ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

13.08.2018

ಸಾಧಾರಣ ಕಾಲದ ಹತ್ತೊಂಭತ್ತೆನೆಯ ವಾರ

ಮೊದಲನೇ ವಾಚನ: ಯೆಜೆಕಿಯೇಲ: 1: 2-5, 24-28
ದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ, ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತ ಸ್ಪರ್ಶದಿಂದ ನಾನು ಪರವಶನಾದೆ. ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂತ ಕಾಂತಿ ಬೆಳಗಿತು. ಅದರ ಮಧ್ಯದಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು. ಅವುಗಳ ರೂಪ ಮನುಷ್ಯ ರೂಪದಂತಿತ್ತು.  ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲ ಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲಿಂದ ಒಂದು ಧ್ವನಿ ನನ್ನ ಕಿವಿಗೆ ಬಿತ್ತು. ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರ ನೀಲ ಮಣಿಯಂತೆ ಹೊಳೆಯುವ ಸಿಂಹಾಸನ ಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. ಸೊಂಟದ ಹಾಗೆ ತೋರುವ ಆತನ ಮಧ್ಯೆ ಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಬುತ ಕಾಂತಿಯನ್ನು ನಾನು ಕಂಡೆ; ಸೊಂಟದ ಹಾಗೆ ತೋರುವ ಆತನ ಮಧ್ಯೆ ಭಾಗದಿಂದ ಕೆಲಗಡೆ ಬೆಂಕಿ ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆ; ಪ್ರಕಾಶವು ಆತನನ್ನು ಆವರಿಸಿಕೊಂಡಿತು. ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರ ಮಹಿಮಾದ್ಬುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡ ಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.

ಕೀರ್ತನೆ: 148: 1-2, 11-12, 13,14
ಶ್ಲೋಕ: ಹೊಗಳಲಿ ಎಲ್ಲರು ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು.

ಶುಭಸಂದೇಶ: ಮತ್ತಾಯ: 17: 22-27
ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, "ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು; ಅವರು ಆತನನ್ನು ಕೊಳ್ಳುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು," ಎಂದರು. ಅದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು. ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು. ದೇವಾಲಯದ ತೆರಿಗೆಯನ್ನು ವಸೂಲಿ ಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, "ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?" ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, "ಹೌದು ಕಟ್ಟುತ್ತಾರೆ," ಎಂದು ಉತ್ತರವಿತ್ತನು. ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು "ಸಿಮೋನಾ, ನಿನಗೆ ಏನನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. "ಪರರಿಂದಲೇ," ಎಂದು ಪೇತ್ರನು ಉತ್ತರ ಕೊಟ್ಟನು. ಯೇಸು, "ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ? ಆದರೂ ನಾವು ಇವರಿಗೆ ಅಡ್ಡಿಯಾಗಬಾರದು ಎಂದೇ ನೀನು ಸರೋವರಕ್ಕೆ ಹೋಗಿ ಗಾಳ ಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು," ಎಂದರು.

No comments:

Post a Comment