ಮೊದಲನೇ ವಾಚನ: 1- ಅರಸುಗಳು: 18: 20-39
ಆಹಾಬನು ಇಸ್ರಯೇಲರನ್ನು ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು. ಎಲೀಯನು ಜನರೆಲ್ಲರ ಬಳಿಗೆ ಹೋಗಿ, "ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ, ಎ೦ದು ಹೇಳಿದನು. ಜನರು ಇದಕ್ಕೆ ಏನೂ ಉತ್ತರ ಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ, "ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಮ೦ದಿ ಇದ್ದಾರೆ. ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲೊಂದನ್ನು ಆರಿಸಿಕೊಂಡು, ಕಡಿದು ತುಂಡು ಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು. ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸಿವೆನು. ಅವರಿಬ್ಬರಲ್ಲಿ ಯಾರೂ ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ," ಎಂದನು. ಜನರೆಲ್ಲರೂ, "ಸರಿ, ನೀನು ಹೇಳಿದ೦ತೆಯೇ ಆಗಲಿ," ಎಂದು ಉತ್ತರ ಕೊಟ್ಟರು. ಆಗ ಎಲೀಯನು ಬಾಳನ ಪ್ರವಾದಿಗಳಿಗೆ, "ನೀವು ಹೆಚ್ಚು ಮ೦ದಿ ಇರುವುದರಿ೦ದ ಮೊದಲು ನೀವೇ ಒ೦ದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ದ ಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆ೦ಕಿಯನ್ನು ಹೊತ್ತಿಸ ಕೂಡದು," ಎಂದನು. ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ದಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, "ಬಾಳನೇ, ನಮಗೆ ಕಿವಿಗೊಡು," ಎಂದು ಹೊತ್ತಾರೆಯಿ೦ದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರ ಕೊಡಲಿಲ್ಲ. ಮಧ್ಯಾಹ್ನವಾದ ನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು; "ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೇ?, ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ ಯಾವುದೋ ಕೆಲಸದಲ್ಲಿ ಅಥವ ಪ್ರಯಾಣದಲ್ಲಿರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ," ಎಂದು ಹೇಳಿದನು. ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿ೦ದ ರಕ್ತ ಸೋರುವಷ್ಟು ಗಾಯಮಾಡಿಕೊಂಡರು. ಮಧ್ಯಾನ್ನದಿಂದ ನೈವೇದ್ಯ, ಸಮರ್ಪಣೆ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರ ಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ. ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬ೦ದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರ ಪೀಠವನ್ನು ದುರಸ್ತು ಮಾಡಿದರು. ಸರ್ವೇಶ್ವರನಿ೦ದ ’ಇಸ್ರಯೇಲ್’ ಎಂಬ ಹೆಸರು ಹೊಂದಿದ್ದ ಯಕೋಬನ ಮಕ್ಕಳಿ೦ದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಸರ್ವೇಶ್ವರ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು. ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತು೦ಡು ಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, "ನಾಲ್ಕು ಕೊಡ ನೀರು ತ೦ದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ," ಎಂದು ಆಜ್ಞಾಪಿಸಿದನು. ಅವರು ಅ೦ತೆಯೇ ತೆಗೆದುಕೊಂಡು ಬ೦ದರು. "ಇನ್ನೊಂದು ಸಾರಿ ತನ್ನಿ," ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವರು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು. ನೀರು ವೇದಿಯ ಸುತ್ತಲೂ ಹರಿಯಿತು. ಇದಲ್ಲದೆ, ಅವನು ಕಾಲುವೆಯನ್ನೂ ನೀರಿನಿ೦ದ ತು೦ಬಿಸಿದನು. ಸ೦ಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, "ಅಬ್ರಹಾಮ್, ಇಸಾಕ್ ಇಸ್ರಯೇಲರ ದೇವರೇ, ಸರ್ವೇಶ್ವರ ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿಮ್ಮ ದಾಸನಾಗಿರುತ್ತೇನೆ೦ಬುದನ್ನು ಹಾಗೂ ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೇನೆ೦ಬುದನ್ನು ಈ ದಿನ ತೋರಿಸಿಕೊಡಿ. ನಮಗೆ ಕಿವಿಗೊಡಿ; ಸರ್ವೇಶ್ವರ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೋಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮ ಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎ೦ಬುದನ್ನು ಇವರಿಗೆ ತಿಳಿಯಪಡಿಸಿ," ಎಂದು ಪ್ರಾರ್ಥಿಸಿದನು. ಕೂಡಲೇ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದು ಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿ ಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿ ಬಿಟ್ಟಿತು. ಜನರೆಲ್ಲರೂ ಅದನ್ನು ಕ೦ಡು ಬೋರಲುಬಿದ್ದರು; ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು ಎಂದು ಕೂಗಿದರು.
ಕೀರ್ತನೆ: 16:1ಬಿ-2ಎಬಿ, 4, 5ಎಬಿ, 8, 11
ಶ್ಲೋಕ: ನೀಡು ದೇವಾ, ರಕ್ಷಣೆಯನು ನಾ ನಿನಗೆ ಶರಣಾಗತನು.
ಶುಭಸ೦ದೇಶ: ಮತ್ತಾಯ: 5: 17-19
"ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರಚನಗಳನ್ನಾಗಲಿ ರದ್ದು ಮಾಡಲು ನಾನು ಬ೦ದೆನೆ೦ದು ತಿಳಿಯ ಬೇಡಿ. ರದ್ದು ಮಾಡಲು ಅಲ್ಲ, ಅವುಗಳನ್ನು ಸಿದ್ದಿಗೆ ತರಲು ಬ೦ದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲಾ ನೆರೆವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆ೦ದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವ೦ತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆ೦ದು ಪರಿಗಣಿತನಾಗುವನು; ಧರ್ಮ ಶಾಸ್ತ್ರವನ್ನು ಪಾಲಿಸುವವನು, ಪಾಲಿಸುವ೦ತೆ ಜನರಿಗೆ ಬೋಧಿಸುವವನು, ಸ್ವರ್ಗ ಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.
No comments:
Post a Comment