಅವುಗಳನು  ನಂಬುವವರು||
ಶ್ಲೋಕ

4.  ಪ್ರಭುವಿನಲ್ಲಿದೆ  ಭರವಸೆ  ಇಸ್ರಯೇಲ್  ಜನರಿಗೆ|
ಆತನೇ  ಸಹಾಯಕ  ರಕ್ಷಾಕವಚ  ಅವರಿಗೆ||
ಪ್ರಭುವಿನಲ್ಲಿದೆ  ಭರವಸೆ  ಆರೋನನ  ಕುಲಕೆ|
ಆತನೇ  ಸಹಾಯಕ  ರಕ್ಷಾಕವಚ  ಅವರಿಗೆ|| 
ಶ್ಲೋಕ


ಘೋಷಣೆ
(ಕೀರ್ತನೆ 27: 11)

ಅಲ್ಲೆಲೂಯ, ಅಲ್ಲೆಲೂಯ.
ಬೋಧಿಸುವೆನು ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು||
ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 9:32-38


ಕುರುಡರು ಹೊರಟು ಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು. ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿ ಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.

06.07.2026 - ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,

 ಮೊದಲನೇ ವಾಚನ: ಹೊಶೇಯ 2:16, 17-18, 21-22


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ. ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಚರಿಸದಂತೆ ಮಾಡುವೆನು. ಆ ದಿನಗಳಲ್ಲಿ ನನ್ನ ಜನರಿಗೆ ಹಾನಿ ಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದ ಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.

ಕೀರ್ತನೆ: 145:2-3, 4-5, 6-7, 8-9

ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು

ಕೀರ್ತನೆ
145: 2-9, v. 8

ಶ್ಲೋಕ:  ಪ್ರಭು  ದಯಾನಿಧಿ,  ಕೃಪಾಸಾಗರನು.

1.  ಹೊಗಳುವೆನು ನಾ ದಿನದಿನವೂ ನಿನ್ನನು|
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು||
ಪ್ರಭು ಮಹಾತ್ಮನು ಸ್ತತ್ಯರ್ಹನು|
ಆತನ ಮಹಿಮೆ ಅಗಮ್ಯವಾದದು||
ಶ್ಲೋಕ

2.  ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು|
ತಿಳಿಸುವುದು ಪ್ರಭೂ, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು||
ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು|
ನಿನ್ನ ಮಹೋನ್ನತ ಮಹಿಮಾಪ್ರಭಾವವನು||
ಶ್ಲೋಕ

3.  ಜನರು ಸಾರುವರು ನಿನ್ನ  ಅದ್ಭುತಶಕ್ತಿಯನು|
ನಾ ಪ್ರಸಿದ್ದಪಡಿಸುವೆನು ನಿನ್ನ ಮಹಿಮೆಯನು||
ಪ್ರಕಟಿಸುವರವರು ನಿನ್ನ ಮಹೋಪಕಾರವನು|
ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು||
ಶ್ಲೋಕ

4.  ಪ್ರಭು ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ

🌺✝️🌺

ಘೋಷಣೆ
(ಕೀರ್ತನೆ 25: 4,5)

ಅಲ್ಲೆಲೂಯ, ಅಲ್ಲೆಲೂಯ.
ನಿನ್ನ  ಮಾರ್ಗವನು  ಪ್ರಭೂ,  ನನಗೆ  ತೋರಿಸು | ಸನ್ಮಾರ್ಗದಲಿ  ಮುನ್ನಡೆಸೆನ್ನ  ದೇವಾ ||
ಅಲ್ಲೆಲೂಯ.





ಶುಭಸಂದೇಶ: ಮತ್ತಾಯ 9:18-26


ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು," ಎಂದು ಬೇಡಿಕೊಂಡನು. ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿ ಹೋದರು. ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು" ಎಂದುಕೊಂಡಿದ್ದಳು ಆಕೆ. ಯೇಸು ಹಿಂದಿರುಗಿ ಆಕೆಯನ್ನು ನೋಡಿ, "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲ ಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, "ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ" ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯ ಮಾಡಿದರು. ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು. ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿ ಹರಡಿತು. 

04.07.2026 - ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ

 ಮೊದಲನೆಯ ವಾಚನ: ಆಮೋಸ 9:11-15



ಸರ್ವೇಶ್ವರ ಇಂತೆನ್ನುತ್ತಾರೆ: "ದಿನ ಬರಲಿದೆ, ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದುದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು. ಹೀಗೆ ನನ್ನ ಜನರು ಎದೋಮಿನ ಮಿಕ್ಕ ಭಾಗವನ್ನೂ ಸರ್ವೇಶ್ವರನ ಪ್ರಜೆ ಎನ್ನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು." ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು: ಕಾಲ ಬರುವುದು. ಆಗ ಹೊಸಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು, ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು. ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು. ಬೇರೂರಿಸುವೆನು ಅವರನು ಸ್ವಂತನಾಡಿನಲಿ, ಕೀಳರಾರು ಅವರನು ಅಲ್ಲಿಂದ ಮರಳಿ." ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.

