ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು 'ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ. ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತ ಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ. ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ! ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲು ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ. ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತಿದ್ದೇನೆ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಲು ಯತ್ನಿಸುತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ. ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ. ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.
ಕೀರ್ತನೆ: 111:1b-2, 7-8, 9 & 10c
ಶ್ಲೋಕ: ತನ್ನೊಡಂಬಡಿಕೆಯ ಚಿರ ನೆನಪಿಸುವುದು ಪ್ರಭುವಿಗೆ.
ಶುಭಸಂದೇಶ: ಲೂಕ 10:25-37
ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ " ಬೋಧಕರೇ, ಅಮರ ಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?" ಎಂದು ಕೇಳಿದನು. ಅದಕ್ಕೆ ಯೇಸು, "ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?" ಎಂದು ಪ್ರಶ್ನೆ ಹಾಕಿದರು. ಅವನು, "ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು" ಎಂದಿದೆ," ಎಂದು ಉತ್ತರಕೊಟ್ಟನು. ಯೇಸು "ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರ ಜೀವ ಲಭಿಸುವುದು," ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, "ನನ್ನ ನೆರೆಯವನು ಯಾರು? ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಯೇಸು ಅವನಿಗೆ ಹೀಗೆಂದು ವಿವರಿಸಿದರು: "ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ, ಅಲ್ಲೇ ಬಿಟ್ಟುಹೋದರು.ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು, ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣಿಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಅವನನ್ನು ತನ್ನ ಸ್ವಂತ ವಾಹಕ ಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, 'ಇವನನ್ನು ಚೆನ್ನಾಗಿ ನೋಡಿಕೊ, ಇದಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ' ಎಂದ. ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?" ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು , "ದಯೆ ತೋರಿದವನೇ ನೆರೆಯವನು," ಎಂದನು. ಆಗ ಯೇಸು, "ಹೋಗು, ನೀನು ಹಾಗೆಯೇ ಮಾಡು," ಎಂದು ಹೇಳಿದರು. ಚಿಂತನೆ: "ಗಾಯಾಳುವಿಗೆ ಸಹಾಯ ಮಾಡುವ ಒಳ್ಳೆಯ ಉದ್ದೇಶ ಮತ್ತು ಜೊತೆಯಲ್ಲಿದ್ದ ಹಣ ಮಾತ್ರವಾಗಿದ್ದರೆ ಸದಯ ಸಮಾರಿತನನ್ನು ಯಾರೂ ಇಂದಿಗೂ ನೆನಪಿನಲ್ಲಿ ಇಟ್ಟುಕೊಳ್ಳುತ್ತಿರಲಿಲ್ಲ". ಇಂಗ್ಲೆಂಡ್ ನ ಪ್ರಧಾನಿಯಾಗಿದ್ದ ಮಾಗರೆಟ್ ಟ್ಯಾಚರ್ ಹೇಳಿದ ಮಾತಿದು. ಇದರ ಅರ್ಥವಿಷ್ಟೇ, ಸಹಾಯ ಮಾಡಬೇಕು ಅನ್ನುವ ಆವನ ಉದ್ದೇಶ ಕಾರ್ಯರೂಪಕ್ಕೆ ಬಂದಾಗ ಮಾತ್ರ ಅದಕ್ಕೆ ಅರ್ಥ, ಇಲ್ಲವಾದರೆ ಅದು ಕೇವಲ ಒಂದು ಚಲಿಸುವ ಆಲೋಚನೆಯಷ್ಟೇ.
Amen
ReplyDelete