ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

29.07.2018

ಮೊದಲನೆಯ ವಾಚನ
ನಮ್ಮ ಉದ್ದೇಶ ಒಳ್ಳೆಯದಾಗಿದ್ದರೆ, ನಾವು ಎಂಥ ಸಂದರ್ಭದಲ್ಲೂ ಅದ್ಭುತಗಳನ್ನು ಮಾಡಬಹುದು. ಕಾರಣ ನಾವು ಸಾಧನಗಳಷ್ಟೇ, ದೇವರೇ ಅದ್ಭುತ ಮಾಡುತ್ತಾರೆ. ಎಲೀಷಾ ಪ್ರವಾದಿಯ ಈ ಘಟನೆ ಇದನ್ನು ಸಾಬೀತುಪಡಿಸುತ್ತದೆ.

ಅರಸರ ಎರಡನೆಯ ಗ್ರಂಥದಿಂದ ವಾಚನ - 4: 42-44


ಒಂದು ದಿನ ಬಾಳ್‌ಷಾಲಿಷಾ ಊರಿನ ಒಬ್ಬ ವ್ಯಕ್ತಿ ಇಪ್ಪತ್ತು ಜವೆಗೋಧಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು. ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟ ಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು. ಸೇವಕನು ಬಡಿಸಿದನು. ಸರ್ವೇಶ್ವರನು ನುಡಿದಂತೆಯೇ ಜನರು ಊಟ ಮಾಡಿ, ತೃಪ್ತರಾಗಿ ಇನ್ನೂ ಉಳಿಸಿಕೊಂಡರು.
- ಪ್ರಭುವಿನ ವಾಕ್ಯ

ಎರಡನೆಯ ವಾಚನ
ನೀವು ಕರೆಯಲ್ಪಟ್ಟ ಉದ್ದೇಶಕ್ಕೆ ಸರಿಯಾಗಿ ನಡೆದುಕೊಳ್ಳಿ ಎಂದು ಪೌಲ ಹೇಳುವಾಗ ಅದು ಬರೀ ಬಾಯಿ ಮಾತಿನ ಉಪದೇಶವಲ್ಲ, ತನ್ನ ಬದುಕಿನದೇ ಉದಾಹರಣೆ

ಸಂತ ಪೌಲ ಎಫೆಸಿಯರಿಗೆ ಬರೆದ ಪತ್ರದಿಂದ ವಾಚನ  - 4 : 1-6
ಹೋದರರೇ, ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ಪೌಲನಾದ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿ ಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆ ಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ; ವಿಶ್ವಾಸವೂ ಒಂದೇ;  ದೀಕ್ಷಾಸ್ನಾನವೂ ಒಂದೇ. ದೇವರು ಒಬ್ಬರೇ, ಸರ್ವರ ತಂದೆಯೂ ಅವರೇ; ಸರ್ವಶ್ರೇಷ್ಟರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.
- ಪ್ರಭುವಿನ ವಾಕ್ಯ

ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ! ಮಾರ್ಗವು ಸತ್ಯವೂ ಜೀವವೂ ನಾನೇ, ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು. ಅಲ್ಲೆಲೂಯ!

ಶುಭಸಂದೇಶ

ಸಂತ ಯೊವಾನ್ನರು ಬರೆದ ಶುಭಸಂದೇಶದಿಂದ ವಾಚನ - 6: 1-15

ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು. ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕ ಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು. ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು. ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು. ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು. ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು. ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು”, ಎಂದನು. ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೇಯನು, “ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತವೆ?” ಎಂದನು. ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದು ಸಾವಿರದಷ್ಟಿತ್ತು. ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು. ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು. ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟು ಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬ ಆದವು. ಯೇಸು ಮಾಡಿದ ಈ ಸೂಚಕ ಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು. ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.

No comments:

Post a Comment