ಕೀರ್ತನೆ: 85:9, 11-12, 13-14
ಶ್ಲೋಕ: ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ.

ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ|
ಇದರಿಂದ ತನ್ನ ಮಹಿಮೆ ನಾಡಿನಲ್ಲಿರುವುದು ನಿರುತ||

ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ|
ಸರ್ವೇಶ್ವರನಿಗೆ ಜಯಜಯ ಘೋಷಮಾಡಿರಿ ಮಾಡಿರಿ||
ಪರಾತ್ಪರನಾದ ಪ್ರಭುವು ಘನಗಂಭೀರನು|
ಪ್ರಪಂಚಕ್ಕೆಲ್ಲ ರಾಜಧಿರಾಜನು||

ಏರಿದನು ಪ್ರಭು ಜಯಜಯಕಾರದೊಂದಿಗೆ|
ಆರೋಹಣವಾದನು ತುತೂರಿನಾದ ಜೊತೆಗೆ||
ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ|
ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ||

ದೇವನು ಭೂಮಂಡಲಕ್ಕೆಲ್ಲಾ ಒಡೆಯನು|
ಕೀರ್ತನೆಯಿಂದ ಕೊಂಡಾಡಿರಿ ಆತನನು||
ವಹಿಸಿಕೊಂಡನು ದೇವನು ಸರ್ವಾಧಿಪತ್ಯ|
ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ||

ಶುಭಸಂದೇಶ: ಮತ್ತಾಯ 9:14-17


ಯೊವಾನ್ನನ ಶಿಷ್ಯರು ಯೇಸುವಿನ ಬಳಿಗೆ ಬಂದರು. "ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ? " ಎಂದು ಪ್ರಶ್ನೆ ಹಾಕಿದರು. ಅದಕ್ಕೆ ಯೇಸು, " ಮದುವಣಿಗನು ಜೊತೆಯಲ್ಲಿರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗರಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು. " ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ, " ಎಂದರು.

03.07.2026 - ನನ್ನ ಪ್ರಭುವೇ, ನನ್ನ ದೇವರೇ,

 ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು  : 10:24-35 


ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು. ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿನು ಅವನನ್ನು ಎದುರಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರ ಮಾಡಿದನು. ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ,   ಎದ್ದು ನಿಲ್ಲು,  ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.

ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು. ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.

ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು. ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ. ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು. ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ವಿಷಯ ನನಗೆ ಮನದಟ್ಟಾಗಿದೆ. ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

-ಪ್ರಭುವಿನ ವಾಕ್ಯ


ಕೀರ್ತನೆ

42: 2-5. v. 5


ಶ್ಲೋಕ:  ಜೀವಂತ  ದೇವರಿಗಾಗಿ  ದಾಹದಿಂದಿದೆ  ಎನ್ನ  ಮನ.

1.  ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ|

ದಣಿದೆನ್ನ ಮನ ದೇವಾ ಹಂಬಲಿಸುತಿದೆ ನಿನಗಾಗಿ||

ಶ್ಲೋಕ

2.  ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ|

ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ||

ಶ್ಲೋಕ

3.  ಜನಸಮೂಹದೊಡನೆ ನಾ ಜಯಜಯಕಾರ  ಮಾಡುತ|

ಸ್ತುತಿಗೀತೆಗಳ ಹಾಡುತ ತೀರ್ಥಯಾತ್ರೆ. ಗೈಯುತ|

ದೇಗುಲಕೆ ತೆರಳಿದಾ ಸವಿನೆನಪು ಮನಗರಗಿಸುವುದು ನಿರುತ||

ಶ್ಲೋಕ

4.  ಎನ್ನ ಮನವೇ, ಚಿಂತಿಸುವೆಯೇಕೆ?|

ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ||

ಮತ್ತೆ ಸ್ತುತಿಸುವೆ ನಾನಾತನನು|

ಮುಕ್ತಿದಾತ ಪರಮಾತ್ಮ ಆತನೆನಗೆ||

ಶ್ಲೋಕ

ಎರಡನೇ ವಾಚನ  : ಹಿಬ್ರಿಯರಿಗೆ 1:2-3 


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ. ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.

-ಪ್ರಭುವಿನ ವಾಕ್ಯ

ಶುಭಸಂದೇಶ: ಯೊವಾನ್ನ20:24-29

ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.

ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.

