17.09.2026 - IIಗುರುವಾರII ಇಂದಿನ ಬೈಬಲ್ ವಾಚನಗಳುIIನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ; ಸಮಾಧಾನದಿಂದ ಹೋಗು

 ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-11


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.  ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.  ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.  ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.  ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.  ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.  ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.  ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.

ಕೀರ್ತನೆ: 118:1-2, 16-17, 28

ಶ್ಲೋಕ: ಸಲ್ಲಿಸಿ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ 

1.  ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ||
ಸಾರಲಿ ಇಸ್ರಯೇಲಿನ ಜನತೆ|
ಆತನ ಪ್ರೀತಿ ಶಾಶ್ವತ ಎಂದೆ||
ಶ್ಲೋಕ

2.  ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ|
ವಿಜಯ ಸಾಧನ ಪ್ರಭುವಿನ ಬಲಗೈಯಿಂದ||
ಸಾಯೆನು, ಜೀವದಿಂದಿರುವೆನು ನಾನು|
ಪ್ರಭುವಿನ ಕಾರ್ಯಗಳನು ಸಾರುವೆನು||
ಶ್ಲೋಕ

3.  ಪ್ರಭುವೇ ದೇವನು, ನಮ್ಮ ಮೇಲೆ|
ಜ್ಯೋತಿಯನು ಬೆಳಗಿದವನು||
ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ||
ಸದುತ್ತರ ಪಾಲಿಸಿದ ಪ್ರಭೂ,  ನಿನಗೆ ವಂದನೆ|
ಉದ್ಧಾರಮಾಡಿದೆ, ನಿನಗೆ ಕೃತಜ್ಞತಾವಂದನೆ||
ಶ್ಲೋಕ

ಘೋಷಣೆ
(ಮತ್ತಾಯ 11: 25)
ಅಲ್ಲೆಲೂಯ, ಅಲ್ಲೆಲೂಯ.
ಪಿತನೇ, ಭೂಸ್ವರ್ಗಗಳ  ಒಡೆಯನೇ, ಈ ವಿಷಯಗಳನ್ನು ಮಕ್ಕಳಂತವರಿಗೆ ನೀವು ಶ್ರುತಪಡಿಸಿದ್ದೀರಿ| ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ||
ಅಲ್ಲೆಲೂಯ.

ಶುಭಸಂದೇಶ: ಲೂಕ 7:36-50

ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.  ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.  ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.  ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.  ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.  ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.  ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.  ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.  ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.  ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;  ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.  ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.  ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.  ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.  ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.

16.09.2026 - IIಬುಧವಾರII ಇಂದಿನ ಬೈಬಲ್ ವಾಚನಗಳುIIದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ

 ಮೊದಲನೇ ವಾಚನ: 1 ಕೊರಿ0ಥಿಯರಿಗೆ: 12:31--13:13

ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ: ಸುರನರರ ನುಡಿಗಳ ನಾನಾಡಬಲ್ಲೆ ನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ. ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ. ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ? ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ. ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ. ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ. ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ. ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರರಲಿ ಪ್ರೀತಿಯೇ ಪರಮೋನ್ನತ ವೆಂಬುದ ನೀನರಿ.

ಕೀರ್ತನೆ: 33:2-3, 4-5, 12, 22

ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
1.  ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ|
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ||
ನೂತನ ಕೀರ್ತನೆಯನು ಆತನಿಗೆ ಹಾಡಿರಿ|
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ||
ಶ್ಲೋಕ

2.  ಸತ್ಯವಾದುದು ಆತನ ಪವಿತ್ರ ವಾಕ್ಯ|
ಸ್ತುತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು| 
ಅಚಲ ಪ್ರೀತಿಯಿಂದ ಪ್ರಭು ಜಗವನು ತುಂಬಿಹನು||
ಶ್ಲೋಕ

3.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ||
ಕೀರ್ತಿಸಿ ದಶ ತಂತಿ ವೀಣೆಯನು ಬಾರಿಸುತ|
ನೂತನ ಕೀರ್ತನೆಯನು ಆತನಿಗೆ ಹಾಡಿರಿ|
ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ||
ಶ್ಲೋಕ

4.  ಸತ್ಯವಾದುದು ಆತನ ಪವಿತ್ರ ವಾಕ್ಯ|
ಸ್ತುತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು|
ಅಚಲ ಪ್ರೀತಿಯಿಂದ ಜಗವನು ತುಂಬಿಹನು||
ಶ್ಲೋಕ

5.  ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ||
ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ, ಕಾದಿಹೆವು ಇದೋ ನಿನ್ನ ನಂಬಿ ಭರವಸದಿ||
ಶ್ಲೋಕ

ಘೋಷಣೆ
(ಮತ್ತಾಯ 4: 4)
ಅಲ್ಲೆಲೂಯ, ಅಲ್ಲೆಲೂಯ.
ಮಾನವನು  ಜೀವಿಸುವುದು  ಆಹಾರದಿಂದ  ಮಾತ್ರವಲ್ಲ,| ದೇವರಾಡುವ ಪ್ರತಿಯೊಂದು ನುಡಿಯಿಂದ||
ಅಲ್ಲೆಲೂಯ.

