ಯೇಸುವಿನ ರೂಪಾಂತರದ ಮಹೋತ್ಸವ
ಯೇಸುವಿನ ರೂಪಾಂತರದ ಘಟನೆಯ ಬಗೆಗಿನ ಫಾ ಚಸರಾರವರ ಮನೋಜ್ಞವಾದ ಪ್ರಬೋಧನೆ ಕೇಳಲು ಈ ಲಿಂಕ್ ಒತ್ತಿ
ಯೇಸುವಿನ ರೂಪಾಂತರದ ಘಟನೆಯ ಬಗೆಗಿನ ಫಾ ಚಸರಾರವರ ಮನೋಜ್ಞವಾದ ಪ್ರಬೋಧನೆ ಕೇಳಲು ಈ ಲಿಂಕ್ ಒತ್ತಿ
ಮೊದಲನೇ ವಾಚನ: ದಾನಿಯೇಲ ೭:೯-೧೦, ೧೩-೧೪
ನಾವು ನೋಡುತ್ತಿದ್ದಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾ ವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಿಧಗಿಸುವ ಬೆಂಕಿ ಅದರ ಚಕ್ರಗಳು. ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆ ಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪು ನೀಡಲು ಕುಳಿತುಕೊಂಡರು. ಪಟ್ಟಿ ಪುಸ್ತಕಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಅಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು. ಅವನ ರಾಜ್ಯ ಎಂದಿಗೂ ಅಳಿಯದು!
ಕೀರ್ತನೆ:97:1-2, 5-6, 9
ಶ್ಲೋಕ: ಪ್ರಭುವೇ, ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ.
ಎರಡನೇ ವಾಚನ; 2ಪೇತ್ರ 1:16-19
ಕ್ರಿಸ್ತ ಮಹಿಮೆಯನ್ನು ಕಂಡವರ ಸಾಕ್ಷ್ಯ ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿ ಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ವವನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ. ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, "ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು," ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು. ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು; ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು. ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.
ಶುಭಸಂದೇಶ; ಮಾರ್ಕ 9:2-10
ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೆ ಯೇಸು ರೂಪಾಂತರ ಹೊಂದಿದರು. ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು. ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದದು ಶಿಷ್ಯರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, "ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು," ಎಂದನು. ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತರಾಗಿದ್ದರು! ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, "ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ," ಎಂಬ ವಾಣಿ ಕೇಳಿಸಿತು. ತಕ್ಷಣ, ಶಿಷ್ಯರು ಸುತ್ತಲು ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, "ನರಪುತ್ರನು ಸತ್ತು ಪುನರುತ್ದಾನಹೊಂದುವ ತನಕ ನೀವು ಕಂಡದ್ದನು ಯಾರಿಗೂ ಹೇಳಬೇಡಿ," ಎಂದು ಆಜ್ಞಾಪಿಸಿದರು. ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ "ಸತ್ತು ಪುನರುತ್ದಾನ ಹೊಂದುವುದು" ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.
No comments:
Post a Comment