02.07.2026 - ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು

 ಮೊದಲನೇ ವಾಚನ: ಆದಿಕಾಂಡ 22:1-19

 
ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, "ಅಬ್ರಹಾಮನೇ, "  ಎಂದು ಕರೆದರು. ಅವನು "ಇಗೋ, ಸಿದ್ದನಿದ್ದೇನೆ" ಎಂದನು. ಆಗ ದೇವರು, "ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂಆದ ಇಸಾಕನನ್ನು ಕರೆದುಕೊಂಡು ಮೊರೀಯ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು" ಎಂದರು. ಅಬ್ರಾಮನು ಮುಂಜಾನೆಯೇ ಎದ್ದು ತನ್ನ ಹೆಸರುಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ದಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು. ಅವನು ತನ್ನ ಸೇವಕರಿಗೆ, "ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಿಗೆ ಬರುತ್ತೇವೆ," ಎಂದು ಹೇಳಿದನು. ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು. ಹೊಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, "ಅಪ್ಪಾ" ಎಂದು ಕರೆದ; "ಏನು ಮಗನೇ?" ಎಂದ ಅಬ್ರಹಾಮ. ಇಸಾಕನು, "ಬೆಂಕಿ--ಕಟ್ಟಿಗೆಯೇನೋ ಇವೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?" ಎಂದು ಕೇಳಿದ. ಅದಕ್ಕೆ ಅಬ್ರಹಾಮನು, "ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ," ಎಂದು ಉತ್ತರಕೊಟ್ಟ, ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು. ದೇವರು ಹೇಳಿದ ಸ್ಥಳಕ್ಕೆ  ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ. ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ. ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, "ಇಗೋ ಸಿದ್ಧನಿದ್ಧೇನೆ" ಎಃದ. ದೂತನು ಅವನಿಗೆ, "ಹುಡುಗನ ಮೇಲೆ ಕೈಯೊತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು," ಎಂದು ಹೇಳಿದನು. ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ. ಆ ಸ್ಥಳಕ್ಕೆ "ಯೆಹೋವ ಯೊರೆ ಎಂದು ಹೆಸರಿಟ್ಟ. "ಬೆಟ್ಟದ ಮೇಲೆ ಸರ್ವೇಶ್ವರಸ್ವಾಮಿಯೇ ಒದಗಿಸುತ್ತಾರೆ" ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು, "ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ; ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮೂದ್ರತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರುಶತ್ರುಗಳ ಪಟ್ಟಣಗಳನ್ನು ಸ್ವಾಧೀನ ಪಡಿಸಿಕೊಳ್ಳುವರು. ನೀನು ನನ್ನ ಮಾತುಗಳನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು. ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ," ಎಂದನು. ತರುವಾಯ ಅಬ್ರಹಾಮನುತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.

 ಕೀರ್ತನೆ: 115:1-2, 3-4, 5-6, 8-9

 ಶ್ಲೋಕ: ನಡೆವೆನು ನಾನು ಪ್ರಭುವಿನ ಕಣ್ಮುಂದೆ

 ಶುಭಸಂದೇಶ: ಮತ್ತಾಯ 9:1-8

ಯೇಸುಸ್ವಾಮಿ ದೋಣಿಯನ್ನು ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು. ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, "ಮಗೂ, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎಂದರು. ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, "ಇವನು ದೇವದೂಷಣೆ ಮಾಡುತ್ತಿದ್ದಾನೆ," ಎಂದುಕೊಂಡರು. ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, "ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ? "ನಿನ್ನ ಪಾಪಗಳು ಕ್ಷಮಿಸಲಾಗಿದೆ" ಎನ್ನುವುದು ಸುಲಭವೂ? ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು," ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದರು. ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು. ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.

01.07.2026 - "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ?

 ಮೊದಲನೇ ವಾಚನ: ಆದಿಕಾಂಡ 21:5, 8-20

ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು. ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆ ಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು. ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು. ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕು ಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು. ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು. ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು. ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು. ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು, ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು. ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು; ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು. ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು. ಹುಡುಗನ ಸಂಗಡ ದೇವರಿದ್ದರು.

ಕೀರ್ತನೆ: 34:6-7, 9-10, 11-12
ಶ್ಲೋಕ: ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು. 

ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I
ಕಾಯುವನು ಪ್ರಭುವಿನ ದೂತನೆ ಬಂದಿಳಿದು II
ಸವಿದು ನೋಡು ಪ್ರಭುವಿನ ಮಾಧುರ್ಯವನು I
ಆತನನು ಆಶ್ರಯಿಸಿಕೊಂಡವನು ಧನ್ಯನು II

ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I
ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II
ಯುವ ಕೇಸರಿಗೆ ಇರಬಹುದು ಹಸಿವು, ದಾಹ I
ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II

ಬನ್ನಿ ಮಿತ್ರರೇ, ಆಲಿಸಿರೀ ಮಾತನು I
ಕಲಿಸುವೆನು ನಾ ನಿಮಗೆ ದೇವ ಭಯವನು II
ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I
ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II

ಕಾದಿಡು ನಾಲಿಗೆಯನು ಕೇಡನು ಆಡದಂತೆ I
ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II

ಶುಭಸಂದೇಶ: ಮತ್ತಾಯ 8:28-34


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅವರು ಯೇಸುವನ್ನು ನೋಡಿದೊಡನೆಯೇ "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತ ಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?" ಎಂದು ಕೂಗಿಕೊಂಡರು. ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪ ದೂರದಲ್ಲೇ ಮೇಯುತ್ತಿತ್ತು. "ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ," ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು, "ಹೋಗಿ" ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿ ಹೋಯಿತು. ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನ ಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು. ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟು ಹೋಗಬೇಕೆಂದು ಮನವಿ ಮಾಡಿಕೊಂಡಿತು.

08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ

  ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12 ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳ...