ಸಂತ ಲೂಕನ ಶುಭ ಸಂದೇಶ – 12: 1-7
"ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,”
ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ,“ಫರಿಸಾಯರ’ಹುಳಿಹಿಟ್ಟಿನ’ ಬಗ್ಗೆ,ಅಂದರೆ ಅವರ ಕಪಟತನದ ಬಗ್ಗೆ,ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟ ಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.
“ಗೆಳೆಯರೇ, ನನ್ನ ಮಾರಿಗೆ ಕಿವಿಗೊಡಿ: ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತ ಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರಂದು ನಿಮಗೆ ಒತ್ತಿಹೇಳುತ್ತೇನೆ.
“ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟು ಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.
No comments:
Post a Comment