ಶುಭಸಂದೇಶ: ಲೂಕ 7:31-35

ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?  ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.  ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;  ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.  ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.

15.09.2026 - IIಮಂಗಳವಾರII ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು

 ಮೊದಲನೇ ವಾಚನ: 1 ಕೊರಿಂಥಿಯರಿಗೆ  12:12-14, 27-31


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ - ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ. ದೇಹವು ಏಕ ಅಂಗದಿಂದ ಅಲ್ಲ, ಅನೇಕ ಅಂಗಗಳಿಂದ ಕೂಡಿದೆ. ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ. ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾ ಪಂಡಿತರನ್ನು ನೇಮಿಸಿದ್ದಾರೆ. ಎಲ್ಲರೂ ಪ್ರೇಷಿತರಲ್ಲ, ಎಲ್ಲರೂ ಪ್ರವಾದಿಗಳಲ್ಲ, ಎಲ್ಲರೂ ಬೋಧಕರಲ್ಲ, ಎಲ್ಲರೂ ಪವಾಡಪುರುಷರಲ್ಲ, ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ. ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. 

ಕೀರ್ತನೆ: 100:1-2, 3, 4, 5

ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು

ಭೊನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|
ಅತಿಸಂತೋಷದಿಂದ ಸೇವೆಮಾಡಿ ಆತನಿಗೆ||
ಹಾಡುತಾ, ಪಾಡುತಾ, ಬನ್ನಿ ಆತನ ಸನ್ನಿಧಿಗೆ||

ಪಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು||

ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರ ಸ್ಮರಣೆಯೊಂದಿಗೆ||

ಹೌದು, ಪ್ರಭುವೆನಿತೋ ಒಳ್ಳೆಯವನು|
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||

ಅಲ್ಲೆಲೂಯ, ಅಲ್ಲೆಲೂಯ!

ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು, ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ,,
ಅಲ್ಲೆಲೂಯ!

ಶುಭಸಂದೇಶ: ಲೂಕ 7:11-17


ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು. ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು. 

ಕ್ಷಮೆಯ ಕುರಿತು ಬೈಬಲ್ ವಾಕ್ಯಗಳು



ಕೋಪವು ನಿಮ್ಮ ಹೃದಯವನ್ನು ನಿಯಂತ್ರಿಸುತ್ತಿರುವಾಗ - ಮತ್ತಾಯ 5:44 

ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; 
ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ

************************


ದೇವರ ಕ್ಷಮೆ ಅಗತ್ಯವಿರುವಾಗ - 1 ಯೊವಾನ್ನ 1:9 

ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ 
ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು 
ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು

************************


 ಮನಸ್ಸಿನಲ್ಲಿ ಶಾಂತಿಯನ್ನು ಬಯಸಿದಾಗ - ರೋಮನರಿಗೆ 12:18 

ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. 

************************


 ಪದೇ ಪದೇ ಕ್ಷಮಿಸುವುದು ಕಷ್ಟವಾಗುತ್ತಿರುವಾಗ - ಮತ್ತಾಯ 18:21–22

ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ

************************

14.09.2026 - IIಇಂದಿನ ಬೈಬಲ್ ವಾಚನಗಳುIIಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿ ಹೋದವರಿಲ್ಲ

 ಮೊದಲನೇ ವಾಚನ: ಸಂಖ್ಯಾಕಾಂಡ - 21:4-9


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ  ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 78:1-2, 34-38

ಶ್ಲೋಕ: ಮರೆಯದಿರು ಪ್ರಭುವಿನ ಮಹತ್ಕಾರ್ಯಗಳನು

ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ|

ಗಮನಕೊಡಿ ನಾ ಹೇಳುವ ಮಾತುಗಳಿಗೆ||
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು|
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು||

ಆತನನು ನೆನಸಿಕೊಂಡರವರು ವಧೆಯಾಗುವಾಗ|
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ||
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು|
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು||

ಆದರೆ ಅವರ ನಾಲಿಗೆಯಾಡಿತು ಅಸತ್ಯ|
ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ||
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ|
ಬದ್ದರಾಗಿರಲಿಲ್ಲ ಆತನ ನಿಬಂಧನೆಗಳಲಿ||

ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ|
ಕೋಪವ ತಾಳಿಕೊಂಡನು, ಹಲವು ವೇಳೆ ಉದ್ರೇಕಗೊಳ್ಳದೆ||

ಎರಡನೇ ವಾಚನ: ಫಿಲಿಪ್ಪಿಯರಿಗೆ 2:6-11


ಜೀವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದು ಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ, ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವ ಪರಮನು, ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು,  "ಕ್ರಿಸ್ತ ಯೇಸುವೇ ಪ್ರಭು", ಎಂದೆಲ್ಲರಿಗೆ ಅರಿಕೆ ಮಾಡುವರು ಪಿತ ದೇವನ ಮಹಿಮೆಯನ್ನು ಈ ಪರಿ ಹೊಗಳಿ ಸಾರುವರವರು.

ಶುಭಸಂದೇಶ: ಯೊವಾನ್ನ 3:13-17


ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

13.09.2026 - ಸಾಧಾರಣ ಕಾಲದ ಇಪ್ಪತ್ತನಾಲ್ಕನೇ ಭಾನುವಾರIIಇಂದಿನ ಬೈಬಲ್ ವಾಚನಗಳು II ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?

 ಮೊದಲನೇ ವಾಚನ: ಸಿರಾಖನು 27:30--28:7


ಸಿಟ್ಟು ಸಿಡುಕು ಸಿಟ್ಟುಸಿಡುಕುಗಳು ಹೇಯವಾದವುಗಳು ಅವೆರಡೂ ಇರುವುವು ಪಾಪಾತ್ಮನೊಳು. ಪ್ರತೀಕಾರ ಮಾಡುವವನು ಸರ್ವೇಶ್ವರನಿಂದ ಪ್ರತೀಕಾರ ಹೊಂದುವನು ಅವನ ಪಾಪಗಳನ್ನು ಸರ್ವೇಶ್ವರ ಸದಾ ಮನಸ್ಸಿನಲ್ಲಿ ಇಟ್ಟುಕೊಳ್ಳುವರು. ಕ್ಷಮೆನೀಡು ನಿನ್ನ ನೆರೆಯವನು ಮಾಡಿದ ತಪ್ಪಿಗೆ ನೀನು ಪ್ರಾರ್ಥಿಸುವಾಗ ಕ್ಷಮೆ ದೊರಕುವುದು ನಿನ್ನ ಪಾಪಗಳಿಗೆ. ನೆರೆಯವನ ಮೇಲೆ ಮುನಿಸಿಟ್ಟುಕೊಂಡರೆ ದೇವರಿಂದ ಕ್ಷಮೆಹೊಂದಲು ಆದೀತೆ? ತನ್ನಂಥ ಮನುಷ್ಯನ ಮೇಲೆ ಅವನಿಗೆ ಕರುಣೆಯಿಲ್ಲದಿರೆ ಬೇಡಿಕೊಂಡರೆ ಪಾಪಮನ್ನಣೆ ಪಡೆಯುವನೆ? ಕೇವಲ ನರಮಾನವನಾದವನು ಇಂಥ ಸಿಡುಕಿಟ್ಟುಕೊಂಡರೆ ಇವನ ಪಾಪಗಳಿಗೆ ದೋಷಪರಿಹಾರ ಮಾಡುವವರು ಯಾರಿದ್ದಾರೆ? ನಿನ್ನ ಅಂತ್ಯಕಾಲವನ್ನು ಸ್ಮರಿಸಿಕೊಂಡು ಹಗೆತನವನು ತೊರೆದುಬಿಡು ಸಾವು ಮರಣಗಳನ್ನು ನೆನೆದು ದೇವರ ಆಜ್ಞೆಗಳನ್ನು ಪಾಲನೆಮಾಡು. ದೇವರ ಆಜ್ಞೆಗಳನ್ನು ಸ್ಮರಿಸಿಕೊಂಡು ನೆರೆಯವನ ಮೇಲೆ ಮುನಿಸಬೇಡ ಮಹೋನ್ನತನ ಒಡಂಬಡಿಕೆಯನ್ನು ನೆನಸಿ ಕೊಂಡು ತಪ್ಪು ನೆಪ್ಪುಗಳನ್ನು ವೀಕ್ಷಿಸಬೇಡ.

