10.09.2026 - ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ. ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ. ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ. ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ. “ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು"ಗಳನ್ನೂ “ಪ್ರಭು"ಗಳನ್ನೂ ಪೂಜಿಸುವುದುಂಟು. ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ. ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ. ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?  ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.  ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.

ಕೀರ್ತನೆ: 139:1-3, 13-14, 23-24

ಶ್ಲೋಕ: ನಡೆಸೆನ್ನನು ಪ್ರಭೂ, ಆ ಸನಾತನ ಪಥದಲಿ

1.  ಪ್ರಭೂ, ನೀ ಅರಿತುಕೊಂಡಿರುವೆ ಅಂತರಂಗವನು|
ನಾ ಕೂರುವುದು ಏಳುವುದೂ ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ||
ಶ್ಲೋಕ

2.  ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯ ಗರ್ಭದಲೇ ನನ್ನ ರೂಪಿಸಿದಾತ ನೀನು|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ|
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ||
ಶ್ಲೋಕ

3.  ತಿಳಿದುಕೋ ದೇವಾ, ನನ್ನ ಹೃದಯವನು|
ಪರೀಕ್ಷಿಸಿ ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ||
ಕೇಡಿದೆಯೇ ನೋಡು ನನ್ನ ಮಾರ್ಗದಲಿ|
ನಡೆಸೆನ್ನನು ಆ ಸನಾತನ ಪಥದಲಿ||
ಶ್ಲೋಕ

ಘೋಷಣೆ
(ಕೀರ್ತನೆ 119:  88)
ಅಲ್ಲೆಲೂಯ, ಅಲ್ಲೆಲೂಯ.

ನಿನ್ನಚಲ  ಪ್ರೀತಿಗನುಸಾರ  ಚೈತನ್ಯಗೊಳಿಸೆನ್ನನು | 
ಕೈಗೊಳ್ಳುವೆನಾಗ  ನಿನ್ನ ಬಾಯುಸುರಿದ  ಕಟ್ಟಳೆಗಳನು ||
ಅಲ್ಲೆಲೂಯ.

ಶುಭಸಂದೇಶ: ಲೂಕ 6:27-38


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’ “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.  ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.  ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು  ಕೊಟ್ಟ  ಅಳತೆಯಲ್ಲೇ  ದೇವರು  ನಿಮಗೂ  ಅಳೆದು  ಕೊಡುವರು," ಎಂದರು.

ಪ್ರಭುಕ್ರಿಸ್ತರ ಶುಭಸಂದೇಶ

ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ

Mother Mary Songs

 




ಮಾತೆ ಓ ಮರಿಯೇ...

Song by Prashanth Ignatius  



09.09.2026 IIಬುಧವಾರII ಇಂದಿನ ಬೈಬಲ್ ವಾಚನ - ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 7:25-31

ಸಹೋದರರೇ, ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ. 26ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.  ನಿನಗೆ ವಿವಾಹವಾಗಿದೆಯೋ? ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ. ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ. ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.  ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ.  ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.

ಕೀರ್ತನೆ: 45:11-12, 14-15, 16-17

ಶ್ಲೋಕ: ಎಲೇ ಕುವರಿಯೇ ಕೇಳು, ಎನ್ನ ಮೊರೆಗೆ ಕಿವಿಗೊಡು

1.  ಎಲೇ  ಕುವರಿಯೇ  ಕೇಳು,  ಎನ್ನ  ಮೊರೆಗೆ  ಕಿವಿಗೊಡು|
ನಿನ್ನ  ಜನರನು  ತೌರುಮನೆಯನು  ಮರೆತುಬಿಡು||
ಆಗ  ಬಯಸುವನು  ರಾಜ  ನಿನ್ನ  ಲಾವಣ್ಯವನು|
ಆತನ  ಪಾದಕ್ಕೆರಗು, ಆತನೇ  ನಿನಗೊಡೆಯನು||
ಶ್ಲೋಕ

2.  ಭೂಷಿತಳಾಗಿಹಳಾಕೆ  ಕಸೂತಿ  ಕೆಲಸದ  ವಸ್ತ್ರಗಳಿಂದ|
ಬರುತಿಹಳು  ರಾಜನ  ಬಳಿಗೆ  ಶಖಿಯರ  ಪರಿವಾರ  ಸಮೇತ||
ಆಗಮಿಸುತಿಹರಿದೋ  ಸಂಭ್ರಮ  ಸಡಗರದಿಂದ|
ಪ್ರವೇಶಿಸುತಿಹರು  ಅರಮನೆಯನು  ಉತ್ಸಾಹದಿಂದ||
ಶ್ಲೋಕ

3.  ನಿನ್ನ  ಪುತ್ರರು  ಅಲಂಕರಿಸುವರು  ಪೂರ್ವಜರ  ಸ್ಥಾನವನು|
ನೇಮಕಗೊಳ್ಳುವರು  ಉತ್ತರಾಧಿಕಾರಿಗಳಾಗಿ  ಜಗದೊಳು||
ಶ್ಲೋಕ

ಘೋಷಣೆ
(ಕೀರ್ತನೆ 119:36,29)

ಅಲ್ಲೆಲೂಯ, ಅಲ್ಲೆಲೂಯ!
ನಿನ್ನ  ಕಟ್ಟಳೆಯ  ಕಡೆ  ಎನ್ನ  ಮನವ  ತಿರುಗಿಸಯ್ಯಾ | ಧರ್ಮಶಾಸ್ತ್ರವನು  ಎನಗೆ  ಅನುಗ್ರಹಿಸಯ್ಯಾ ||
ಅಲ್ಲೆಲೂಯ!

ಶುಭಸಂದೇಶ: ಲೂಕ 6:20-26


ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ! ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. “ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ. ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು. 


ಮಾತೆ ಓ ಮರಿಯೇ...
Song by Prashanth Ignatius  


08.09.2026 - ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು

                                                         ದೇವಮಾತೆಯ ಮಹೋತ್ಸವ 


ಮೊದಲನೇ ವಾಚನ: ಮೀಕ 5:1-4


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು! ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು. ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು. ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಕೀರ್ತನೆ: 13:6, 6

ಶ್ಲೋಕ: ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ

ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I
ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I
ಹಾಡುವೆ ಗೀತವನು ಮನಃಪೂರ್ವಕವಾಗಿ II

ಶುಭಸಂದೇಶ: ಮತ್ತಾಯ 1:1-16, 18-23


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, 5ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,  ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,  ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.  ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,  ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು; ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.  ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.  ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು. “ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.  “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.

ಮರಿಯಮ್ಮನವರ ಗೀತೆಗಳು


                                            

07.09.2026 - ಸೋಮವಾರII ಇಂದಿನ ಬೈಬಲ್ ವಾಚನ II ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ?

 ಮೊದಲನೇ ವಾಚನ: 1 ಕೊರಿಂಥಿಯರಿಗೆ 5:1-8 

ಸಹೋದರರೇ,  ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ. ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ? ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ. ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ. ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ. ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ. ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಕೀರ್ತನೆ: 5:5-6, 7, 12

ಶ್ಲೋಕ: ಸತ್ಯಪಥದಲಿ ನಡೆಸೆನ್ನನು ದೇವಾ

ಶುಭಸಂದೇಶ: ಲೂಕ 6:6-11

ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು ಸಬ್ಬತ್ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು. ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು. ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಸಂತ ಮರಿಯಮ್ಮನವರ ಗೀತೆಗಳು - ಚಿಗುರು ಬಳಗ 

06.09.2026 - ಸಾಧಾರಣ ಕಾಲದ 23ನೇ ಭಾನುವಾರ II ಇಂದಿನ ಬೈಬಲ್ ವಾಚನ IIಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.

 ಮೊದಲನೇ ವಾಚನ: ಯೆಜೆಕಿಯೇಲ 33:7-9



ಕರ್ತರು ನನಗೆ ಇಂತೆಂದರು: “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು. ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು. ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.

ಕೀರ್ತನೆ: 95:1-2, 6-7, 8-9

ಶ್ಲೋಕ: ಪ್ರಭುವಿನ ಕರೆಗೆ ಕಿವಿಗೊಟ್ಟರೆನಿತೊ ಒಳ್ಳಿತು ನೀವೀಂದೇ

ಎರಡನೇ ವಾಚನ: ರೋಮನರಿಗೆ 13:8-10


ಸಹೋದರರೇ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು. “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.

ಶುಭಸಂದೇಶ: ಮತ್ತಾಯ 18:15-20


ಯೇಸು ತಮ್ಮ ಶಿಷ್ಯರಿಗೆ: “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ. ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು. “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.  “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.  ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.” ಎಂದರು.

ಸಂತ ಮರಿಯಮ್ಮನವರ ಹಳೆಯ ಗೀತೆಗಳ ಗೀತಗುಚ್ಛ


05.09.2026 - ಶನಿವಾರII ಇಂದಿನ ಬೈಬಲ್ ವಾಚನ II ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ

 ಮೊದಲನೇ ವಾಚನ: 1 ಕೊರಿಂಥಿಯರಿಗೆ  4: 6-15

ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ವಿೂರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು. ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ? ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು! ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ. ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ದಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು! ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ. ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ. ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು! ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು. ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.

ಕೀರ್ತನೆ:  145:17-18, 19-20, 21

ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವಾವರೆಲ್ಲರಿಗೆ

1 ಪ್ರಭುವಿನ ಮಾರ್ಗ ಧರ್ಮಸಮ್ಮತ|
ಆತನ ಕಾರ್ಯವೆಲ್ಲ ಪುನೀತ||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||
ಶ್ಲೋಕ


2.  ಹೆದರಿನಡೆಯುವವರ ಇಷ್ಟವನು ಈಡೇರಿಸುವನು|
ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು||
ಸಲಹುವನು ತನ್ನನು ಪ್ರೀತಿಸುವವರೆಲ್ಲರನು|
ನಾಶಮಾಡುವನು ದುರ್ಮಾರ್ಗಿಗಳೆಲ್ಲರನು||
ಶ್ಲೋಕ

3.  ಉಸುರುತದೆ ನನ್ನ ನಾಲಿಗೆ ಪ್ರಭುವಿನ ಸ್ತೋತ್ರವನು|
ನರರೆಲ್ಲರು ಸ್ತುತಿಸಲಿ ಸತತ ಆತನ ಶ್ರೀ ನಾಮವನು||
ಶ್ಲೋಕ

ಘೋಷಣೆ

(ಕೀರ್ತನೆ 119: 18)

ಅಲ್ಲೆಲೂಯ, ಅಲ್ಲೆಲೂಯ.

ನಿನ್ನ  ಶಾಸ್ತ್ರದ  ಮಹಿಮೆಯನು  ಅರಿಯುವಂತೆ | ನನ್ನ ಕಣ್ಣುಗಳಿಂದ  ನೀ  ತೆಗೆದುಬಿಡು  ಅಂಧತೆ ||

ಅಲ್ಲೆಲೂಯ.

ಶುಭಸಂದೇಶ: ಲೂಕ 6:1-5

ಒಂದು ಸಬ್ಬತ್ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು. ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್ತಿದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು. ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ? ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ? ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.





10.09.2026 - ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ

  ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13 ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ...