ಸಾಧಾರಣ ಕಾಲದ 25ನೇ - ಶನಿವಾರ
ಸಂತರಾದ ಮಿಖಾಯೇಲ್, ಗಬ್ರಿಯೇಲ್, ರಫಯೇಲ್ (ಪ್ರಧಾನ ದೂತರು)
ಮೊದಲನೇ ವಾಚನ: ದಾನಿಯೇಲನು: 7: 9-10, 13-14 (ಪ್ರಕಟನೆ: 12: 7-12)
ನಾನು ನೋಡುತ್ತಿದ್ದ ಹಾಗೆ ಸಿಂಹಾಸನಗಳನ್ನು ಹಾಕಲಾಯಿತು. ಮಹಾ ವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ, ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು. ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆ ಸಲ್ಲಿಸುತ್ತಿದ್ದರು. ಕೋಟ್ಯಾನು ಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯ ಸಭೆಯವರು ತೀರ್ಪು ನೀಡಲು ಕುಳಿತುಕೊಂಡರು. ಪಟ್ಟಿ ಪುಸ್ತಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲು ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾ ವೃದ್ದರನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆಸಲ್ಲಿಸಲೆಂದು ಅವನಿಗೆ ದೊರೆತನ ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!
ಕೀರ್ತನೆ: 138: 1-2ಎಬಿ, 2ಸಿಡಿಇ-3, 4-5
ಶ್ಲೋಕ: ಹೃದಯ ಪೂರ್ವಕ ವಂದನೆ ಪ್ರಭು ನಿನಗೆ ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ.
ಶುಭಸಂದೇಶ: ಯೊವಾನ್ನ: 1: 47-50
ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, "ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ," ಎಂದು ನುಡಿದರು. ನತಾನಿಯೇಲನು, "ನನ್ನ ಪರಿಚಯ ನಿಮಗೆ ಹೇಗಾಯಿತು?" ಎಂದು ಕೇಳಲು ಯೇಸು, "ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ," ಎಂದು ಉತ್ತರ ಕೊಟ್ಟರು. ಅದಕ್ಕೆ ನತಾನಿಯೇಲನು "ಗುರುದೇವ, ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ," ಎಂದನು. ಆಗ ಯೇಸು, "ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೇ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ," ಎಂದು ನುಡಿದರು. ತಮ್ಮ ಮಾತನ್ನು ಮುಂದುವರಿಸುತ್ತಾ, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಸ್ವರ್ಗವು ತೆರೆದಿರುವುದನ್ನು ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ," ಎಂದು ಹೇಳಿದರು.
No comments:
Post a Comment