ಕೀರ್ತನೆ: 103:1-2, 3-4, 9-10, 11-12

ಶ್ಲೋಕ: ಪ್ರಭು ದಯಾಳು, ಕೃಪಾಪೂರ್ಣನು, ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ

1.  ಭಜಿಸು ಎನ್ನ ಮನವೇ, ಭಜಿಸು ಪ್ರಭುವನು|
ನನ್ನ ಅಂತರಂಗವೇ, ಭಜಿಸು ಆತನನು|
ನೆನೆ ಆತನ ಪರಮ ಪಾವನ ನಾಮವನು||
ಭಜಿಸು ನನ್ನ ಮನವೇ, ಭಜಿಸು ಪ್ರಭುವನು|
ಮರೆಯದಿರು ಆತನ ಉಪಕಾರಗಳೊಂದನು||
ಶ್ಲೋಕ

2.  ಮನ್ನಿಸುವನಾತ ನನ್ನ ದೋಷಗಳನು|
ವಾಸಿಮಾಡುವನು ನನ್ನ ರೋಗಗಳನು||
ಉಳಿಸುವನು ಪಾತಾಳದ ಕೂಪದಿಂದ ನನ್ನನು|
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು||
ಶ್ಲೋಕ

3.  ಆತನು ಸದಾ ತಪ್ಪು ಹುಡುಕುವವನಲ್ಲ|
ನಿತ್ಯಕ್ಕೂ ಕೋಪ ಇಟ್ಟುಕೊಳ್ಳುವವನಲ್ಲ||
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ|
ನಮ್ಮ ಅಪರಾಧಗಳಿಗೆ ತಕ್ಕ ಹಾಗೆ ದಂಡಿಸಲಿಲ್ಲ||
ಶ್ಲೋಕ

4.  ಆಕಾಶ ಮಂಡಲವು ಭೂಮಿಯಿಂದೆಷ್ಟೋ ಉನ್ನತ|
ದೈವ ಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ||
ಪಡುವಣದಿಂದ ಮೂಡಣವೆಷ್ಟೋ ದೂರ|
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ||
ಶ್ಲೋಕ

ರಡನೇ ವಾಚನ: ರೋಮನರಿಗೆ14:7-9


ಸಹೋದರರೇ, ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ. ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ. ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು. ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು. 

ಶುಭಸಂದೇಶ: ಮತ್ತಾಯ18:21-35


ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.  “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ,” ಎಂದು ಯೇಸು ಉತ್ತರವಿತ್ತರು. ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.  ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.  ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.  ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.  ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ. “ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.  ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.  ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.  ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.  ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.  ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.  ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ. “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.

12.09.2026 - ಶನಿವಾರ IIಇಂದಿನ ಬೈಬಲ್ ವಾಚನಗಳುII ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿ ಮಾತಾಗಿ ತುಳುಕುತ್ತದೆ

 ಮೊದಲನೇ ವಾಚನ: 1 ಕೊರಿಂಥಿಯರಿಗೆ 10:14-22


ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ. ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.  ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?  ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ. ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.  ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?  ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ : ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.  ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.  ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?

ಕೀರ್ತನೆ: 116:12-13, 17-18

ಶ್ಲೋಕ: ಅರ್ಪಿಸುವೆ ಪ್ರಭೂ ನಾ ನಿನಗೆ ಕೃತಜ್ಞತಾಬಲಿಗಳನು

1.  ಪ್ರಭು ನನಗೆ ಮಾಡಿದ ಮಹೋಪಕಾರಗಳಿಗಾಗಿ|

ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ?||
ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು|
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು||
ಶ್ಲೋಕ

2.  ಅರ್ಪಿಸುವೆ ನಾ ನಿನಗೆ ಕೃತಜ್ಞತಾಬಲಿಗಳನು|
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು||
ತೀರಿಸುವೆನು ಆತನ ಸಭೆಯ ಸಮ್ಮುಖದೊಳು|
ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು||
ಶ್ಲೋಕ

ಘೋಷಣೆ

(ಕೀರ್ತನೆ 119: 135)
ಅಲ್ಲೆಲೂಯ, ಅಲ್ಲೆಲೂಯ.
ತೋರು ನಿನ್ನ ಮುಖದರ್ಶನ ಈ ದಾಸನಿಗೆ| ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ||
ಅಲ್ಲೆಲೂಯ.


ಶುಭಸಂದೇಶ: 6:43-49

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದು ಹೇಳಿದರು: “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.  ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.  ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. “ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?  ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:  ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.  ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.

17.09.2026 - IIಗುರುವಾರII ಇಂದಿನ ಬೈಬಲ್ ವಾಚನಗಳುIIನಿನ್ನ ವಿಶ್ವಾಸ ನಿನ್ನನ್ನು ಉದ್ಧಾರ ಮಾಡಿದೆ; ಸಮಾಧಾನದಿಂದ ಹೋಗು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-11 ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದ...