ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

04.06.2005 - ಎರಡು ಪ್ರಮುಖ ಆಜ್ಞೆಗಳು

ಮಾರ್ಕ 12:28-34

ನಮ್ಮ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. 

ಧರ್ಮಶಾಸ್ತ್ರಿಯೊಬ್ಬನು, ಯೇಸುಸ್ವಾಮಿ ಸದ್ದುಕಾಯಕರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು , " ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?" ಎಂದು ಕೇಳಿದನು, ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು; ನಮ್ಮ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. ನಿನ್ನನ್ನು ನೀನೆ ಪ್ರೀತಿಸಿಕೊಳ್ಳುವಂತೆ ನಿನ್ನ 
ನೆರೆಹೊರೆಯವರನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವರೆಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ" ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, " ಬೋಧಕರೇ ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ 
ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; ಅವರನ್ನು ನಾವು ಪೂರ್ಣ ಹೃದಯದಿಂದಲೂ  ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಹೊರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನ ಬಲಿಗಳಿಗಿಂತಲೂ ಯಜ್ಞ ಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು," ಎಂದನು. ಅವನ್ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, " ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

03.06.15 - "ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ"

ಸಂತ ಮಾರ್ಕನ ಶುಭ ಸಂದೇಶ - 12: 18-27

"ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ"

ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು.ಸತ್ತ ಮೇಲೆ ಪುನರುತ್ಥಾನ ಇಲ್ಲವೆಂಬುದು ಅವರ ಅಭಿಮತ. ಇವರು ಯೇಸುವನ್ನು" ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು ಎಂದು ಮೋಶೆ ನಮಗೆ ಬರೆದಿಟ್ಟಿದ್ದಾನಲ್ಲವೇ? ಒಮ್ಮೆ ಏಳು ಮಂದಿ ಅಣ್ಣ ತಮ್ಮಂದಿರಿದ್ದರು.ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮುದುವೆ ಮಾಡಿಕೊಂಡು, ಸಂತಾನವಿಲ್ಲದೆ ಸಾವನಪ್ಪಿದ . ಮೂರನೆಯವನಿಗೂ ಇದೇ ಗತಿಯಾಯಿತು. ಅನಂತರ,ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣ ಹೊಂದಿದಳು. ಈಗ ಹೇಳಿ,ಪುನರುತ್ಥಾನ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು?ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?" ಎಂದು ಪ್ರಶ್ನಿಸಿದರು. 

ಅದಕ್ಕೆ ಯೇಸು,"ನಿಮ್ಮದು ಎಂಥಾ ತಪ್ಪು ಅಭಿಪ್ರಾಯ!ಪವಿತ್ರ ಗಂಥವನ್ನಾಗಲೀ,ದೇವರ ಶಕ್ತಿಯನ್ನಾಗಲೀ,ನೀವು ಅರ್ಥಮಾಡಿಕೊಂಡಿಲ್ಲ. ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ,ಮಾಡಿಕೊಡುವುದೂ ಇಲ್ಲ.ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ:’ನಾನು ಅಬ್ರಹಾಮನಿಗೆ ದೇವರು,ಇಸಾಕನಿಗೆ ದೇವರು,ಯಾಕೋಬನಿಗೆ ದೇವರು’ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥ ’ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ.ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ" ಎಂದರು.

02.06.15 - ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೆ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೆ

ಮಾರ್ಕ 12:13-17

ಆಮೇಲೆ ಅವರು ಯೇಸುವನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು. ಇವರು ಬಂದು, "ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖ ದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವ ಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ? ಎಂದು ಕೇಳಿದರು. ಅವರ ಕಪಟತನವನ್ನು ಯೇಸ್ಯ್ ಗ್ರಹಿಸಿ, " ನೀವು ನನ್ನನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ, " ಎಂದರು. 

ಅವರೊಂದು ನಾಣ್ಯವನ್ನು ತಂದರು. "ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?" ಎಂದು ಯೇಸು ಕೇಳಿದರು. ಅದಕ್ಕೆ ಅವರು "ಅವು ರೋಮ್ ಚಕ್ರವರ್ತಿಯವು," ಎಂದರು. ಆಗ ಯೇಸು, " ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ," ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.

01.06.2015 - ತೋಟದ ಮಾಲೀಕ

ಮಾರ್ಕ 12:1-12

ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: "ಒಬ್ಬನು ದ್ರಾಕ್ಷಿಯ ತೋಟವೊಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ.ದ್ರಾಕ್ಷರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ. ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು. ಕೆಲವರನ್ನು ಕಡಿದು ಹಾಕಿದರು. ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದು ಮಗನೊಬ್ಬನೇ. " ನನ್ನ ಮಗನಿಗಾದರೋ ಅವರು ಮರ್ಯಾದೆ ಕೊಟ್ಟಾರು" ಎಂದು ಭಾವಿಸಿ, ಕಟ್ಟ ಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ. 

ಆದರೆ ಆ ಗೇಣಿದಾರರು,"ತೋಟಕ್ಕೆ ಇವನೇ ಉತ್ತರಾಧಿಕಾರು; ಬನ್ನಿ ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು," ಎಂದು ಒಳಸಂಚು ಹೂಡಿ, ಅವನನ್ನು ಹಿಡಿದು, ಕೊಂದು  ಹಾಕಿ ತೋಟದ ಆಚೆಗೆ ಎಸೆದುಬಿಟ್ಟರು. ಇಂತಹ ಪರಿಸ್ಥಿತಿಯಲ್ಲಿ  ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು.ಪವಿತ್ರ ಗ್ರಂಥದಲ್ಲಿ: "ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು. ಸರ್ವೇಶ್ವರನಿಂದಲೇ ಆದ ಆ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. ತಮ್ಮನ್ನು ಕುರಿತೇ ಸಾಮತಿಯನ್ನು ಹೇಳುತ್ತಿದ್ದರೆಂದು ಅರ್ಥ ಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನ ಸಮೂಹಕ್ಕೆ ಹೆದರಿ ಅವರನ್ನು ಬಿಟ್ಟು ಹೋದರು.