ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 3:14-17
ಇದು ಕರ್ತರ ನುಡಿ: “ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು. ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು. ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ. ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.
ಕೀರ್ತನೆ
ಯೆರೆಮೀಯ 31: 10, 11-12, 13, v.10
ಶ್ಲೋಕ: ಪ್ರಭು ನಮ್ಮನ್ನು ಕಾಪಾಡುವರು.
1. ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ
ಅದನ್ನು ಸಾರಿರಿ:ಇಸ್ರಾಯೇಲರನ್ನು ಚದುರಿಸಿದಾತ
ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ
ಕಾಪಾಡುವನೆಂದು ಪ್ರಕಟಿಸಿರಿ.
ಶ್ಲೋಕ
2. ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು
ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.
ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ
ಬರುವರು ಪ್ರವಾಹ ಪ್ರವಾಹವಾಗಿ
ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ
ಈ ವರದಾನಗಳನ್ನು ಅನುಭವಿಸಲಿಕ್ಕಾಗಿ.
ಶ್ಲೋಕ
3. ಆಗ ನಾಟ್ಯವಾಡಿ ನಲಿವಳು ಯುವತಿ
ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ.
ಅವರ ದುಃಖವನ್ನು ಸಂತೋಷವಾಗಿಸುವೆನು
ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.
ಶ್ಲೋಕ
ಘೋಷಣೆ
(ಕೀರ್ತನೆ 130: 5)
ಅಲ್ಲೆಲೂಯ, ಅಲ್ಲೆಲೂಯ.
ಪ್ರಭುವಿಗಾಗಿ ಎನ್ನ ಮನ ಕಾದಿದೆ,| ಆತನ ವಾಕ್ಯದಲಿ ನಂಬಿಕೆ ನನಗಿದೆ||
ಅಲ್ಲೆಲೂಯ.
ಶುಭಸಂದೇಶ: ಮತ್ತಾಯ 13:18-23
ಯೇಸುಸ್ವಾಮಿ ತಮ್ಮ ಶಿಷ್ಯರನ್ನುದ್ದೇಶಿಸಿ, “ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ: ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ. ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.
















